Homeಮುಖಪುಟಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಒತ್ತಾಯಿಸಿತ್ತು.

- Advertisement -
- Advertisement -

ಕಳೆದೊಂದು ವಾರದಿಂದ ದೇಶಾದ್ಯಂತ ರೈತರು ಬೀದಿಗಿಳಿದಿದ್ದಾರೆ. ರೈತವಿರೋಧಿ ಸುಗ್ರೀವಾಜ್ಞೆ, ಮಸೂದೆಗಳನ್ನು ಹಿಂಪಡೆಯುವಂತೆ ಕೇಂದ್ರ, ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ “ಈ ರೈತ ಮಸೂದೆಗಳು ರೈತರ ಮಂಡಿ ಮಾರುಕಟ್ಟೆಗೆ ವಿರುದ್ಧವಿವೆ ಎಂಬುದು ಸುಳ್ಳು ಎಂದು ನಾನು ಸ್ಪಷ್ಟಪಡಿಸುತ್ತೇನೆ. ಇದು ಕೃಷಿಮಂಡಿಗಳನ್ನು ಮತ್ತಷ್ಟು ಅಭಿವೃದ್ದಿಪಡಿಸಲಿದೆ. ಈ ಸಂದರ್ಭಕ್ಕೆ ತುರ್ತು ಅಗತ್ಯವಿದ್ದ ಕಾರಣಕ್ಕೆ ನಮ್ಮ ಸರ್ಕಾರ ಇವುಗಳನ್ನು ಅಂಗೀಕರಿಸಿದೆ. ಈಗ ರೈತರು ಎಲ್ಲಿ ಬೇಕಾದರೂ ತಮ್ಮ ಬೆಳೆಗಳನ್ನು ಲಾಭದ ದರಕ್ಕೆ ಮಾರುವ ಅಧಿಕಾರ ಹೊಂದಿದ್ದಾರೆ” ಎಂದು ತಿಳಿಸಿದ್ದಾರೆ.

ಖುದ್ದು ಮೋದಿಯವರೇ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಳ್ಳುವ ಮಟ್ಟಿಗೆ ರೈತರ ವಿರೋಧ ಬೆಳೆದುನಿಂತಿದೆ. ಅಷ್ಟೇ ಅಲ್ಲದೇ ನಿನ್ನೆ ಕೇಂದ್ರದ 6 ಸಚಿವರು ಪತ್ರಿಕಾಗೋಷ್ಠಿ ನಡೆಸಿ ಕೃಷಿ ಮಸೂದೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆದರೂ ರೈತರು ತನ್ನ ಪ್ರತಿಭಟನೆಗಳನ್ನು ನಿಲ್ಲಿಸಿಲ್ಲ ಎಂದರೆ ಈ ಮಸೂದೆಗಳು ರೈತವಿರೋಧಿ ಎಂಬುದರಲ್ಲಿ ಸಂಶಯವಿಲ್ಲ ಎನಿಸುತ್ತದೆ.

ಇನ್ನು ಕೃಷಿ ಮಸೂದೆಗಳಲ್ಲಿ ಒಂದಾದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿವಾದ ಭುಗಿಲೆದ್ದಿದೆ. ಕೇಂದ್ರ ಸರ್ಕಾರವೇ ಈ ಕಾಯ್ದೆಗೆ ತಿದ್ದುಪಡಿ ತರಲು ಕಳೆದ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಾಗಿತ್ತು. ಆದರೆ ಎಪಿಎಂಸಿ ರಾಜ್ಯಪಟ್ಟಿಯಲ್ಲಿ ಬರುವುದರಿಂದ ಮೇ 04ರಂದು ಕೇಂದ್ರವು ಹಲವು ರಾಜ್ಯಸರ್ಕಾರಗಳಿಗೆ ಸುತ್ತೋಲೆಯೊಂದನ್ನು ಕಳಿಸಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವಂತೆ ಒತ್ತಡ ತಂದಿತ್ತು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಕುರಿತು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಪತ್ರ ಬರೆದಿದ್ದು, ನೀವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಪಿಎಲ್‌ಎಂ 2017ರ ಕಾಯ್ದೆಗೆ ಆದಷ್ಟು ಬೇಗ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಬೇಕೆಂದು ಸೂಚಿಸಿರುವ ಪತ್ರವು ಆಗ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಅದಕ್ಕೆ ಮುಂಚೆಯೇ ಕೇಂದ್ರವು ತಯಾರಿಸಿದ್ದ ಮಾದರಿ ಕಾಯ್ದೆಯ ಪ್ರತಿಯು ರೈತ ಮುಖಂಡರಿಂದ ನಾನುಗೌರಿ.ಕಾಂಗೆ ಲಭ್ಯವಾಗಿತ್ತು.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು” ಎಂದು ಕೇಂದ್ರದ ಪತ್ರದಲ್ಲಿ ಬರೆಯಲಾಗಿತ್ತು.

