ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ನಗರದಿಂದ ಮೂಡಿಗೆರೆಗೆ ಆಗಮಿಸಿದ ‘SIR ಜನಜಾಗೃತಿ ಜಾಥಾ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರವು ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಹನೀಯರು ಶೂನ್ಯದಿಂದ ಈ ದೇಶವನ್ನು ಕಟ್ಟಿ ಬೆಳೆಸಿದ್ದಾರೆ. ಆದರೆ ಕಳೆದ ಹತ್ತು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ತಾವೇ ಎಲ್ಲವನ್ನೂ ಮಾಡಿದ್ದೇವೆ ಎಂದು ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನದ ಆಶಯಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಬಿಜೆಪಿ, ಇದೀಗ SIR ಜೂನ್ 30 ರಿಂದ ಜಾರಿ ಮಾಡುವ ಮೂಲಕ ತನ್ನ ಹುನ್ನಾರವನ್ನು ಸುಲಭವಾಗಿಸಿಕೊಳ್ಳುತ್ತಿದೆ. ಆದ್ದರಿಂದ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಸಂಘಟನೆಗಳು ಒಟ್ಟುಗೂಡಿ SIRನಿಂದ ಆಗಬಹುದಾದ ಅನಾಹುತಗಳನ್ನು ಹಿಮ್ಮೆಟ್ಟಿಸಬೇಕಿದೆ. ಮತದಾರರ ಪಟ್ಟಿಯಿಂದ ಯಾರೊಬ್ಬರ ಹೆಸರು ತಪ್ಪಿಹೋಗದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕೆಂದು ಅವರು ಕರೆ ನೀಡಿದರು.
ಇದೇ ವೇಳೆ ಮಾತನಾಡಿದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡ ಗೌಸ್ ಮೊಹಿದೀನ್, ಮತದಾರರು ಸರ್ಕಾರವನ್ನು ಆಯ್ಕೆ ಮಾಡುವ ಬದಲಾಗಿ, ಸರ್ಕಾರವೇ ತನಗೆ ಬೇಕಾದ ಮತದಾರರನ್ನು ಆಯ್ಕೆ ಮಾಡಿಕೊಳ್ಳುವ ದುಸ್ಥಿತಿಗೆ ಇಂದು ದೇಶ ತಲುಪಿದೆ. ಆದರೆ ನಾವು ನಮ್ಮ ರಕ್ತ ಕೊಟ್ಟಾದರೂ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತೇವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.
ತದನಂತರ ಮಾತನಾಡಿದ ಸಿಪಿಐ (ML) ಪಕ್ಷದ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ, SIR ಮೂಲಕ ಆದಿವಾಸಿ, ಬುಡಕಟ್ಟು, ದಲಿತ ಮತ್ತು ಅಲ್ಪಸಂಖ್ಯಾತರನ್ನು ಹಕ್ಕುಗಳಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ದೇಶದಲ್ಲಿ ಸರ್ವಾಧಿಕಾರ ತರಲು ಸಂಘಪರಿವಾರ ಪಿತೂರಿ ನಡೆಸುತ್ತಿದ್ದು, ಈಗಾಗಲೇ ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ SIR ಜಾರಿ ಮುಖಾಂತರ ಲಕ್ಷಾಂತರ ಅರ್ಹ ಮತದಾರರ ಹೆಸರನ್ನು ಕೈಬಿಡಲಾಗಿದೆ. ಇದು ಕರ್ನಾಟಕದಲ್ಲಿ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಜಾಥಾದ ಮಾರ್ಗ-3ರ ನೇತೃತ್ವ ವಹಿಸಿರುವ ಸುರೇಶ್ ನಾಯ್ಕ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಈ ಕೂಡಲೇ ಎಚ್ಚೆತ್ತುಕೊಂಡು ಯಾವೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಬೇರೆ ರಾಜ್ಯಗಳಂತೆ ಇಲ್ಲೂ ಕೂಡ ದೊಡ್ಡ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದರು.
ಇಂದಿರಾ ಲಂಕೇಶ್ ಗೆ ಶ್ರದ್ದಾಂಜಲಿ
ಇದೇ ಸಂದರ್ಭದಲ್ಲಿ ಇಂದು ನಿಧನರಾದ ಪತ್ರಕರ್ತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಹಾಗೂ ಅವರು ನಾಡಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಈ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿದರಹಳ್ಳಿ ಜಯರಾಂ, ಮೂಡಿಗೆರೆ ತಾಲ್ಲೂಕಿನ ಕಾಂಗ್ರೆಸ್ ವಕ್ತಾರರಾದ ಅನಂತ್, ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ರಮೇಶ್, ಬಿಎಸ್ಪಿ ರಾಜ್ಯ ಉಪಾಧ್ಯಕ್ಷರು, ಜಾಕೀರ್ ಹುಸೇನ್, ಎಸ್ಡಿಪಿಐ ತಾಲ್ಲೂಕು ಅಧ್ಯಕ್ಷ ಷರೀಫ್ M.U, ಸಾಮಾಜಿಕ ಹೋರಾಟಗಾರ ಹರೀಶ್ ಮತ್ತಿತರರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು, ರಾಮು ಕೌಳಿ, ಪವಿತ್ರ, ಸುಮಂತ್ ಮತ್ತು ಗಿರಿಜಾ ವಹಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.


