Homeಮುಖಪುಟಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ "ರುದ್ರ ನರ್ತನ"

ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

- Advertisement -
- Advertisement -

ಆಕೆಯ ಹೆಸರು ಅಮೃತ ವರ್ಷಿಣಿ. ತೆಲಂಗಾಣದ ಮಿರಿಯಾಲಗೂಡ ನಗರದ ಆರ್ಯ-ವೈಶ್ಯ ಸಮಾಜದ ಉದ್ಯಮಿ ಟಿ. ಮಾರುತಿ ರಾವ್‍ನ ಏಕೈಕ ಮಗಳು. ತಂದೆಗೆ ಮಗಳ ಮೇಲಿನ ಪ್ರೀತಿ ಸಹಜ.

(ತನ್ನ ತಂದೆ ಮಾರುತಿ ರಾವ್ ಜೊತೆಗೆ ಅಮೃತ ವರ್ಷಿನಿ)

2018ರ ಜನವರಿಯಲ್ಲಿ ಅಮೃತ ಆಕೆಯ ಸಹಪಾಠಿ ಪ್ರಣಯ್‍ ಕುಮಾರ್ ಎಂಬ ದಲಿತ ಕ್ರಿಶ್ಚಿಯನ್ ಹುಡುಗನನ್ನು ಮನೆ ಬಿಟ್ಟು ಹೋಗಿ ಮದುವೆ ಆದಳು. ಹುಡುಗರಿಬ್ಬರೂ ಪ್ರೀತಿಸುತ್ತಿದ್ದರು, ಆಕೆಯ ಮನೆಯಲ್ಲಿ ವಿರೋಧ, ಬೆದರಿಕೆಗಳು. ದಿಟ್ಟವಾಗಿ ಎದುರಿಸಿ ಹೊರನಡೆದು ಮದುವೆ ಆದಳು. ಪ್ರಣಯ್ ಅವರ ಮನೆಯವರೇ ನಿಂತು ಮದುವೆ ಮಾಡಿದರು, ಅವರ ಜೊತೆಯೇ ಜೀವನ ನಡೆಸಲಾರಂಭಿಸಿದಳು. ಕೆಲ ತಿಂಗಳಿನಲ್ಲಿ ಆಕೆ ಬಸಿರಾದಳು. ಇದೇ ಸಂದರ್ಭದಲ್ಲಿ ಆಕೆಯ ಕುಟುಂಬ ಕೈಚಾಚಿತು. ಸಹಜವಾಗಿಯೇ ಹುಡುಗಿ ತಾಯಿಯ ಆಸರೆಗೆ ಹಾತೊರೆಯಿತು. ತಾಯಿಯ ಜೊತೆ ಬಾಂಧವ್ಯ ಮತ್ತೆ ಶುರುವಾಯಿತು. ಆದರೆ ಇದರ ಹಿಂದಿನ ವಿಷ ಅರಿಯದಾದಳು ಹುಡುಗಿ.

(ಪ್ರಣಯ್ ಮತ್ತು ಅಮೃತ ವರ್ಷಿನಿ)

ಸೆಪ್ಟೆಂಬರ್ 2018. ಪ್ರಣಯ್ ಮತ್ತು ಅಮೃತ ವೈದ್ಯರನ್ನು ಕಾಣಲು ಹೋಗಿದ್ದಾಗ ಆಕೆಯ ಮುಂದೆಯೇ ಪ್ರಿಯಕರ ಪ್ರಣಯ್‍ನನ್ನು ಭೀಕರವಾಗಿ ಕೊಚ್ಚಿ ಕೊಲೆಗೈಯ್ಯಲಾಯಿತು. ಸುಪಾರಿ ಕೊಟ್ಟಿದ್ದು ಆಕೆಯ ತಂದೆ ಮಾರುತಿರಾವ್. ತಾಯಿಯ ಜೊತೆ ಅಮೃತ ನಡೆಸಿದ್ದ ಸಂಭಾಷಣೆಗಳೇ ಆಕೆಗೆ ಮುಳುವಾದವು. ಈ ಕರೆಗಳಿಂದ ಅಮೃತ-ಪ್ರಣಯ್ ಎಲ್ಲಿದ್ದಾರೆಂಬ ಮಾಹಿತಿ ಮಾರುತಿರಾವ್ ಮತ್ತು ಕೊಲೆಗಾರರಿಗೆ ಸಿಕ್ಕಿತ್ತು. ಮಾರುತಿರಾವ್ ಪ್ರಣಯ್‍ನನ್ನು ಕೊಲ್ಲಲು ಒಂದು ಕೋಟಿ ಸುಪಾರಿ ಕೊಟ್ಟದ್ದ. ತನ್ನ ತಂದೆತಾಯಿಯೂ ಸಹ ತನ್ನ ಮದುವೆಯನ್ನು ಒಪ್ಪಿಕೊಂಡರು, ಇನ್ನೆಲ್ಲವೂ ಸರಿಹೋಗುತ್ತದೆ ಎಂದು ಕನಸಿದ್ದಳು ಹುಡುಗಿ. ತಾನೆಣಿಸಲಾರದ ದುರಂತವಾಯಿತು ಬದುಕು. ತನ್ನ ತಂದೆಯನ್ನು ಗಲ್ಲಿಗೇರಿಸಬೇಕೆಂದು ಚೀರಿದಳು ಬಸುರಿ ಹುಡುಗಿ. ಜನವರಿ 2019ರಲ್ಲಿ ಗಂಡುಮಗುವಿಗೆ ಜನ್ಮ ನೀಡಿದಳು ಅಮೃತ. ಪ್ರಣಯ್ ಅವರ ಕುಟುಂಬದ ಜೊತೆ ಅವರ ಮಗಳಾಗಿ ಜೀವನ ನಡೆಸುತ್ತಿದ್ದಾಳೆ. ಅವರ ಮನಸ್ಸು ನಿಜಕ್ಕೂ ದೊಡ್ಡದು.

