Homeಕರ್ನಾಟಕಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ

ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ

ಗುತ್ತಿಗೆದಾರರು ಎರಡು ವಿಧದ ಬೀಡಿಯನ್ನು ಕಟ್ಟಿಸುತ್ತಾರೆ. ಒಂದು ಕ್ರಯದ ಬೀಡಿ ಮತ್ತು ಇನ್ನೊಂದು ಪಾಸ್ ಪುಸ್ತಕದ ಬೀಡಿ. ಈ ಕ್ರಯದ ಬೀಡಿ ಕಾರ್ಮಿಕನ ಹೆಸರು ಕಂಪೆನಿಯಲ್ಲಿ ನೋಂದಾವಣೆಯಾಗಿರುವುದಿಲ್ಲ. ಹಾಗಾಗಿ ಅವರು ಕಂಪೆನಿಯ ಅಧಿಕೃತ ಕಾರ್ಮಿಕರಲ್ಲ. ಅವರದೇನಿದ್ದರೂ ಗುತ್ತಿಗೆದಾರರ ಜೊತೆಗಿನ ವ್ಯವಹಾರವಷ್ಟೇ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರಗಿನಿಂದ ನೋಡುವವರಿಗೆ ಇಲ್ಲಿಯ ಶ್ರೀಮಂತಿಕೆಯ ಚಿತ್ರಣವಷ್ಟೇ ಗೋಚರಿಸುತ್ತದೆ. ಕಡು ಬಡತನ ನಮ್ಮ ಜಿಲ್ಲೆಯಲ್ಲಿಯೂ ಇದೆ. ಆದರೆ ಹಸಿವು ರುದ್ರತಾಂಡವವಾಡಿದ್ದು ವಿರಳ. ಇದಕ್ಕೆ ಕಾರಣ ಇಲ್ಲಿನ ಬೀಡಿ ಉದ್ಯಮ. ಕರಾವಳಿಯ ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬಿಯಾಗಿಸಿದ್ದೂ ಇದೇ ಬೀಡಿ ಉದ್ಯಮ. ಬೀಡಿ ಕಟ್ಟುವ ಕಲೆಯನ್ನು ಕರಗತ ಮಾಡಿಕೊಂಡಿರುವ ಇಲ್ಲಿನ ಮಹಿಳೆಯರು ವಿದ್ಯಾಭ್ಯಾಸವಿಲ್ಲದೇ, ಪ್ರಮಾಣ ಪತ್ರವಿಲ್ಲದೇ ಬದುಕನ್ನು ಕಟ್ಟಿಕೊಳ್ಳುವಲ್ಲಿ ಬೀಡಿಯ ಪಾತ್ರ ಹಿರಿದು. ಬಡವರು ಮಾತ್ರವಲ್ಲದೇ ಸಣ್ಣ ಕೃಷಿಕರು, ಗ್ರಾಮೀಣ ಕೆಳಮಧ್ಯಮವರ್ಗದ ಜನರು ಇಂದಿಗೂ ಬೀಡಿಯನ್ನು ತಮ್ಮ ಉಪಕಸುಬಾಗಿಸಿಕೊಂಡಿದ್ದಾರೆ. ಕೂಲಿ ಕಾರ್ಮಿಕರು ದುಡಿಮೆಯಿಲ್ಲದ ದಿನಗಳಲ್ಲಿ ಈ ಉಪಕಸುಬನ್ನು ಅವಲಂಬಿಸುತ್ತಾರೆ. ಇದೀಗ ಲಾಕ್ಡೌನಿನಿಂದಾಗಿ ಅತ್ತ ಕಸುಬೂ ಇಲ್ಲದೆ, ಇತ್ತ ಉಪಕಸುಬೂ ಇಲ್ಲದೆ ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಕಷ್ಟದ ಸಂದರ್ಭಗಳಲ್ಲೆಲ್ಲಾ ನೆರವಾಗುತ್ತಿದ್ದ ಬೀಡಿ ಈ ಬಾರಿ ಕೈ ಹಿಡಿಯಲಿಲ್ಲ.

