ಸಂಘ ಪರಿವಾರದ ಕಾರ್ಯಕರ್ತೆ, ವಿವಾದಿತ ಬಾಷಣಗಾರ್ತಿ ಚೈತ್ರಾ ಕುಂದಾಪುರರನ್ನು ಕಲಬುರಗಿ ಜಿಲ್ಲೆಯ ಮಹಿಳಾ ಪೋಲಿಸರು ವಶಕ್ಕೆ ಪಡೆದುಕೊಂಡು, ಯಾದಗಿರಿ ಜಿಲ್ಲೆಗೆ ವಾಪಸ್ ಕಳುಹಿಸಿದ್ದಾರೆ. ಮಂಗಳವಾರ ನಡೆಯಲಿದ್ದ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಚೈತ್ರಾ ಕುಂದಾಪುರ ಕಲಬುರಗಿಗೆ ಭಾಷಣ ಮಾಡಲು ಆಗಮಿಸುತ್ತಿದ್ದರು. ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಆಗಮಿಸುತ್ತಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ, ಅವರನ್ನು ಯಾದಗಿರಿ ಜಿಲ್ಲೆಗೆ ವಾಪಸ್ ಕಳುಹಿಸಿದ್ದಾರೆ.
ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆಬ್ರವರಿ 27ರಿಂದ ಮಾರ್ಚ್ 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ಚೈತ್ರಾ ಕುಂದಾಪುರ ಇಬ್ಬರೂ ಕಲಬುರಗಿ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಭಾನುವಾರ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ: ಆಷಾಢದ ಗಾಳಿಯಲ್ಲಿ ಹಾರಿದ ಪಟ ಬಸವರಾಜ ಬೊಮ್ಮಾಯಿ
ಆಳಂದ ಪಟ್ಟಣದಲ್ಲಿ ಮುಸ್ಲಿಂ ಧಾರ್ಮಿಕ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮ ಮತ್ತು ಆಳಂದ ಚಲೋ ಕಾರ್ಯಕ್ರಮಕ್ಕೆ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದ್ದರು.
ಇದರಿಂದ ಪಟ್ಟಣದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಕಾರಣ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆಗೆ ಪ್ರವೇಶಿಸದಂತೆ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರು ಆಳಂದ ತಾಲೂಕಿಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರ ಮೇಲೆ ಸಿಆರ್ ಪಿಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ಅನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು