Homeಕರ್ನಾಟಕಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ

ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ

ಗುತ್ತಿಗೆದಾರರು ಎರಡು ವಿಧದ ಬೀಡಿಯನ್ನು ಕಟ್ಟಿಸುತ್ತಾರೆ. ಒಂದು ಕ್ರಯದ ಬೀಡಿ ಮತ್ತು ಇನ್ನೊಂದು ಪಾಸ್ ಪುಸ್ತಕದ ಬೀಡಿ. ಈ ಕ್ರಯದ ಬೀಡಿ ಕಾರ್ಮಿಕನ ಹೆಸರು ಕಂಪೆನಿಯಲ್ಲಿ ನೋಂದಾವಣೆಯಾಗಿರುವುದಿಲ್ಲ. ಹಾಗಾಗಿ ಅವರು ಕಂಪೆನಿಯ ಅಧಿಕೃತ ಕಾರ್ಮಿಕರಲ್ಲ. ಅವರದೇನಿದ್ದರೂ ಗುತ್ತಿಗೆದಾರರ ಜೊತೆಗಿನ ವ್ಯವಹಾರವಷ್ಟೇ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರಗಿನಿಂದ ನೋಡುವವರಿಗೆ ಇಲ್ಲಿಯ ಶ್ರೀಮಂತಿಕೆಯ ಚಿತ್ರಣವಷ್ಟೇ ಗೋಚರಿಸುತ್ತದೆ. ಕಡು ಬಡತನ ನಮ್ಮ ಜಿಲ್ಲೆಯಲ್ಲಿಯೂ ಇದೆ. ಆದರೆ ಹಸಿವು ರುದ್ರತಾಂಡವವಾಡಿದ್ದು ವಿರಳ. ಇದಕ್ಕೆ ಕಾರಣ ಇಲ್ಲಿನ ಬೀಡಿ ಉದ್ಯಮ. ಕರಾವಳಿಯ ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬಿಯಾಗಿಸಿದ್ದೂ ಇದೇ ಬೀಡಿ ಉದ್ಯಮ. ಬೀಡಿ ಕಟ್ಟುವ ಕಲೆಯನ್ನು ಕರಗತ ಮಾಡಿಕೊಂಡಿರುವ ಇಲ್ಲಿನ ಮಹಿಳೆಯರು ವಿದ್ಯಾಭ್ಯಾಸವಿಲ್ಲದೇ, ಪ್ರಮಾಣ ಪತ್ರವಿಲ್ಲದೇ ಬದುಕನ್ನು ಕಟ್ಟಿಕೊಳ್ಳುವಲ್ಲಿ ಬೀಡಿಯ ಪಾತ್ರ ಹಿರಿದು. ಬಡವರು ಮಾತ್ರವಲ್ಲದೇ ಸಣ್ಣ ಕೃಷಿಕರು, ಗ್ರಾಮೀಣ ಕೆಳಮಧ್ಯಮವರ್ಗದ ಜನರು ಇಂದಿಗೂ ಬೀಡಿಯನ್ನು ತಮ್ಮ ಉಪಕಸುಬಾಗಿಸಿಕೊಂಡಿದ್ದಾರೆ. ಕೂಲಿ ಕಾರ್ಮಿಕರು ದುಡಿಮೆಯಿಲ್ಲದ ದಿನಗಳಲ್ಲಿ ಈ ಉಪಕಸುಬನ್ನು ಅವಲಂಬಿಸುತ್ತಾರೆ. ಇದೀಗ ಲಾಕ್ಡೌನಿನಿಂದಾಗಿ ಅತ್ತ ಕಸುಬೂ ಇಲ್ಲದೆ, ಇತ್ತ ಉಪಕಸುಬೂ ಇಲ್ಲದೆ ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಕಷ್ಟದ ಸಂದರ್ಭಗಳಲ್ಲೆಲ್ಲಾ ನೆರವಾಗುತ್ತಿದ್ದ ಬೀಡಿ ಈ ಬಾರಿ ಕೈ ಹಿಡಿಯಲಿಲ್ಲ.

