Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...