ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣ (ಪಿಎಸ್ಐ ಹಗರಣ)ಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಶ್ರೇಣಿಯ ಅಧಿಕಾರಿ ಅಮೃತ್ ಪೌಲ್ ಅವರನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಸೋಮವಾರ ಬಂಧಿಸಿದೆ. ಬಂಧನಕ್ಕೆ ಒಳಗಾದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಹಗರಣ ನಡೆದಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬಂದ ನಂತರ, ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾಯಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ನೇಮಕಾತಿ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿವಂತೆ ಸಿಐಡಿ ಅದಿಕಾರಿಗಳು ಅಮೃತ್ ಪೌಲ್ ಅವರಿಗೆ ನೋಟೀಸ್ ನೀಡಿದ್ದರು. ನೊಟೀಸ್ ಸ್ವೀಕರಿಸಿದ್ದ ಅಮೃತ್ ಪೌಲ್ ನಾಲ್ಕನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅವರನ್ನು ಬಂಧಿಸಿದ ಪೊಲೀಸರು ಪ್ರಕರಣದ ವಿಚಾರಣೆಗಾಗಿ 14 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳಿದ್ದು, ಆದರೆ ನ್ಯಾಯಾಧೀಶರು ಅವರನ್ನು 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದ್ದಾರೆ.
ಮೂಲಗಳ ಪ್ರಕಾರ, ವಂಚನೆಗೊಳಗಾದ ಅಭ್ಯರ್ಥಿಗಳ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳನ್ನು ನೇಮಕಾತಿ ವಿಭಾಗದಲ್ಲಿಯೇ ತಿರುಚಲಾಗಿದೆ ಎಂದು ಆರೋಪಿಸಲಾಗಿತ್ತು. ಘಟನೆಗಳ ಬಗ್ಗೆ ಅಮೃತ್ ಪೌಲ್ಗೆ ತಿಳಿದಿತ್ತು ಎಂದು ಅವರು ಹೇಳಲಾಗಿದೆ.
ಇದನ್ನೂ ಓದಿ: ಪಿಎಸ್ಐ ಪರೀಕ್ಷಾ ಅಕ್ರಮದ ಹಿಂದಿರುವ ಸಚಿವರ್ಯಾರು? ಕಾಂಗ್ರೆಸ್ ಪ್ರಶ್ನೆಗೆ ನಾನಲ್ಲ ಎಂದು ಸಚಿವ ಅಶ್ವಥ್ ನಾರಾಯಣ್
545 ಹುದ್ದೆಗಳನ್ನು ಭರ್ತಿ ಮಾಡಲು 2021 ರ ಅಕ್ಟೋಬರ್ನಲ್ಲಿ PSI ನೇಮಕಾತಿ ಪ್ರಾರಂಭಿಸಲಾಗಿತ್ತು. ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ ಈ ಹಗರಣ ಮೊದಲು ಬೆಳಕಿಗೆ ಬಂದಿದ್ದು, ಬಿಜೆಪಿ ಮುಖಂಡ, ಕಾಂಗ್ರೆಸ್ ಶಾಸಕರೊಬ್ಬರ ಗನ್ಮ್ಯಾನ್, ಉಪ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೆಬಲ್ಗಳು ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳನ್ನು ಸಹ ಬಂಧಿಸಲಾಗಿದೆ. ಪ್ರಕರಣದ ಸಂಬಂಧ ಇದುವರೆಗೆ ಸುಮಾರು 70 ಮಂದಿಯನ್ನು ಬಂಧಿಸಲಾಗಿತ್ತು.