Homeಡೇಟಾ ಖೋಲಿಕೆಟ್ಟ-ಒಳ್ಳೆ ಸರ್ವಾಧಿಕಾರ ಅನ್ನೋದು ಇಲ್ಲ. ಅಮಾಸಿ ಅಮಾಸಿನ, ಹುಣಿಮೆ ಹುಣಿಮಿನ

ಕೆಟ್ಟ-ಒಳ್ಳೆ ಸರ್ವಾಧಿಕಾರ ಅನ್ನೋದು ಇಲ್ಲ. ಅಮಾಸಿ ಅಮಾಸಿನ, ಹುಣಿಮೆ ಹುಣಿಮಿನ

ಹೊಸ ಸರಕಾರ ಬಂದ ಮ್ಯಾಲೆ ಪಂಥ ಪ್ರಧಾನ ಸೇವಕರು ಇಲ್ಲ ಅನ್ನುವವರನ್ನ ದೂರ ಮಾಡಿ ಹೌದು ಅನ್ನುವರನ್ನು ಮಾತ್ರ ಹತ್ತಿರ ಇಟ್ಟುಕೊಂಡಾರ. ಟೀಕಾಕಾರರಿಗೆ ಜಾಗ ಇಲ್ಲ. ಭಜನಾ ಮಂಡಳಿಗಳಿಗೆ ಮಾತ್ರ ಜಾಗ ಇದೆ.

- Advertisement -
- Advertisement -

ಬಿಹಾರ ಸಿಂಡರೋಂ ಅಂತ ಒಂದು ಅದ.

ಅದು ಎನಪಾ ಅಂದ್ರ ಬಿಹಾರದಾಗ ಇರೋ ಬುದ್ಧಿವಂತ ಮನುಷ್ಯರು ಸಣ್ಣವರಿದ್ದಾಗ ಬಹಳ ಕಷ್ಟಪಟ್ಟು ಓದಿ, ಪರೀಕ್ಷಾ ಪಾಸು ಮಾಡಿ, ಡಾಕ್ಟರು, ಇಂಜಿನಿಯರು, ಐ.ಎ.ಎಸ್ ಅಧಿಕಾರಿ ಆಗತಾರ. ಅಷ್ಟೆಲ್ಲಾ ಭಾನಗಡಿ ಯಾಕಪಾ ಅಂದ್ರ ಬಿಹಾರದಿಂದ ಹೊರಗ ಬೀಳಲಿಕ್ಕೆ.

ಅಲ್ಲಿಂದ ಹೊರಗಬಿದ್ದವರು ಬೆಂಗಳೂರಿಗೆ ಬಂದು “ಥೂ ಈ ಟ್ರಾಫಿಕ್’, ಈ ಹೊಲಸು ನೀರು, ಗಲೀಜು ಮಾರ್ಕೆಟ್,’ ಅಂತ ಬೈತಾರ ಅದು ಬ್ಯಾರೆ ವಿಷಯ.
ಇದು ಯಾಕ ನೆನಪು ಆತಪಾ ಅಂದ್ರ ಮೊನ್ನೆ ನಮ್ಮ ಕಾಕು ಅವರ ಮನಿಯೊಳಗ ಈ ಸುದ್ದಿ ಬಂತು.

ನಾನು, ನಮ್ಮ ಮನಿಯವರು ಕೂಡಿ ಬಾಜು ಮನಿ ಕಾಕು ಅವರ ಮನಿಗೆ ಹೋಗಿದ್ದವಿ. ಅವರು ಮತ್ತು ಅವರ ಗಂಡ ಕೂಡುಮನಿ ಕಾಕಾ ಇಬ್ಬರೂ ಒಂದು ಕೂಡುಮನಿ (ಅಪಾಟ್ಮೆಂಟ್)ದೊಳಗ ಇರ್ತಾರ.

ಅವರು ಮೊನ್ನೆ ಇನ್ನಾ ಅಮೆರಿಕ ಪ್ರವಾಸ ಮುಗಿಸಿ ಬಂದಿದ್ದರು. ಅಲ್ಲಿ ಇರೋ ತಮ್ಮ ಮಗ – ಸೊಸಿ, ಮಗಳು – ಅಳಿಯನ ಭೇಟಿಯಾಗಿ ಬಂದಿದ್ದರು. ಅಲ್ಲಿಂದ ಬಂದು ಒಂದು ತಿಂಗಳು ಆದರೂ ಕೂಡ ನ್ಯೂಯಾರ್ಕಿನ ಥಂಡಿ, ಅಮೆರಿಕನ್ ಇಂಗ್ಲೀಷ್‌ನ ಒತ್ತುಮಾತು, ಹಾಗೂ ಅಲ್ಲಿನ ಸ್ವಚ್ಛ ರಸ್ತೆಗಳ ಗುಂಗಿನಲ್ಲೇ ಇದ್ದರು.

“ಇಲ್ಲೆ ಎಲ್ಲಾ ಕಡೆ ಹೊಲಸು, ಕಷ್ಟಪಟ್ಟು ಓದಿದ ಹುಡುಗರಿಗೆ ಮರಿಯಾದಿ ಇಲ್ಲ, ಮೀಸಲಾತಿಯೊಳಗ ಸಿಕ್ಕು ಸಾಯಬೇಕು. ಒಳ್ಳೆ ನೌಕರಿ ಇಲ್ಲ, ಏನಿಲ್ಲ, ಅದಕ್ಕ ನಮ್ಮ ಹುಡುಗರಿಗೆ ನಾ ಹೈಸ್ಕೂಲ್‌ದಾಗ ಹೇಳಿಬಿಟ್ಟೆ. ನೋಡ್ರಿ ಇಲ್ಲೆ ಛಲೋ ಓದರಿ, ಎಷ್ಟು ಲಗೂ ಆಗತದ ಅಷ್ಟು ಲಗೂ ಅಮೆರಿಕ, ಯೂರೋಪು, ಆಸ್ಟ್ರೇಲಿಯಾ ಅಂತ ಎಲ್ಲೇರ ಹೋಗಿ ಬಿಡರಿ. ಅವರು ನನ್ನ ಮಾತು ಕೇಳಿದರು, ಶಾಣೆ ಆದರು” ಅಂತ ಚಾಕಲೆಟ್ ಕಾರ್ಖಾನೆಯ ಒಳಗೆ ಹೋದ ಚಾರ್ಲಿಯಂತೆ ಖುಷಿ ಸೂಸಿದರು.

ಅವರು ಅಲ್ಲಿಗೆ ಹೋದ ಮ್ಯಾಲೆ ಅಲ್ಲೇ ಇರೋ ಹುಡುಗ ಹುಡುಗಿ ನೋಡಿ ಅವರ ಲಗ್ನ ಮಾಡಿದಿವಿ. ಅವರು ಅಲ್ಲೇ ಆರಾಮ ಇದ್ದಾರ ಅಂತ ಕಾಕಾ ಅಂದ್ರು.

“ಏನು ಆರಾಮೋ ಏನೋ ತಮ್ಮಾ? ಇಬ್ಬರಿಗೂ ಸಕ್ಕರೆ ರೋಗ. ಇವರಿಗೆ ಸಿಟ್ಟು ಜಾಸ್ತಿ ಆಗಿ ಆಗಿ ಬಿ. ಪಿ ಬ್ಯಾರೆ ಬಂದದ. ಒಂದು ಬ್ಲಡ್ ಟೆಸ್ಟ್ ಮಾಡಸಬೇಕು ಅಂದ್ರ ಯಾರರ ಹುಡುಗರ ಮರ್ಜಿ ಹಿಡಿಬೇಕು. ಅವಲಕ್ಕಿ ಖಾಲಿ ಆದರ ಕಿರಾಣಿ ಅಂಗಡಿಯವನಿಗೆ ಫೋನು ಮಾಡಿ ಕಾಯಬೇಕು. ಹಿಂಗ ನಡದದ ನೋಡು,” ಅಂತ ಕಾಕು ನಿಟ್ಟುಸಿರುಬಿಟ್ಟರು.

ಅಷ್ಟೊತ್ತಿಗೆ ನೀರಿಕ್ಷೆಯಂತೆ ಮಾತು ಹಿಂದೂಸ್ತಾನದ ರಾಜಕಾರಣಕ್ಕೆ ಹೊರಳಿತು. ಅಲ್ಲೋ ನಮ್ಮ ಜನಾ ಕೊರೊನಾ ಬಂದದ ಮಾಸ್ಕ್ ಹಾಕ್ಕೊಂಡು ಓಡಾಡರಿ ಅದ್ರ ಕೇಳೋದೇ ಇಲ್ಲ. ಬಜಾರ್‌ದಾಗ ಹೋದರ ಒಬ್ಬರ ಮೈ ಮ್ಯಾಲೆ ಒಬ್ಬರು ಬೀಳತಾರ. ಯಾರಿಗೂ ಶಿಸ್ತು ಅನ್ನೋದು ಇಲ್ಲ. ಛೇ ಛೇ ಅಂದ್ರು ಕಾಕಾ.

“ಅದಕ್ಕ ನೋಡು ನಮಗ ಸರ್ವಾಧಿಕಾರಿನ ಬೇಕು. ಪ್ರಜಾಪ್ರಭುತ್ವ ಎಲ್ಲಾ ನಡಿಯೋದಿಲ್ಲ. ಈ ಚುನಾವಣೆ, ಸಂಸತ್ತು, ಕ್ಯಾಬಿನೇಟು ಎಲ್ಲಾ ಕೆಲ್ಸಕ್ಕ ಬಾರದ ಮಾತು, ಗೈರು ಉಪಯೋಗಿ,” ಅಂದ್ರು.

ಈ ಕೂಡುಮನಿ ಕಾಕಾಗಳು ಬ್ಯಾರೆ ಎಲ್ಲಾ ವಿಷಯ ಮಾತಾಡೋವಾಗ ಸಹಜ ಇರ್ತಾರ. ಆದರ ರಾಜಕೀಯ ಬಂತು ಅಂದ್ರ ಡಿಸ್ಕವರಿ ಚಾನಲ್‌ನ ಪ್ರಾಣಿ ಬೇಟೆ ಆಗುವಾಗ ಮಾಡೋಹಂಗ ಆಗತಾರ. ಅವರ ದನಿ ಜೋರ ಆಗಲಿಕ್ಕೆ ಶುರುಆಗತದ. ಅವರ ಕೈ ಉಗುರು ಹೊರಗ ಬರಲಿಕ್ಕೆ ಹತ್ತತಾವು. ಅವರ ಕಣ್ಣ ಪಾಪೆ ದೊಡ್ಡವು ಆಗಲಿಕ್ಕೆ ಶುರು ಆಗತಾವು. ಹಿಂದ ರಾಮ್ಸೆ ಬಂಧುಗಳ ಹಳೆ ಹಾರರ ಹಿಂದಿ ಪಿಚ್ಛರನ ಹಿನ್ನೆಲೆ ಸಂಗೀತ ಕೇಳಲಿಕ್ಕೆ ಶುರು ಆಗತದ.

“ನಾನು ಹೋಗಲಿ ಬಿಡರಿ ಕಾಕಾ. ರಾಜಕೀಯ ಮಾತಾಡಿ ಚಹಾದ ರುಚಿ ಯಾಕ ಕೇಡಿಸಿಕೊಳ್ಳಬೇಕು,” ಅಂತ ನಕ್ಕೆ. ಅಗದೀ ಖರೆ ಮಾತು ಹೇಳಿದಿ ನೋಡಪಾ. ಇವರಿಗೆ ನಮ್ಮ ಅಳಿಯ ಒಂದು ಶಾಣೆ ಫೋನು ಕೊಡಿಸಿ ಬಿಟ್ಟಾನ. ಅದರಾಗ ಆ ‘ಏನು ನಡದದ’ (ವಾಟಸಪ್ಪು ) ಬ್ಯಾರೆ ಹಾಕಿ ಕೊಟ್ಟಾನ. ಆವಾಗಿನಿಂದಾ ಬರೆ ಅದರಾಗ ಇರ್ತಾರ. ಯಾರ ಬಂದರೂ ಬರೆ ರಾಜಕೀಯದ ಮಾತು. ನನಗ ಅಂತೂ ಸಾಕಾಗಿ ಬಿಟ್ಟದ. ಅಂತ ಅಂದ್ರು.

ನಾನು ಹೋಗಲಿ ಬಿಡರಿ. ಅದು ಹೊಸಾದು ಅಂತ ಅದನ್ನ ನೋಡತಾರ. ಒಂದು ದಿವಸ ಅದು ಸಹಿತ ಬೇಜಾರು ಆಗಿ ಬಿಟ್ಟುಬಿಡತಾರ ಅಂದೆ.

