Homeಮುಖಪುಟಪ್ರಜಾಪೀಡನೆಗೆ ಕಾನೂನಿನ ಬಳಕೆಯೆ?

ಪ್ರಜಾಪೀಡನೆಗೆ ಕಾನೂನಿನ ಬಳಕೆಯೆ?

ಅಧ್ಯಾಪಕನೂ ತಂದೆಯೂ ಆಗಿರುವ ಪ್ರಜೆಯೊಬ್ಬನ ಕೆಲವು ತಲ್ಲಣ, ಪ್ರಶ್ನೆ

- Advertisement -
- Advertisement -

ಇಂದು ದೇಶವನ್ನು ಆಳುತ್ತಿರುವ ಪ್ರಭುತ್ವಶಕ್ತಿಯು ದೇಶದ್ರೋಹವೆಸಗಿದ್ದಕ್ಕೆ ಶಿಕ್ಷೆ ವಿಧಿಸುವ ಕಾಯಿದೆ, ಯುಎಪಿಎ  ಕಾಯಿದೆ, ಎನ್‍ಎಸ್‍ಎ ಕಾಯಿದೆ ಮುಂತಾದ ಹಲವು ಭಯಂಕರ ಕಾಯಿದೆಗಳನ್ನು ಯಾವುದೇ ವಿವೇಚನೆಯಿಲ್ಲದೆ, ಕ್ಷುಲ್ಲಕ ಕಾರಣಗಳಿಗಾಗಿ, ಬೇಕಾಬಿಟ್ಟಿಯಾಗಿ ಅನ್ವಯಿಸಿ, ಹಲವರನ್ನು ಬಂಧನದಲ್ಲಿಡುತ್ತಿದೆ, ಹಲವರಮೇಲೆ ಮೊಕದ್ದಮೆ ಹೂಡಿದೆ. ಈಚೆಗೆ, ಬೀದರಿನ ಶಾಹೀನ್ ಶಾಲೆಯ ಪ್ರಕರಣ ಮತ್ತು ಉತ್ತರಪ್ರದೇಶದ ಕರ್ತವ್ಯನಿಷ್ಠೆಯ ವೈದ್ಯ ಕಫೀಲ್ ಖಾನ್ ಅವರ ಪ್ರಕರಣದ ಬಳಿಕ, ಹುಬ್ಬಳ್ಳಿಯಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಹಾಗೂ ಬೆಂಗಳೂರಿನಲ್ಲಿ ಓದುತ್ತಿರುವ ಅಮೂಲ್ಯಾ ಲಿಯೊನಾ ಎಂಬ ಹುಡುಗಿ ಇಂಥ ಒಂದು ಕ್ರಮಕ್ಕೆ ತುತ್ತಾಗಿದ್ದಾರೆ.

ಹುಬ್ಬಳ್ಳಿಯ ಕೆಎಲ್‍ಇ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಓದುತ್ತಿರುವ ಮೂವರು ಕಾಶ್ಮೀರೀ ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜ಼ಿಂದಾಬಾದ್’ ಎಂಬ ಘೋಷಣೆಯನ್ನು ಕೂಗಿದರು, ತಾವು ಹಾಗೆ ಕೂಗುತ್ತಿರುವುದರ ವಿಡಿಯೋ ಮುದ್ರಣಮಾಡಿ ವಾಟ್ಸಾಪ್‌ನಲ್ಲಿ ತಮ್ಮ ಸ್ನೇಹಿತರ ಜೊತೆ ಹಂಚಿಕೊಂಡರು ಅನ್ನುವುದು ಅವರ ಮೇಲಿರುವ ಆರೋಪ.

ಮೊದಲಿಗೆ, ಭಾರತದ ಒಬ್ಬ ಪ್ರಜೆಯಾಗಿ, ನಾಗರಿಕನಾಗಿ ಕೆಲವು ಮಾತು, ಪ್ರಶ್ನೆ ಮುಂದಿಡುತ್ತೇನೆ.

