Homeಕರ್ನಾಟಕಬಿಜೆಪಿ ಸೋಲಿಗೆ ಈ ಐದು ಅಂಶಗಳು ಪ್ರಮುಖ ಕಾರಣ

ಬಿಜೆಪಿ ಸೋಲಿಗೆ ಈ ಐದು ಅಂಶಗಳು ಪ್ರಮುಖ ಕಾರಣ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಆಡಳಿತರೂಢ ಬಿಜೆಪಿ ಸರ್ಕಾರ ವಾಶ್‌ಔಟ್ ಆಗಿದ್ದು, ಕಾಂಗ್ರೆಸ್ ಭಾರೀ ಬಹುಮತವನ್ನು ಪಡೆದಿದೆ. 136 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದರೆ, ಬಿಜೆಪಿ 65 ಸ್ಥಾನಗಳಿಗೆ, ಜೆಡಿಎಸ್‌ 19 ಸ್ಥಾನಗಳಿಗೆ ಕುಸಿದಿವೆ.

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ಉಮೇದಿನಲ್ಲಿತ್ತು. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಬಿಜೆಪಿ ಮಾಡಿಕೊಂಡಿರುವ ಎಡವಟ್ಟು ಮತ್ತು ಚುನಾವಣೆ ಸಂದರ್ಭದಲ್ಲಿ ಪಕ್ಷದೊಳಗೆ ಉಂಟಾದ ಬಿಕ್ಕಟ್ಟು ಸೇರಿದಂತೆ ಹಲವು ಕಾರಣಗಳು ಈ ಹೀನಾಯ ಸೋಲಿಗೆ ಕಾರಣವಾಗಿವೆ.

ಬಿಜೆಪಿ ಸೋಲಿಗೆ ಕಾರಣವಾದ ಐದು ಅಂಶಗಳು

  1. ರಾಷ್ಟ್ರೀಯ ನಾಯಕರ ಹಸ್ತಕ್ಷೇಪ & ಸ್ಥಳೀಯ ನಾಯಕರ ಕಡೆಗಣನೆ

ರಾಜ್ಯ ವಿಧಾನಸಭಾ ಚುನಾವಣೆಯು ನಡೆಯುವುದು ರಾಜ್ಯದಲ್ಲಿನ ಸಮಸ್ಯೆಗಳು, ಇಲ್ಲಿನ ನಾಯಕತ್ವದ ಮೇಲೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿಯಲ್ಲಿನ ರಾಜ್ಯ ನಾಯಕರು ಕಡೆಗಣಿಸಲ್ಪಟ್ಟರು. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನಂಥವರನ್ನು ಮೂಲೆಗುಂಪು ಮಾಡಲಾಯಿತು. ಜಗದೀಶ್ ಶೆಟ್ಟರ್‌, ಲಕ್ಷ್ಮಣ್‌ ಸವದಿಯಂತಹ ಲಿಂಗಾಯತ ನಾಯಕರಿಗೆ ಟಿಕೆಟ್ ಕೈತಪ್ಪಿತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಲಿಂಗಾಯತ ನಾಯಕರನ್ನು ಮುಗಿಸುತ್ತಿದ್ದಾರೆಂಬ ಕೂಗು ಎದ್ದಿತು. ಹೀಗಾಗಿ ಲಿಂಗಾಯತ ಮತದಾರರು ಬಿಜೆಪಿಯಿಂದ ದೂರ ಸರಿದಿರುವ ಸಾಧ್ಯತೆ ಹೆಚ್ಚಿದೆ.

ರಾಜ್ಯ ನಾಯಕರು ಪ್ರಚಾರ ನಡೆಸಿದ್ದಕ್ಕಿಂತ ರಾಷ್ಟ್ರೀಯ ಮಟ್ಟದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಮೊದಲಾದವರು ಅಖಾಡಕ್ಕೆ ಇಳಿದರು. ‘ಮೋದಿಗೆ ಮತ ಹಾಕಿ’ ಎಂದು ಬಿಜೆಪಿ ಪ್ರಚಾರ ಮಾಡಿತು. ಆದರೆ ಇದು ವಿಧಾನಸಭಾ ಚುನಾವಣೆ. ಮೋದಿ ಇಲ್ಲಿನ ಅಭ್ಯರ್ಥಿಯೂ ಅಲ್ಲ, ಇಲ್ಲಿ ಆಡಳಿತ ನಡೆಸುವುದೂ ಇಲ್ಲ. ಈ ಸತ್ಯವನ್ನು ಬಿಜೆಪಿ ಅರ್ಥಮಾಡಿಕೊಳ್ಳಲಿಲ್ಲ. ಮೋದಿಯವರು ಬರೀ ಭಾಷಣ ಮಾಡುತ್ತಾರೆ, ಕೆಲಸ ಮಾಡಲ್ಲ ಎಂಬ ಸಂದೇಶ ರವಾನೆಯಾಯಿತು. ಹೊಸ ಮುಖಗಳನ್ನು ತರುತ್ತೇವೆ ಎಂದು ಹೊರಟ ಬಿಜೆಪಿ, ಹಿರಿಯ ನಾಯಕರನ್ನು ಕಡೆಗಣಿಸಿತು.

2. ನಲವತ್ತು ಪರ್ಸೆಂಟ್ ಕಮಿಷನ್ ಆರೋಪ ಮತ್ತು ಸಾಲು ಸಾಲು ಹಗರಣ: 2013ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವನ್ನು 10 % ಕಮಿಷನ್ ಸರ್ಕಾರ ಎಂದು ಮೂದಲಿಸಿದ ಬಿಜೆಪಿ, ಆಪರೇಷನ್‌ ಕಮಲದ ಬಳಿಕ ಅಧಿಕಾರಕ್ಕೇರಿತು. ಆದರೆ 40% ಕಮಿಷನ್‌ ಆರೋಪವನ್ನು ಎದುರಿಸಿತು. ರಾಜ್ಯ ಗುತ್ತಿಗೆದಾರರ ಸಂಘವು ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದರೂ ಪ್ರಯೋಜನವಾಗಲಿಲ್ಲ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಕಿರುಕುಳ ಆರೋಪವನ್ನು ಮಾಡಿ ಆತ್ಮಹತ್ಯೆ ಮಾಡಿಕೊಂಡರು. ಕೆ.ಎಸ್.ಈಶ್ವರಪ್ಪ ಅವರ ಮೇಲೆ ನೇರ ಆರೋಪ ಕೇಳಿಬಂದಿದ್ದರಿಂದ ಅವರು ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದರು.

ಸಿದ್ದರಾಮಯ್ಯನವರ 75ನೇ ಜನ್ಮದಿನದ ಬಳಿಕ ಕಾಂಗ್ರೆಸ್ ವರ್ಚಸ್ಸು ಏರುಗತಿಯಲ್ಲಿ ಕಂಡುಬಂತು. ನಲವತ್ತು ಪರ್ಸೆಂಟ್ ಆರೋಪ ಹೊರಬಿದ್ದಾಗ ಮತ್ತಷ್ಟು ತೀವ್ರವಾಗಿ ಕಾಂಗ್ರೆಸ್ ಅಟ್ಯಾಕ್ ಮಾಡಿತು. ನಿಜವಾದ ವಿರೋಧ ಪಕ್ಷವಾಗಿ ಹೊಮ್ಮಿತು. ಪೇಸಿಎಂ ಪೋಸ್ಟರ್‌ಗಳನ್ನು ಅಂಟಿಸಿ ರಾಜ್ಯದ ಗಮನ ಸೆಳೆಯಿತು. ಇದು 40% ಸರ್ಕಾರ ಎಂಬ ಅಭಿಪ್ರಾಯವನ್ನು ರಾಜ್ಯದ ಮತದಾರರು ತಾಳುವಷ್ಟು ಪರಿಣಾಮಕಾರಿಯಾಗಿ ಕ್ಯಾಂಪೇನ್‌ ಆಯಿತು.

ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಬಿಜೆಪಿಯ ರಾಜ್ಯ ನಾಯಕರಲ್ಲಿ ಅಸಮರ್ಥತೆ ಎದ್ದು ಕಾಣುತ್ತಿತ್ತು. ಬಸವರಾಜ ಬೊಮ್ಮಾಯಿ ವಿಫಲ ನಾಯಕರಾಗಿ ಕಂಡರು. ಬ್ರಾಹ್ಮಣ ನಾಯಕತ್ವ ಬಿಜೆಪಿ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಹೋಯಿತು. ಬಿ.ವೈ.ವಿಜಯೇಂದ್ರ ಅವರನ್ನು ವರಣಾದಲ್ಲಿ ಸಿದ್ದರಾಮಯ್ಯನವರ ವಿರುದ್ಧ ನಿಲ್ಲಿಸಿ, ಸೋಲಿಸಲು ಯೋಜನೆ ರೂಪಿಸಲಾಗುತ್ತಿದೆ ಎಂಬ ಸಂದೇಶ ರವಾನೆಯಾಯಿತು. ಆಂತರಿಕ ಬಂಡಾಯ ಹೆಚ್ಚಾಯಿತು.

