Homeಮುಖಪುಟನಜತ್ ಓಝ್ಕಾಯಾನ ಆರು ಪದ್ಯಗಳು

ನಜತ್ ಓಝ್ಕಾಯಾನ ಆರು ಪದ್ಯಗಳು

- Advertisement -
- Advertisement -

1.ಪ್ರೇಮ ಹುಲಿಯ ಅವತಾರ

ಪ್ರೇಮ,
ಹುಲಿಯ ಅವತಾರ.
ಅಪರೂಪದ ಬೆಕ್ಕು, ಚೆಲುವಿನ ಬನಿ,
ಚರ್ಮದ ಕೆಳಗೆ ಹುರಿಗಟ್ಟಿರುವ
ಸ್ನಾಯುಗಳ ಮಾಯಗಾರ.
ಬದುಕು-ಸಾವಿನ ತಕ್ಕಡಿಯ
ತನ್ನ ನಿಷ್ಠುರ ದವಡೆಯಲ್ಲಿ ಸರಿದೂಗಿಸುವ
ಗಂಭೀರ ವ್ಯಾಪಾರಿ.

ಪ್ರೇಮ ಊಹಾತೀತ,
ಇನ್ನೇನು ಜಾಡು ಸಿಕ್ಕಿತು ಎನ್ನುವಾಗಲೇ
ಹೆಜ್ಜೆ ಅಳಿಸಿ ಹಾಕಿಬಿಡುವ ಚತುರ ಚೋರ
ಕಾಯುವ ನಾಟಕವಾಡುವ ವೇಷಧಾರಿ,
ಕೊಲ್ಲಲು ಹಾರುವ ತನಕ
ಸದ್ದು ಮಾಡದೇ ಸುಮ್ಮನಿದ್ದುಬಿಡುವ ತಂತ್ರಗಾರ,
ಎಂಥ ಕಾಡಿನ ಗರ್ಭದಲ್ಲೂ
ಬೇಟೆಯ ವಾಸನೆ
ಕ್ಷಣಮಾತ್ರದಲ್ಲಿ ಪತ್ತೆಹಚ್ಚಿಬಿಡುವ ಚಾಣಾಕ್ಷ ಗೂಢಚಾರ.

ಸ್ವರ್ಗ, ನರಕ ಎರಡರಲ್ಲೂ
ಪ್ರೇಮದ್ದೇ ಸರ್ಕಾರ.
ಬಿಸಿ ಉಸಿರಿನಿಂದ ಜೀವ ತುಂಬುತ್ತದೆಯಾದರೂ
ಗರ್ಜಿಸಿಯೇ ಅಸ್ತಿತ್ವ ಘೋಷಣೆ
ಹರಿತ ಉಗುರುಗಳ ನಡುವೆಯೇ ಲಲ್ಲೆವಾತು.

ಪ್ರೇಮ, ಭಯಂಕರ.
ಎಂಥ ಧೈರ್ಯಶಾಲಿಗಳೂ
ಒಂದರೆಘಳಿಗೆ ಬೆಚ್ಚಿ ಬೀಳುತ್ತಾರೆ.

ನನ್ನ ಮಾತು ಕೇಳಿ, ಈಗಲೇ ಮನೆಗೆ ಹೋಗಿ
ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಿ
ಇದು ಬೇಟೆಯಾಡಲೇ ಬೇಕಾದಂಥ ವ್ಯಾಘ್ರ.
(Love is a Tiger)

*****

2.ಹುಚ್ಚು ಹರಟೆ

ನನ್ನ ಪ್ರಾರ್ಥನೆ ಆಗಾಗ,
ತುಣುಕುಗಳಲ್ಲಿ, ದಿನವಿಡೀ,
ಅಂಥ ಮಹತ್ವದ್ದೇನಲ್ಲ, ಬಹುತೇಕ ಹರಟೆ.

ಭಗವಂತನಿಗಾಗಿ
ನಾನು ಹಾಡುವ ಹಾಡುಗಳು
ನೂರಕ್ಕೆ ನೂರು ಸಿಲ್ಲಿ,
ಪ್ರಾರ್ಥನೆ, ಅಪ್ಪಟ ಗಾಸಿಪ್
ಹಾಸಿಗೆಯೊಳಗಿನ ಗುಸುಗುಸು.

ಗಂಭೀರವಾಗಿರಲೇಬೇಕೆ?
ಭಗವಂತನೊಡನೆಯ ನನ್ನ ವ್ಯವಹಾರ
ತಲೆಹಿಡುಕತನಕ್ಕಿಂತ ಕೀಳೆ?