ಜ಼ಿಂದಾಬಾದ್ ಎಂದರೆ ‘ಚಿರಕಾಲ, ಅಥವಾ ನೂರ್ಕಾಲ ಬಾಳಲಿ’ ಎಂದರ್ಥ. ಸದಾಶಯವುಳ್ಳ ಮಾತು ಅದು; ಯಾರಿಗೂ ಕೇಡನ್ನು ಬಯಸುವಂಥದಲ್ಲ. ಪಾಕಿಸ್ತಾನವಾಗಲಿ, ಈಥಿಯೋಪಿಯಾ ಆಗಲಿ, ಹಂಗೆರಿ ಆಗಲಿ, ಬೊಲಿವಿಯಾ ಆಗಲಿ, ಕ್ಯಾಮರೂನ್ ಆಗಲಿ, ಚಿಕ್ಕನಾಯಕನಹಳ್ಳಿಯಾಗಲಿ, ತಿರುನೆಲ್ವೇಲಿಯಾಗಲಿ, ಮಂಗಳಗ್ರಹವೋ, ಶುಕ್ರಗ್ರಹವೋ, ಮತ್ತೊಂದು ಗ್ರಹವೋ ಆಗಲಿ, ಅದು ಚೆನ್ನಾಗಿರಲಿ ಎಂದು ಬಯಸುವುದರಲ್ಲಿ ತಪ್ಪೇನಿದೆ?! ಪಾಕಿಸ್ತಾನವೂ ಸೇರಿದಂತೆ, ಯಾರಿಗೇ ಯಾವುದಕ್ಕೇ ಆಗಲಿ, ಒಳಿತಾಗಲಿ ಎಂದು ಬಯಸಕೂಡದೆಂದು ಭಾರತದ ಸಂವಿಧಾನದಲ್ಲಿಲ್ಲವಲ್ಲ! ಒಟ್ಟು ಭಾರತೀಯ ಪರಂಪರೆಯೇ ‘ಲೋಕಾಸ್ಸಮಸ್ತಾಃ ಸುಖಿನೋ ಭವಂತು/ ಸರ್ವೇ ಸಂತು ನಿರಾಮಯಾಃ/ ಸರ್ವೇ ಭದ್ರಾಣಿ ಪಶ್ಯಂತು/ ಮಾಕಶ್ಚಿತ್ ದುಃಖ ಭಾಗ್ಭವೇತ್’  ಅನ್ನುತ್ತದೆಯಲ್ಲ! ಮೇಲಾಗಿ, ಈ ಹುಡುಗರು ಭಾರತವು ಹಾಳಾಗಲಿ ಎಂದು ಘೋಷಿಸಲಿಲ್ಲವಲ್ಲ! ಭಾರತವನ್ನು ಹಾಳುಮಾಡುವವರಂತೆ ಆ ವಿಡಿಯೋದಲ್ಲಿ ಆ ಹುಡುಗರು ಕಾಣುತ್ತಾರೆಯೇ? ಅವರು ಹಾಗೆ ಮಾಡಬಹುದು ಅನ್ನುವುದಕ್ಕೆ ಪುರಾವೆ ಇದೆಯೇ? ಅಂಥ ಯಾವ ಪುರಾವೆಯಿಲ್ಲವೆಂದು ತಾನೆ, ಅವರನ್ನು ಮೊತ್ತಮೊದಲ ಬಾರಿ ದಸ್ತಗಿರಿಮಾಡಿದ ದಿನ, ಫೆಬ್ರವರಿ 16ರಂದು, ಸಂಜೆಯ ಹೊತ್ತಿಗೇ ಪೊಲೀಸರು ಅವರ ಬಿಡುಗಡೆಮಾಡಿದ್ದು? ಆದರೆ, ಅದೇ ದಿನವೇ ಅವರನ್ನು ಮತ್ತೆ ಬಂಧಿಸಿ, ಅವರ ಮೇಲೆ ದೇಶದ್ರೋಹದಂಥ ಗಂಭೀರ ಆರೋಪ ಹೊರಿಸಿದ್ದಕ್ಕೆ ಕಾರಣ, ಪೊಲೀಸ್ ಸ್ಟೇಷನ್ನಿನ ಹೊರಗೆ ಸಂಘಪರಿವಾರದ ಸಂಘಟನೆಗಳು ದೊಂಬಿ ಸೇರಿ ಗಲಾಟೆಮಾಡಿ, ಒತ್ತಡ ಬೀರಿದ್ದೇ ಹೌದಲ್ಲವೇ? ಈ ನಮ್ಮ ದೇಶದ ಕಾನೂನು ಪಾಲನೆಯ ವ್ಯವಸ್ಥೆಯು ದೊಂಬಿ ಸೇರಿದ ಜನ ಹೇಳಿದಂತೆ ನಡೆದುಕೊಳ್ಳುವಂತಾಯಿತೇ?