ಹಳೇ ಕಾಲದಲ್ಲಿ ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೀಡಿಯ ಕುರಿತ ಉದ್ಯೋಗದ ಪರಿಕಲ್ಪನೆ ಹೇಗಿತ್ತೆಂದರೆ ಮದುವೆ ಸಂಬಂಧ ಮಾತನಾಡುವಾಗ ಹುಡುಗ- ಹುಡುಗಿಗೆ ಬೀಡಿ ಕಟ್ಟಲು ಬರುತ್ತದಾ ಎಂಬ ಪ್ರಶ್ನೆ ಬಡ ಮತ್ತು ಮಧ್ಯಮ ವರ್ಗದಲ್ಲಿ ಸರ್ವೇ ಸಾಮಾನ್ಯವಾಗಿತ್ತಂತೆ. ಇಬ್ಬರಿಗೂ ಬರುತ್ತದೆಂದರೆ ಒಳ್ಳೆಯ ಜೋಡಿ ಎನ್ನಲು ಅದೂ ಒಂದು ಪ್ರಮಾಣ ಪತ್ರದಂತಿತ್ತು ಎಂದು ಹಿರಿಯರು ಹೇಳುತ್ತಿದ್ದರು. ಹುಡುಗನಿಗೂ ಈ ರೀತಿಯ ಪ್ರಶ್ನೆ ಯಾಕೆ ಕೇಳಲಾಗುತ್ತಿತ್ತೆಂದರೆ ಕೃಷಿ ಕೂಲಿ, ಇತರ ಕೂಲಿ ಕಾರ್ಮಿಕರಾದರೆ ಜಡಿ ಮಳೆ ಸುರಿಯುವ ಎರಡ್ಮೂರು ತಿಂಗಳು ಕೆಲಸವಿರುತ್ತಿರಲಿಲ್ಲ. ಅಂತಹ ದಿನಗಳಲ್ಲಿ ಹೊಟ್ಟೆ ತುಂಬಿಸಲು ಬೀಡಿಯೇ ನೆರವಾಗುತ್ತಿತ್ತು. ಅಲ್ಲದೇ ದಿನದ ದುಡಿಮೆ ಮುಗಿಸಿ ಬಂದ ಮೇಲೆ ಪುರುಷರು ಬೀಡಿಯ ಎಲೆ ಕತ್ತರಿಸಿಕೊಡಲೋ, ಬೀಡಿಗೆ ನೂಲು ಸುತ್ತಿ ಕೊಡಲೋ ಮಡದಿಗೆ ನೆರವಾಗಬಹುದು ಎಂಬ ದೂರಾಲೋಚನೆ ಅಂದಿನ ಹಿರಿಯರದ್ದಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡಿಯು ಮನೆಯೊಳಗಿದ್ದೇ ಮಾಡುವ ಕಸುಬಾದುದರಿಂದ ಹೊರನೋಟಕ್ಕೆ ಸುಲಭದ ಕೆಲಸದಂತೆ ಗೋಚರಿಸುತ್ತದೆ. ಬೀಡಿ ಕಾರ್ಮಿಕರ ಶ್ರಮ ಮತ್ತು ಬವಣೆಯನ್ನು ನಾನು ಹತ್ತಿರದಿಂದ ನೋಡಿ ಬಲ್ಲೆ. ದಿನವಿಡೀ ಕೂತು ಸೊಂಟ ಮುರಿದು ಸುರುಟುವ ಬೀಡಿ ಒಂದು ಕಟ್ಟಾಗಬೇಕಾದರೆ 25 ಬೀಡಿಗಳು ಸೇರಬೇಕು. ಇಂತಹ ನಲ್ವತ್ತು ಕಟ್ಟುಗಳು ಸೇರಿದರೆ ಸಾವಿರ ಬೀಡಿಗಳಾಗುತ್ತವೆ. ಅದಕ್ಕೆ ಸಿಗುವ ಕೂಲಿಯಾದರೋ ಬಹಳ ಕಡಿಮೆ. ಅರ್ಧ ಕೆ.