ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಟ್ವಿಟ್ಟರ್ ಅನ್ನು ನಿಯಂತ್ರಿಸುತ್ತಿರುವ ಪ್ರಯತ್ನಗಳ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಒಕ್ಕೂಟ ಸರ್ಕಾರವು ಟ್ವಿಟರ್ ಮೇಲೆ ಪ್ರಭಾವ ಬೀರಲು ವಿಫಲವಾಗಿದೆ ಆದ್ದರಿಂದ ಇದೀಗ ಅವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಒಕ್ಕೂಟ ಸರ್ಕಾರ ತನ್ನ ಸರ್ಕಾರವನ್ನು ಕೂಡಾ ಇದೇ ರೀತಿ ನಡೆಸಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿ ಅವರು, “ಒಕ್ಕೂಟ ಸರ್ಕಾರಕ್ಕೆ ಟ್ವಿಟರ್ ಅನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಅದನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ. ಒಕ್ಕೂಟಕ್ಕೆ ನಿರ್ವಹಿಸಲು ಸಾಧ್ಯವಾಗದ ಎಲ್ಲರೊಂದಿಗೆ ಹಾಗೆ ಮಾಡಲು ಪ್ರಯತ್ನಿಸುತ್ತಿದೆ. ಅವರಿಗೆ ನನ್ನನ್ನು ನಿಯಂತ್ರಿಸಲು ಸಾಧ್ಯಗಿಲ್ಲ, ಅದಕ್ಕಾಗಿಯೇ ಅವರು ನನ್ನ ಸರ್ಕಾರವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್
ಐಟಿ ನಿಯಮಗಳನ್ನು ಪಾಲಿಸದಿರುವುದು ಮತ್ತು ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿರುವ ಪ್ರಮುಖ ಸಿಬ್ಬಂದಿಯನ್ನು ನೇಮಿಸುವಲ್ಲಿ ವಿಫಲವಾದ ಕಾರಣ ಟ್ವಿಟರ್ ಭಾರತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ. ಆದ್ದರಿಂದ ಈಗ ಟ್ವಿಟರ್ನಲ್ಲಿ ವ್ಯಕ್ತಿಯೊಬ್ಬರು ಯಾವುದೆ ಆಕ್ಷೇಪಾರ್ಹ ವಿಷಯಗಳನ್ನು ಹಾಕಿದರೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಟ್ವಿಟರ್ ಮೇಲೆ ಕೂಡಾ ಕ್ರಮ ಕೈಗೊಳ್ಳಬಹುದಾಗಿದೆ.
ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆಸಿದೆ ಎಂಬ ಬಿಜೆಪಿಯ ಆರೋಪಗಳ ಕುರಿತು ಬೆಳಕು ಚೆಲ್ಲಿದ ಮುಖ್ಯಮಂತ್ರಿ, “ಇದು ಬಿಜೆಪಿಯ ಗಿಮಿಕ್ ಆಗಿದ್ದು, ಮಾಡಲ್ಪಟ್ಟ ಎಲ್ಲಾ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ” ಎಂದು ಹೇಳಿದ್ದಾರೆ.
“ರಾಜ್ಯದಲ್ಲಿ ಈಗ ಯಾವುದೇ ರಾಜಕೀಯ ಹಿಂಸಾಚಾರಗಳು ನಡೆಯುತ್ತಿಲ್ಲ. ಒಂದು ಅಥವಾ ಎರಡು ವಿರಳ ಘಟನೆಗಳು ನಡೆದಿರಬಹುದು, ಆದರೆ ಅವುಗಳನ್ನು ರಾಜಕೀಯ ಹಿಂಸಾಚಾರದ ಘಟನೆಗಳೆಂದು ಹಣೆಪಟ್ಟಿ ಕಟ್ಟಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಲಕ್ಷದ್ವೀಪ: ನಿರ್ಮಾಪಕಿ ಆಯಿಷಾ ಸುಲ್ತಾನಗೆ ಬಂಧನದಿಂದ ರಕ್ಷಣೆ ನೀಡಿದ ಕೇರಳ ಹೈಕೋರ್ಟ್


