ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಬಂಧಿತರು. ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಅವರ ಮೇಲೆ ಪ್ರಕರಣವನ್ನು ದಾಖಲಿಸಿ ಬಂಧಿಸಿದ್ದಾರೆ. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲ ನ್ಯಾಯ ಕಾಯ್ದೆ ಹಾಗೂ ಮನುಷ್ಯರನ್ನು ಮಲ ಸ್ವಚ್ಛಗೊಳಿಸಲು ನಿಯೋಜಿಸಿಕೊಳ್ಳುವ ಹಾಗೂ ಪುನರ್ವಸತಿ ಕಾಯ್ದೆಯಡಿ ಲಕ್ಷ್ಮಿದೇವಮ್ಮ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ಆರೋಪಿ ಲಕ್ಷಿ ದೇವಮ್ಮ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದೆ.
ಏನಿದು ಘಟನೆ?
ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯವನ್ನು ಬ್ಲೀಚಿಂಗ್ ಪೌಡರ್ ಮತ್ತು ಕೆಮಿಕಲ್ ಹಾಕಿಸಿ ಸ್ವಚ್ಛಗೊಳಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಹಳ ಹಿಂದಿನಿಂದಲೂ ಈ ಶಾಲಾ ಶಿಕ್ಷಕರು ಮಕ್ಕಳಿಂದಲೆ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಮಕ್ಕಳ ಪೊಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕರ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಶಿಕ್ಷಕರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ಬಿಇಓ ಆಂಜನಪ್ಪ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯ ಶಿಕ್ಷಕಿ ಸೂಚನೆ ಮೇರೆಗೆ ಮಕ್ಕಳಿಬ್ಬರು ಶೌಚಾಲಯ ಸ್ವಚ್ಛಗೊಳಿಸಿದ್ದರು ಎಂಬುದಾಗಿ ತನಿಖೆ ವೇಳೆ ಅರಿತುಕೊಂಡಿದ್ದು, ಈ ಕುರಿತು ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಶಾಲಾ ಮುಖ್ಯ ಶಿಕ್ಷಕಿಯನ್ನು ಬಂಧಿಸಿದ್ದಾರೆ.
ಕಳೆದ ವಾರ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಕುರಿತು ಪೋಟೋಗಳು ವೈರಲ್ ಆಗಿದ್ದವು. ಇದಲ್ಲದೆ ಶಾಲಾ ಬಾಲಕನೋರ್ವನ ಹೇಳಿಕೆಯ ವಿಡಿಯೋ ಕೂಡ ವೈರಲ್ ಆಗಿತ್ತು. ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ, ನಾವು ಐದಾರು ಮಂದಿ ಇದ್ದೆವು. ಶೌಚ ಗುಂಡಿಗೆ ಇಳಿಸಿ ಕಸ ತೆಗೆಸಿದರು. ನಾವು ಬಕೆಟ್ಗಳಲ್ಲಿ ಕಸ ತುಂಬಿ ಕೊಟ್ಟೆವು. ಕೆಲವರು ಮೇಲಿಂದ ನೀರು ಹಾಕಿದರು. ಇಲ್ಲಿ ವಿಪರೀತ ಹಿಂಸೆ ಕೊಡುತ್ತಾರೆ. ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳುವುದು ಸೆರೆಯಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದರು.
ಇದನ್ನು ಓದಿ: ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