ಜಿ. ಬೀಡಿ ಎಲೆಗೆ 1000 ಬೀಡಿಗಳಾಗಬೇಕು. ಪ್ರತೀ ಬಾರಿಯೂ ಸಾವಿರ ಬೀಡಿ ಭರ್ತಿ ಮಾಡಿಕೊಡಲಾಗುವುದಿಲ್ಲ. ಅದು ಬೀಡಿ ಗುತ್ತಿಗೆದಾರ ಕೊಡುವ ಎಲೆಯ ಗುಣಮಟ್ಟದ ಮೇಲೆ ಅವಲಂಬಿಸಿರುತ್ತದೆ. ಎಲೆಯ ಗುಣಮಟ್ಟ ಚೆನ್ನಾಗಿಲ್ಲದಿದ್ದರೆ ಅದರಿಂದುಂಟಾಗುವ ನಷ್ಟವನ್ನು ಸ್ವತಃ ಕಾರ್ಮಿಕರೇ ಭರಿಸಬೇಕು. ಬೀಡಿಗೆ ಸುತ್ತುವ ನೂಲು ಒಂದು ಉಂಡೆ ಜಾಸ್ತಿ ಕೇಳಿದರೆ ಗಾಳಿಪಟ ಹಾರಿಸಲಿಕ್ಕಿದೆಯೇ ಎಂದು ಗುತ್ತಿಗೆದಾರ ವ್ಯಂಗ್ಯವಾಗಿ ರೇಗಾಡುವುದನ್ನು ನೋಡಿದ್ದೇನೆ. ಸಾವಿರ ಬೀಡಿಯಲ್ಲಿ ಒಂದು ಕಟ್ಟು ಬಿಚ್ಚಿ ತಿರಸ್ಕರಿಸದಿದ್ದರೆ ಅವನಿಗೆ ತಿಂದದ್ದು ಕರಗುವುದಿಲ್ಲ. ಆಗೆಲ್ಲಾ ಆ ಮಹಿಳೆಯರು ಒತ್ತರಿಸಿ ಬರುವ ದುಃಖ ಕಣ್ಣೀರಾಗಿ ಹರಿಯದಂತೆ ತಡೆಯುವಾಗಿನ ಚಡಪಡಿಕೆಯನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸಾವಿರ ಬೀಡಿಯಲ್ಲಿ ಕೊನೆಯ ಒಂದು ಕಟ್ಟು ಬೀಡಿಯನ್ನು ಭರ್ತಿ ಮಾಡಲು ಕಾರ್ಮಿಕರು ಬಹಳಷ್ಟು ಶ್ರಮ ಹಾಕುತ್ತಾರೆ. ಹರಿದ ಎಲೆಗೆ ತೇಪೆ ಹಾಕಿಯೋ, ಏನಾದರೊಂದು ಮಾಡಿ ಭರ್ತಿ ಮಾಡುತ್ತಾರೆ. ಒಬ್ಬೊಬ್ಬ ಗುತ್ತಿಗೆದಾರನ ಅಧೀನದಲ್ಲಿ ಸರಾಸರಿ ಐವತ್ತು ಮಂದಿ ಕಾರ್ಮಿಕರು ದುಡಿಯುತ್ತಾರೆ. ಹೀಗೆ ಒಬ್ಬೊಬ್ಬ ಕಾರ್ಮಿಕರ ಒಂದೊಂದು ಕಟ್ಟು ಬೀಡಿಯನ್ನು ಬಿಚ್ಚಿ ಎಸೆದರೆ ಐವತ್ತು ಕಾರ್ಮಿಕರಿಂದ 1250 ಬೀಡಿಗಳಾಗುತ್ತವೆ. ಹಾಗೆ ಬಿಚ್ಚಿ ಚೆನ್ನಾಗಿಲ್ಲ ಎಂದು ಎಸೆಯುವ ಬೀಡಿ ಯಾವತ್ತೂ ಕಸದ ಬುಟ್ಟಿ ಸೇರುವುದಿಲ್ಲ. ಮತ್ತೆ ಅವುಗಳನ್ನು ಸೇರಿಸಿ ಕಟ್ಟು ಮಾಡಿ ಗುತ್ತಿಗೆದಾರ ಅದನ್ನು ತನ್ನ ಮನೆಯವರ ಬೀಡಿ ಲೆಕ್ಕ ಪುಸ್ತಕಕ್ಕೆ ಬರೆಯುತ್ತಾನೆ. ಅನಕ್ಷರಸ್ಥ ಮಹಿಳೆಯರಾದರೆ ಅವರಿಗೆ ಇನ್ನೂ ಲಾಭ. ಲೆಕ್ಕ ಪುಸ್ತಕಕ್ಕೆ ಬರೆಯುವಾಗ ಒಂದು ಕಟ್ಟು ಕಳೆದೇ ಲೆಕ್ಕ ಪುಸ್ತಕಕ್ಕೆ ಬರೆಯುವುದು ವಾಡಿಕೆ. ಘಾಟಿ ಹೆಂಗಸರಾದರೆ ಬೀಡಿಯ ಲೆಕ್ಕವನ್ನು ನೆನಪಿಟ್ಟುಕೊಂಡು ವಾರದ ಕೊನೆಯಲ್ಲಿ ಮಜೂರಿ ಪಡೆಯುವಾಗ ಏನಾದರೂ ವ್ಯತ್ಯಾಸ ಕಂಡುಬಂದರೆ ನ್ಯಾಯಕ್ಕಾಗಿ ಜಗಳಾಡುತ್ತಾರೆ. ಆದರೂ ಅವನ ಮುಂದೆ ಅವರ ಜಗಳ ಜಯಿಸುವುದಿಲ್ಲ.

ಹೆಚ್ಚಿನ ಗುತ್ತಿಗೆದಾರರು ಪುಟ್ಟ ದಿನಸಿ ಅಂಗಡಿಯನ್ನೂ ಹೊಂದಿರುತ್ತಾರೆ. ಇದರಿಂದ ಕಾರ್ಮಿಕರಿಗೆ ಅನುಕೂಲವಾಗುವುದಕ್ಕಿಂತ ಗುತ್ತಿಗೆದಾರನಿಗೇ ಲಾಭ. ಸಾಮಾನ್ಯವಾಗಿ ಅಲ್ಲಿ ಇತರರಿಗೊಂದು ಬೆಲೆಯಾದರೆ ವಾರದ ಮಜೂರಿಯಲ್ಲಿ ಕಳೆಯಲು ಸಾಲ ಪಡೆಯುವ ಕಾರ್ಮಿಕರಿಗೊಂದು ಬೆಲೆ. ವಾರದ ಕೊನೆಯಲ್ಲಿ ಮಜೂರಿ ಕೊಡುವಾಗ ಸಾಲದ ಪಟ್ಟಿಗೆ ಒಂದಿಷ್ಟು ಸೇರಿಸಿಯೇ ಮಜೂರಿ ಕಳೆಯುವ ಕೆಲ ಕಳ್ಳ ಗುತ್ತಿಗೆದಾರರೂ ಇದ್ದಾರೆ. ಹಲವು ಬಾರಿ ವಾರದ ಕೊನೆಯಲ್ಲಿ ಮಜೂರಿಗಿಂತ ಖರೀದಿಸಿದ ದಿನಸಿಗಳ ಸಾಲವೇ ಹೆಚ್ಚಾಗಿ ಬೇಸರದಿಂದ ಸಪ್ಪೆ ಮೋರೆ ಮಾಡಿ ಬರಿಗೈಯಲ್ಲಿ ಬರುವ ಕಾರ್ಮಿಕರೂ ಇದ್ದಾರೆ. ಆಗ ಅಗತ್ಯ ದಿನಸಿ ಕೇಳಿದರೆ ಕೊಡದೇ ಖಾಲಿ ಚೀಲದೊಂದಿಗೆ ಮರಳುವ ಕಾರ್ಮಿಕರ ಅಸಹಾಯಕ ಮುಖ ಈಗಲೂ ನನ್ನ ಕಣ್ಣ ಮುಂದೆ ಬರುತ್ತದೆ.

