ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಿಯನ್ನು ಬೆಂಗಳೂರು ಮತ್ತು ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆದರಿಕೆ ಕರೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಎಫ್ಐಆರ್ ದಾಖಲಿಸಿದ್ದ ಪೊಲೀಸರು, ಕರೆ ದಾಖಲೆಗಳ ಮೂಲಕ ಆರೋಪಿ ಮಹಾರಾಷ್ಟ್ರದ ಸೋಲಾಪುರದ 40 ವರ್ಷದ ದಾನಪ್ಪನನ್ನು ಪತ್ತೆ ಹಚ್ಚಿದ್ದು, ಲಾತೂರ್ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಎಫ್ಎಂಸಿಜಿ ಎಂಬ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಎಂದು ವರದಿಗಳು ಹೇಳಿವೆ.
ಆರೋಪಿಯನ್ನು ಬೆಂಗಳೂರಿಗೆ ಕರೆ ತಂದಿರುವ ಪೊಲೀಸರು, ಆತನಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಫೋನ್ ನಂಬರ್ ಹೇಗೆ ಸಿಕ್ಕಿತು ಎಂದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಆತ ಒಬ್ಬನೇ ಬೆದರಿಕೆ ಕರೆ ಮಾಡಿದ್ದಾನೋ, ಅಥವಾ ಇನ್ಯಾರಾದರು ಸಹಕಾರ ನೀಡಿದ್ದಾರೋ ಎಂಬುವುದನ್ನು ಪರಿಶೀಲಿಸುತ್ತಿದ್ದಾರೆ.
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಅಕ್ಟೋಬರ್ 4ರಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಕುರಿತು ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್ 12ರಂದು ಟಿಪ್ಪಣಿ ಕಳುಹಿಸಿದ್ದರು.
ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ವಿಷಯ ಸುದ್ದಿಯಾಗುತ್ತಿದ್ದಂತೆ ಅವರಿಗೆ ಅನೇಕ ಬೆದರಿಕೆ ಕರೆಗಳು ಬರಲಾರಂಭಿಸಿವೆ ಎನ್ನಲಾಗಿದೆ. ಬುಧವಾರ (ಅ.15) ಈ ಸಂಬಂಧ ವಿಡಿಯೋವೊಂದನ್ನು ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದರು. ವಿಡಿಯೋದಲ್ಲಿ, ಸಚಿವರಿಗೆ ಕರೆ ಮಾಡಿದ್ದ ಬಂಧಿತ ಆರೋಪಿ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಇತ್ತು.