ಒಂದು ಕೆಲಸ ಮಾಡ್ರಿ. ಈ ವರ್ಷ ಅಮೆರಿಕ ಹೋದಂಗ ಮುಂದಿನ ವರ್ಷ ಉತ್ತರ ಕೊರಿಯಾ ಹೋಗರಿ. ಅಲ್ಲೇ ಮಜಾ ಇರ್ತದ ಅಂದೆ. ನಮ್ಮ ಗೆಳೆಯ ಇದ್ದಾನ. ಕಿಮ್ ಅಂತ. ಅವನ ಅಡ್ರೆಸ್ ಕೊಡತೆನಿ. ಅಲ್ಲಿ ಸ್ವಲ್ಪ ದಿವಸ ಇದ್ದು ಬರ್ರಿ ಅಂದೆ.

“ಅಲ್ಲೇ ಏನು ಮಜಾಪಾ ಅಂತಾದು” ಅಂದ್ರು ಕಾಕು.

“ಅಲ್ಲೇ ತಿಂಗಳದಾಗ ಎಲ್ಲರ ಮನಿಗೆ ಎರಡು ಸರೆ ಕೇಶಕರ್ತನ ನಿರೀಕ್ಷಕರು (ಹೇರ್‌ಕಟ್ ಇನ್ಸ್‌ಪೆಕ್ಟರ್) ಬರ್ತಾರ. ಅಲ್ಲಿನ ಕಾನೂನು ಪ್ರಕಾರ ಗಂಡಸರು 15 ರೀತಿ ಕಟ್ ಮಾಡಿಸಿಕೋಬೇಕು. ಹೆಣ್ಣು ಮಕ್ಕಳಿಗೆ ವಿನಾಯಿತಿ ಅದ. ಅವರು 16 ರೀತಿ ಮಾಡಿಸಿಕೊಳ್ಳಬೇಕು. ತಲಿ ಮ್ಯಾಲೆ ಕೂದಲು ಇಲ್ಲಾ ಅನ್ನೋ ಖಲವಾಟ ಗಂಡಸುರು ಪರಿಮಿತಿ ಪಡೆದ ವಿಗ್ ಹಾಕಿಸಿಕೊಳ್ಳಬೇಕು,” ಅಂತ ಅಂದೆ ನಾನು.

Image courtesy: MarketWatch

ಹೋಗೋ ಮಾರಾಯ ಎನರ ಸುಳ್ಳು ಸುಳ್ಳು ಹೇಳಬ್ಯಾಡ ಅಂತಅಂದ್ರು. ಅಯ್ಯೋ ಇಲ್ಲಾ. ಇಲ್ಲೇ ನೋಡ್ರಿ ಬೇಕಾರ ಅಂತ ಹೇಳಿದೆ.

ಅಲ್ಲೇ ಇನ್ನೊಂದು ಕಾನೂನು ಆದ. ರಾಜಕೀಯ ಅಪರಾಧಿಗಳಿಗೆ ಬೇಗ ಬೇಗ ವಿಚಾರಣೆ, ಬೇಗ ಬೇಗ ಶಿಕ್ಷೆ. ಅವರಿಗೆ ಜಾಮೀನು ಇಲ್ಲ, ಬಿಡುಗಡೆ ಇಲ್ಲ. ಅವರಿಗೆ ವಿಶೇಷ ಜೈಲು. ಅಲ್ಲೇ ಅವರ ಹತ್ತರ ಕಠಿಣ ಕೂಲಿ ಕೆಲಸ ಮಾಡಿಸಿ ಊಟಕ್ಕ ಹಾಕತಾರ. ಇನ್ನೂ ಮಜಾ ಏನು ಅಂದ್ರ ಯಾವ ರಾಜಕೀಯ ಹೋರಾಟಗಾರರು ಒಬ್ಬಂಟಿ ಆಗಬಾರದು ಅಂತ ಹೇಳಿ ಅವರ ಅಪ್ಪ, ಮಕ್ಕಳು ಎಲ್ಲರನ್ನೂ ಅವರ ಜೊತೆಗೆ ಜೈಲಿಗೆ ಹಾಕತಾರ.

ಒಬ್ಬ ಮನುಷ್ಯನಿಗೆ ಕ್ರಾಂತಿಕಾರಿ ಐಡಿಯಾ ಬಂದೇತಿ ಅಂದ್ರ ಅದಕ್ಕ ಅವರ ಅಪ್ಪ ಕಾರಣ ಇರತಾನ. ಅದಕ್ಕ ಅವ ಒಳಗ ಇನ್ನೂ, ತನ್ನ ಮಗನ ಮ್ಯಾಲೆ ಕ್ರಾಂತಿಕಾರಿ ಪ್ರಭಾವ ಬೀರಿರಬಹುದು. ಅದಕ್ಕ ಅವನಿಗೂ ಜೈಲು. ಅವರು ಎಷ್ಟು ಸಣ್ಣಾವ್ರು ಇದ್ದರೂ ಸರಿ, ಜೈಲಿಗೆ ಕಳಸೋದ. ಐದಾರು ವರ್ಷದ ಮಕ್ಕಳಿಗೆ ಜೈಲಿಗೆ ಹಾಕೋದು ಅಲ್ಲೇ ಸಾಮಾನ್ಯ ಅಂತ ಅಂದೆ. ಅಯ್ಯೋ ಅಷ್ಟು ಸಣ್ಣ ಹುಡುಗರಿಗೆ ಯಾಕ? ಅಂತ ಯಾರೋ ಕೇಳಿದಾಗ ಹಾವಿಗೆ ಹುಟ್ಟಿನಿಂದ ವಿಷ ಇರ್ತದ ಅಂತ ಅಲ್ಲಿನ ಕಿಮ್ ಅನ್ನೋ ನಾಯಕರು ಹೇಳಿದರು.

ಅದಕ್ಕ ಆ ಜೈಲಿಗೆ 14 ನೆ ನಂಬರ್ ಕ್ಯಾಂಪ್ ಅಂತ ಹೆಸರು. ಅದಕ್ಕ ಕೆಲವರು ಜೋಕು ಮಾಡತಾರ. ಉತ್ತರ ಕೊರಿಯಾದಾಗ ಇರೋದಕ್ಕಿಂತ ಆ ಕ್ಯಾಂಪ್‌ದಾಗ ಇರಬೇಕು. ಯಾಕ್ ಅಂದ್ರ ಇಡೀ ದೇಶದಾಗಿನ ಸಾಹಿತಿಗಳು, ಕವಿಗಳು, ಚಿತ್ರ ಕಲಾವಿದರು, ಚಲನಚಿತ್ರ ನಿರ್ದೇಶಕರು, ಸಂಗೀತಕಾರರು, ಕಾಲೇಜು ಶಿಕ್ಷಕರು, ಎಲ್ಲರೂ ಅಲ್ಲೇ ಇದ್ದಾರ, ಅಂತ.

ನನ್ನ ಮಾತು ಮುಂದುವರೆಯಿತು. ಅದು ಕೆಟ್ಟ ಸರ್ವಾಧಿಕಾರ. ನಮಗ ಬೇಕಾಗಿದ್ದು ಒಳ್ಳೆ ಸರ್ವಾಧಿಕಾರ. ಅಂತ ಅಂದ್ರು ಕಾಕಾ. ಅದರಾಗ ಒಳ್ಳೇದು – ಕೆಟ್ಟದ್ದು ಅನ್ನೋದು ಇರೋದಿಲ್ಲ ಕಾಕಾ, ಅಮಾಸಿ ಅಮಾಸಿನ, ಹುಣಿಮಿ ಹುಣಿಮಿನ ಅಂತ ಅಂದೆ.

ಈ ಮಾತು ಕತೆ ಯಾವಾಗ ಮುಗಿತದೋ ಅಂತ ಕಾಕು ಕಾಯತಾ ಕೂತಿದ್ದರು.

ನೋಡ್ರಿ, ಮಾನವ ಸ್ವಾತಂತ್ರ ಸೂಚಿ – 19 ಅಂತ ಒಂದು ವರದಿ ಬಂದದ. ಅದರ ಪ್ರಕಾರ ಎರಡು ನೂರು ದೇಶದಾಗ ಭಾರತ 94 ನೆ ಸ್ಥಾನದಾಗ ಆದ. ಏಷಿಯಾದ ಅನೇಕ ದೇಶಗಳು ಇದಕ್ಕಿಂತ ಉನ್ನತ ಸ್ಥಾನದಾಗ ಅದಾವು ಅಂತ ಹೇಳಿದೆ.

ನಮ್ಮದು ಸ್ವತಂತ್ರ ದೇಶ. ಇದು ಮೊದಲಿನ ಹತ್ತು- ಇಪ್ಪತ್ತುರ ಒಳಗ ಇರಬೇಕಾಗಿತ್ತು ಅಲ್ಲಾ, ಅಂತ ಕಾಕಾ ಮಹಾಭಾರತದ ದ್ರತರಾಷ್ಟ್ರನ ಗತೆ ಒಂದು ಘನ ಗಂಭೀರ ಹೇಳಿಕೆಕೊಟ್ಟರು.

ಎಲ್ಲೆ ಇರ್ತದ ಕಾಕಾ, ಹೊಸ ಸರಕಾರ ಬಂದ ಮ್ಯಾಲೆ ಪಂಥ ಪ್ರಧಾನ ಸೇವಕರು ಇಲ್ಲ ಅನ್ನುವವರನ್ನ ದೂರ ಮಾಡಿ ಹೌದು ಅನ್ನುವರನ್ನು ಮಾತ್ರ ಹತ್ತಿರ ಇಟ್ಟುಕೊಂಡಾರ. ಟೀಕಾಕಾರರಿಗೆ ಜಾಗ ಇಲ್ಲ. ಭಜನಾ ಮಂಡಳಿಗಳಿಗೆ ಮಾತ್ರ ಜಾಗ ಇದೆ. ಸರಕಾರ ಅನ್ನೋದು ಮಿತಿಮೀರಿದ ಅಧಿಕಾರ ಪಡೆದುಕೊಂಡುಬಿಟ್ಟದ. ಎಲ್ಲಾ ರೀತಿಯ ಚಳುವಳಿ, ಹೋರಾಟಗಳನ್ನ ಹತ್ತಿಕ್ಕಿಬಿಟ್ಟದ.

ನೂರಾರು ಮಂದಿ ಚಿಂತಕರನ್ನ ವರ್ಷಗಟ್ಟಲೆ ವಿಚಾರಣೆ ಇಲ್ಲದೆ, ನ್ಯಾಯಾಲಯದ ಮುಂದ ನಿಲ್ಲಿಸದೆ, ನಿಲ್ಲಿಸಿದರೂ ಅವರಿಗೆ ಬೇಲು ಸಿಗದಂತೆ ನೋಡಿಕೊಂಡಾರ. ಅವರ ಅಪ್ಪ- ಮಕ್ಕಳು ಎಲ್ಲರನ್ನೂ ಕರಕೊಂಡು ಹೋಗಿ 14 ನೆ ನಂಬರ್ ಕ್ಯಾಂಪ್‌ಗೆ ಕರಕೊಂಡು ಹೋಗೋದು ಒಂದು ಬಾಕಿ ಐತಿ ನೋಡ್ರಿ, ಅಂದೆ.

ಹಂಗೂ ಆಗಬಹುದು ಅಂತಿಯೇನು, ಅಂದ್ರು ಕಾಕು. ಯಾರಿಗೆ ಗೊತ್ತಪಾ ಮಾರಾಯ. ಯಾರಿಗೂ ಅಗತ್ಯಕ್ಕಿಂತ ಜಾಸ್ತಿ ಅಧಿಕಾರ ಕೊಡಬಾರದು ಅಂತ ಅಂತ ಸಣ್ಣ ದನಿಯೊಳಗ ಅಂದುಕೊಂಡರು. ಅವರು ಓಣಿಯೊಳಗ ಓಡಾಡಿ ಬೆಳದವರು. ಎಲ್ಲಕ್ಕಿಂತ ಮುಖ್ಯ ಅಂದ್ರ ಅವರ ಫೋನಿನ ಒಳಗ ’ಎನ್ ನಡದದ’ ಅನ್ನೋದು ಇಲ್ಲಾ!


ಇದನ್ನೂ ಓದಿ: ಈ ಜಿಡಿಪಿ ಅಂದರೆ ಏನಪಾ? : ಡೇಟಾಮ್ಯಾಟಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...