ಗುತ್ತಿಗೆದಾರರು ಎರಡು ವಿಧದ ಬೀಡಿಯನ್ನು ಕಟ್ಟಿಸುತ್ತಾರೆ. ಒಂದು ಕ್ರಯದಬೀಡಿ ಮತ್ತು ಇನ್ನೊಂದು ಪಾಸ್ ಪುಸ್ತಕದಬೀಡಿ. ಈ ಕ್ರಯದಬೀಡಿ ಕಾರ್ಮಿಕನ ಹೆಸರು ಕಂಪೆನಿಯಲ್ಲಿ ನೋಂದಾವಣೆಯಾಗಿರುವುದಿಲ್ಲ. ಹಾಗಾಗಿ ಅವರು ಕಂಪೆನಿಯ ಅಧಿಕೃತ ಕಾರ್ಮಿಕರಲ್ಲ. ಅವರದೇನಿದ್ದರೂ ಗುತ್ತಿಗೆದಾರರ ಜೊತೆಗಿನ ವ್ಯವಹಾರವಷ್ಟೇ. ಕ್ರಯದ ಬೀಡಿಗೆ ಪಾಸ್ ಪುಸ್ತಕದ ಬೀಡಿಗಿಂತ ಮೂವತ್ತು ರೂಪಾಯಿ ಹೆಚ್ಚು ಬೆಲೆ (ಈಗಿನ ಬೀಡಿ ಮಾರುಕಟ್ಟೆ ಪ್ರಕಾರ). ಆದರೆ ಕ್ರಯದಬೀಡಿಯ ಕಾರ್ಮಿಕನಿಗೆ ಪಾಸ್ ಪುಸ್ತಕದ ಕಾರ್ಮಿಕನಂತೆ ಯಾವ ಸೌಲಭ್ಯಗಳೂ ಇರುವುದಿಲ್ಲ. ಪಾಸ್ ಪುಸ್ತಕದಬೀಡಿ ಕಾರ್ಮಿಕನಿಗೆ ಭವಿಷ್ಯ ನಿಧಿ, ಇ.ಎಸ್.ಐ, ಬೋನಸ್, ತುಟ್ಟಿ ಭತ್ಯೆ, ಮಕ್ಕಳ ಸ್ಕಾಲರ್‍ಶಿಪ್ ಇತ್ಯಾದಿಗಳು ದೊರೆಯುತ್ತವೆ. ಕ್ರಯದಬೀಡಿ ಕಾರ್ಮಿಕರು ಕೈ ಕಾಲು ಹಿಡಿದು ಬೇಡಿದರೂ ಕೆಲವು ಗುತ್ತಿಗೆದಾರರು ಅವರಿಗೆ ಪಾಸ್ ಪುಸ್ತಕ ಮಾಡಿಕೊಡಲು ಸುತಾರಾಂ ಒಪ್ಪುವುದಿಲ್ಲ. ಯಾಕೆಂದರೆ ಕ್ರಯದ ಬೀಡಿ ಕಟ್ಟುವ ಕಾರ್ಮಿಕರು ಇವರಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಿದ್ದಂತೆ. ಗುತ್ತಿಗೆದಾರನ ಮನೆಯ ಸದಸ್ಯರು ಬೀಡಿ ಕಟ್ಟಲಿ, ಕಟ್ಟದಿರಲಿ ತಲೆಗೊಂದರಂತೆ ಪಾಸ್ ಪುಸ್ತಕ ಮಾಡಿಡುತ್ತಾನೆ. ಹೇಗಿದ್ದರೂ ಕ್ರಯದ ಬೀಡಿ ಕಾರ್ಮಿಕರಿಗೂ ಕಂಪೆನಿಗೂ ಸಂಪರ್ಕವಿರುವುದಿಲ್ಲ. ಕ್ರಯದ ಕಾರ್ಮಿಕರ ಬೀಡಿಯನ್ನೆಲ್ಲ್ಲಾ ಗುತ್ತಿಗೆದಾರ ತನ್ನ ಮನೆಯವರ ಪಾಸ್ ಪುಸ್ತಕಕ್ಕೆ ಬರೆಯುತ್ತಾನೆ. ಆ ಮೂಲಕ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನೆಲ್ಲಾ ತನ್ನ ಜೇಬಿಗಿಳಿಸುತ್ತಾನೆ.