ಇನ್ನು, ಆಜಾ಼ದೀ ಅರ್ಥಾತ್ ಬಿಡುಗಡೆ ಎಂದು ಆ ಮೂವರು ಹುಡುಗರು ಕೂಗಿದ್ದು ಆ ವಿಡಿಯೋದಲ್ಲಿ ಕಾಣುತ್ತದೆ. ಆ ಮಾತನ್ನು ನಾನೂ ಕೂಗಿದ್ದೇನೆ!  ಸಿಎಎ, ಎನ್‍ಆರ್‌ಸಿ ಮತ್ತು ಎನ್‍ಪಿಆರ್‌ಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತ, ಆ ಕಾನೂನುಗಳಿಂದ ನಮಗೆಲ್ಲ ಬಿಡುಗಡೆಯಾಗಲಿ ಎಂದು ಕೂಗುತ್ತಿರುವ ನಾವೆಲ್ಲರೂ ದೇಶದ್ರೋಹಿಗಳೇ? ಸರಕಾರ ಹಾಗೂ ಸಂಘ ಪರಿವಾರದ ರೀತಿನೀತಿಗಳನ್ನು ಒಪ್ಪದೇ, ಶಾಂತಿಯುತವಾಗಿ ಭಿನ್ನಮತ ತಾಳುವುದು ದೇಶದ್ರೋಹವಾಯಿತೇ?

ಈ ಮುಂದಿನ ಮಾತನ್ನು ತಲ್ಲಣಗೊಂಡ ಅಧ್ಯಾಪಕನೊಬ್ಬನಾಗಿ ಆಡುತ್ತಿದ್ದೇನೆ. ತಮ್ಮ ವಿದ್ಯಾರ್ಥಿಗಳು ಪೊಲೀಸರಿಂದ ಯಾವುದೇ ಬಗೆಯ ಬಂಧನಕ್ಕೆ ಒಳಗಾಗುವುದು, ಅದರಲ್ಲಿಯೂ ದೇಶದ್ರೋಹದ ಆರೋಪವನ್ನು ಅನ್ಯಾಯವಾಗಿ ಎದುರಿಸುವುದು, ಅಧ್ಯಾಪಕರಾದವರಿಗೆ ಯಾವತ್ತಿಗೂ ಕರುಳು ಹಿಂಡುವ ಸಂಗತಿ.

