‘ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣುತ್ತೇನೆ’ ಎಂದು ಪ್ರಮಾಣವಚನ ಸ್ವೀಕರಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಅಯೋಧ್ಯೆ ರಾಮಮಂದಿರ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ವಿಜೃಂಭಣೆಯಿಂದ ನಡೆಸಿಕೊಟ್ಟಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವವರ ಈ ರೀತಿಯ ವರ್ತನೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ದಕ್ಷಿಣ ಭಾರತದ ಹೆಸರಾಂತ ನಟ ಕಿಶೋರ್ ಕುಮಾರ್ (ಹುಲಿ), ‘ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ…’ ಎಂದು ಹೇಳಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ… ನಾವು ನೋಡದ್ದೇನಲ್ಲ. ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ.. ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳು … ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು’ ಎಂದು ಕಿಶೋರ್ ವಾಗ್ದಾಳಿ ನಡೆಸಿದ್ದಾರೆ.
‘ಧರ್ಮ ಮತ್ತು ದೇವರು ರಾಜಕಾರಿಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಪ್ರಶ್ನಾತೀತರನ್ನಾಗಿಸಿಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಆಡಳಿತಕ್ಕೆ ಬಂದ ನಂತರದ ‘ಹಿಂದುತ್ವ ರಾಜಕೀಯ’ ಬೆಳವಣಿಗೆಗಳು, ಬಿಜೆಪಿ ಸರ್ಕಾರದ ಸಂವಿಧಾನ ವಿರೋಧಿ ನಡೆಗಳ ವಿರುದ್ಧ ತಮ್ಮ ಪೇಸ್ಬುಕ್ ಮತ್ತು ಮಾಧ್ಯಮ ಸಂದರ್ಶನಗಳಲ್ಲಿ ಕಿಶೋರ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಾರೆ.
ರಾಮಮಂದಿರದ ಕುರಿತು ಈ ಹಿಂದೆ ಒಂದು ಪೋಸ್ಟ್ನಲ್ಲಿ, ‘ಅಸಲಿ ಹಿಂದೂ ವಿರೋಧಿ ಯಾರು? ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ? ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು? ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ’ ಎಂದು ತರಾಟೆಗೆ ತೆಗೆದುಕೊಂಡಿದ್ದರು.
‘ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿಬಿಡುವುದಿಲ್ಲವೇ? ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು.. ಅಷ್ಟೇ. ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ. ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ.. ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ’ ಎಂದು ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ಮಾತಿನಲ್ಲೇ ಚಾಟಿ ಏಟು ಬೀಸಿದ್ದರು.
ಇದನ್ನೂ ಓದಿ; ಪಶ್ಚಿಮ ಬಂಗಾಳ: ‘ಸರ್ವಧರ್ಮ ಸೌಹಾರ್ದ ರ್ಯಾಲಿ’ ಆರಂಭಿಸಿದ ಮಮತಾ ಬ್ಯಾನರ್ಜಿ