Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...