ಕಡೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈತಪ್ಪಿರುವ ಬೆನ್ನಲ್ಲೇ ವೈ.ಎಸ್.ವಿ. ದತ್ತ ಅವರು ಇದೇ ಏ.9ರಂದು ಅಭಿಮಾನಿಗಳ ಸಭೆ ಕರೆದಿದ್ದು, ಮುಂದಿನ ನಡೆಯ ಕುರಿತು ತಿಳಿಸುವ ಸಾಧ್ಯತೆ ಇದೆ.
ಬೆಳ್ಳಿಗೆ 11 ಗಂಟೆಗೆ ಕಡೂರಿನಲ್ಲಿ ಸಭೆ ಆರಂಭವಾಗಲಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
“ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಮದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ. ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ವೈಎಸ್ವಿ ದತ್ತ ಅವರು ಸೇರಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು.
ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಡೂರು: ಲಿಂಗಾಯತ-ಕುರುಬ ಸಮುದಾಯಗಳ ಮೇಲಾಟದ ಅಖಾಡದಲ್ಲಿ ಕೈ-ಕಮಲ ಕದನ ಕುತೂಹಲ!
ಜೆಡಿಎಸ್ ತೊರೆದ ವೈಎಸ್ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.
ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಟಿಕೆಟ್ ನೀಡಲಾಗಿದೆ.