ಯಾರೇ ಆಗಲಿ, ಆ ಹುಡುಗರಂತೆ, ತಮ್ಮ ಕೋಣೆಯಲ್ಲಿ ಕೂತು ಯಾವುದೋ ಪಾಪ್‍ ಹಾಡನ್ನು ಕೇಳುತ್ತ ನಮ್ಮ ನೆರೆಯ ದೇಶಕ್ಕೆ ಒಳ್ಳೆಯದನ್ನು ಬಯಸಿ ಎರಡು ಘೋಷಣೆ ಕೂಗುವುದು, ಅದರ ಒಂದು ಚಿಕ್ಕ ವಿಡಿಯೋವನ್ನು ತಮ್ಮ ಸ್ನೇಹಿತರ ಜೊತೆಗೆ ಹಂಚಿಕೊಳ್ಳುವುದು ದೇಶದ್ರೋಹದ ಕೆಲಸ ಹೇಗಾಗುತ್ತದೆ? ಒಂದು ವೇಳೆ, ಕಾಲೇಜಿನ ಆಡಳಿತವರ್ಗಕ್ಕೆ, ಕಾಲೇಜಿನಲ್ಲಿನ ಬೇರೆ ವಿದ್ಯಾರ್ಥಿಗಳು ಆ ಮೂವರ ಜೊತೆ  ಜಗಳವಾಡಬಹುದೆಂಬ ಆತಂಕವಿತ್ತು ಎಂದಿಟ್ಟುಕೊಳ್ಳೋಣ. ಅದನ್ನು ಆ ಕಾಲೇಜಿನ ಪ್ರಿನ್ಸಿಪಾಲರು ಮತ್ತು ಹಾಸ್ಟೆಲಿನ ವಾರ್ಡೆನ್ ಅವರು ಸುಲಭವಾಗಿ ನಿವಾರಿಸಿಕೊಳ್ಳಬಹುದಿತ್ತು: ಆ ಹುಡುಗರನ್ನು ತಮ್ಮ ಕಚೇರಿಗೆ ಕರೆಸಿ, ಗಟ್ಟಿಯಾದ ಎಚ್ಚರಿಕೆ ನೀಡಿ, ‘ಸುಮ್ಮನೆ ಓದಿಕೊಂಡು, ಚೆನ್ನಾಗಿರಿ’ ಅನ್ನಬಹುದಿತ್ತು. ಹಾಗೆಯೇ, ಉಳಿದ ವಿದ್ಯಾರ್ಥಿಗಳಿಗೂ ‘ನಿಮ್ಮ ಆ ಸಹಪಾಠಿಗಳಮೇಲೆ ಜುಲುಮೆ ಮಾಡಬೇಡಿ, ಹೊಂದಿಕೊಂಡಿರಿ, ಹೋಗಿ’ ಎಂದು ಗದರಿಸಿ, ಬುದ್ಧಿ ಹೇಳಬಹುದಿತ್ತು. ಹೆಚ್ಚಿನ ವೇಳೆ, ಪರಿಸ್ಥಿತಿಯನ್ನು ಸರಿಮಾಡಲು ಅಂಥ ಮಾತೇ ಸಾಕಾಗುತ್ತದೆ. ಕೆಲವು ವರದಿಗಳು ಹೇಳುವಂತೆ, ಆ ಕಾಲೇಜಿನವರು, ಪಾಪ, ಹಾಗೆ ಮಾಡಿದ್ದರು ಕೂಡ.

ಮೇಲೆ ಹೇಳಿದ ಆ ಅದೇ ವರದಿಗಳಲ್ಲಿರುವಂತೆ, ಆ ಮೂವರು ಹುಡುಗರ ಮೇಲೆ ಇಂಥ ಗುರುತರವಾದ ಆರೋಪ ಹೊರಿಸುವುದು ಪೊಲೀಸರಿಗೂ ಇಷ್ಟವಿರುವಂತೆ ತೋರುವುದಿಲ್ಲ.

