Homeಮುಖಪುಟ"ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ": ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

- Advertisement -
- Advertisement -

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ ‘ಐತಿಹಾಸಿಕ ಅನ್ಯಾಯ’ ಎಂದು ಕರೆದಿದ್ದಾರೆ ಮತ್ತು ಗುರುವಾರ (ಏ16) ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ ನೀಡಿದ್ದಾರೆ.

“ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ದಕ್ಷಿಣ ರಾಜ್ಯಗಳನ್ನು ಶಿಕ್ಷಿಸಲಾಗುತ್ತಿದೆಯೇ” ಎಂದು ಸ್ಟಾಲಿನ್ ಪ್ರಶ್ನಿಸಿದ್ದು, ಈ ಕ್ರಮವು ದಕ್ಷಿಣದಾದ್ಯಂತ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ಎಚ್ಚರಿಸಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಯನ್ನು ‘ಗಂಭೀರ ಅಪಾಯ’ ಎಂದು ಕರೆದಿರುವ ಸ್ಟಾಲಿನ್, ಕ್ಷೇತ್ರ ಮರುವಿಂಗಡನೆ ವಿರುದ್ಧ ಹೋರಾಟ ರೂಪಿಸಲು ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ನಡೆಸಿದರು.

“ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಮೇಲೆ ಇಳಿದಿದೆ… ಇದು ಬರೀ ಪಕ್ಷಗಳು ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ವಿಷಯವಲ್ಲ. ಇದು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವ ವಿಷಯ. ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಲು ಭಾರತದಾದ್ಯಂತ ಎಲ್ಲಾ ಪಕ್ಷಗಳು ಮತ್ತು ಸಂಸದರು ಒಂದಾಗಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಿದ ನಂತರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಈ ಕ್ರಮವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು (ಮೂರನೇ ಒಂದು ಭಾಗದಷ್ಟು) ಮೀಸಲಾತಿಯನ್ನು ಜಾರಿಗೆ ತರುವುದರೊಂದಿಗೆ ಸಂಬಂಧ ಹೊಂದಿದೆ.

ಎಕ್ಸ್‌ನ ಮತ್ತೊಂದು ಪೋಸ್ಟ್‌ನಲ್ಲಿ ಸ್ಟಾಲಿನ್ ಅವರು, “ಕ್ಷೇತ್ರ ಮರುವಿಂಗಡನೆ ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ನಮಗೆ ವಿಧಿಸುತ್ತಿರುವ ಶಿಕ್ಷೆಯೇ” ಎಂದು ಪ್ರಶ್ನಿಸಿದ್ದಾರೆ. “ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳಿಗೆ ಮರುಪಾವತಿ ಮಾಡುವ ವಿಧಾನ ಇದುವೇ?” ಎಂದು ಕೇಳಿದ್ದಾರೆ.

“ಕೇಂದ್ರ ಬಿಜೆಪಿ ಸರ್ಕಾರ ನಾಳೆ ಸಂಸತ್ತಿನಲ್ಲಿ ಮಂಡಿಸಲು ಯೋಜಿಸಿರುವ ಕ್ಷೇತ್ರ ಮರುವಿಂಗಡನೆ ತಿದ್ದುಪಡಿಯು ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳ ವಿರುದ್ಧದ ಬೃಹತ್ ಐತಿಹಾಸಿಕ ಅನ್ಯಾಯವಾಗಿದೆ. ವಿಂಧ್ಯ ಪರ್ವತಗಳ ದಕ್ಷಿಣದಲ್ಲಿರುವ ಪ್ರತಿಯೊಬ್ಬ ದಕ್ಷಿಣ ಭಾರತೀಯರು ಕೋಪದಿಂದ ಕುದಿಯುತ್ತಿದ್ದಾರೆ” ಎಂದು ಸ್ಟಾಲಿನ್ ಬರೆದುಕೊಂಡಿದ್ದಾರೆ.