ಹಳೇ ಕಾಲದಲ್ಲಿ ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೀಡಿಯ ಕುರಿತ ಉದ್ಯೋಗದ ಪರಿಕಲ್ಪನೆ ಹೇಗಿತ್ತೆಂದರೆ ಮದುವೆ ಸಂಬಂಧ ಮಾತನಾಡುವಾಗ ಹುಡುಗ- ಹುಡುಗಿಗೆ ಬೀಡಿ ಕಟ್ಟಲು ಬರುತ್ತದಾ ಎಂಬ ಪ್ರಶ್ನೆ ಬಡ ಮತ್ತು ಮಧ್ಯಮ ವರ್ಗದಲ್ಲಿ ಸರ್ವೇ ಸಾಮಾನ್ಯವಾಗಿತ್ತಂತೆ. ಇಬ್ಬರಿಗೂ ಬರುತ್ತದೆಂದರೆ ಒಳ್ಳೆಯ ಜೋಡಿ ಎನ್ನಲು ಅದೂ ಒಂದು ಪ್ರಮಾಣ ಪತ್ರದಂತಿತ್ತು ಎಂದು ಹಿರಿಯರು ಹೇಳುತ್ತಿದ್ದರು. ಹುಡುಗನಿಗೂ ಈ ರೀತಿಯ ಪ್ರಶ್ನೆ ಯಾಕೆ ಕೇಳಲಾಗುತ್ತಿತ್ತೆಂದರೆ ಕೃಷಿ ಕೂಲಿ, ಇತರ ಕೂಲಿ ಕಾರ್ಮಿಕರಾದರೆ ಜಡಿ ಮಳೆ ಸುರಿಯುವ ಎರಡ್ಮೂರು ತಿಂಗಳು ಕೆಲಸವಿರುತ್ತಿರಲಿಲ್ಲ. ಅಂತಹ ದಿನಗಳಲ್ಲಿ ಹೊಟ್ಟೆ ತುಂಬಿಸಲು ಬೀಡಿಯೇ ನೆರವಾಗುತ್ತಿತ್ತು. ಅಲ್ಲದೇ ದಿನದ ದುಡಿಮೆ ಮುಗಿಸಿ ಬಂದ ಮೇಲೆ ಪುರುಷರು ಬೀಡಿಯ ಎಲೆ ಕತ್ತರಿಸಿಕೊಡಲೋ, ಬೀಡಿಗೆ ನೂಲು ಸುತ್ತಿ ಕೊಡಲೋ ಮಡದಿಗೆ ನೆರವಾಗಬಹುದು ಎಂಬ ದೂರಾಲೋಚನೆ ಅಂದಿನ ಹಿರಿಯರದ್ದಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡಿಯು ಮನೆಯೊಳಗಿದ್ದೇ ಮಾಡುವ ಕಸುಬಾದುದರಿಂದ ಹೊರನೋಟಕ್ಕೆ ಸುಲಭದ ಕೆಲಸದಂತೆ ಗೋಚರಿಸುತ್ತದೆ. ಬೀಡಿ ಕಾರ್ಮಿಕರ ಶ್ರಮ ಮತ್ತು ಬವಣೆಯನ್ನು ನಾನು ಹತ್ತಿರದಿಂದ ನೋಡಿ ಬಲ್ಲೆ. ದಿನವಿಡೀ ಕೂತು ಸೊಂಟ ಮುರಿದು ಸುರುಟುವ ಬೀಡಿ ಒಂದು ಕಟ್ಟಾಗಬೇಕಾದರೆ 25 ಬೀಡಿಗಳು ಸೇರಬೇಕು. ಇಂತಹ ನಲ್ವತ್ತು ಕಟ್ಟುಗಳು ಸೇರಿದರೆ ಸಾವಿರ ಬೀಡಿಗಳಾಗುತ್ತವೆ. ಅದಕ್ಕೆ ಸಿಗುವ ಕೂಲಿಯಾದರೋ ಬಹಳ ಕಡಿಮೆ. ಅರ್ಧ ಕೆ.ಜಿ. ಬೀಡಿ ಎಲೆಗೆ 1000 ಬೀಡಿಗಳಾಗಬೇಕು. ಪ್ರತೀ ಬಾರಿಯೂ ಸಾವಿರ ಬೀಡಿ ಭರ್ತಿ ಮಾಡಿಕೊಡಲಾಗುವುದಿಲ್ಲ. ಅದು ಬೀಡಿ ಗುತ್ತಿಗೆದಾರ ಕೊಡುವ ಎಲೆಯ ಗುಣಮಟ್ಟದ ಮೇಲೆ ಅವಲಂಬಿಸಿರುತ್ತದೆ. ಎಲೆಯ ಗುಣಮಟ್ಟ ಚೆನ್ನಾಗಿಲ್ಲದಿದ್ದರೆ ಅದರಿಂದುಂಟಾಗುವ ನಷ್ಟವನ್ನು ಸ್ವತಃ ಕಾರ್ಮಿಕರೇ ಭರಿಸಬೇಕು. ಬೀಡಿಗೆ ಸುತ್ತುವ ನೂಲು ಒಂದು ಉಂಡೆ ಜಾಸ್ತಿ ಕೇಳಿದರೆ ಗಾಳಿಪಟ ಹಾರಿಸಲಿಕ್ಕಿದೆಯೇ ಎಂದು ಗುತ್ತಿಗೆದಾರ ವ್ಯಂಗ್ಯವಾಗಿ ರೇಗಾಡುವುದನ್ನು ನೋಡಿದ್ದೇನೆ. ಸಾವಿರ ಬೀಡಿಯಲ್ಲಿ ಒಂದು ಕಟ್ಟು ಬಿಚ್ಚಿ ತಿರಸ್ಕರಿಸದಿದ್ದರೆ ಅವನಿಗೆ ತಿಂದದ್ದು ಕರಗುವುದಿಲ್ಲ. ಆಗೆಲ್ಲಾ ಆ ಮಹಿಳೆಯರು ಒತ್ತರಿಸಿ ಬರುವ ದುಃಖ ಕಣ್ಣೀರಾಗಿ ಹರಿಯದಂತೆ ತಡೆಯುವಾಗಿನ ಚಡಪಡಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸಾವಿರ ಬೀಡಿಯಲ್ಲಿ ಕೊನೆಯ ಒಂದು ಕಟ್ಟು ಬೀಡಿಯನ್ನು ಭರ್ತಿ ಮಾಡಲು ಕಾರ್ಮಿಕರು ಬಹಳಷ್ಟು ಶ್ರಮ ಹಾಕುತ್ತಾರೆ. ಹರಿದ ಎಲೆಗೆ ತೇಪೆ ಹಾಕಿಯೋ, ಏನಾದರೊಂದು ಮಾಡಿ ಭರ್ತಿ ಮಾಡುತ್ತಾರೆ. ಒಬ್ಬೊಬ್ಬ ಗುತ್ತಿಗೆದಾರನ ಅಧೀನದಲ್ಲಿ ಸರಾಸರಿ ಐವತ್ತು ಮಂದಿ ಕಾರ್ಮಿಕರು ದುಡಿಯುತ್ತಾರೆ. ಹೀಗೆ ಒಬ್ಬೊಬ್ಬ ಕಾರ್ಮಿಕರ ಒಂದೊಂದು ಕಟ್ಟು ಬೀಡಿಯನ್ನು ಬಿಚ್ಚಿ ಎಸೆದರೆ ಐವತ್ತು ಕಾರ್ಮಿಕರಿಂದ 1250 ಬೀಡಿಗಳಾಗುತ್ತವೆ. ಹಾಗೆ ಬಿಚ್ಚಿ ಚೆನ್ನಾಗಿಲ್ಲ ಎಂದು ಎಸೆಯುವ ಬೀಡಿ ಯಾವತ್ತೂ ಕಸದ ಬುಟ್ಟಿ ಸೇರುವುದಿಲ್ಲ. ಮತ್ತೆ ಅವುಗಳನ್ನು ಸೇರಿಸಿ ಕಟ್ಟು ಮಾಡಿ ಗುತ್ತಿಗೆದಾರ ಅದನ್ನು ತನ್ನ ಮನೆಯವರ ಬೀಡಿ ಲೆಕ್ಕ ಪುಸ್ತಕಕ್ಕೆ ಬರೆಯುತ್ತಾನೆ. ಅನಕ್ಷರಸ್ಥ ಮಹಿಳೆಯರಾದರೆ ಅವರಿಗೆ ಇನ್ನೂ ಲಾಭ. ಲೆಕ್ಕ ಪುಸ್ತಕಕ್ಕೆ ಬರೆಯುವಾಗ ಒಂದು ಕಟ್ಟು ಕಳೆದೇ ಲೆಕ್ಕ ಪುಸ್ತಕಕ್ಕೆ ಬರೆಯುವುದು ವಾಡಿಕೆ. ಘಾಟಿ ಹೆಂಗಸರಾದರೆ ಬೀಡಿಯ ಲೆಕ್ಕವನ್ನು ನೆನಪಿಟ್ಟುಕೊಂಡು ವಾರದ ಕೊನೆಯಲ್ಲಿ ಮಜೂರಿ ಪಡೆಯುವಾಗ ಏನಾದರೂ ವ್ಯತ್ಯಾಸ ಕಂಡುಬಂದರೆ ನ್ಯಾಯಕ್ಕಾಗಿ ಜಗಳಾಡುತ್ತಾರೆ. ಆದರೂ ಅವನ ಮುಂದೆ ಅವರ ಜಗಳ ಜಯಿಸುವುದಿಲ್ಲ.

ಹೆಚ್ಚಿನ ಗುತ್ತಿಗೆದಾರರು ಪುಟ್ಟ ದಿನಸಿ ಅಂಗಡಿಯನ್ನೂ ಹೊಂದಿರುತ್ತಾರೆ. ಇದರಿಂದ ಕಾರ್ಮಿಕರಿಗೆ ಅನುಕೂಲವಾಗುವುದಕ್ಕಿಂತ ಗುತ್ತಿಗೆದಾರನಿಗೇ ಲಾಭ. ಸಾಮಾನ್ಯವಾಗಿ ಅಲ್ಲಿ ಇತರರಿಗೊಂದು ಬೆಲೆಯಾದರೆ ವಾರದ ಮಜೂರಿಯಲ್ಲಿ ಕಳೆಯಲು ಸಾಲ ಪಡೆಯುವ ಕಾರ್ಮಿಕರಿಗೊಂದು ಬೆಲೆ. ವಾರದ ಕೊನೆಯಲ್ಲಿ ಮಜೂರಿ ಕೊಡುವಾಗ ಸಾಲದ ಪಟ್ಟಿಗೆ ಒಂದಿಷ್ಟು ಸೇರಿಸಿಯೇ ಮಜೂರಿ ಕಳೆಯುವ ಕೆಲ ಕಳ್ಳ ಗುತ್ತಿಗೆದಾರರೂ ಇದ್ದಾರೆ. ಹಲವು ಬಾರಿ ವಾರದ ಕೊನೆಯಲ್ಲಿ ಮಜೂರಿಗಿಂತ ಖರೀದಿಸಿದ ದಿನಸಿಗಳ ಸಾಲವೇ ಹೆಚ್ಚಾಗಿ ಬೇಸರದಿಂದ ಸಪ್ಪೆ ಮೋರೆ ಮಾಡಿ ಬರಿಗೈಯಲ್ಲಿ ಬರುವ ಕಾರ್ಮಿಕರೂ ಇದ್ದಾರೆ. ಆಗ ಅಗತ್ಯ ದಿನಸಿ ಕೇಳಿದರೆ ಕೊಡದೇ ಖಾಲಿ ಚೀಲದೊಂದಿಗೆ ಮರಳುವ ಕಾರ್ಮಿಕರ ಅಸಹಾಯಕ ಮುಖ ಈಗಲೂ ನನ್ನ ಕಣ್ಣ ಮುಂದೆ ಬರುತ್ತದೆ.