ಪರಿಸ್ಥಿತಿ ಈಮಟ್ಟಕ್ಕೆ ಹೋಗಿರುವುದು, ಸಂಘ ಪರಿವಾರದ ಕೆಲವು ಸಂಘಟನೆಗಳವರು ಈ ಮೂವರು ವಿದ್ಯಾರ್ಥಿಗಳ ವಿರುದ್ಧ ಮಾಡಿದ ದೊಂಬಿ ಗಲಾಟೆಯಿಂದ. ಅದರ ಒತ್ತಡಕ್ಕೆ ಕಾಲೇಜಿನವರು, ಪೊಲೀಸನವರು, ಇಬ್ಬರೂ ಮಣಿಯಬೇಕಾಯಿತು. ದೊಂಬಿಯನ್ನು ನಿಭಾಯಿಸಿ, ಅದಕ್ಕೆ ಬುದ್ಧಿ ಹೇಳಬೇಕಿದ್ದ ಸರಕಾರದ ಬೇರೆ ಆಡಳಿತಗಾರರು ಕೂಡ ತಮ್ಮ ಕೆಲಸ ಮಾಡಿಲ್ಲ. ಸಂಘ ಪರಿವಾರದ ಮುಖಂಡರಂತೂ ಇಂಥ ಅನ್ಯಾಯಕ್ಕೆ ಕುಮ್ಮಕ್ಕು ಕೊಟ್ಟಂತೆಯೇ ಕಾಣುತ್ತದೆ: ದೊಂಬಿಯು ನ್ಯಾಯಾಲಯದ ಅಂಗಳದಲ್ಲಿಯೇ ಆ ಹುಡುಗರ ಮೇಲೆ ದಾಳಿಮಾಡಿದೆ. ದಾಳಿ ಮಾಡಿದವರ ಮೇಲೆ ಪೊಲೀಸರು ಯಾವುದೇ ಕ್ರಮ ಕೈಗೊಂಡಂತೆ ಕಾಣುವುದಿಲ್ಲ.

ಆ ಮೂವರು ಹುಡುಗರು ನಿರಂತರ ಹಿಂಸೆಯಿಂದ ಕಂಗಾಲಾಗಿರುವ ತಮ್ಮ ನಾಡನ್ನು ಬಿಟ್ಟು ಪ್ರಧಾನ ಮಂತ್ರಿಗಳ ಒಂದು ವಿಶೇಷ ಕೋಟಾದ ಅಡಿಯಲ್ಲಿ ಸಂಪೂರ್ಣ ಉಚಿತವಾದ ವಿದ್ಯಾಭ್ಯಾಸ ಪಡೆದುಕೊಳ್ಳಲು ದೂರದ ಹುಬ್ಬಳ್ಳಿಗೆ ಬಂದವರು. ಅಂಥ ತಮ್ಮ ಮಕ್ಕಳ ವಿಷಯದಲ್ಲಿ ಅವರ ತಂದೆತಾಯಂದಿರಿಗೆ ಎಷ್ಟು ಸಂತೋಷವಾಗಿರಬೇಡ?! ಈಗ ಆ ತಂದೆತಾಯಂದಿರ ಪಾಡೇನು, ಆ ಮಕ್ಕಳ ಪಾಡೇನು? ಆ ಮಕ್ಕಳು ಅಚಾತುರ್ಯದ ಕೆಲಸ ಮಾಡಿದ್ದಾರೆ, ಹಾದಿ ತಪ್ಪಿದ್ದಾರೆ ಅನ್ನಿಸಿದರೆ, ಅಧ್ಯಾಪಕರು ಮತ್ತು ಸುತ್ತಲಿನ ಸಮಾಜದ ಹಿರಿಯರು ಆ ಹುಡುಗರ ತಂದೆತಾಯಂದಿರೊಡಗೂಡಿ ಅನುನಯದ ಮಾತು, ಗದರಿಕೆಯ ಉಗುರಿನಿಂದ ಪರಿಹರಿಸಬಹುದಾದ್ದಕ್ಕೆ ಕರಾಳ ಕಾನೂನಿನ ಕೊಡಲಿ ಹೊಡೆತವೇಕೆ?