ಈಗ ಜಾಮೀನಿನ ಮೇಲೆ ಹೊರಬಂದಿದ್ದ ಮಾರುತಿರಾವ್ ಹೈದರಾಬಾದಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದ ಅಮೃತ ಬಹುಶಃ ಅಪ್ಪನಿಗೆ ತಾನು ಮಾಡಿದ ತಪ್ಪಿನ ಅರಿವಾಗಿ ಪಶ್ಚಾತ್ತಾಪವಾಗಿ ಹೀಗೆ ಮಾಡಿಕೊಂಡಿರಬಹುದು ಎಂದವಳ ದನಿಯಲ್ಲಿ ದುಗುಡ, ಹತಾಶೆಯ ಜೊತೆ ಒಂದು ಸಣ್ಣ ಆಸೆಯೂ ಇದ್ದಂತಿತ್ತು. ಮಾರುತಿರಾವ್ ತನ್ನ ಜೀವನ ಅಂತ್ಯಗೊಳಿಸಿದ್ದು ಹೈದರಾಬಾದಿನ ಆರ್ಯವೈಶ್ಯ ಭವನದ ರೂಂ ನಂಬರ್ 306ರಲ್ಲಿ! ಆತ ಎರಡು ಸಾಲಿನ ಪತ್ರ ಬರೆದಿಟ್ಟು ಹೋಗಿದ್ದಾನೆ. “ಗಿರಿಜಾ ನನ್ನು ಕ್ಷಮಿಂಚು. ತಲ್ಲಿ ಅಮೃತ ಅಮ್ಮ ದೆಗ್ಗರಿಕಿ ವೆಳ್ಳಿಪೋ” – “ಗಿರಿಜಾ (ಆತನ ಪತ್ನಿ) ನನ್ನನ್ನು ಕ್ಷಮಿಸು. ತಾಯಿ ಅಮೃತ ಅಮ್ಮನ ಬಳಿ ಹೋಗಿಬಿಡು”. ಅಮೃತಳ ಆಸೆ ಹುಸಿಯಾಗಿತ್ತು. ಮಾರುತಿರಾವ್‍ಗೆ ಸಾಯುವಾಗಲೂ ಜಾತಿಯೇ ಮುಖ್ಯವಾಗಿತ್ತು, ಆತ ಸತ್ತದ್ದು ಆರ್ಯವೈಶ್ಯ ಭವನದಲ್ಲಿ ಮತ್ತು ಆ ಕಡೆಯ ಕ್ಷಣದಲ್ಲೂ ಆತನ ಮಗಳು ದಲಿತನೊಬ್ಬನ ಮನೆಯಲ್ಲಿರುವುದು ಆತನಿಗೆ ಸಹಿಸಿಕೊಳ್ಳಲಾಗಲಿಲ್ಲ!

