Homeಮುಖಪುಟಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

ಉರಿಬಿಸಿಲಿನಲ್ಲಿ ಲಕ್ಷಾಂತರ ಜನ ಕೂರಿಸಿ ಕಾರ್ಯಕ್ರಮ ನಡೆಸಿದ ಮಹಾರಾಷ್ಟ್ರ ಸರ್ಕಾರ; ಹೀಟ್‌ಸ್ಟ್ರೋಕ್‌ಗೆ 11 ಮಂದಿ ಸಾವು

- Advertisement -
- Advertisement -

ನವಿ ಮುಂಬೈನ ತೆರೆದ ಮೈದಾನದಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ’ ದುರಂತಕ್ಕೆ ಕಾರಣವಾಗಿದೆ.

“ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಕನಿಷ್ಠ 11 ಜನರು ನಿರ್ಜಲೀಕರಣ (dehydration) ಮತ್ತು ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ್ದಾರೆ, ಗಂಭೀರವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಕಚೇರಿ ಈ ಕುರಿತು ಪ್ರತಿಕ್ರಿಯಿಸಿದ್ದು, 11 ಸಾವುಗಳು ದೃಢಪಟ್ಟಿವೆ ಎಂದಿದೆ. ಆದರೆ 13 ಜನರು ಸತ್ತಿರಬಹುದೆಂದು ಮೂಲಗಳು ಹೇಳುತ್ತಿವೆ. ಸಾವಿಗೀಡಾದವರಲ್ಲಿ ಎಂಟು ಮಂದಿ ಮಹಿಳೆಯರಿದ್ದು, ಹೆಚ್ಚಿನವರು ವೃದ್ಧರಿದ್ದಾರೆ.

ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಹೃದಯ ಸಂಬಂಧಿ ಸಮಸ್ಯೆಗಳಿಂದಾಗಿ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳಿಂದಾಗಿ ಗಂಭೀರವಾಗಿದ್ದಾರೆಂದು ಹೇಳಲಾಗುತ್ತಿದೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿತ್ತು. ಲಕ್ಷಗಟ್ಟಲೆ ಜನರು ಖಾರ್ಘರ್ ಇಂಟರ್ನ್ಯಾಷನಲ್ ಕಾರ್ಪೊರೇಟ್ ಪಾರ್ಕ್ ಮೈದಾನದಲ್ಲಿ ಸುಮಾರು ಐದು ಗಂಟೆಗಳ ಕಾಲ (ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ರವರೆಗೆ) ಉರಿಬಿಸಿಲಿನಲ್ಲಿ ಕುಳಿತುಕೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ಕಪಿಲ್ ಪಾಟೀಲ್ ವೇದಿಕೆಯಲ್ಲಿದ್ದರು. ಇತರ ವಿಐಪಿಗಳು ಪಾಲ್ಗೊಂಡಿದ್ದರು.

ಪ್ರತಿ ಜಿಲ್ಲೆಗೆ ಪ್ರಸ್ತಾಪಿಸಲಾದ ‘ಹೀಟ್ ಆಕ್ಷನ್ ಪ್ಲಾನ್‌’ಗೆ ವಿರುದ್ಧವಾಗಿ ಹೊರಂಗಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಥಾಣೆ ಭಾಗದಲ್ಲಿ ಭಾನುವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮೃತರ ಪೈಕಿ ರಾಯಗಡದ ಜಯಶ್ರೀ ಪಾಟೀಲ್ (54) ಅವರು ಖಾರ್ಘರ್ ಸ್ಥಳದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿದ್ದರು. ನಂತರ, ರೋಗಿಗಳನ್ನು ಭೇಟಿ ಮಾಡಲು ಶಿಂಧೆ ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ಧಾವಿಸಿದರು. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

“ಇದು ಅತ್ಯಂತ ನೋವಿನ ಮತ್ತು ದುರದೃಷ್ಟಕರ ಘಟನೆ. ಲಕ್ಷಗಟ್ಟಲೆ ಜನ ಬಂದಿದ್ದರಿಂದ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತಿತ್ತು, ಆದರೆ ಕೊನೆಗೆ ಹೀಗಾಯಿತು” ಎಂದು ಶಿಂಧೆ ವಿಷಾದಿಸಿದ್ದಾರೆ.

“ನಾನು ಇದನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ. ಚಿಕಿತ್ಸೆಯ ಅಗತ್ಯವಿರುವವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೆಲವರನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಬೇಕಿದ್ದು, ಅದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪನ್ವೇಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಮುನ್ಸಿಪಲ್ ಕಮಿಷನರ್ ಅವರನ್ನು ರೋಗಿಗಳ ಮೇಲೆ ನಿಗಾ ಇರಿಸಲು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮುನ್ಸಿಪಲ್ ಕಮಿಷನರ್‌ ರೋಗಿಗಳ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ,  ಅವರಿಗೆ ಮಾಹಿತಿಗಳನ್ನು ನೀಡುತ್ತಾರೆ. ಕನಿಷ್ಠ 50 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, 24 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಕೆಲವರನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ” ಎಂದಿದ್ದಾರೆ.

