Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...