Homeಮುಖಪುಟಸಿನಿಮಾ ಸ್ಪಂದನೆ; ‘ದ ಗ್ರೇಟ್ ಇಂಡಿಯನ್ ಕಿಚನ್': ಅಡುಗೆಮನೆಯೊಳಗೆ ಅಡಗಿರುವ ಭವ್ಯ ಭಾರತ

ಸಿನಿಮಾ ಸ್ಪಂದನೆ; ‘ದ ಗ್ರೇಟ್ ಇಂಡಿಯನ್ ಕಿಚನ್’: ಅಡುಗೆಮನೆಯೊಳಗೆ ಅಡಗಿರುವ ಭವ್ಯ ಭಾರತ

ಮನೆಯೊಳಗಿನ ಅವ್ಯವಸ್ಥೆಗಳನ್ನು ಸರಿಮಾಡಿಕೊಳ್ಳದೇ ಇದ್ದರೆ ಕೊನೆಗೊಂದು ದಿನ ಸೋರುತ್ತಿರುವ ಅದೇ ರಾಡಿ ತಮ್ಮ ಮುಖಕ್ಕೇ ಅಂಟಿಕೊಳ್ಳಬಹುದೆಂಬ ವಾಸ್ತವವನ್ನು ನಿರ್ದೇಶಕ ಯಾವ ಉಪದೇಶ, ಬೋಧನೆ, ಭಾಷಣಗಳಿಲ್ಲದೇ ಸಮರ್ಪಕವಾಗಿ ಇಲ್ಲಿ ಪ್ರೇಕ್ಷಕನಿಗೆ ರವಾನಿಸಿದ್ದಾರೆ. ‘ಚಿತ್ರಕತೆ’ ಎಂದು ಕರೆಸಿಕೊಳ್ಳುವಂತಹದ್ದು ಈ ಚಿತ್ರದಲ್ಲಿಲ್ಲ. ಆದರೂ ಪ್ರತಿಯೊಬ್ಬರೂ ನೋಡಲೇಬೇಕಾದ ಮನೆಮನೆಯ ಕತೆಯ ಚಿತ್ರವಿದು.

- Advertisement -
- Advertisement -

ಒಂದು: ಮನೆಯ ಸೊಸೆ ನೃತ್ಯ ಶಿಕ್ಷಕಿಯ ಕೆಲಸಕ್ಕೆ ಅರ್ಜಿ ಹಾಕಿರುತ್ತಾಳೆ. ಸಂದರ್ಶನಕ್ಕೆ ಆಹ್ವಾನಿಸಿ ಮನೆಗೆ ಪತ್ರ ಬರುತ್ತದೆ. ಆ ಪತ್ರವನ್ನು ನೋಡಿದ ಮಾವ ಸೊಸೆಗೆ ಮನೆಯೊಳಗಿನ ಹೆಣ್ಣಿನ ಪಾತ್ರದ ಮಹತ್ವವನ್ನು ತಿಳಿಸಿಕೊಡುತ್ತಾನೆ: “ಹೆಣ್ಣೊಬ್ಬಳು ಮನೆಯೊಳಗಿದ್ದರೆ ಐಶ್ವರ್ಯವಿದ್ದಂತೆ, ಮಕ್ಕಳು ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದುತ್ತಾರೆ, ಅವಳು ಮನೆಯೊಳಗೆ ಮಾಡುವ ಕೆಲಸಕಾರ್ಯಗಳು ಯಾವುದೇ ಅಧಿಕಾರಿ ಅಥವಾ ಮಂತ್ರಿಗಳ ಕೆಲಸಕ್ಕಿಂತ ಕಡಿಮೆಯಿಲ್ಲ ಎಂದು. ಮುಂದಿನ ಶಾಟ್‌ನಲ್ಲಿ ಸೊಸೆ ಮನೆಯ ಹಿತ್ತಲಿನಲ್ಲಿ ಮಾವನ ಚಡ್ಡಿ ಒಗೆಯುತ್ತಿರುತ್ತಾಳೆ.