3.ಮಿತಿಮೀರಿದ ಕೋಮವಾದ ಮತ್ತು ಮತೀಯ ಗೂಂಡಾಗಿರಿಯ ಸಮರ್ಥನೆ

ಬೊಮ್ಮಾಯಿಯವರು ಯಾರೂ ಊಹಿಸಲಾಗಷ್ಟು ಕೋಮು ರಾಜಕಾರಣ ಮಾಡಿದ್ದು ಢಾಳಾಗಿ ಕಂಡಿತು. “ನಮಗಿಂತ ಹೆಚ್ಚು ಬೊಮ್ಮಾಯಿ ಆರ್‌ಎಸ್‌ಎಸ್‌ ಆಗಿ ಬದಲಾಗಿದ್ದಾರೆ” ಎಂದು ಬಿಜೆಪಿಯ ನಾಯಕ, ಸಚಿವ ಆರ್.ಅಶೋಕ್ ಅವರೇ ಸದನದಲ್ಲಿ ಹೇಳಿದ್ದರು. ಮತೀಯ ಗೂಂಡಾಗಿರಿಯನ್ನು ಕಟುವಾಗಿ ಟೀಕಿಸಬೇಕಿದ್ದ ಬೊಮ್ಮಾಯಿ- ‘ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ’ ಎಂದು ಹೇಳಿಕೆ ನೀಡುವ ಮೂಲಕ ಬೊಮ್ಮಾಯಿಯವರು ಅದಕ್ಕೆ ಸಮರ್ಥನೆ ನೀಡಿದ್ದರು. ಪಠ್ಯಪುಸ್ತಕ ತಿರುಚೀಕರಣಕ್ಕೆ ಸರ್ಕಾರ ಕೈಹಾಕಿತು. ಮಕ್ಕಳಲ್ಲಿ ವಿಶಾಲ ದೃಷ್ಟಿಕೋನ, ಜಾತ್ಯತೀತ ಮನೋಭಾವ, ಸಾಂವಿಧಾನಿಕ ಮೌಲ್ಯಗಳನ್ನು ಕಲಿಸಬೇಕಾದ ಸರ್ಕಾರ, ಪಠ್ಯಪುಸ್ತಕಗಳನ್ನು ಪಕ್ಷಪುಸ್ತಕವನ್ನಾಗಿ ಮಾಡಿತು. ಸುಮಾರು ಒಂದು ತಿಂಗಳ ಕಾಲ ರಾಜ್ಯದಲ್ಲಿ ಈ ವಿವಾದ ಚರ್ಚೆಯಾಯಿತು.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪವನ್ನು ಎದುರಿಸುತ್ತಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳಿಗೆ ಹೆಸರಾದ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಆದೇಶವಿಲ್ಲದೆ ಈ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಬಹುತೇಕ ಒಂದೇ ಸಮುದಾಯದ ಜನರಿದ್ದ ಈ ಸಮಿತಿಯು ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಪರಿಷ್ಕರಣೆಗಳು ಆತಂಕಕಾರಿಯಾಗಿದ್ದವು.

ಅಲ್ಪಸಂಖ್ಯಾತ ಸಮುದಾಯವನ್ನು ಟಾರ್ಗೆಟ್ ಮಾಡುವುದು ಮುಂದುವರಿಯಿತು. ಕ್ರಿಶ್ಚಿಯನ್ನರ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿಗಳಾಗುತ್ತಿರುವುದು ಕಂಡು ಬಂದರೂ ಸರ್ಕಾರ ನಿಷ್ಕ್ರಿಯವಾಗಿತ್ತು.‌‌ ಬಲವಂತವಾಗಿ, ಆಮಿಷವೊಡ್ಡಿ ದಲಿತರನ್ನು ಮತಾಂತರ ಮಾಡಲಾಗುತ್ತಿದೆ ಎಂಬ ವಾದವನ್ನು ತೇಲಿಬಿಡಲಾಯಿತು.‌ ದಲಿತರು ಅನುಭವಿಸುತ್ತಿರುವ ಅಸ್ಪೃಶ್ಯತೆಯ ನೋವು, ಸರ್ವರ್ಣೀಯರಿಂದ ಆಗುತ್ತಿರುವ ದೌರ್ಜನ್ಯಗಳ ಕುರಿತ ಪ್ರಶ್ನೆಗಳಿಗೆ ಈಗಲೂ ಬಿಜೆಪಿ ಹಾಗೂ ಸಂಘಪರಿವಾರದಿಂದ ಉತ್ತರವಿಲ್ಲ.‌‌ ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿತು.‌

ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಹಿಜಾಬ್‌ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್‌ವರೆಗೆ ಹೋಯಿತು.‌

ಉರಿಗೌಡ, ನಂಜೇಗೌಡ ಎಂಬ ಪಾತ್ರಗಳನ್ನು ಚುನಾವಣೆ ಕಣಕ್ಕೆ ತರಲಾಯಿತು. ಇವರೇ ಟಿಪ್ಪುವನ್ನು ಕೊಂದಿದ್ದು ಎಂದು ಬಿಂಬಿಸಲು ಯತ್ನಿಸಿ ಸೋತರು. ನಕಲಿ ಇತಿಹಾಸವನ್ನು ಬಿಜೆಪಿ ಸೃಷ್ಟಿಸಿದೆ ಎಂಬುದು ಮತದಾರರಿಗೆ ಅರ್ಥವಾಯಿತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರು ಮಧ್ಯಪ್ರವೇಶಿಸಿದ ಬಳಿಕ ಬಿಜೆಪಿ ನಾಯಕರು ‘ಉರಿಗೌಡ, ನಂಜೇಗೌಡ ವಿವಾದ’ದಿಂದ ಹಿಂದೆ ಸರಿದರು. ಕೋಮುದ್ವೇಷ ಪ್ರಕರಣಗಳಲ್ಲಿ ಪರಿಹಾರ ನೀಡುವಾಗ ತಾರತಮ್ಯವನ್ನು ತೋರಿತು. ಇಷ್ಟೆಲ್ಲ‌ ದ್ವೇಷಕಾರುವ ಪ್ರವೃತ್ತಿ ಹೆಚ್ಚಾಗುತ್ತಿರುವಾಗ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಯೂ ಹೆಚ್ಚಿತ್ತು.

4.ಮೀಸಲಾತಿ ಗಿಮಿಕ್ ಮತ್ತು ಒಳಮೀಸಲಾತಿಯ ಗೊಂದಲ

ಶತಾಯಗತಾಯ ಅಧಿಕಾರ ಹಿಡಿಯಬೇಕೆಂಬ ಹಠಕ್ಕೆ ಬಿದ್ದ ಬಿಜೆಪಿ ಮೀಸಲಾತಿ ವಿಚಾರದಲ್ಲಿ ಗಿಮಿಕ್‌ಗಳನ್ನು ಮಾಡಿತು. ಲಿಂಗಾಯತರು ಮತ್ತು ಒಕ್ಕಲಿಗರಿಗೆ ತಲಾ ಎರಡು ಪರ್ಸೆಂಟ್ ಮೀಸಲಾತಿಯನ್ನು ನೀಡುತ್ತೇವೆಂದು ಮುಸ್ಲಿಮರ ಮೀಸಲಾತಿಯನ್ನು ಕಿತ್ತುಹಾಕಲಾಯಿತು. ಒಬಿಸಿ ವರ್ಗದಲ್ಲಿ ವೈಜ್ಞಾನಿಕವಾಗಿ ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಕೈಗೊಂಡ ನಿರ್ಧಾರ ಒಕ್ಕಲಿಗರು ಮತ್ತು ಲಿಂಗಾಯತರಲ್ಲಿಯೇ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು. ಇನ್ನೊಬ್ಬರ ಅನ್ನವನ್ನು ಕಿತ್ತು, ಮತ್ತೊಬ್ಬರಿಗೆ ಹಂಚುವ ಕಿತಾಪತಿ ಇದೆಂದು ಸಮುದಾಯಗಳು ಭಾವಿಸಿದವು. ಒಕ್ಕಲಿಗ ಸಮುದಾಯದ ಪ್ರಭಾವಿ ನಂಜಾವಧೂತ ಸ್ವಾಮೀಜಿಯವರು, “ಒಕ್ಕಲಿಗರು ಇನ್ನೊಬ್ಬರ ಅನ್ನ ಕಿತ್ತು ತಿನ್ನುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರು.

