ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್ಎಸ್) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಸಂಸ್ಥೆಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ವರದಿಯಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು. ಬಾಂಬೆ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯ ರವೀಂದ್ರ ಘುಗೆ ಅವರು ಕೂಡ ಕಾರ್ಯಕ್ರಮದ ಅತಿಥಿಯಾಗಿದ್ದರು.
ಸಂಸ್ಥೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳ ಪ್ರಕಾರ, ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿಭಟನೆಗಳು ನಡೆಯಬಹುದು ಎಂಬ ಗುಪ್ತಚರ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಶುಕ್ರವಾರ (ಜು.30) ಸಂಜೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಟಿಐಎಸ್ಎಸ್ ಆಡಳಿತ ಮಂಡಳಿಯು, “ಸಂಸ್ಥೆಯ ಪ್ರಸ್ತುತ ವಾತಾವರಣವು ಕಾರ್ಯಕ್ರಮ ನಡೆಸಲು ಪೂರಕವಾಗಿಲ್ಲ. ನಿಗದಿತ ದಿನಾಂಕದಂದು ಘಟಿಕೋತ್ಸವ ನಡೆಸಿದರೆ, ಅದು ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಮತ್ತು ಅತಿಥಿಗಳ ಸುರಕ್ಷತೆಗೆ ತೊಂದರೆ ಉಂಟುಮಾಡಬಹುದು ಎಂದು ಹೇಳಿದೆ.
ಕಾರ್ಯಕ್ರಮ ಮುಂದೂಡಿಕೆಯನ್ನು ಸಂಸ್ಥೆಯು ಒಂದು ಕಠಿಣ, ಆದರೆ ಅನಿವಾರ್ಯ ನಿರ್ಧಾರ ಎಂದು ಬಣ್ಣಿಸಿದೆ. ಸಂಸ್ಥೆಯ ಹಿತಾಸಕ್ತಿ ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಎಲ್ಲರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.