ಗುತ್ತಿಗೆದಾರರು ಎರಡು ವಿಧದ ಬೀಡಿಯನ್ನು ಕಟ್ಟಿಸುತ್ತಾರೆ. ಒಂದು ಕ್ರಯದಬೀಡಿ ಮತ್ತು ಇನ್ನೊಂದು ಪಾಸ್ ಪುಸ್ತಕದಬೀಡಿ. ಈ ಕ್ರಯದಬೀಡಿ ಕಾರ್ಮಿಕನ ಹೆಸರು ಕಂಪೆನಿಯಲ್ಲಿ ನೋಂದಾವಣೆಯಾಗಿರುವುದಿಲ್ಲ. ಹಾಗಾಗಿ ಅವರು ಕಂಪೆನಿಯ ಅಧಿಕೃತ ಕಾರ್ಮಿಕರಲ್ಲ. ಅವರದೇನಿದ್ದರೂ ಗುತ್ತಿಗೆದಾರರ ಜೊತೆಗಿನ ವ್ಯವಹಾರವಷ್ಟೇ. ಕ್ರಯದ ಬೀಡಿಗೆ ಪಾಸ್ ಪುಸ್ತಕದ ಬೀಡಿಗಿಂತ ಮೂವತ್ತು ರೂಪಾಯಿ ಹೆಚ್ಚು ಬೆಲೆ (ಈಗಿನ ಬೀಡಿ ಮಾರುಕಟ್ಟೆ ಪ್ರಕಾರ). ಆದರೆ ಕ್ರಯದಬೀಡಿಯ ಕಾರ್ಮಿಕನಿಗೆ ಪಾಸ್ ಪುಸ್ತಕದ ಕಾರ್ಮಿಕನಂತೆ ಯಾವ ಸೌಲಭ್ಯಗಳೂ ಇರುವುದಿಲ್ಲ. ಪಾಸ್ ಪುಸ್ತಕದಬೀಡಿ ಕಾರ್ಮಿಕನಿಗೆ ಭವಿಷ್ಯ ನಿಧಿ, ಇ.ಎಸ್.ಐ, ಬೋನಸ್, ತುಟ್ಟಿ ಭತ್ಯೆ, ಮಕ್ಕಳ ಸ್ಕಾಲರ್‍ಶಿಪ್ ಇತ್ಯಾದಿಗಳು ದೊರೆಯುತ್ತವೆ. ಕ್ರಯದಬೀಡಿ ಕಾರ್ಮಿಕರು ಕೈ ಕಾಲು ಹಿಡಿದು ಬೇಡಿದರೂ ಕೆಲವು ಗುತ್ತಿಗೆದಾರರು ಅವರಿಗೆ ಪಾಸ್ ಪುಸ್ತಕ ಮಾಡಿಕೊಡಲು ಸುತಾರಾಂ ಒಪ್ಪುವುದಿಲ್ಲ. ಯಾಕೆಂದರೆ ಕ್ರಯದ ಬೀಡಿ ಕಟ್ಟುವ ಕಾರ್ಮಿಕರು ಇವರಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಿದ್ದಂತೆ. ಗುತ್ತಿಗೆದಾರನ ಮನೆಯ ಸದಸ್ಯರು ಬೀಡಿ ಕಟ್ಟಲಿ, ಕಟ್ಟದಿರಲಿ ತಲೆಗೊಂದರಂತೆ ಪಾಸ್ ಪುಸ್ತಕ ಮಾಡಿಡುತ್ತಾನೆ. ಹೇಗಿದ್ದರೂ ಕ್ರಯದ ಬೀಡಿ ಕಾರ್ಮಿಕರಿಗೂ ಕಂಪೆನಿಗೂ ಸಂಪರ್ಕವಿರುವುದಿಲ್ಲ. ಕ್ರಯದ ಕಾರ್ಮಿಕರ ಬೀಡಿಯನ್ನೆಲ್ಲ್ಲಾ ಗುತ್ತಿಗೆದಾರ ತನ್ನ ಮನೆಯವರ ಪಾಸ್ ಪುಸ್ತಕಕ್ಕೆ ಬರೆಯುತ್ತಾನೆ. ಆ ಮೂಲಕ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನೆಲ್ಲಾ ತನ್ನ ಜೇಬಿಗಿಳಿಸುತ್ತಾನೆ.