ಎರಡು: ಮನೆಯ ಡೈನಿಂಗ್ ಟೇಬಲ್‌ನಲ್ಲಿ ಕುಳಿತು ಊಟ ಮಾಡುವಾಗ ಗಂಡ ಊಟದ ತಟ್ಟೆಯಿಂದ ನುಗ್ಗೇಕಾಯಿಯನ್ನು ಜಗಿದು ಅದರ ನಾರನ್ನು ಬಾಯಿಂದ ತೆಗೆದು ಡೈನಿಂಗ್ ಟೇಬಲ್ ಮೇಲಿಡುತ್ತಾನೆ. ಅವನ ಊಟವಾದ ಮೇಲೆ ತಾಯಿಯೋ ಹೆಂಡತಿಯೋ ಅದನ್ನು ಬಳಿದು ಶುಚಿಗೊಳಿಸಬೇಕು. ಹೋಟೆಲಿನಲ್ಲಿ ಊಟ ಮಾಡುವಾಗ ನಾಜೂಕಾಗಿ ತಟ್ಟೆಯ ಮೂಲೆಯಲ್ಲಿಡುತ್ತಾನೆ. ಇದರ ಪ್ರಸ್ತಾಪ ಮಾಡಿದ ಹೆಂಡತಿಯಿಂದ ಕ್ಷಮಾಪಣೆ ಕೇಳುತ್ತಾನೆ.

ಮೂರು: ಅಡುಗೆಮನೆಯ ಸಿಂಕ್ ಪೈಪ್ ಸೋರುತ್ತಿದೆ. ಮುಸುರೆ ನೀರು ತೊಟ್ಟಿಕ್ಕಿ, ತೊಟ್ಟು ತೊಟ್ಟಾಗಿ ಬೀಳುತ್ತಾ ಹರಿದು ಹೊರಗೆ ಬರುತ್ತಿದೆ. ಸೊಸೆ ಆ ಮುಸುರೆನೀರು ಹರಿದು ಬರುವುದನ್ನು ತಡೆಯಲು ಒಂದು ಗೋಣಿಚೀಲವನ್ನು ಹಾಕುತ್ತಾಳೆ. ಮತ್ತೂ ಹೆಚ್ಚಾದಾಗ ಚಿಕ್ಕದೊಂದು ಬಕೆಟ್ ಇಡುತ್ತಾಳೆ. ಬಕೆಟ್ ತುಂಬಿದಾಗಲೆಲ್ಲಾ ಆ ಮುಸುರೆನೀರನ್ನು ಹೊರಕ್ಕೆ ಸುರಿದು ಬಕೆಟ್ಟನ್ನು ಖಾಲಿ ಮಾಡಿ ಮತ್ತೆ ಸಿಂಕ್ ಕೆಳಗೆ ಇಡುತ್ತಾಳೆ. ಗೋಣಿಚೀಲ ಪೂರ್ತಿ ತೊಯ್ದು ಹೋದಾಗ ಅದನ್ನು ಹೊರಗೆ ಹಾಕಿ ಮತ್ತೊಂದು ಒಣಗಿದ ಚೀಲವನ್ನು ಸಿಂಕ್ ಕೆಳಗೆ ಹರಡುತ್ತಾಳೆ.

ಹೀಗೆ ಗಬ್ಬು ನಾರುತ್ತಿರುವುದು ‘ದ ಗ್ರೇಟ್ ಇಂಡಿಯನ್ ಕಿಚನ್. ಅದನ್ನು ಸಹಿಸಿಕೊಳ್ಳುವಂತೆ ಮಾಡುತ್ತಿರುವುದು ಘಮಘಮಿಸುವ ಮಸಾಲೆಗಳು, ತರಾವರಿ ತಿಂಡಿತಿನಿಸುಗಳು ಮತ್ತು ಅದನ್ನು ಸರಿಮಾಡುತ್ತೇನೆಂದು ನಯವಾಗಿ ಹೇಳುತ್ತಾ ಪ್ರತಿದಿನವೂ ಮರೆತುಹೋಗುವ ಗಂಡನಿರುವ, ತನಗೆ ಎಷ್ಟೇ ಕಷ್ಟವಾದರೂ ಒಂದೂ ಮಾತನಾಡದೆ ಬೆಳಗಿನಿಂದ ರಾತ್ರಿಯವರೆಗೆ ಕತ್ತೆಯ ರೀತಿ ದುಡಿಯುವ ಅತ್ತೆಯಿರುವ, ಪರಂಪರೆ, ಸಂಸ್ಕೃತಿಯ ಹೆಸರಿನಲ್ಲಿ ಪುರುಷಪ್ರಧಾನತೆಯನ್ನು ಎಗ್ಗಿಲ್ಲದೇ ಆಚರಿಸುವ ಮಾವ ಇರುವ – ಕುಟುಂಬ ಎಂಬ ‘ಬಂಧನ’.

ಇಂತಹ ಕೋಟ್ಯಂತರ ಕುಟುಂಬಗಳಿಗೆ ತಮ್ಮ ತಮ್ಮ ಮನೆಯೊಳಕ್ಕೆ ಕನ್ನಡಿ ಹಿಡಿದು ತೋರಿಸಿರುವುದು ‘ದ ಗ್ರೇಟ್ ಇಂಡಿಯನ್ ಕಿಚನ್ ಎಂಬ ಮಲೆಯಾಳಿ ಸಿನೆಮಾ. ಇದನ್ನು ಬರೆದು ನಿರ್ದೇಶನ ಮಾಡಿರುವ ಜೋ ಬೇಬಿ ಅವರ ಸೂಕ್ಷ್ಮತೆ ಚಿತ್ರದುದ್ದಕ್ಕೂ ಎಂತಹ ಗಂಡಸರನ್ನಾದರೂ ಒಂದುಕ್ಷಣ ತಮ್ಮ ಬಗ್ಗೆ ಯೋಚಿಸುವಂತೆ ಮಾಡದೇ ಇರಲಾರದು. ಮತ್ತು ಯಾವ ಹೆಣ್ಣಿಗಾದರೂ ಒಂದಲ್ಲಾ ಒಂದು ದೃಶ್ಯ ತನ್ನ ಬದುಕಿನಲ್ಲಿ ನಡೆದದ್ದು ಎನಿಸದೇ ಇರಲಾರದು.

ಕಾಲ ಎಷ್ಟೇ ಬದಲಾಗಿದೆ ಎಂದರೂ – ಮನೆಯಲ್ಲಿ ಮಿಕ್ಸಿಯಿದ್ದರೂ ಒರಳುಕಲ್ಲಿನಲ್ಲೇ ರುಬ್ಬಬೇಕು, ಕುಕ್ಕರ್ ಇದ್ದರೂ ಸೌದೆ ಒಲೆಯಲ್ಲೇ ಅನ್ನ ಬಸಿಯಬೇಕು, ವಾಶಿಂಗ್ ಮೆಶಿನ್ ಇದ್ದರೂ ಬಟ್ಟೆಗಳು ಬಾಳಿಕೆ ಬರಲೆಂದು ಕಯ್ಯಲ್ಲೇ ಒಗೆಯಬೇಕು. ಮಧ್ಯಾಹ್ನದ ಅನ್ನ ಮಿಕ್ಕಿದ್ದರೂ ರಾತ್ರಿಗೆ ಬಿಸಿಯಾಗಿ ಚಪಾತಿ ಮಾಡಲೇಬೇಕು, ಹಾಟ್ ಬಾಕ್ಸಿನಲ್ಲಿ ಹಾಕಿಟ್ಟರೆ ಆಗದು ಊಟಕ್ಕೆ ಕುಳಿತಾಗಲೇ ಬಿಸಿಯಾಗಿ ಒಲೆಯ ಮೇಲಿಂದ ತಂದುಕೊಡಬೇಕು, ಯಾರೂ ಓಡಾಡದಿದ್ದರೂ ಮನೆಯ ಕೋಣೆಗಳನ್ನೆಲ್ಲಾ ಪ್ರತಿನಿತ್ಯ ಒರೆಸಲೇಬೇಕು. ಹೀಗೆ ಕೊಳೆತು ನಾರುತ್ತಿರುವ ಸಂಪ್ರದಾಯಗಳಿಗೆ ಒಣಗಿದ ಗೋಣಿಚೀಲಗಳ ಹೊದಿಸುವ ಬದಲು ಆ ಆಚರಣೆಗಳನ್ನೇ ಕೈಬಿಡಬೇಕಿದೆ.

ಶಾಲೆಯಲ್ಲಿ ಶಿಕ್ಷಕನಾಗಿ ಕುಟುಂಬ ಎಂಬ ವ್ಯವಸ್ಥೆಯ ಬಗ್ಗೆ ಪಾಠ ಮಾಡಿಯೂ, ಮನೆಯೊಳಗಿನ ತನ್ನ ಪಾತ್ರದ ನಿರ್ವಹಣೆಯ ಅರಿವು ಚಿತ್ರದ ನಾಯಕನಿಗೆ ಇಲ್ಲ. ನಮ್ಮ ಸಮಾಜ ಸೋತಿರುವುದು ಇಲ್ಲಿಯೇ ಆದರೆ ಕೌಟುಂಬಿಕ ದೌರ್ಜನ್ಯ ಮತ್ತು ಹಿಂಸೆಯ ಅತಿಸೂಕ್ಷ್ಮವಾದ ವ್ಯಾಖ್ಯಾನವನ್ನು ಈ ಸಿನೆಮಾದಲ್ಲಿ ನಮ್ಮ ಕಣ್ಣೆದುರು ತೋರಿಸುವ ಮೂಲಕ ನಿರ್ದೇಶಕ ಗೆದ್ದಿದ್ದಾರೆ. ಮನೆಯೊಳಗಿನ ದೈನಂದಿನ ಸಣ್ಣಸಣ್ಣ ವಿಚಾರಗಳು ಒಂದು ಸಿನೆಮಾ ಆಗಿ ತೆರೆದುಕೊಳ್ಳುವುದು, ನಿರ್ದೇಶಕ ಕಂಡುಕೊಂಡಿರುವ ಹೊಸ ಪರಿಭಾಷೆಯಾಗಿದೆ.

ಎಷ್ಟು ಮಾಡಿದರೂ ಮುಗಿಯದ ಮನೆಕೆಲಸವೆಂಬುದು ಪರಂಪರಾಗತವಾಗಿ ನಡೆದು ಬಂದಿದೆ ಮತ್ತಿದಕ್ಕೆ ಬಿಡುವೇ ಇಲ್ಲ. ಅತ್ತೆ ಮಾಡಬೇಕು ಅತ್ತೆ ಇಲ್ಲದಿದ್ದರೆ ಸೊಸೆ, ಇಲ್ಲದಿದ್ದರೆ ಕೆಲಸದವಳು ಅವಳೂ ಇಲ್ಲದಿದ್ದರೆ ದೂರದ ಸಂಬಂಧಿಕಳಾದರೂ ಇದನ್ನು ಮುಂದುವರೆಸಲೇಬೇಕು. ಮನೆಯೊಳಗಿನ ಹಳೆಯ ಫೋಟೋಗಳ ಮೆರವಣಿಗೆ, ಇಷ್ಟೂ ವರ್ಷಗಳ ಕಾಲ ಆ ಮನೆಯಲ್ಲಿ ಎಲ್ಲವನ್ನೂ ಎಲ್ಲರೂ ಹೀಗೆ ನಡೆಸಿಕೊಂಡು ಬಂದಿರುವುದನ್ನು ಸೂಚ್ಯವಾಗಿ ತಿಳಿಸುತ್ತದೆ. ಮನುಷ್ಯ ಒಂದೆಡೆ ನೆಲೆ ನಿಂತು, ಗಂಡು ಬೇಟೆಯಾಡುವ, ಬೆಳೆ ಬೆಳೆಯುವ, ಹೆಣ್ಣು ಮಕ್ಕಳನ್ನು ನೋಡಿಕೊಂಡು ಮನೆಯೊಳಗಿರುವ ಆದಿಮ ಕಾಲದಿಂದ ಹಿಡಿದು- ಮದುವೆಯಾದ ಮೇಲೆ ಕೆಲಸಕ್ಕೆ ಕಳುಹಿಸುವುದಿಲ್ಲ ಎನ್ನುತ್ತಿದ್ದ ಕಾಲ ಬಂದ ಮೇಲೂ, ಚೆನ್ನಾಗಿ ಸಂಪಾದನೆ ಮಾಡುವ ಹುಡುಗಿಯನ್ನೇ ಹುಡುಕಿ ಮಾದುವೆಯಾಗುವ ಕಾಲದವರೆಗೂ ಈ ಮನೆಯ ಕೆಲಸವೆಂಬುದು ‘ಜೆಂಡರ್‌’ನ್ನು  ಆಧರಿಸಿಕೊಂಡು ಬಂದಿದೆ.

PC : Times of India

ಮನೆಯಲ್ಲಿರುವ ಇಬ್ಬರಿಗೆ ಬೇಯಿಸಿ ಹಾಕುವುದಕ್ಕೆ ಅದೆಷ್ಟು ಹೊತ್ತು ಹಿಡಿದೀತು ಎಂದು ಸುಲಭವಾಗಿ ಒಂದು ಮಾತಿನಲ್ಲಿ ಹೇಳಿ ಮುಗಿಸಿಬಿಡಬಹುದು. ಆದರೆ ಅಡುಗೆ ಎಂದರೆ ಅಷ್ಟು ಸರಳವೇ? ಸಿಪ್ಪೆ ಹೆರೆಯುವುದು, ಹಚ್ಚುವುದು, ತುರಿಯುವುದು, ರುಬ್ಬುವುದು, ಅರೆಯುವುದು, ಹುರಿಯುವುದು, ಬೇಯಿಸುವುದು, ಒಗ್ಗರಿಸುವುದು ಬಿಸಿಬಿಸಿಯಾಗಿರುವಾಗಲೇ ಬಡಿಸುವುದು; ಮತ್ತಿದು ಒಂದು ಹೊತ್ತಿನ ಕತೆಯಲ್ಲ ಒಂದು ದಿನದ ಬವಣೆಯಲ್ಲ. ದಿನದಿನವೂ ಅನುದಿನವೂ ತಪ್ಪಿಸದೆ ಅನೂಚಾನಾಗಿ ನಡೆಯಬೇಕಿರುವುದು. ಬೆಳಗಿನ ತಿಂಡಿಯ ಕೆಲಸ ಮುಗಿಯುವಷ್ಟರಲ್ಲಿ ಮಧ್ಯಾನ್ನದ ಅಡುಗೆಯ ಸಮಯ, ಅದನ್ನು ಮಾಡಿ ಮುಗಿಸುವಷ್ಟರಲ್ಲಿ ಸಂಜೆಯ ಚಹಾ ಜೊತೆಗೆ ಬಾಯಾಡಿಸಲು ಏನಾದರೊಂದು ಮುಗಿಸುವಷ್ಟರಲ್ಲಿ ರಾತ್ರಿಗೆ ಮತ್ತೆ ಬಿಸಿಬಿಸಿಯಾಗಿ ತಯಾರಾಗಬೇಕಿರುವ ಚಪಾತಿ. ಒಬ್ಬರಿಗೆ ಚಟ್ನಿ ಬೇಕು ಮತ್ತೊಬ್ಬರಿಗೆ ಸಾಂಬಾರ್ ಬೇಕೇಬೇಕು.