ವಿವೇಕವಿಲ್ಲದ, ದಮನಕಾರಿಯಾದ ಇಂಥ ಬಂಧನಗಳಿಂದಾಗಿ, ಕಾಶ್ಮೀರ ಕಣಿವೆಯ ಜನರ ನಂಬಿಕೆಯನ್ನು ಸಂಪೂರ್ಣ ಕಳೆದುಕೊಂಡಿರುವ ನಮ್ಮ ಕೇಂದ್ರ ಸರಕಾರವು ಅದನ್ನು ಎಂದಾದರೂ ಮತ್ತೆ ಪಡೆಯುವ ಎಲ್ಲ ದಾರಿಗಳನ್ನು ಮುಚ್ಚಿಹಾಕಿದೆ.

ಮಗುವಿನ ಮೇಲೆ ಬ್ರಹ್ಮಾಸ್ತ್ರದ ಪ್ರಯೋಗ

ಈ ಕೆಳಗಿರುವ ಮಾತನ್ನು ಒಬ್ಬ ತಂದೆಯಾಗಿ ಬರೆಯುತ್ತಿದ್ದೇನೆ.

ಕಾಶ್ಮೀರದ ಆ ಮೂವರು ಹುಡುಗರಮೇಲೆ ಮೊಕದ್ದಮೆ ಹೊರಿಸಲಾಗಿರುವುದರ ಬೆನ್ನಿಗೇ ಬೆಂಗಳೂರಿನ ಅಮೂಲ್ಯಾ ಲಿಯೊನಾ ಪ್ರಕರಣ ನಡೆದಿದೆ. ಅಮೂಲ್ಯಳು, ಮತ್ತೊಬ್ಬರು ಸಂಘಟಿಸಿದ ಸಭೆಯಲ್ಲಿ, ಸಭೆಯ ಸಂಘಟಕರಿಗೆ ಯಾವ ಸೂಚನೆಯನ್ನೂ ನೀಡದೆ, ವೇದಿಕೆಯೇರಿ ಆ ಬಗೆಯ ಘೋಷಣೆ ಕೂಗಿದ್ದು ತಪ್ಪೆನ್ನಬಹುದೇ ಹೊರತು, ಆ ಹುಡುಗಿ ಹೊಂದಿರುವ ಆಶಯಗಳೇ ತಪ್ಪು ಎಂದು ಸಾರಾಸಗಟು ಹೇಳಲು ಬರುವುದಿಲ್ಲ. ಪಾಕಿಸ್ತಾನ್ ಜ಼ಿಂದಾಬಾದ್ ಎಂದು ಕೂಗುವುದರ ಜೊತೆಗೆ, ಹಿಂದೂಸ್ತಾನ್ ಜ಼ಿಂದಾಬಾದ್ ಎಂದು ಕೂಡ ಕೂಗಿದಳು ಅವಳು. ಅರ್ಥಾತ್, ಎರಡೂ ದೇಶಗಳು ಚೆನ್ನಾಗಿರಲಿ, ಪರಸ್ಪರ ಸ್ನೇಹದಿಂದಿರಲಿ ಅನ್ನುವುದೇ ಅವಳ ಆಶಯವಲ್ಲವೇ?

ಅಮೂಲ್ಯಳ  ದುಡುಕಿನ ವರ್ತನೆಯಿಂದ ಗಾಬರಿಗೊಂಡ ಆ ಸಭೆಯ ಸಂಘಟಕರು ಮತ್ತು ಸಭಿಕರು ಪಾಕಿಸ್ತಾನ್ ಮುರ್ದಾಬಾದ್ (ಪಾಕಿಸ್ತಾನ ಸಾಯಲಿ, ನಾಶವಾಗಲಿ) ಎಂದು ಕೂಗಿ, ತಮ್ಮ ಸ್ವದೇಶಪ್ರೇಮ ಸಾರಬೇಕಾಯಿತು. ನಾವು ನಮ್ಮ ನೆರೆಯ, ಸೋದರ ದೇಶವೊಂದು ಹಾಳಾಗಲಿ ಎಂದು ಕೂಗಿ ನಮ್ಮ ಸ್ವದೇಶಪ್ರೇಮವನ್ನು ಸಾಬೀತುಮಾಡಬೇಕಾದ್ದು ಎಂಥ ದುಃಖದ ವಿಷಯವಲ್ಲವೇ?

ಆದರೆ, ಪ್ರಭುತ್ವವು ಹತ್ತೊಂಭತ್ತರ ವಯಸ್ಸಿನ ಚಿಕ್ಕವಳು ಅಮೂಲ್ಯಳ ದುಡುಕಿನ ಆ ವರ್ತನೆ ಮತ್ತು ಸಣ್ಣ ಮೂರ್ಖತನಕ್ಕೆ ಪ್ರತಿಯಾಗಿ ಅವಳಮೇಲೆ ಎಂಥೆಂಥ ಭಯಂಕರ ಕಾಯ್ದೆಗಳ ಅನ್ವಯ ಮೊಕದ್ದಮೆ ಹೂಡಿದೆ! ಮಗು ಅದು. ನಾಲ್ಕು ಮಾತು ಬೈದು, ಒಂದಷ್ಟು ಬುದ್ಧಿಮಾತು ಹೇಳಿ, ಕೌನ್ಸೆಲಿಂಗ್ ಮಾಡಿ ಬಿಟ್ಟುಬಿಡಬೇಕಿತ್ತು ಅದನ್ನು. ಬದಲಾಗಿ, ಮಗುವಿನಮೇಲೆ ಬ್ರಹ್ಮಾಸ್ತ್ರದ ಪ್ರಯೋಗಮಾಡುತ್ತಿದ್ದಾರೆ.  ಅದಂತೂ ಅನೃತ, ಅಧರ್ಮ; ಮಹಾಪಾಪದ ಕೆಲಸ.

ಅಮೂಲ್ಯಳ ಬಂಧನವಾದ ದಿನದಂದೇ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಅವಳ ತಂದೆಯ ಮನೆಯಮೇಲೆ ಪುಂಡರ ದಾಳಿ ನಡೆದಿದೆ. ಅವರ ಮನೆಯ ಕಿಟಕಿ ಗಾಜುಗಳು, ಮನೆಯ ಪೌಳಿಯಲ್ಲಿನ ವಸ್ತುಗಳು ಚೂರುಚೂರಾಗಿವೆ. ಬಳಿಕ, ಸಂಘ ಪರಿವಾರದ ಯುವಕರು ಹಲವರು ಅಮೂಲ್ಯಳ ತಂದೆಯನ್ನು ಬೆದರಿಸಿ ಆತ ತನ್ನ ಮಗಳ ವಿರುದ್ಧ ಕಟುವಾದ ಮಾತಾಡುವಂತೆ ಮಾಡಿದ್ದಾರೆ. ಅದೆಲ್ಲವನ್ನೂಒಳಗೊಂಡಿರುವ ವಿಡಿಯೋವನ್ನು ಅವರು ರಾಜಾರೋಷವಾಗಿ ಹಂಚಿಕೊಂಡಿದ್ದಾರೆ. ಅದು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಟಿವಿ ವಾಹಿನಿಗಳಲ್ಲಿ ಬಿತ್ತರಗೊಂಡಿದೆ. ಅದರಲ್ಲಿ ತನ್ನ ಸುತ್ತ ಯಮದೂತರಂತೆ ನಿಂತು ಒತ್ತಾಯಮಾಡುತ್ತಿರುವ ಆ ಜನರಿಂದ ಆ ತಂದೆ ಭಯಭೀತನಾಗಿ ತನ್ನ ಮಗಳ ವಿರುದ್ಧ ಮಾತನಾಡುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಇಷ್ಟಾಗಿಯೂ ಆ ದೌರ್ಜನ್ಯವೆಸಗಿದವರ ಮೇಲೆ ಪ್ರಭುತ್ವ ಮತ್ತು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಆ ಚಿಕ್ಕಹುಡುಗಿಯಮೇಲೆ ಮಾತ್ರ ರಾಕ್ಷಸೀಯ ಕಾಯಿದೆಯೊಂದರ ಗದಾಪ್ರಹಾರವಾಗಿದೆ.