ಬಿಜೆಪಿ ಮೀಸಲಾತಿ ವಿರೋಧಿ ಎಂಬ ಟ್ಯಾಗ್ ಮೊದಲಿನಿಂದಲೂ ಹೊಂದಿದೆ. ಆದರೆ ಚುನಾವಣೆಯ ಕೊನೆ ಕ್ಷಣದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿದ್ದೇವೆ ಎಂದು ಬಿಂಬಿಸಿಕೊಳ್ಳಲು ಹೊರಟಿತು. ಆದರೆ ಕೇಂದ್ರ ಸರ್ಕಾರದ ಮುಂದಕ್ಕೆ ಮೀಸಲಾತಿ ಹೆಚ್ಚಳದ ಪ್ರಸ್ತಾವನೆ ಹೋಗಿಯೇ ಇರಲಿಲ್ಲ. ಹೀಗಿರುವ ಒಳಮೀಸಲಾತಿ ಜಾರಿ ಮಾಡಿದ್ದೇವೆಂದು ಹೇಳಿತು. ಜಾರಿಯೇ ಆಗದಿರುವ ಮೀಸಲಾತಿ ಹೆಚ್ಚಳದಲ್ಲಿ ಒಳಮೀಸಲಾತಿ ಮಾಡಿದ್ದೇವೆಂಬ ಬಿಜೆಪಿಯ ನಡೆ ಗೊಂದಲ ಮೂಡಿಸಿತು. ಒಳಮೀಸಲಾತಿ ವಿಚಾರ ಬಂಜಾರ ಸಮುದಾಯದಲ್ಲಿ ಕಿಚ್ಚು ಹಚ್ಚಿತು. ಇತ್ತ ಮಾದಿಗ ಸಮುದಾಯವೂ ಇದು ಗೊಂದಲಕಾರಿಯಾಗಿದೆ ಎಂಬುದನ್ನು ಒಪ್ಪಿಕೊಂಡಿತು.

2018ರಲ್ಲಿ ಬಿಜೆಪಿಯಿಂದ ಕೈತಪ್ಪಿ ಹೋಗಿದ್ದ ದಲಿತರ ಮತಗಳು ಮತ್ತೆ ಮರಳಿ ಕಾಂಗ್ರೆಸ್ ಸೇರಿದವು. ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿದ್ದು ಪರಿಣಾಮ ಬೀರಿದೆ. ದಲಿತರ ಮತಗಳು ಸಾಲಿಡ್ ಆಗಿ ಕಾಂಗ್ರೆಸ್‌ಗೆ ಬಂದವು.

5.ಕಾಂಗ್ರೆಸ್‌ ನಾಯಕತ್ವದಲ್ಲಿನ ಒಗ್ಗಟ್ಟು ಮತ್ತು ಕಾಂಗ್ರೆಸ್ಸಿನ ಭರವಸೆಗಳು: ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯನವರ ನಡುವೆ ಹೊಂದಾಣಿಕೆ ಇಲ್ಲ ಎಂದು ಬಿಜೆಪಿ ಪ್ರಚಾರ ಮಾಡುತ್ತಿದ್ದಾಗಲೆಲ್ಲ ಈ ಇಬ್ಬರು ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಒಂದಾಗಿ ಚುನಾವಣಾ ಪ್ರಚಾರ ಮಾಡಿದರು.

ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಿತು. ಆದರೆ ಗ್ಯಾರಂಟಿಗಳನ್ನು ಮೋದಿ ಮತ್ತು ಬಿಜೆಪಿ ನಾಯಕರು ಗೇಲಿ ಮಾಡಿದರು. ಅದಕ್ಕೆ ಉತ್ತರವಾಗಿ ಬಿಜೆಪಿಯಿಂದ ಯಾವುದೇ ಭರವಸೆಗಳು ಕಂಡುಬರಲಿಲ್ಲ. ಏನು ಕೆಲಸ ಮಾಡುತ್ತೇವೆ ಎಂಬ ಸ್ಪಷ್ಟ ಉತ್ತವನ್ನು ನೀಡಲಿಲ್ಲ. ಬೆಲೆ ಏರಿಕೆಗಳಿಂದ ತತ್ತರಿಸಿದ್ದ ಜನಕ್ಕೆ ಕಾಂಗ್ರೆಸ್‌ನ ಗ್ಯಾರಂಟಿಗಳು ಹೊಸ ಭರವಸೆಗಳನ್ನು ಹುಟ್ಟಿಹಾಕಿದವು. ರಾಹುಲ್ ಗಾಂಧಿಯವರ ಸಜ್ಜನ ಮಾತುಗಾರಿಕೆ, ಭಾರತ್‌ ಜೋಡೋದಂತಹ ಯಾತ್ರೆ ಕರ್ನಾಟಕದಲ್ಲಿ ಸಾಗಿದ್ದು- ರಾಜ್ಯ ಕಾಂಗ್ರೆಸ್‌ನೊಳಗೆ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...