Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...