ಈ ನಡುವೆ ಅದೇ ಸಮಯದಲ್ಲಿ ಕರ್ನಾಟಕದ ರಾಜ್ಯಪಾಲರ ಕಚೇರಿಯು ಆದಷ್ಟು ಬೇಗ ತಿದ್ದುಪಡಿ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿತ್ತೆಂಬ ಸುದ್ದಿ ಹರಿದಾಡಿತ್ತು. ಅದು ಎಷ್ಟರಮಟ್ಟಿಗೆಂದರೆ ಪ್ರತಿ ಗಂಟೆಗೊಮ್ಮೆ ಸುಗ್ರೀವಾಜ್ಞೆಯ ಸಹಿಗಾಗಿ ರಾಜ್ಯಪಾಲರ ಕಚೇರಿಗೆ ಆದಷ್ಟು ಬೇಗ ಕಳಿಸಿಕೊಡಬೇಕೆಂದು ಒತ್ತಾಯಿಸಲಾಗುತ್ತಿತ್ತು ಎಂದು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಈ ರೀತಿಯಾಗಿ ತನ್ನ ವ್ಯಾಪ್ತಿಗೆ ಬಾರದ ತಿದ್ದುಪಡಿಯನ್ನು ಸಹ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಸುಗ್ರೀವಾಜ್ಞೆಗಳ ಮೂಲಕ ತಂದಿತ್ತು. ಈಗಲೂ ಸಹ ಅವುಗಳನ್ನು ಸಮರ್ಪಕವಾಗಿ ಚರ್ಚಿಸದೇ ತರಾತುರಿಯಲ್ಲಿ ಅಂಗೀಕರಿಸಲಾಗುತ್ತಿದೆ. ವಿರೋಧಿಸಿದ ಸಂಸದರನ್ನು ಅಧಿವೇಶನದಿಂದ ದೂರ ಇಡಲಾಗುತ್ತಿದೆ. ದೇಶದ ರೈತರ ಮೇಲೆ ಗಮನಾರ್ಹ ಪರಿಣಾಮ ಬೀರುವ ತಿದ್ದುಪಡಿಗಳನ್ನು ರಾಜ್ಯಗಳಿಗೆ ಒತ್ತಡ ಹೇರಿ ಸುಗ್ರೀವಾಜ್ಞೆಗಳ ಮೂಲಕ ತಂದು ಈಗ ತರಾತುರಿಯಲ್ಲಿ ಅಂಗೀಕರಿಸುತ್ತಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಅಂತಹ ರೈತರನ್ನು ಕಂಗನಾ ರಾಣಾವತ್‌ರಂತಹ ನಟಿಯರು ಭಯೋತ್ಪಾದಕರು ಎಂದು ಕರೆಯುತ್ತಿದ್ದಾರೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಆದರೆ ರೈತರು ಇದರ ವಿರುದ್ಧ ತಿರುಗಿಬಿದ್ದಿರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆದ ಕಾರಣವೇ ನಿನ್ನೆ ಮೋದಿ ಸೇರಿದಂತೆ ಹಲವು ಸಚಿವರು ಕೃಷಿ ಮಸೂದೆಗಳ ಸಮರ್ಥನೆಗಿಳಿದಿದ್ದಾರೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿ ಯುವಜನರು ಪರೀಕ್ಷೆ ಮುಂದೂಡಿಕೆ ಮತ್ತು ಉದ್ಯೋಗದ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಈಗ ರೈತರು ದನಿಯೆತ್ತುತ್ತಿದ್ದಾರೆ. ಸರ್ಕಾರ ಇನ್ನೆಷ್ಟು ಜನರ ಕೋಪ ಆಕ್ರೋಶಗಳಿಗೆ ಗುರಿಯಾಗಿಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳು ರೈತರನ್ನು ಬಲಶಾಲಿಗಳನ್ನಾಗಿಸಲಿವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...