ಸರ್ಕಾರದ ಸೂಚನೆಯಂತೆ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳನ್ನು ಕಡ್ಡಾಯವಾಗಿ ತೆರೆಯವುದು ಮತ್ತು ಬಾಡಿಗೆ ಮನೆಯಲ್ಲಿರುವ ವೈದ್ಯರನ್ನು ಖಾಲಿ ಮಾಡುವವರ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಮಧುಗಿರಿ ಪಟ್ಟಣದಲ್ಲಿ ತಾಲ್ಲೂಕಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅವರು ಮಾತನಾಡಿದರು.
ಈಗಾಗಲೇ ಕೋವಿಡ್-19 ದೇಶದೆಲ್ಲೆಡೆ ವ್ಯಾಪಕ ಹರಡುತ್ತಿರುವ ಹಿನ್ನೆಲೆಯಲ್ಲಿ 3ನೇ ಹಂತಕ್ಕೆ ಹೋಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆ ಮತ್ತು ಕ್ಲಿನಿಕ್ಗಳನ್ನು ತೆರೆದು ಸ್ಥಳೀಯರಿಗೆ ಅನುಕೂಲವಾಗುವಂತೆ ಸಹಕರಿಸಬೇಕು ಎಂದರು.
ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರಿಗಳ ಸಭೆ ಕರೆದು ಕೆಲಸ ಮಾಡುತ್ತಿಲ್ಲ ಎಂದು ನಾನುಗೌರಿ.ಕಾಂ ವರದಿ ಮಾಡಿತ್ತು. ಈಗ ಸಚಿವರು ಫೀಲ್ಡಿಗಿಳಿದಿರುವುದು ರೋಗದ ವಿರುದ್ಧ ಹೋರಾಟಕ್ಕೆ ಬಲ ಬಂದಾಂತಾಗಿದೆ.
ಇದನ್ನೂ ಓದಿ: ಕೊರೊನಾ ನಿಭಾಯಿಸಲು ತುಮಕೂರಿನಲ್ಲಿ ಸಚಿವ ಮಾಧುಸ್ವಾಮಿಯವರೇ ಕಾಣುತ್ತಿಲ್ಲ…
ಜಿಲ್ಲಾಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿರ್ವತಿಸಲಾಗಿದೆ. ಕೊರೋನಾ ಶಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಜಿಲ್ಲಾಸ್ಪತ್ರೆಗೆ ಬರುವ ಗರ್ಭಿಣಿಯರನ್ನು ಶ್ರೀದೇವಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುವುದು. ಸಾರ್ವಜನಿಕರು ಆಂತಕಪಡುವ ಅಗತ್ಯವಿಲ್ಲ ಎಂದರು.
ಜಿಲ್ಲಾಸ್ಪತ್ರೆಗೆ ದೂರ ಇರುವ ತಾಲೂಕುಗಳಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯಲ್ಲಿ 70-80 ವೆಂಟಿಲೇಟರ್ಗಳು ಲಭ್ಯವಿದ್ದು, ಅಗತ್ಯವಿರುವ ವೆಂಟಿಲೇಟರ್ಗಳನ್ನು ರಾಜ್ಯ ಸರ್ಕಾರವು ಖರೀದಿಸಲು ಮುಂದಾಗಿದೆ. ಇದರ ಜೊತೆಗೆ ಯಾವುದೇ ಕೊರತೆಯಾಗದಂತೆ ಮುನ್ನಚ್ಚರಿಕಾ ಕ್ರಮವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ. ವೈದ್ಯಕೀಯ ಸೇರಿದಂತೆ ಅಗತ್ಯ ವಸ್ತುಗಳ ಸರಕು ಸಾಗಾಟ ವಾಹನಗಳು ಓಡಾಡುತ್ತವೆ ಎಂದರು.