ಉದ್ಯೋಗಸ್ಥ ಮಹಿಳೆಯರ ಮೇಲೆ ಕಚೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಮತ್ತಿತರ ಕೆಲಸದ ಜಾಗದಲ್ಲಿ ಲೈಂಗಿಕ ದೌರ್ಜನ್ಯವಾಗುವಂತೆಯೇ ಬೀಡಿ ಕಾರ್ಮಿಕರ ಮೇಲೂ ಕೆಲವೊಮ್ಮೆ ಸಣ್ಣ ಮಟ್ಟದ ಲೈಂಗಿಕ ಶೋಷಣೆ ನಡೆಯುವುದೂ ಇದೆ. ಕಾರ್ಮಿಕೆಯರ ಅಸಹಾಯಕತೆಯನ್ನು ಕೆಲ ಗುತ್ತಿಗೆದಾರರು ಕೈ ಸನ್ನೆ, ಕಣ್ಸನ್ನೆಗಳ ಮೂಲಕವೂ ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಎಲೆಯನ್ನು ತೂಗಿದ ಬಳಿಕ ತಕ್ಕಡಿಯ ತಟ್ಟೆಯಿಂದ ಅವರ ಚೀಲಕ್ಕೆ ಹಾಕುವ ಬದಲು ನೆಲಕ್ಕೆ ಸುರಿಯುವ ಗುತ್ತಿಗೆದಾರರು/ಎಲೆ ತೂಗಿ ಕೊಡುವ ಕೆಲಸದಾಳುಗಳಿದ್ದಾರೆ. ಇನ್ನು ಕೆಲವರು ಎಲೆಯನ್ನು ನೆಲಕ್ಕೆಸೆದು ಆಯ್ದುಕೊಳ್ಳಿ ಎನ್ನುತ್ತಾರೆ. ಎಲೆಯನ್ನು ಹೆಕ್ಕಲು ಕಾರ್ಮಿಕೆ ಬಗ್ಗಿದಾಗ ಆತನ ಕಣ್ಣು ಸ್ಕ್ಯಾನಿಂಗ್ ಮಾಡತೊಡಗುವುದೂ ಇದೆ. ಹೀಗೆ ಬೀಡಿ ಕಾರ್ಮಿಕರ ಬವಣೆ ಹೇಳಿ ಮುಗಿಯದಷ್ಟಿದೆ.

ಬೀಡಿ ಬೋನಸ್ ಸಿಕ್ಕಾಗ ಹಳ್ಳಿಯ ಮುಗ್ಧ ಕಾರ್ಮಿಕರ ಮುಖದಲ್ಲಿ ಲಾಸ್ಯವಾಡುತ್ತಿದ್ದ ಸಂತಸದ ನಗುವನ್ನು ನಾನು ಕಣ್ತುಂಬಿಸಿಕೊಂಡಿದ್ದೇನೆ. ಆ ಹಣದಿಂದ ಅವರು ಬೆಳ್ಳಿಯ ಕಾಲ್ಗೆಜ್ಜೆ ಖರೀದಿಸುವುದು, ಅದಕ್ಕೆ ಹಿಂದಿನ ಉಳಿತಾಯ ಸೇರಿಸಿ ಚಿನ್ನದ ಪುಟ್ಟ ಕಿವಿಯೋಲೆ ಮಾಡಿಸುವುದೆಲ್ಲಾ ಇದೆ. ಅದನ್ನು ಹಳ್ಳಿ ಜನಕ್ಕೆ ತೋರಿಸಿ ಸಂಭ್ರಮಪಡುತ್ತಿದ್ದರು. ಹಿಂದೆಲ್ಲಾ ನನ್ನೂರಿನ ಅದೆಷ್ಟೋ ತರುಣಿಯರು ಹಾಗೆ ಕೂಡಿಟ್ಟ ದುಡ್ಡಿನಿಂದಲೇ ತಂತಮ್ಮ ಮದುವೆಗೆ ಚಿನ್ನ ಮಾಡಿಟ್ಟದ್ದೂ ಇದೆ. ಹಾಗೆ ಮದುವೆಯಾಗಿ ಹೋದ ಅನೇಕ ಹೆಣ್ಮಕ್ಕಳನ್ನು ನಾನು ಕಂಡಿದ್ದೇನೆ. ನನ್ನೂರಿನ ಯುವಪೀಳಿಗೆ ಉತ್ತಮ ವಿದ್ಯಾಭ್ಯಾಸ ಪಡೆದು ಒಳ್ಳೆಯ ಉದ್ಯೋಗ ಗಳಿಸಿದ್ದರ ಹಿಂದೆ ಬೀಡಿಯ ಕೊಡುಗೆ ಅಪಾರವಿದೆ.