ವಿವೇಕ, ಹೃದಯವಂತಿಕೆ ಬೇಕಿದೆ

ಕರ್ನಾಟಕ ಸರಕಾರವು ಆ ಮೂವರು ಹುಡುಗರಮೇಲೆ, ಅಮೂಲ್ಯಳಮೇಲೆ, ಮೈಸೂರಿನಲ್ಲಿ ಪ್ರತಿಭಟಿಸಿದ ನಳಿನಿ ಬಾಲಕುಮಾರ್ ಮೇಲೆ ಹಾಗೂ ಬೀದರಿನ ಶಾಹೀನ್ ಶಾಲೆಯ ಪ್ರಕರಣದ ಆ ಮಗುವಿನ ತಾಯಿ ಹಾಗೂ ಅಲ್ಲಿನ ಉಳಿದ ಆರೋಪಿಗಳ ಮೇಲೆ ಹೂಡಿರುವ ಮೊಕದ್ದಮೆಗಳನ್ನು ವಾಪಸು ತೆಗೆದುಕೊಳ್ಳುವ ವಿವೇಕ ಮತ್ತು ಹೃದಯವಂತಿಕೆ ತೋರಲಿ.

ಜೊತೆಗೆ, ‘ದೇಶದ್ರೋಹಿಗಳು, ಭಯೋತ್ಪಾದಕರು, ಶಾಂತಿಭಂಗ ಉಂಟುಮಾಡುವವರು, ದೇಶದ ಸುರಕ್ಷೆತೆಗೆ ಧಕ್ಕೆ ತರುವವರು, ಅರ್ಬನ್ ನಕ್ಸಲ್‍ಗಳು, ಟುಕ್‍ಡೇ ಟುಕ್‍ಡೇ ಗ್ಯಾಂಗಿನವರು’ ಮುಂತಾಗಿ, ಘನಘೋರವಾದ ಆಪಾದನೆಗಳನ್ನು ಬೇಕಾಬಿಟ್ಟಿಯಾಗಿ ಹೊರಿಸಿ, ಕಾನೂನನ್ನು ಪ್ರಜಾಪೀಡನೆಗೆ ಬಳಸುತ್ತಿರುವ ಕೇಂದ್ರ ಸರಕಾರವನ್ನು ಹಾಗೂ ಅದರ ಹಾದಿಯನ್ನೇ ತುಳಿಯುತ್ತಿರುವ ರಾಜ್ಯ ಸರಕಾರಗಳನ್ನು, ವಿವಿಧ ರಾಜ್ಯಗಳ ಉಚ್ಚ ನ್ಯಾಯಾಲಯಗಳು, ಹಾಗೂ ದೇಶದ ಸರ್ವೋಚ್ಚ ನ್ಯಾಯಾಲಯವು, ಕಟುವಾಗಿ ಪ್ರಶ್ನಿಸಿ, ಕಾನೂನಿನ ದುರುಪಯೋಗವನ್ನು ತಡೆಯಲಿ; ಜನರನ್ನು, ದೇಶವನ್ನು, ಸದ್ಧರ್ಮವನ್ನು ಕಾಯಲಿ.

********

(ಲೇಖಕರು ಕನ್ನಡದ ಕವಿ, ನಾಟಕಕಾರ ಮತ್ತು ಖ್ಯಾತ ರಂಗನಿರ್ದೇಶಕರು. ಅಭಿಪ್ರಾಯಗಳು ವೈಯಕ್ತಿಕವಾದವು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...