ಪ್ರಾರ್ಥನೆ
ಗೆಳೆಯರ ನಡುವಿನ ಕಾಡು ಹರಟೆ
ಭಗವಂತನನ್ನು
ಬೋರು ಹೊಡೆಸುವುದಕ್ಕಿಂತ
ಸಿಟ್ಟಿಗೇಳಿಸುವುದೇ ಒಳ್ಳೆಯ ಚೌಕಾಸಿ.
(Silly chatter)

********

3. ಪ್ರೇಮದಲ್ಲಿ ಮುಳುಗಿರುವ ಮನುಷ್ಯ

ಪ್ರೇಮದಲ್ಲಿ ಮುಳುಗಿರುವ ಮನುಷ್ಯ
ತನ್ನ ಪ್ರೇಮವನ್ನು ಜಾಹೀರು ಮಾಡುವುದು
ಎರಡು ರೀತಿಯಲ್ಲಿ

ಹಾಡಿ ಹಾಡಿ ಹೇಳುತ್ತಾನೆ
ಮನೆಯ ಮಾಳಿಗೆ ಮೇಲೆ ನಿಂತು
ಊರಿಗೆಊರೇ ಹುಚ್ಚೆದ್ದು ಕುಣಿಯುವಂತೆ,
ಇಲ್ಲಾ
ಯಾರಿಗೂ ಕಾಣದಂತೆ
ಕದ್ದ ಒಡವೆಯ ಕಣ್ಣಿಗೊತ್ತಿಕೊಂಡು ಮುಚ್ಚಿಡುವಂತೆ ಕಳ್ಳ
ಬಚ್ಚಿಟ್ಟುಕೊಳ್ಳುತ್ತಾನೆ ಎದೆಯಲ್ಲಿ

ನಾನು ಹಾಗೆಲ್ಲ
ಮಾಳಿಗೆ ಏರಿ ಹಾಡುವುದಿಲ್ಲ
ಅದು ಜೈಲಿನ ಹಾದಿ, ಗೊತ್ತು ನನಗೆ
ಬದಲಾಗಿ
ಗಲ್ಲ ಉಬ್ಬಿಸಿ ಓಡಾಡುತ್ತೇನೆ
ಊರ ತುಂಬ
ಬಾಯಲ್ಲಿ ಉಂಡಿ ತುಂಬಿಕೊಂಡ
ತುಂಟ ಹುಡುಗನಂತೆ

ಸಿಕ್ಕಿಹಾಕಿಕೊಂಡರೆ ಮಾತ್ರ
ಉಸುರುತ್ತೇನೆ ಅವರ ಕಿವಿಯಲ್ಲಿ
ಕುಣಿದಾಡುತ್ತ, ಕಣ್ಣು ಮಿಟುಕಿಸುತ್ತ
ನನ್ನ ಪ್ರೇಮ.
(When a person falls in love)

******

4 ಭಗವಂತನ ಪರಿಪೂರ್ಣತೆ

ಇವತ್ತು
ಒಬ್ಬ ಮನುಷ್ಯ ಸಿಕ್ಕಿದ್ದ
ಭಗವಂತನ ಪರಿಪೂರ್ಣತೆಯ ಬಗ್ಗೆ
ಮಾತನಾಡುತ್ತಲೇ ಹೋದ.

ಹೇಗೆ ಆತ
ಅಪಾರ, ನಿರ್ವಿಕಾರ, ನಿರಾಕಾರ, ನಿರ್ಗುಣ
ಮುಂತಾಗಿ.
ಅವನ ಮಾತುಗಳಿಗೆ ಕಾವ್ಯದ ಸ್ಪರ್ಶವಿತ್ತು,
ಕೈಗೆ ನಿಲುಕಲಾರದ, ಕಲ್ಪನಾತೀತ ಭಾವವೊಂದನ್ನು
ವಿವರಿಸುವ ಉನ್ಮಾದವಿತ್ತು.

ನನಗೆ ಗೊತ್ತಿಲ್ಲ ಈ ಮನುಷ್ಯ
ಯಾರ ಪ್ರೇಮದಲ್ಲಿ ಹೀಗೆ ಮಗ್ನನಾಗಿದ್ದಾನೆಂದು,
ಆದರೆ ಒಂದಂತೂ ನಿಜ
ಅದು ಖಂಡಿತ ಭಗವಂತನಂತೂ ಆಗಿರಲಾರ.

ನನಗೆ ಗೊತ್ತಿರುವ ಭಗವಂತ
ನೆಲದಿಂದ ಒಂದು ಹೆಜ್ಜೆಯನ್ನೂ ಮೇಲಿಟ್ಟವನಲ್ಲ,
ಅವ ಪ್ರತಿದಿನ ನಾನು ರಸ್ತೆಯಲ್ಲಿ ಒದೆಯುತ್ತ ಓಡಾಡುವ
ಮಣ್ಣಿನ ಗುಪ್ಪೆಗಳ ನಡುವೆ ಹಾಸು ಹೊಕ್ಕಾದವನು.
ನನ್ನ ಭಗವಂತ ಪರಿಪೂರ್ಣನಲ್ಲ,
ಜಗ ಮೊಂಡ, ಅಸಾಧ್ಯ ಹುಂಬ,
ಒಂದು ಮಾತಿಗೆ ಹತ್ತು ಮಾತನಾಡುವವ,
ಮಗ್ಗಲ ಮುಳ್ಳು.

ಪ್ರಾರ್ಥನೆಗಾಗಿ ಬಾಗಿದಾಗ
ನನ್ನ ಕತ್ತಿಗೆ ಮುತ್ತಿಡುವ ಭಗವಂತ
ನಿಲುಕಲಾರದವನೆನಲ್ಲ,
ತೋಳಿಗೆ ಸಿಕ್ಕರೆ ಮುರಿದು ಮುದ್ದೆ ಮಾಡುವುದಾಗಿ
ಹೆದರಿಸುವ ಭಯಂಕರ ಪೋಲಿ ಆಸಾಮಿ.
ನಿರ್ವಿಕಾರ? ಹಾಗೆಂದರೇನು?
ಬಹುಶಃ ