Homeಮುಖಪುಟಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ "ರುದ್ರ ನರ್ತನ"

ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

- Advertisement -
- Advertisement -

ಆಕೆಯ ಹೆಸರು ಅಮೃತ ವರ್ಷಿಣಿ. ತೆಲಂಗಾಣದ ಮಿರಿಯಾಲಗೂಡ ನಗರದ ಆರ್ಯ-ವೈಶ್ಯ ಸಮಾಜದ ಉದ್ಯಮಿ ಟಿ. ಮಾರುತಿ ರಾವ್‍ನ ಏಕೈಕ ಮಗಳು. ತಂದೆಗೆ ಮಗಳ ಮೇಲಿನ ಪ್ರೀತಿ ಸಹಜ.

(ತನ್ನ ತಂದೆ ಮಾರುತಿ ರಾವ್ ಜೊತೆಗೆ ಅಮೃತ ವರ್ಷಿನಿ)

2018ರ ಜನವರಿಯಲ್ಲಿ ಅಮೃತ ಆಕೆಯ ಸಹಪಾಠಿ ಪ್ರಣಯ್‍ ಕುಮಾರ್ ಎಂಬ ದಲಿತ ಕ್ರಿಶ್ಚಿಯನ್ ಹುಡುಗನನ್ನು ಮನೆ ಬಿಟ್ಟು ಹೋಗಿ ಮದುವೆ ಆದಳು. ಹುಡುಗರಿಬ್ಬರೂ ಪ್ರೀತಿಸುತ್ತಿದ್ದರು, ಆಕೆಯ ಮನೆಯಲ್ಲಿ ವಿರೋಧ, ಬೆದರಿಕೆಗಳು. ದಿಟ್ಟವಾಗಿ ಎದುರಿಸಿ ಹೊರನಡೆದು ಮದುವೆ ಆದಳು. ಪ್ರಣಯ್ ಅವರ ಮನೆಯವರೇ ನಿಂತು ಮದುವೆ ಮಾಡಿದರು, ಅವರ ಜೊತೆಯೇ ಜೀವನ ನಡೆಸಲಾರಂಭಿಸಿದಳು. ಕೆಲ ತಿಂಗಳಿನಲ್ಲಿ ಆಕೆ ಬಸಿರಾದಳು. ಇದೇ ಸಂದರ್ಭದಲ್ಲಿ ಆಕೆಯ ಕುಟುಂಬ ಕೈಚಾಚಿತು. ಸಹಜವಾಗಿಯೇ ಹುಡುಗಿ ತಾಯಿಯ ಆಸರೆಗೆ ಹಾತೊರೆಯಿತು. ತಾಯಿಯ ಜೊತೆ ಬಾಂಧವ್ಯ ಮತ್ತೆ ಶುರುವಾಯಿತು. ಆದರೆ ಇದರ ಹಿಂದಿನ ವಿಷ ಅರಿಯದಾದಳು ಹುಡುಗಿ.

(ಪ್ರಣಯ್ ಮತ್ತು ಅಮೃತ ವರ್ಷಿನಿ)

ಸೆಪ್ಟೆಂಬರ್ 2018. ಪ್ರಣಯ್ ಮತ್ತು ಅಮೃತ ವೈದ್ಯರನ್ನು ಕಾಣಲು ಹೋಗಿದ್ದಾಗ ಆಕೆಯ ಮುಂದೆಯೇ ಪ್ರಿಯಕರ ಪ್ರಣಯ್‍ನನ್ನು ಭೀಕರವಾಗಿ ಕೊಚ್ಚಿ ಕೊಲೆಗೈಯ್ಯಲಾಯಿತು. ಸುಪಾರಿ ಕೊಟ್ಟಿದ್ದು ಆಕೆಯ ತಂದೆ ಮಾರುತಿರಾವ್. ತಾಯಿಯ ಜೊತೆ ಅಮೃತ ನಡೆಸಿದ್ದ ಸಂಭಾಷಣೆಗಳೇ ಆಕೆಗೆ ಮುಳುವಾದವು. ಈ ಕರೆಗಳಿಂದ ಅಮೃತ-ಪ್ರಣಯ್ ಎಲ್ಲಿದ್ದಾರೆಂಬ ಮಾಹಿತಿ ಮಾರುತಿರಾವ್ ಮತ್ತು ಕೊಲೆಗಾರರಿಗೆ ಸಿಕ್ಕಿತ್ತು. ಮಾರುತಿರಾವ್ ಪ್ರಣಯ್‍ನನ್ನು ಕೊಲ್ಲಲು ಒಂದು ಕೋಟಿ ಸುಪಾರಿ ಕೊಟ್ಟದ್ದ. ತನ್ನ ತಂದೆತಾಯಿಯೂ ಸಹ ತನ್ನ ಮದುವೆಯನ್ನು ಒಪ್ಪಿಕೊಂಡರು, ಇನ್ನೆಲ್ಲವೂ ಸರಿಹೋಗುತ್ತದೆ ಎಂದು ಕನಸಿದ್ದಳು ಹುಡುಗಿ. ತಾನೆಣಿಸಲಾರದ ದುರಂತವಾಯಿತು ಬದುಕು. ತನ್ನ ತಂದೆಯನ್ನು ಗಲ್ಲಿಗೇರಿಸಬೇಕೆಂದು ಚೀರಿದಳು ಬಸುರಿ ಹುಡುಗಿ. ಜನವರಿ 2019ರಲ್ಲಿ ಗಂಡುಮಗುವಿಗೆ ಜನ್ಮ ನೀಡಿದಳು ಅಮೃತ. ಪ್ರಣಯ್ ಅವರ ಕುಟುಂಬದ ಜೊತೆ ಅವರ ಮಗಳಾಗಿ ಜೀವನ ನಡೆಸುತ್ತಿದ್ದಾಳೆ. ಅವರ ಮನಸ್ಸು ನಿಜಕ್ಕೂ ದೊಡ್ಡದು.

