Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...