ಉದ್ಯೋಗಸ್ಥ ಮಹಿಳೆಯರ ಮೇಲೆ ಕಚೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಮತ್ತಿತರ ಕೆಲಸದ ಜಾಗದಲ್ಲಿ ಲೈಂಗಿಕ ದೌರ್ಜನ್ಯವಾಗುವಂತೆಯೇ ಬೀಡಿ ಕಾರ್ಮಿಕರ ಮೇಲೂ ಕೆಲವೊಮ್ಮೆ ಸಣ್ಣ ಮಟ್ಟದ ಲೈಂಗಿಕ ಶೋಷಣೆ ನಡೆಯುವುದೂ ಇದೆ. ಕಾರ್ಮಿಕೆಯರ ಅಸಹಾಯಕತೆಯನ್ನು ಕೆಲ ಗುತ್ತಿಗೆದಾರರು ಕೈ ಸನ್ನೆ, ಕಣ್ಸನ್ನೆಗಳ ಮೂಲಕವೂ ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಎಲೆಯನ್ನು ತೂಗಿದ ಬಳಿಕ ತಕ್ಕಡಿಯ ತಟ್ಟೆಯಿಂದ ಅವರ ಚೀಲಕ್ಕೆ ಹಾಕುವ ಬದಲು ನೆಲಕ್ಕೆ ಸುರಿಯುವ ಗುತ್ತಿಗೆದಾರರು/ಎಲೆ ತೂಗಿ ಕೊಡುವ ಕೆಲಸದಾಳುಗಳಿದ್ದಾರೆ. ಇನ್ನು ಕೆಲವರು ಎಲೆಯನ್ನು ನೆಲಕ್ಕೆಸೆದು ಆಯ್ದುಕೊಳ್ಳಿ ಎನ್ನುತ್ತಾರೆ. ಎಲೆಯನ್ನು ಹೆಕ್ಕಲು ಕಾರ್ಮಿಕೆ ಬಗ್ಗಿದಾಗ ಆತನ ಕಣ್ಣು ಸ್ಕ್ಯಾನಿಂಗ್ ಮಾಡತೊಡಗುವುದೂ ಇದೆ. ಹೀಗೆ ಬೀಡಿ ಕಾರ್ಮಿಕರ ಬವಣೆ ಹೇಳಿ ಮುಗಿಯದಷ್ಟಿದೆ.

ಬೀಡಿ ಬೋನಸ್ ಸಿಕ್ಕಾಗ ಹಳ್ಳಿಯ ಮುಗ್ಧ ಕಾರ್ಮಿಕರ ಮುಖದಲ್ಲಿ ಲಾಸ್ಯವಾಡುತ್ತಿದ್ದ ಸಂತಸದ ನಗುವನ್ನು ನಾನು ಕಣ್ತುಂಬಿಸಿಕೊಂಡಿದ್ದೇನೆ. ಆ ಹಣದಿಂದ ಅವರು ಬೆಳ್ಳಿಯ ಕಾಲ್ಗೆಜ್ಜೆ ಖರೀದಿಸುವುದು, ಅದಕ್ಕೆ ಹಿಂದಿನ ಉಳಿತಾಯ ಸೇರಿಸಿ ಚಿನ್ನದ ಪುಟ್ಟ ಕಿವಿಯೋಲೆ ಮಾಡಿಸುವುದೆಲ್ಲಾ ಇದೆ. ಅದನ್ನು ಹಳ್ಳಿ ಜನಕ್ಕೆ ತೋರಿಸಿ ಸಂಭ್ರಮಪಡುತ್ತಿದ್ದರು. ಹಿಂದೆಲ್ಲಾ ನನ್ನೂರಿನ ಅದೆಷ್ಟೋ ತರುಣಿಯರು ಹಾಗೆ ಕೂಡಿಟ್ಟ ದುಡ್ಡಿನಿಂದಲೇ ತಂತಮ್ಮ ಮದುವೆಗೆ ಚಿನ್ನ ಮಾಡಿಟ್ಟದ್ದೂ ಇದೆ. ಹಾಗೆ ಮದುವೆಯಾಗಿ ಹೋದ ಅನೇಕ ಹೆಣ್ಮಕ್ಕಳನ್ನು ನಾನು ಕಂಡಿದ್ದೇನೆ. ನನ್ನೂರಿನ ಯುವಪೀಳಿಗೆ ಉತ್ತಮ ವಿದ್ಯಾಭ್ಯಾಸ ಪಡೆದು ಒಳ್ಳೆಯ ಉದ್ಯೋಗ ಗಳಿಸಿದ್ದರ ಹಿಂದೆ ಬೀಡಿಯ ಕೊಡುಗೆ ಅಪಾರವಿದೆ.

ನಮಗೆಲ್ಲಾ ಅಮ್ಮಂದಿರ ಬೀಡಿಯ ಸೂಪು (ಗೆರಸೆ) ಬಾಲ್ಯದಲ್ಲಿ ಎಟಿಎಂನಂತಿತ್ತು. ಶಾಲಾ ದಿನಗಳ ಪಾಕೆಟ್ ಮನಿಯೂ ಬೀಡಿಯ ಸೂಪಿನಿಂದಲೇ ಸಿಗುತ್ತಿತ್ತು.

ಕುಡುಕ ಗಂಡಸರೂ ಬೀಡಿಯ ಸೂಪಿಗೆ ಕನ್ನ ಹಾಕುತ್ತಿದ್ದರು. ನನ್ನೂರಿನ ತಾಯಂದಿರಿಗೂ ಬೀಡಿಯ ಜೊತೆ ಮುರಿಯಲಾಗದ ಭಾವನಾತ್ಮಕ ನಂಟಿದೆ. ಅಮ್ಮಂದಿರ ಬೀಡಿಯಿಂದಲೇ ಕಲಿತು ಒಳ್ಳೆಯ ಉದ್ಯೋಗ ಗಳಿಸಿಕೊಂಡ ಮಕ್ಕಳು “ಇನ್ನು ಬೀಡಿ ಕಟ್ಟಿದ್ದು ಸಾಕಮ್ಮಾ” ಎಂದರೂ ಕೆಲ ತಾಯಂದಿರು ನಮ್ಮ ಬದುಕು ರೂಪಿಸಿದ ಬೀಡಿಯನ್ನು ಹೇಗೆ ತೊರೆಯಲಿ ಎಂದು ಗದ್ಗದಿತರಾದದ್ದನ್ನೂ ಕಂಡಿರುವೆ.

ಒಟ್ಟಿನಲ್ಲಿ ಕರಾವಳಿಯ ಬಡವರ, ಕೆಳ ಮಧ್ಯಮ ವರ್ಗದ ಜನತೆಯ ಬದುಕು ರೂಪಿಸಿದ ಬೀಡಿಯ ಕುರಿತಂತೆ ನನ್ನ ಅರಿವಿನ ಮಿತಿಯಲ್ಲೇ ಬರೆಯುವುದಾದರೂ ಇನ್ನೂ ಬಹಳಷ್ಟಿದೆ.

(ಸಜ್ಜನ ಬೀಡಿ ಗುತ್ತಿಗೆದಾರರ ಕ್ಷಮೆ ಯಾಚಿಸುವೆ)


ಇದನ್ನೂ ಓದಿ: ಲಾಕ್‍ಡೌನ್ – ಮನೆಯಿಂದಲೇ ಕೆಲಸ, ಮನೆಕೆಲಸ ಮತ್ತು ಮಹಿಳೆ! – ಮಲ್ಲಿಗೆ ಸಿರಿಮನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...