ಈಗ ಜಾಮೀನಿನ ಮೇಲೆ ಹೊರಬಂದಿದ್ದ ಮಾರುತಿರಾವ್ ಹೈದರಾಬಾದಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದ ಅಮೃತ ಬಹುಶಃ ಅಪ್ಪನಿಗೆ ತಾನು ಮಾಡಿದ ತಪ್ಪಿನ ಅರಿವಾಗಿ ಪಶ್ಚಾತ್ತಾಪವಾಗಿ ಹೀಗೆ ಮಾಡಿಕೊಂಡಿರಬಹುದು ಎಂದವಳ ದನಿಯಲ್ಲಿ ದುಗುಡ, ಹತಾಶೆಯ ಜೊತೆ ಒಂದು ಸಣ್ಣ ಆಸೆಯೂ ಇದ್ದಂತಿತ್ತು. ಮಾರುತಿರಾವ್ ತನ್ನ ಜೀವನ ಅಂತ್ಯಗೊಳಿಸಿದ್ದು ಹೈದರಾಬಾದಿನ ಆರ್ಯವೈಶ್ಯ ಭವನದ ರೂಂ ನಂಬರ್ 306ರಲ್ಲಿ! ಆತ ಎರಡು ಸಾಲಿನ ಪತ್ರ ಬರೆದಿಟ್ಟು ಹೋಗಿದ್ದಾನೆ. “ಗಿರಿಜಾ ನನ್ನು ಕ್ಷಮಿಂಚು. ತಲ್ಲಿ ಅಮೃತ ಅಮ್ಮ ದೆಗ್ಗರಿಕಿ ವೆಳ್ಳಿಪೋ” – “ಗಿರಿಜಾ (ಆತನ ಪತ್ನಿ) ನನ್ನನ್ನು ಕ್ಷಮಿಸು. ತಾಯಿ ಅಮೃತ ಅಮ್ಮನ ಬಳಿ ಹೋಗಿಬಿಡು”. ಅಮೃತಳ ಆಸೆ ಹುಸಿಯಾಗಿತ್ತು. ಮಾರುತಿರಾವ್‍ಗೆ ಸಾಯುವಾಗಲೂ ಜಾತಿಯೇ ಮುಖ್ಯವಾಗಿತ್ತು, ಆತ ಸತ್ತದ್ದು ಆರ್ಯವೈಶ್ಯ ಭವನದಲ್ಲಿ ಮತ್ತು ಆ ಕಡೆಯ ಕ್ಷಣದಲ್ಲೂ ಆತನ ಮಗಳು ದಲಿತನೊಬ್ಬನ ಮನೆಯಲ್ಲಿರುವುದು ಆತನಿಗೆ ಸಹಿಸಿಕೊಳ್ಳಲಾಗಲಿಲ್ಲ!

(ತನ್ನ ಮಗುವಿನೊಂದಿಗೆ ಅಮೃತ ವರ್ಷಿನಿ)

ಮಾರುತಿರಾವ್‍ನ ಜಾತಿ ವ್ಯಾಮೋಹ ಮತ್ತು ಹಿಂಸೆಯ ಪ್ರತಿಫಲನ ಈ ದುರಂತ ಕಥೆಗೆ ಸಮಾಜ, ಮಾಧ್ಯಮ ಸ್ಪಂದಿಸಿದ ರೀತಿಯಲ್ಲೂ ಕಾಣಬಹುದು. ಬಹುತೇಕ ಟಿವಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಮೃತಳನ್ನು ವಿಲನ್ ಆಗಿ ಚಿತ್ರಿಸಲಾಗಿದೆ! ಟಿವಿ-9 ತೆಲುಗು ವಾಹಿನಿಯ ಪ್ರಮುಖ ಆಂಕರ್ ರಜನೀಕಾಂತ್ ವಲ್ಲೆಲಚೆರುವು ಟ್ವೀಟ್ ಮಾಡಿದ್ದಾರೆ: “ಆತನ ನೆಗೆಟಿವ್ ಗುಣಗಳನ್ನು ಪಕ್ಕಕ್ಕಿಟ್ಟರೆ, ಮಾರುತಿ ರಾವ್‍ಗೆ ಸಾಯಿಸೋ ಅಷ್ಟು ಮತ್ತು ಸತ್ತು ಹೋಗೋಷ್ಟು ಮಗಳ ಬಗ್ಗೆ ಪ್ರೀತಿ ಇತ್ತು”. ಸಾಮಾಜಿಕ ಮಾಧ್ಯಮಗಳಲ್ಲಿ ಇವತ್ತಲ್ಲ ಮಾರುತಿ ರಾವ್ ಪ್ರಣಯ್‍ನನ್ನು ಕೊಲ್ಲಿಸಿ ಜೈಲು ಸೇರಿದಾಗಲೇ ಆತನಿಗೆ ಅಭಿಮಾನಿ ಪೇಜುಗಳು ಹುಟ್ಟುಕೊಂಡಿದ್ದವು ಮತ್ತು ಇವರೆಲ್ಲರೂ ಆತನ ಮಗಳ ಮೇಲಿನ ಪ್ರೇಮವನ್ನೇ ಐಡಿಯಲೈಸ್ ಮಾಡುತ್ತಿದ್ದರು. ಆಗ ಇದು ಎಷ್ಟು ತಾರಕಕ್ಕೆ ಹೋಗಿತ್ತೆಂದರೆ ಅಮೃತ ತಂದೆ-ತಾಯಿಗಳು ಅವರ ಸುಖಕ್ಕೆ ಸೆಕ್ಸ್‍ನಲ್ಲಿ ಭಾಗವಹಿಸುವುದರಿಂದ ಮಕ್ಕಳಾಗುತ್ತಾರೆಯೇ ಹೊರತು ನಮ್ಮನ್ನು ಹುಟ್ಟಿಸಬೇಕೆಂದೇನೂ ಅಲ್ಲ ಅಂದಿದ್ದಳು ಮತ್ತು ಅದನ್ನು ಎಲ್ಲರೂ ಖಂಡಿಸಿ ದೊಡ್ಡ ರಾದ್ಧಾಂತ ಮಾಡಿದ್ದರು. ಮೊನ್ನೆ ಎಷ್ಟೇ ಆಗಲಿ ತಂದೆ ಅಲ್ಲವೇ ಅಮೃತ ಶವ ನೋಡಲು ಹೋದಾಗ ಜನ ಘೋಷಣೆ ಕೂಗಿ ಆಕೆಯನ್ನು ಹೊರದೂಡಿಬಿಟ್ಟರು. ಇವರೆಲ್ಲರ ಪ್ರಕಾರ ಇಡೀ ದುರಂತ ಕತೆಗೆ ಆಕೆಯೇ ಕಾರಣ! ತಂದೆತಾಯಿಯ ಪ್ರೀತಿಯನ್ನು ಮನಗಾಣದೆ, ತನ್ನ (ತೆಳು ಎಂದು ಅವರ ಭಾವನೆಯೆ?) ಪ್ರೀತಿಗೇ ಕಟ್ಟುಬಿದ್ದು ಇಡೀ ದುರಂತಕ್ಕೆ ಕಾರಣವಾಗಿಬಿಟ್ಟಳು ಎಂದು ಮಾಧ್ಯಮಗಳೂ ಹಲುಬುತ್ತಿರುವುದು ಅವರ ಜಾತಿ ಮನಸ್ಥಿತಿ ಮತ್ತು ಮುಸುಕಿಗೆ ಸ್ಪಷ್ಟ ನಿದರ್ಶನ.

ಮಾರುತಿರಾವ್‍ಗೆ ಪ್ರೀತಿ ಇದ್ದದ್ದು ತನ್ನ ಮಗಳ ಮೇಲೆಯೋ ಇಲ್ಲ ತನ್ನ ಜಾತಿ ಮತ್ತು ಅದರ ಸುತ್ತ ಆತ ಕಟ್ಟುಕೊಂಡಿದ್ದ ತಾನು ಮೇಲೆಂಬ ಹುಸಿ ಭಾವನೆಗಳಿಗೋ? ಆತ ನಿಜಕ್ಕೂ ಆತನ ಮಗಳನ್ನು ಮಾಧ್ಯಮಗಳು ಕಟ್ಟಿಕೊಡಲು ಪ್ರಯತ್ನಿಸುತ್ತಿರುವಂತೆ ಅನ್‍ಕಂಡೀಷನಲ್ ಆಗಿ ಪ್ರೀತಿಸುತ್ತಿದ್ದದ್ದೇ ನಿಜವಾದರೆ ಆಕೆಯ ಆಯ್ಕೆ ಮತ್ತು ಇಷ್ಟವನ್ನು ಗೌರವಿಸಿ ಆಕೆ ಖುಷಿಯಾಗಿರುವುದೇ ತನಗೆ ಮುಖ್ಯ ಎಂದಿರುತ್ತಿದ್ದ. ಬಸುರಿ ಮಗಳ ಮುಂದೆ ಆಕೆಯ ಗಂಡನನ್ನು ಕೊಚ್ಚಿ ಕೊಲೆಗೈಯ್ಯಿಸುತ್ತಿರಲಿಲ್ಲ. ಅದು ಮಗಳ ಮೇಲಿನ ಪ್ರೀತಿ ಅಲ್ಲ. ಅತ್ಯಂತ ಪಿತೃಪ್ರಧಾನ ರೀತಿಯಲ್ಲಿ ಆತ ಮಗಳನ್ನು ತನ್ನ ಸ್ವತ್ತು ಎಂದೇ ನೋಡಿದ್ದ. ಆತನ “ಕುಲಗೌರವ”ವನ್ನು ಆಕೆ ಹಾಳು ಮಾಡಿದಳೆಂದೆಣಿಸಿದ್ದ. ಆದರೆ ಮಗಳ ಮೇಲೆ ಕೋಪ ಬರಲಿಲ್ಲ. ಆಕೆಯನ್ನು ಈ ದಲಿತ ಹುಡುಗ ತಲೆಕೆಡಿಸಿದ್ದಾನೆ ಎಂದೆಣಿಸಿರಬೇಕು, ಆತನನ್ನು ಸಾಯಿಸಿಬಿಟ್ಟ. ಆತ ಮಗಳಿಗೆ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳಬಹುದೆಂದು ಅನ್ನಿಸಿರಲೇ ಇಲ್ಲ ಎನಿಸುತ್ತೆ. ಆಕೆಗೆ ತನ್ನ ಬಾಳಸಂಗಾತಿಯನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ ಮತ್ತು ಆಕೆ ಮಾಡಿದ ಆಯ್ಕೆ ಸರಿಯಾದುದಲ್ಲ, ಆಕೆಯನ್ನು ದಿಕ್ಕುತಪ್ಪಿಸಲಾಗಿದೆ ಎಂಬ ನಿರ್ಣಯಗಳು ಮಾರುತಿ ರಾವ್‍ನ ನಡವಳಿಕೆಗಳ ಹಿಂದೆ ಸ್ಪಷ್ಟವಾಗಿ ಕಾಣಿಸುತ್ತಿವೆ. ಅದು ಮಗಳ ಬಗೆಗಿನ ಆರೋಗ್ಯಕರ ಪ್ರೀತಿ ಖಂಡಿತ ಅಲ್ಲ, ಮೀರಲಾರದ ತನ್ನ ವ್ಯರ್ಥ, ಅರ್ಥವಿಲ್ಲದ ಜಾತಿ ಮತ್ತು ಪಿತೃಪ್ರಧಾನ ಗರ್ವ ಅಷ್ಟೆ.

ಮಾರಿ ಸೆಲ್ವರಾಜ್ ಅವರ ನಿರ್ದೇಶನದ ಪರಿಯೆರುಂ ಪೆರುಮಾಳ್ ಚಿತ್ರದಲ್ಲಿ ಒಂದು ವಿಲಕ್ಷಣ ಪಾತ್ರವಿದೆ. ಮೇಲ್ಜಾತಿಯ ಮಕ್ಕಳನ್ನು ಪ್ರೀತಿಸುವ ಕೆಳಜಾತಿಯವರನ್ನು ಸಾಕ್ಷಿ ಉಳಿಯದೆ ಕೊಲ್ಲುವ ಮುದುಕನ ಪಾತ್ರ. ಚಿತ್ರದುದ್ದಕ್ಕೂ ಆತ ಅನೇಕರನ್ನು ಹೀಗೆ ಕೊಲ್ಲುತ್ತಾನೆ, “ಕುಲಗೌರವರ”ದ ಹೆಸರಿನಲ್ಲಿ. ಚಿತ್ರದ ನಾಯಕ ಪೆರುಮಾಳ್ ದಲಿತ, ಮೇಲ್ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿದ್ದಾನೆ. ಆ ಹುಡುಗಿಯ ಸೋದರ ಸಂಬಂಧಿ ಮತ್ತು ಇಬ್ಬರೂ ಪ್ರೇಮಿಗಳ ಸಹಪಾಠಿ ಮತ್ತು ಹುಡುಗಿಯ ತಂದೆ ಇದೇ ಮುದುಕನಿಗೆ ಪೆರುಮಾಳ್‍ನನ್ನು ಕೊಲ್ಲಲು ಸುಪಾರಿ ನೀಡುತ್ತಾರೆ. ಈ ಮುದುಕ ಪೆರುಮಾಳ್‍ಗೆ ಪರಿಚಿತನೇ. ಆತನ ಸೈಕಲ್‍ನಲ್ಲೇ ಡ್ರಾಪ್ ಕೇಳಿ ಹತ್ತಿಕೊಳ್ಳುತ್ತಾನೆ. ಕಡೆಗೆ ಆತನನ್ನು ರೈಲ್ವೆಹಳಿಗಳ ಮೇಲೆ ನೂಕಿ ರೈಲಿಗೆ ತಲೆಕೊಡಿಸಿ ಕೊಲ್ಲಲೆತ್ನಿಸುತ್ತಾನೆ. ಪೆರುಮಾಳ್ ಮೊದಲ ಬಾರಿಗೆ ತಿರುಗಿ ಬಿದ್ದು ಮುದುಕ ಮತ್ತು ತನ್ನ ಸಹಪಾಠಿಗೆ ಹೊಡೆಯುತಾನೆ. ಅಷ್ಟರಲ್ಲಿ ಹುಡುಗಿಯ ತಂದೆ ಅಲ್ಲಿಗೆ ಕಾರಿನಲ್ಲಿ ಬರುತ್ತಾನೆ. ಒಂದು ಶಾಟ್‍ನಲ್ಲಿ ಕಾರೊಳಗೆ ಕೂತ ತಂದೆ, ಡಾಶ್‍ಬೋರ್ಡ್‍ನಲ್ಲಿರುವ ಮಚ್ಚು ಮತ್ತು ಹೊರಗೆ ನಿಂತಿರುವ ಪೆರುಮಾಳ್ ಇದ್ದಾರೆ. ತಂದೆ ಮಚ್ಚಿಗೆ ಕೈಹಾಕುವುದಿಲ್ಲ. ಮುದುಕ ಸೋತಿದ್ದಾನೆ, ರೈಲಿಗೆ ಎದುರು ಕೂತು ತಾನೇ ಸಾಯುತ್ತಾನೆ. ಆ ಮುದುಕ ಜಾತಿಯ ವೃಥಾ ಗರ್ವ ಮತ್ತು ಅದ ಸ್ಥಾಪಿಸಲು ಹಿಂಸೆಗೆ ಹಪಹಪಿಸುವ ಮನಸ್ಸು.

ಆದರೆ ಇವತ್ತು ಅದೇ ತಮಿಳುನಾಡಿನಲ್ಲಿ ದ್ರೌಪದಿ ಎಂಬ ಚಲನಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ದಲಿತ ಹುಡುಗರು “ಲವ್ ಜಿಹಾದ್”ನ ಮಾದರಿಯಲ್ಲಿ ಮೇಲ್ಜಾತಿಗಳ ಹೆಣ್ಣುಮಕ್ಕಳನ್ನು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮದುವೆ ಆಗುತ್ತಿದ್ದಾರೆ ಎಂಬಂತಹ ಕಥಾಹಂದರವಿದೆ. ಅದು ಹೇಗೆ ಈ ಚಿತ್ರ ಸೆನ್ಸಾರ್ ಆಗಿ ಬಿಡುಗಡೆಯಾಯಿತೋ ದೇವರೇ ಬಲ್ಲ. ಜಾತ್ಯಹಂಕಾರಗಳ ರುದ್ರನರ್ತನ ಇನ್ನೂ ನಡೆದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...