ಕಾರ್ಯಕ್ರಮವನ್ನು ಆಯೋಜಿಸಿದ ಸಾಂಸ್ಕೃತಿಕ ವ್ಯವಹಾರಗಳ ಸಚಿವಾಲಯವು, “20 ಲಕ್ಷ ಜನರು ಸೇರಲು ವ್ಯವಸ್ಥೆ ಮಾಡಲಾಗಿದೆ” ಎಂದಿತ್ತು. ಇದನ್ನು ಸಾಮಾಜಿಕ ಹೋರಾಟಗಾರರು ಪ್ರಶ್ನಿಸಿದ್ದರು. “ಸರ್ಕಾರದ ದುರಾಡಳಿತದಿಂದ ಸಾವು ಸಂಭವಿಸಿದೆ” ಎಂದು ಸಾಮಾಜಿಕ ಕಾರ್ಯಕರ್ತ ರಾಜೀವ್ ಮಿಶ್ರಾ ಆರೋಪಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಖಾರ್ಘರ್ ನಿವಾಸಿಯೊಬ್ಬರು, “ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಿಂದ ಆಗಮಿಸಿದ ಕೆಲವರು ಎರಡು ದಿನಗಳ ಕಾಲ ಮೈದಾನದಲ್ಲಿ ಇದ್ದರು. ಭಾನುವಾರ ಮಧ್ಯಾಹ್ನ, ಲಕ್ಷಾಂತರ ಜನರು ಯಾವುದೇ ನೆರಳಿಲ್ಲದೆ ಉರಿಬಿಸಿಲಿನಲ್ಲಿ ಕುಳಿತ್ತಿದ್ದರು” ಎಂದಿದ್ದಾರೆ.

ಅಪ್ಪಾಸಾಹೇಬ್ ಧರ್ಮಾಧಿಕಾರಿ ನಡೆಸುತ್ತಿರುವ ಸಂಸ್ಥೆಯು ಕಾರ್ಯಕ್ರಮಕ್ಕೆ ಬರುವವರಿಗಾಗಿ ಸಾರಿಗೆ ವ್ಯವಸ್ಥೆ ಮಾಡಲು ಸಹಕರಿಸಿದೆ ಎಂದು ಹೇಳಲಾಗುತ್ತದೆ.

ಹೆಸರು ಹೇಳಲಿಚ್ಛಿಸದ ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸುಮಾರು 30 ಜನರನ್ನು ಉಪಜಿಲ್ಲಾ ಆಸ್ಪತ್ರೆ-ಪನ್ವೇಲ್, ವಾಶಿಯ ಎನ್‌ಎಂಎಂಸಿ ಮತ್ತು ಫೋರ್ಟಿಸ್, ನೆರೂಲ್‌ನ ಡಿವೈ ಪಾಟೀಲ್ ಆಸ್ಪತ್ರೆ, ಕಾಮೋಥೆಯ ಎಂಜಿಎಂ ಆಸ್ಪತ್ರೆ ಸೇರಿದಂತೆ ಖಾರ್ಘರ್‌ನಲ್ಲಿರುವ ಬೇಲಾಪುರ ಮತ್ತು ಟಾಟಾ ಕ್ಯಾನ್ಸರ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ” ಎಂದಿದ್ದಾರೆ.

ತೊಂದರೆಗೀಡಾದವರು ನಿರ್ಜಲೀಕರಣ (dehydration), ಎದೆ ನೋವು, ಇತರ ಆರೋಗ್ಯ ಸಮಸ್ಯೆಗಳ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಏರಿಕೆಯಿಂದ ಬಳಲುತ್ತಿದ್ದರು. ಕೆಲವು ಜನರಿಗೆ ORS ಪೌಡರ್ ಅನ್ನು ಒದಗಿಸಲಾಯಿತು, ನೆರಳಿನಲ್ಲಿ ಅಥವಾ ಎಸಿ ಸೌಲಭ್ಯವಿರುವಲ್ಲಿ ಕುಳಿತುಕೊಳ್ಳಲು ಹೇಳಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ವಾಶಿ ಎನ್‌ಎಂಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ಜವಡೆ ಮಾತನಾಡಿ, “55 ವರ್ಷದ ವ್ಯಕ್ತಿ ಸೇರಿದಂತೆ ಒಂಬತ್ತು ರೋಗಿಗಳು ಹೀಟ್‌ಸ್ಟ್ರೋಕ್‌ನಿಂದಾಗಿ ದಾಖಲಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ನಂತರ ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ರಾಯಗಢ ಪೊಲೀಸ್ ಅಧೀಕ್ಷಕ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, “‘ಖಾರ್ಘರ್ ಕಾರ್ಯಕ್ರಮದ ಸಮಯದಲ್ಲಿ ಆಗಿರುವ ಯಾವುದೇ ಸಾವುನೋವುಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಏಕೆಂದರೆ ಅದು ನವಿ ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿದೆ” ಎಂದು ನುಣುಚಿಕೊಂಡಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ 5 ಲಕ್ಷ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ.

ನವಿ ಮುಂಬೈ ಆಸ್ಪತ್ರೆಯಲ್ಲಿ ರೋಗಿಗಳನ್ನು ಭೇಟಿ ಮಾಡಿದ ನಂತರ ಮಾತನಾಡಿರುವ ಶಿಂಧೆ, “ಚಿಕಿತ್ಸೆ ಪಡೆಯುತ್ತಿರುವ ಜನರನ್ನು ನಾನು ಭೇಟಿಯಾಗಿದ್ದೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಈ ಘಟನೆ ಅತ್ಯಂತ ವಿಷಾದನೀಯ. ಇದರಿಂದ ತುಂಬಾ ನೋವಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯುತ್ತಿತ್ತು, ಕೊನೆಯಲ್ಲಿ, ಈ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...