(ತನ್ನ ಮಗುವಿನೊಂದಿಗೆ ಅಮೃತ ವರ್ಷಿನಿ)

ಮಾರುತಿರಾವ್‍ನ ಜಾತಿ ವ್ಯಾಮೋಹ ಮತ್ತು ಹಿಂಸೆಯ ಪ್ರತಿಫಲನ ಈ ದುರಂತ ಕಥೆಗೆ ಸಮಾಜ, ಮಾಧ್ಯಮ ಸ್ಪಂದಿಸಿದ ರೀತಿಯಲ್ಲೂ ಕಾಣಬಹುದು. ಬಹುತೇಕ ಟಿವಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಮೃತಳನ್ನು ವಿಲನ್ ಆಗಿ ಚಿತ್ರಿಸಲಾಗಿದೆ! ಟಿವಿ-9 ತೆಲುಗು ವಾಹಿನಿಯ ಪ್ರಮುಖ ಆಂಕರ್ ರಜನೀಕಾಂತ್ ವಲ್ಲೆಲಚೆರುವು ಟ್ವೀಟ್ ಮಾಡಿದ್ದಾರೆ: “ಆತನ ನೆಗೆಟಿವ್ ಗುಣಗಳನ್ನು ಪಕ್ಕಕ್ಕಿಟ್ಟರೆ, ಮಾರುತಿ ರಾವ್‍ಗೆ ಸಾಯಿಸೋ ಅಷ್ಟು ಮತ್ತು ಸತ್ತು ಹೋಗೋಷ್ಟು ಮಗಳ ಬಗ್ಗೆ ಪ್ರೀತಿ ಇತ್ತು”. ಸಾಮಾಜಿಕ ಮಾಧ್ಯಮಗಳಲ್ಲಿ ಇವತ್ತಲ್ಲ ಮಾರುತಿ ರಾವ್ ಪ್ರಣಯ್‍ನನ್ನು ಕೊಲ್ಲಿಸಿ ಜೈಲು ಸೇರಿದಾಗಲೇ ಆತನಿಗೆ ಅಭಿಮಾನಿ ಪೇಜುಗಳು ಹುಟ್ಟುಕೊಂಡಿದ್ದವು ಮತ್ತು ಇವರೆಲ್ಲರೂ ಆತನ ಮಗಳ ಮೇಲಿನ ಪ್ರೇಮವನ್ನೇ ಐಡಿಯಲೈಸ್ ಮಾಡುತ್ತಿದ್ದರು. ಆಗ ಇದು ಎಷ್ಟು ತಾರಕಕ್ಕೆ ಹೋಗಿತ್ತೆಂದರೆ ಅಮೃತ ತಂದೆ-ತಾಯಿಗಳು ಅವರ ಸುಖಕ್ಕೆ ಸೆಕ್ಸ್‍ನಲ್ಲಿ ಭಾಗವಹಿಸುವುದರಿಂದ ಮಕ್ಕಳಾಗುತ್ತಾರೆಯೇ ಹೊರತು ನಮ್ಮನ್ನು ಹುಟ್ಟಿಸಬೇಕೆಂದೇನೂ ಅಲ್ಲ ಅಂದಿದ್ದಳು ಮತ್ತು ಅದನ್ನು ಎಲ್ಲರೂ ಖಂಡಿಸಿ ದೊಡ್ಡ ರಾದ್ಧಾಂತ ಮಾಡಿದ್ದರು. ಮೊನ್ನೆ ಎಷ್ಟೇ ಆಗಲಿ ತಂದೆ ಅಲ್ಲವೇ ಅಮೃತ ಶವ ನೋಡಲು ಹೋದಾಗ ಜನ ಘೋಷಣೆ ಕೂಗಿ ಆಕೆಯನ್ನು ಹೊರದೂಡಿಬಿಟ್ಟರು. ಇವರೆಲ್ಲರ ಪ್ರಕಾರ ಇಡೀ ದುರಂತ ಕತೆಗೆ ಆಕೆಯೇ ಕಾರಣ! ತಂದೆತಾಯಿಯ ಪ್ರೀತಿಯನ್ನು ಮನಗಾಣದೆ, ತನ್ನ (ತೆಳು ಎಂದು ಅವರ ಭಾವನೆಯೆ?) ಪ್ರೀತಿಗೇ ಕಟ್ಟುಬಿದ್ದು ಇಡೀ ದುರಂತಕ್ಕೆ ಕಾರಣವಾಗಿಬಿಟ್ಟಳು ಎಂದು ಮಾಧ್ಯಮಗಳೂ ಹಲುಬುತ್ತಿರುವುದು ಅವರ ಜಾತಿ ಮನಸ್ಥಿತಿ ಮತ್ತು ಮುಸುಕಿಗೆ ಸ್ಪಷ್ಟ ನಿದರ್ಶನ.