“ಬಿಜೆಪಿ ಬೆಂಕಿಯೊಂದಿಗೆ ಆಟವಾಡುತ್ತಿದೆ. ತಮಿಳುನಾಡಿನಾದ್ಯಂತ, ಕ್ಷೇತ್ರ ಮರುವಿಂಗಡನೆ ವಿರೋಧಿಸಿ ನಾಳೆ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಕಪ್ಪು ಬಾವುಟಗಳು ಮೇಲೇರಲಿವೆ… ಕೇಂದ್ರ ಸರ್ಕಾರ ತಮಿಳುನಾಡಿನ ಧ್ವನಿಯನ್ನು ಗೌರವಿಸಲು ಮತ್ತು ತನ್ನ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದರೆ, ನೀವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನೀವು ತೆರಬೇಕಾದ ಬೆಲೆ ಭಾರೀ ಪ್ರಮಾಣದಲ್ಲಿರುತ್ತದೆ. ಡಿಎಂಕೆ ಅಧ್ಯಕ್ಷನಾಗಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನಿ ತಮಿಳನಾಗಿ ಇದು ನನ್ನ ಕಠಿಣ ಎಚ್ಚರಿಕೆ” ಎಂದು ಸ್ಟಾಲಿನ್ ಖಾರವಾಗಿ ಹೇಳಿದ್ದಾರೆ.

ಈ ಪ್ರಕ್ರಿಯೆ ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಮಾಡಿದರೆ ಅಥವಾ ದಕ್ಷಿಣ ರಾಜ್ಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರಿದರೆ ತಮಿಳುನಾಡು ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಪ್ರಾರಂಭಿಸುತ್ತದೆ ಎಂದು ಸ್ಟಾಲಿನ್ ಮಂಗಳವಾರ (ಏ.14) ಎಚ್ಚರಿಸಿದ್ದರು. ಏಪ್ರಿಲ್ 16 ರಂದು ನಡೆಯುವ ಸಂಸತ್ತಿನ ವಿಶೇಷ ಅಧಿವೇಶನವನ್ನು ಉಲ್ಲೇಖಿಸಿರುವ ಅವರು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳ ಮಧ್ಯೆ ಸಂಸತ್ತಿನ ವಿಶೇಷ ಅಧಿವೇಶನವನ್ನು ‘ಬಲವಂತವಾಗಿ ಕರೆಯಲಾಗಿದೆ’ ಎಂದು ಹೇಳಿದ್ದರು.

ವಿಶೇಷ ಅಧಿವೇಶನದಲ್ಲಿ, ಕೇಂದ್ರ ಸರ್ಕಾರವು ಕ್ಷೇತ್ರ ಮರುವಿಂಗಡನೆ ಕುರಿತು ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ ತರಲು ಉದ್ದೇಶಿಸಿದೆ. ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳ ಮೇಲೆ ಕೇಂದ್ರವು ತನ್ನ ನಿರ್ಧಾರವನ್ನು ಒತ್ತಾಯಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಸೀಮಿತ ವಿಂಗಡಣೆಯನ್ನು ಜಾರಿಗೆ ತರುವ ಈ ಆತುರದ ಪ್ರಯತ್ನವು ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಸ್ಪಷ್ಟ ದಾಳಿಯಾಗಿದೆ. ಅದಕ್ಕಿಂತ ಹೆಚ್ಚಾಗಿ, ಇದು ರಾಜ್ಯಗಳ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ನೀವು ಈ ಹಿಂದೆಂದೂ ನೋಡಿರದ ತಮಿಳುನಾಡನ್ನು ಇನ್ನು ಮುಂದೆ ನೋಡಲಿದ್ದೀರಿ. 1950 ಮತ್ತು 1960ರ ದಶಕದ ಡಿಎಂಕೆ ಪಕ್ಷದ ಆವೇಶ ಮತ್ತು ಸ್ಫೂರ್ತಿಯನ್ನು ಭಾರತವು ಮತ್ತೊಮ್ಮೆ ಸಾಕ್ಷೀಕರಿಸಲಿದೆ. ಇದನ್ನು ಬೆದರಿಕೆ ಎಂದು ತಪ್ಪಾಗಿ ಭಾವಿಸಬೇಡಿ; ಇದೊಂದು ಎಚ್ಚರಿಕೆ. ನೀವು ಇದನ್ನು ಬೆದರಿಕೆ ಎಂದೇ ವ್ಯಾಖ್ಯಾನಿಸಲು ಬಯಸಿದರೂ ನಮಗೇನೂ ತೊಂದರೆಯಿಲ್ಲ. ಹೌದು, ಇದು ತಮಿಳುನಾಡಿನಿಂದ ನೀಡುತ್ತಿರುವ ಎಚ್ಚರಿಕೆ” ಸ್ಟಾಲಿನ್ ಖಾರವಾಗಿ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...