ಅಡುಗೆ ಮಾಡಿ ಬಡಿಸಿ ಅವರ ಊಟವಾದ ಮೇಲೆ ಶುಚಿಗೊಳಿಸುವುದು ಮತ್ತೊಂದು ಮಹಾಸಂಗ್ರಾಮಕ್ಕೆ ಸಜ್ಜಾದಂತೆ. ಹೆಂಗಸರಿಗೆ ಅಡುಗೆಮನೆಯಿಂದ ‘ಮುಕ್ತಿ’ ಕೊಡುವ ‘ಸಹಾಯ’ ಮಾಡುವ ಗಂಡಸರದು ಇನ್ನೊಂದು ಬಗೆ. ಅವರು ಮಾಡಿದ ಮಹದುಪಕಾರದ ನಂತರ ಅಡುಗೆಮನೆ ರಣರಂಗವೇ ಸರಿ. ಮತ್ತೆ ಒಪ್ಪ ಓರಣಗೊಳಿಸುವಷ್ಟರಲ್ಲಿ ಸಾಕಾಗುತ್ತದೆ. ಆದರೂ ನಾವೇ ಎಲ್ಲ ಮಾಡಿದ ಮೇಲೆ ಇನ್ನೇನು ಕೆಲಸ ಉಳಿದಿರಲು ಸಾಧ್ಯ ಎಂದು ಫರ್ಮಾನು ಹೊರಡಿಸಲಾಗುತ್ತದೆ.

ಎಷ್ಟು ಸಣ್ಣಸಣ್ಣ ಅಂಶಗಳಿಂದ ಬದಲಾವಣೆ ಪ್ರಾರಂಭಿಸಬಹುದು. ಮನೆಗೆ ಬಂದ ತಮ್ಮ, ತಾಯಿಯನ್ನು ಕುಡಿಯುವ ನೀರು ತಂದುಕೊಡಲು ಕೇಳುತ್ತಾನೆ. ನಾಯಕಿ ಅವನಿಗೇ ತೆಗೆದುಕೊಂಡು ಕುಡಿಯಲು ಹೇಳುತ್ತಾಳೆ. ಬದಲಾಗಬೇಕಿರುವುದು ವ್ಯವಸ್ಥೆಯೇ ಆದರೂ ಸುಧಾರಿಸಬೇಕಿರುವುದು ನಮ್ಮ ಮನಸ್ಥಿತಿಯಷ್ಟೇ! ಇದು ಗಂಡಸರ ಕೆಲಸ, ಇದು ಹೆಂಗಸರ ಕೆಲಸ ಎಂದು ಹಿಂದಿನವರು ಹೇಳಿದ್ದನ್ನೇ ಅನುಸರಿಸು, ವಿಭಾಗಿಸಿಕೊಳ್ಳುವ, ಭಾವಿಸಿಕೊಳ್ಳುವ, ಸಾಧಿಸುವ ಬದಲು ನನಗೆ ಅಗತ್ಯವಾದ ಕೆಲಸ, ಮನೆಗೆ ಅಗತ್ಯವಾದ ಕೆಲಸ ಎಂದು ನೋಡುವ ದೃಷ್ಟಿಕೋನದ ಅವಶ್ಯಕತೆಯಿದೆ. ಬದಲಾಗಬೇಕಿರುವುದು ಗಂಡಿನ ಮನಸ್ಥಿತಿಯಷ್ಟೇ ಅಲ್ಲ ಹೆಣ್ಣಿನದೂ ಕೂಡ. ಒಬ್ಬ ಜಾಗೃತ ಹೆಣ್ಣು ಮತ್ತಷ್ಟು ಜನರಲ್ಲಿ ಅರಿವು ಮೂಡಿಸಬೇಕು. ಇಲ್ಲವಾದಲ್ಲಿ ಒಬ್ಬ ಹೆಣ್ಣು ವಿರೋಧಿಸಿದರೆ, ಸ್ವೀಕರಿಸಿವಂತಹ ಮತ್ತೊಬ್ಬ ಹೆಣ್ಣು ಸುಲಭವಾಗಿ ಬಲಿಯಾಗುತ್ತಾಳೆ.

ಚಿತ್ರ ಅಡುಗೆಮನೆಯ ಸುತ್ತ ಸುತ್ತುತ್ತಲೇ ಶಬರಿಮಲೈಗೆ ಹೆಣ್ಣಿನ ಪ್ರವೇಶದಂತಹ ವಿದ್ಯಮಾನವನ್ನೂ ಸೇರಿಸಿಕೊಳ್ಳುತ್ತದೆ. ಮುಟ್ಟಿನ ಸಮಯದಲ್ಲಿ ಹೆಣ್ಣು ಯಾವ ಕೆಲಸವನ್ನೂ ಮಾಡಬಾರದು, ಕೋಣೆಯ ಒಳಗೇ ಇರಬೇಕು ಎನ್ನುವ ಕಟ್ಟಳೆ ಸಂಪ್ರದಾಯವಾದಿಗಳ ಪ್ರಕಾರ ಮೈಲಿಗೆಯಾದರೆ, ಆಧುನಿಕ ಸಂಪ್ರದಾಯವಾದಿಗಳ ಪ್ರಕಾರ ಹೆಣ್ಣಿಗೆ ನೀಡಿರುವ ಲಕ್ಷುರಿ- ವಿಶೇಷ ಸೌಕರ್ಯ. ಆದರೆ ಹೆಣ್ಣಿಗೆ ಇದು ಬಲವಂತದ ಮಾಘಸ್ನಾನವಷ್ಟೇ!

ಮನೆಯೊಳಗಿನ ಅವ್ಯವಸ್ಥೆಗಳನ್ನು ಸರಿಮಾಡಿಕೊಳ್ಳದೇ ಇದ್ದರೆ ಕೊನೆಗೊಂದು ದಿನ ಸೋರುತ್ತಿರುವ ಅದೇ ರಾಡಿ ತಮ್ಮ ಮುಖಕ್ಕೇ ಅಂಟಿಕೊಳ್ಳಬಹುದೆಂಬ ವಾಸ್ತವವನ್ನು ನಿರ್ದೇಶಕ ಯಾವ ಉಪದೇಶ, ಬೋಧನೆ, ಭಾಷಣಗಳಿಲ್ಲದೇ ಸಮರ್ಪಕವಾಗಿ ಇಲ್ಲಿ ಪ್ರೇಕ್ಷಕನಿಗೆ ರವಾನಿಸಿದ್ದಾರೆ. ‘ಚಿತ್ರಕತೆ’ ಎಂದು ಕರೆಸಿಕೊಳ್ಳುವಂತಹದ್ದು ಈ ಚಿತ್ರದಲ್ಲಿಲ್ಲ. ಆದರೂ ಪ್ರತಿಯೊಬ್ಬರೂ ನೋಡಲೇಬೇಕಾದ ಮನೆಮನೆಯ ಕತೆಯ ಚಿತ್ರವಿದು. ಚಿತ್ರದ ಮತ್ತೊಂದು ವೈಶಿಷ್ಟ್ಯತೆ ಎಂದರೆ ಈ ಕುಟುಂಬದಲ್ಲಿ ಯಾವುದೇ ಕೊರತೆಯಿಲ್ಲ. ಇಲ್ಲಿ ಯಾರೂ ಕೆಡುಕು ಮಾಡಲೆಂದೇ ಕಾದು ಕುಳಿತಿಲ್ಲ. ಕಾಟ ಕೊಡುವ ಅತ್ತೆ, ಕಾಮಿಸುವ ಮಾವ, ದುಡಿಯದ/ಹೊಡೆಯುವ ಗಂಡ ಊಹೂಂ ಈ ಯಾವ ಅಂಶವೂ ಇಲ್ಲ. ಸಮಸ್ಯೆಯ ಮೂಲ ಇರುವುದು ಪುರುಷಪ್ರಧಾನ ಮನಸ್ಥಿತಿಯಲ್ಲಿ, ಪಿತೃಪ್ರಧಾನ ಸಮಾಜ ಹೊರೆಸಿರುವ ಕಟ್ಟುಪಾಡುಗಳನ್ನು ಪ್ರಶ್ನಿಸದೇ ಅನುಸರಿಸಿಕೊಂಡು ಹೋಗುವ ಮನಸ್ಥಿತಿಯಲ್ಲಿ.

ಕೊನೆಗೂ ಹೆಣ್ಣಿನ ಬಿಡುಗಡೆಯೆಂಬುದು ಹೆಣ್ಣೇ ಕಂಡುಕೊಳ್ಳಬೇಕಿರುವ ದಾರಿಯಾಗಿದೆ. ಚಿತ್ರದ ಕೊನೆಯಲ್ಲಿ ನಾಯಕಿ ಗಂಡನ ಮನೆಯಿಂದ ಹೊರನಡೆದು ಬರುತ್ತಿರುವಾಗ, ಹಿನ್ನೆಲೆಯಲ್ಲಿ ಊರಿನ ಹೆಂಗಸರು ತಮ್ಮ ತಮ್ಮ ನಿತ್ಯದ ಮನೆಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ನೃತ್ಯವೇ ತನ್ನ ಮಾಧ್ಯಮ ಎಂದರಿತ ನಾಯಕಿ ನೃತ್ಯದ ಮೂಲಕವೇ ಬಿಡುಗಡೆಯ ದಾರಿ ಕಂಡುಕೊಳ್ಳುತ್ತಾಳೆ.

ಭಾರತೀಯ ಚಿತ್ರರಂಗಕ್ಕೆ ಮಲೆಯಾಳಂ ಸಿನೆಮಾಗಳ ಕೊಡುಗೆ ದೊಡ್ಡದು. ಈ ಚಿತ್ರ ಕೂಡ ಆ ಸಾಲಿನಲ್ಲಿ ನಿಲ್ಲುತ್ತದೆ. ಚಿತ್ರದಲ್ಲಿ ಹಿನ್ನೆಲೆ ಸಂಗೀತವೆಂಬುದು ಇಲ್ಲವೇ ಇಲ್ಲ. ಅಡುಗೆಮನೆಯೊಳಗಿನ ದೈನಂದಿನ ಏಕತಾನತೆಯನ್ನು ಎತ್ತಿಹಿಡಿಯುವುದರಲ್ಲಿ ಈ ಅಂಶವೂ ಕೆಲಸಮಾಡಿದೆ. ಅದಕ್ಕೆ ಪೂರಕವಾಗಿ ಚಿತ್ರದುದ್ದಕ್ಕೂ ಮನೆಯೊಳಗಿರುವ ಮಂದ ಬೆಳಕಷ್ಟನ್ನೇ ಕಾಯ್ದುಕೊಳ್ಳಲಾಗಿದೆ. ಚಿತ್ರದ ಕೊನೆಯಲ್ಲಿ ನೃತ್ಯದ ಸನ್ನಿವೇಶದ ಮೂಲಕ ತೆರೆಯ ಮೇಲೆ ಬೆಳಕು, ಬಣ್ಣ, ಸಂಗೀತ, ನೃತ್ಯಗಳು ಸಮ್ಮಿಳಿತಗೊಂಡು ನಾಯಕಿ ತಾನು ಸಂಯೋಜಿಸಿದ ನೃತ್ಯಕ್ಕೆ ಏಕಮಾತ್ರ ಪ್ರೇಕ್ಷಕಳಾಗಿ ತಾನೇ ಚಪ್ಪಾಳೆ ಹೊಡೆಯುವ ಮೂಲಕ ತನ್ನ ಮುಂದಿನ ದಾರಿಯ ಸುಳುಹು ನೀಡುತ್ತಾಳೆ.

ಕಾವ್ಯಶ್ರೀ. ಎಚ್

ಕಾವ್ಯಶ್ರೀ. ಎಚ್
ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವ ಕಾವ್ಯಶ್ರೀ ಅವರು ಸಮಕಾಲೀನ ಸಮಸ್ಯೆಗಳಿಗೆ ಸ್ಪಂದಿಸುವ ಬರಹಗಾರ್ತಿ. ಸ್ತ್ರೀವಾದಿ ಚಿಂತಕಿ ಚಿಮಮಾಂಡ ಅಡಿಚಿ ಅವರ ಫೆಮಿನಿಸ್ಟ್ ಮ್ಯಾನಿಫೆಸ್ಟೋ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.


ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...