ಮಾರುತಿರಾವ್‍ಗೆ ಪ್ರೀತಿ ಇದ್ದದ್ದು ತನ್ನ ಮಗಳ ಮೇಲೆಯೋ ಇಲ್ಲ ತನ್ನ ಜಾತಿ ಮತ್ತು ಅದರ ಸುತ್ತ ಆತ ಕಟ್ಟುಕೊಂಡಿದ್ದ ತಾನು ಮೇಲೆಂಬ ಹುಸಿ ಭಾವನೆಗಳಿಗೋ? ಆತ ನಿಜಕ್ಕೂ ಆತನ ಮಗಳನ್ನು ಮಾಧ್ಯಮಗಳು ಕಟ್ಟಿಕೊಡಲು ಪ್ರಯತ್ನಿಸುತ್ತಿರುವಂತೆ ಅನ್‍ಕಂಡೀಷನಲ್ ಆಗಿ ಪ್ರೀತಿಸುತ್ತಿದ್ದದ್ದೇ ನಿಜವಾದರೆ ಆಕೆಯ ಆಯ್ಕೆ ಮತ್ತು ಇಷ್ಟವನ್ನು ಗೌರವಿಸಿ ಆಕೆ ಖುಷಿಯಾಗಿರುವುದೇ ತನಗೆ ಮುಖ್ಯ ಎಂದಿರುತ್ತಿದ್ದ. ಬಸುರಿ ಮಗಳ ಮುಂದೆ ಆಕೆಯ ಗಂಡನನ್ನು ಕೊಚ್ಚಿ ಕೊಲೆಗೈಯ್ಯಿಸುತ್ತಿರಲಿಲ್ಲ. ಅದು ಮಗಳ ಮೇಲಿನ ಪ್ರೀತಿ ಅಲ್ಲ. ಅತ್ಯಂತ ಪಿತೃಪ್ರಧಾನ ರೀತಿಯಲ್ಲಿ ಆತ ಮಗಳನ್ನು ತನ್ನ ಸ್ವತ್ತು ಎಂದೇ ನೋಡಿದ್ದ. ಆತನ “ಕುಲಗೌರವ”ವನ್ನು ಆಕೆ ಹಾಳು ಮಾಡಿದಳೆಂದೆಣಿಸಿದ್ದ. ಆದರೆ ಮಗಳ ಮೇಲೆ ಕೋಪ ಬರಲಿಲ್ಲ. ಆಕೆಯನ್ನು ಈ ದಲಿತ ಹುಡುಗ ತಲೆಕೆಡಿಸಿದ್ದಾನೆ ಎಂದೆಣಿಸಿರಬೇಕು, ಆತನನ್ನು ಸಾಯಿಸಿಬಿಟ್ಟ. ಆತ ಮಗಳಿಗೆ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳಬಹುದೆಂದು ಅನ್ನಿಸಿರಲೇ ಇಲ್ಲ ಎನಿಸುತ್ತೆ. ಆಕೆಗೆ ತನ್ನ ಬಾಳಸಂಗಾತಿಯನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವೂ ಇಲ್ಲ ಮತ್ತು ಆಕೆ ಮಾಡಿದ ಆಯ್ಕೆ ಸರಿಯಾದುದಲ್ಲ, ಆಕೆಯನ್ನು ದಿಕ್ಕುತಪ್ಪಿಸಲಾಗಿದೆ ಎಂಬ ನಿರ್ಣಯಗಳು ಮಾರುತಿ ರಾವ್‍ನ ನಡವಳಿಕೆಗಳ ಹಿಂದೆ ಸ್ಪಷ್ಟವಾಗಿ ಕಾಣಿಸುತ್ತಿವೆ. ಅದು ಮಗಳ ಬಗೆಗಿನ ಆರೋಗ್ಯಕರ ಪ್ರೀತಿ ಖಂಡಿತ ಅಲ್ಲ, ಮೀರಲಾರದ ತನ್ನ ವ್ಯರ್ಥ, ಅರ್ಥವಿಲ್ಲದ ಜಾತಿ ಮತ್ತು ಪಿತೃಪ್ರಧಾನ ಗರ್ವ ಅಷ್ಟೆ.

