ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ತುಳುನಾಡಿನ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಕಾರ್ಯಕ್ರಮಕ್ಕೆ ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಿ ಯಡವಟ್ಟು ಮಾಡಿಕೊಂಡಿದ್ದ ಬೆಂಗಳೂರು ಕಂಬಳ ಸಮಿತಿ ಕೊನೆಗೂ ತನ್ನ ನಿರ್ಧಾರ ಬದಲಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಹ್ವಾನ ವಿರೋಧಿಸಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಅಶೋಕ್ ರೈ ಕೋಡಿಂಬಾಡಿ, ವಿವಾದಿತ ಸಂಸದನನ್ನು ಕರೆಯದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಕೊನೇ ಕ್ಷಣದಲ್ಲಿ ಆಹ್ವಾನ ಪತ್ರಿಕೆಯನ್ನೂ ಹೊಸದಾಗಿ ಪ್ರಿಂಟ್ ಮಾಡಲು ನಿರ್ಧರಿಸಿದ್ದಾರೆ.
ಬ್ರಿಜ್ ಭೂಷಣ್ಗೆ ಯಾಕೆ ವಿರೋಧ?
ಆರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಬ್ರಿಜ್ ಭೂಷಣ್ ಎದುರಿಸುತ್ತಿದ್ದಾರೆ. ಹಲವು ಗಂಭೀರ ಅಪರಾಧ ಪ್ರಕರಣಗಳು ಬ್ರಿಜ್ ಭೂಷಣ್ ಮೇಲಿವೆ. ಅಂತಹ ವ್ಯಕ್ತಿಯನ್ನು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬೆಂಗಳೂರು ಕಂಬಳ ಸಮಿತಿ ಆಹ್ವಾನಿನಿಸಿರುವುದು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಕರ್ನಾಟಕ ಸರ್ಕಾರ ಕೂಡ ಈ ಕಂಬಳಕ್ಕಾಗಿ ಒಂದು ಕೋಟಿ ರೂ. ಘೋಷಣೆ ಮಾಡಿದೆ.
ಈ ಹಿಂದಿನ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಕುಸ್ತಿಪಟುಗಳನ್ನು ಬ್ರಿಜ್ ಭೂಷಣ್ ಅಭಿನಂದಿಸಲಿದ್ದಾರೆ ಎಂದು ಹೇಳಲಾಗಿತ್ತು. ನಟ ದರ್ಶನ್, ಮಾಜಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟದ ಅಧ್ಯಕ್ಷ ವಿಶಾಲ್ ಸಿಂಗ್ ಸನ್ಮಾನ ಸಮಾರಂಭದಲ್ಲಿ ಇತರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳ ಸಮಿತಿ ಎಂಬ ಖಾಸಗಿ ಗುಂಪು ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ನವೆಂಬರ್ 25 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮುಖ್ಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಡಿವಿ ಸದಾನಂದ ಗೌಡ ಅವರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಎರಡು ದಿನಗಳ ಕಾರ್ಯಕ್ರಮದ ಅಧಿಕೃತ ಆಹ್ವಾನ ಪಟ್ಟಿಯಲ್ಲಿ ಹಲವಾರು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಹೆಸರುಗಳಿವೆ.
ಈ ಬಗ್ಗೆ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿ, ”ಸಿದ್ದಿ ಜನಾಂಗದ ಸಂಘಟನೆಯವರು ಬಂದು ಬ್ರಿಜ್ ಭೂಷಣ್ ಅವರನ್ನು ಕರೆಯುವಂತೆ ತಿಳಿಸಿದರು. ಎಲ್ಲ ಜಾತಿ ಜನಾಂಗದವರ ಮುಖಂಡರನ್ನು ಕರೆಯಲಾಗುತ್ತಿದೆ. ಸಮುದಾಯದ ಕೋರಿಕೆ ಮೇರೆಗೆ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿದೆ. ಅವರು ಕಾರ್ಯಕ್ರಮಕ್ಕೆ ಬರುತ್ತಾರೆಂಬುದು ಖಚಿತವಿಲ್ಲ” ಎಂದು ಹೇಳಿದ್ದರು.
”ಅವರು ಕಾರ್ಯಕ್ರಮಕ್ಕೆ ಬಂದರೂ ಕಂಬಳಕ್ಕೆ ಹೊರತುಪಡಿಸಿ ಬೇರೆ ವಿಚಾರಗಳ ಕುರಿತು ಮಾತನಾಡಲು ಅನುಮತಿ ಕೊಡುವುದಿಲ್ಲ” ಎಂದು ತಿಳಿಸಿದ್ದರು.
ಇದನ್ನೂ ಓದಿ: ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅತಿಥಿ: ವಿವಾದ ಸೃಷ್ಟಿ