ನಮಗೆಲ್ಲಾ ಅಮ್ಮಂದಿರ ಬೀಡಿಯ ಸೂಪು (ಗೆರಸೆ) ಬಾಲ್ಯದಲ್ಲಿ ಎಟಿಎಂನಂತಿತ್ತು. ಶಾಲಾ ದಿನಗಳ ಪಾಕೆಟ್ ಮನಿಯೂ ಬೀಡಿಯ ಸೂಪಿನಿಂದಲೇ ಸಿಗುತ್ತಿತ್ತು.

ಕುಡುಕ ಗಂಡಸರೂ ಬೀಡಿಯ ಸೂಪಿಗೆ ಕನ್ನ ಹಾಕುತ್ತಿದ್ದರು. ನನ್ನೂರಿನ ತಾಯಂದಿರಿಗೂ ಬೀಡಿಯ ಜೊತೆ ಮುರಿಯಲಾಗದ ಭಾವನಾತ್ಮಕ ನಂಟಿದೆ. ಅಮ್ಮಂದಿರ ಬೀಡಿಯಿಂದಲೇ ಕಲಿತು ಒಳ್ಳೆಯ ಉದ್ಯೋಗ ಗಳಿಸಿಕೊಂಡ ಮಕ್ಕಳು “ಇನ್ನು ಬೀಡಿ ಕಟ್ಟಿದ್ದು ಸಾಕಮ್ಮಾ” ಎಂದರೂ ಕೆಲ ತಾಯಂದಿರು ನಮ್ಮ ಬದುಕು ರೂಪಿಸಿದ ಬೀಡಿಯನ್ನು ಹೇಗೆ ತೊರೆಯಲಿ ಎಂದು ಗದ್ಗದಿತರಾದದ್ದನ್ನೂ ಕಂಡಿರುವೆ.

ಒಟ್ಟಿನಲ್ಲಿ ಕರಾವಳಿಯ ಬಡವರ, ಕೆಳ ಮಧ್ಯಮ ವರ್ಗದ ಜನತೆಯ ಬದುಕು ರೂಪಿಸಿದ ಬೀಡಿಯ ಕುರಿತಂತೆ ನನ್ನ ಅರಿವಿನ ಮಿತಿಯಲ್ಲೇ ಬರೆಯುವುದಾದರೂ ಇನ್ನೂ ಬಹಳಷ್ಟಿದೆ.

(ಸಜ್ಜನ ಬೀಡಿ ಗುತ್ತಿಗೆದಾರರ ಕ್ಷಮೆ ಯಾಚಿಸುವೆ)


ಇದನ್ನೂ ಓದಿ: ಲಾಕ್‍ಡೌನ್ – ಮನೆಯಿಂದಲೇ ಕೆಲಸ, ಮನೆಕೆಲಸ ಮತ್ತು ಮಹಿಳೆ! – ಮಲ್ಲಿಗೆ ಸಿರಿಮನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...