Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...