ಮಾರಿ ಸೆಲ್ವರಾಜ್ ಅವರ ನಿರ್ದೇಶನದ ಪರಿಯೆರುಂ ಪೆರುಮಾಳ್ ಚಿತ್ರದಲ್ಲಿ ಒಂದು ವಿಲಕ್ಷಣ ಪಾತ್ರವಿದೆ. ಮೇಲ್ಜಾತಿಯ ಮಕ್ಕಳನ್ನು ಪ್ರೀತಿಸುವ ಕೆಳಜಾತಿಯವರನ್ನು ಸಾಕ್ಷಿ ಉಳಿಯದೆ ಕೊಲ್ಲುವ ಮುದುಕನ ಪಾತ್ರ. ಚಿತ್ರದುದ್ದಕ್ಕೂ ಆತ ಅನೇಕರನ್ನು ಹೀಗೆ ಕೊಲ್ಲುತ್ತಾನೆ, “ಕುಲಗೌರವರ”ದ ಹೆಸರಿನಲ್ಲಿ. ಚಿತ್ರದ ನಾಯಕ ಪೆರುಮಾಳ್ ದಲಿತ, ಮೇಲ್ಜಾತಿಯ ಹುಡುಗಿಯನ್ನು ಪ್ರೀತಿಸುತ್ತಿದ್ದಾನೆ. ಆ ಹುಡುಗಿಯ ಸೋದರ ಸಂಬಂಧಿ ಮತ್ತು ಇಬ್ಬರೂ ಪ್ರೇಮಿಗಳ ಸಹಪಾಠಿ ಮತ್ತು ಹುಡುಗಿಯ ತಂದೆ ಇದೇ ಮುದುಕನಿಗೆ ಪೆರುಮಾಳ್‍ನನ್ನು ಕೊಲ್ಲಲು ಸುಪಾರಿ ನೀಡುತ್ತಾರೆ. ಈ ಮುದುಕ ಪೆರುಮಾಳ್‍ಗೆ ಪರಿಚಿತನೇ. ಆತನ ಸೈಕಲ್‍ನಲ್ಲೇ ಡ್ರಾಪ್ ಕೇಳಿ ಹತ್ತಿಕೊಳ್ಳುತ್ತಾನೆ. ಕಡೆಗೆ ಆತನನ್ನು ರೈಲ್ವೆಹಳಿಗಳ ಮೇಲೆ ನೂಕಿ ರೈಲಿಗೆ ತಲೆಕೊಡಿಸಿ ಕೊಲ್ಲಲೆತ್ನಿಸುತ್ತಾನೆ. ಪೆರುಮಾಳ್ ಮೊದಲ ಬಾರಿಗೆ ತಿರುಗಿ ಬಿದ್ದು ಮುದುಕ ಮತ್ತು ತನ್ನ ಸಹಪಾಠಿಗೆ ಹೊಡೆಯುತಾನೆ. ಅಷ್ಟರಲ್ಲಿ ಹುಡುಗಿಯ ತಂದೆ ಅಲ್ಲಿಗೆ ಕಾರಿನಲ್ಲಿ ಬರುತ್ತಾನೆ. ಒಂದು ಶಾಟ್‍ನಲ್ಲಿ ಕಾರೊಳಗೆ ಕೂತ ತಂದೆ, ಡಾಶ್‍ಬೋರ್ಡ್‍ನಲ್ಲಿರುವ ಮಚ್ಚು ಮತ್ತು ಹೊರಗೆ ನಿಂತಿರುವ ಪೆರುಮಾಳ್ ಇದ್ದಾರೆ. ತಂದೆ ಮಚ್ಚಿಗೆ ಕೈಹಾಕುವುದಿಲ್ಲ. ಮುದುಕ ಸೋತಿದ್ದಾನೆ, ರೈಲಿಗೆ ಎದುರು ಕೂತು ತಾನೇ ಸಾಯುತ್ತಾನೆ. ಆ ಮುದುಕ ಜಾತಿಯ ವೃಥಾ ಗರ್ವ ಮತ್ತು ಅದ ಸ್ಥಾಪಿಸಲು ಹಿಂಸೆಗೆ ಹಪಹಪಿಸುವ ಮನಸ್ಸು.

ಆದರೆ ಇವತ್ತು ಅದೇ ತಮಿಳುನಾಡಿನಲ್ಲಿ ದ್ರೌಪದಿ ಎಂಬ ಚಲನಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ದಲಿತ ಹುಡುಗರು “ಲವ್ ಜಿಹಾದ್”ನ ಮಾದರಿಯಲ್ಲಿ ಮೇಲ್ಜಾತಿಗಳ ಹೆಣ್ಣುಮಕ್ಕಳನ್ನು ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿ ಮದುವೆ ಆಗುತ್ತಿದ್ದಾರೆ ಎಂಬಂತಹ ಕಥಾಹಂದರವಿದೆ. ಅದು ಹೇಗೆ ಈ ಚಿತ್ರ ಸೆನ್ಸಾರ್ ಆಗಿ ಬಿಡುಗಡೆಯಾಯಿತೋ ದೇವರೇ ಬಲ್ಲ. ಜಾತ್ಯಹಂಕಾರಗಳ ರುದ್ರನರ್ತನ ಇನ್ನೂ ನಡೆದೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...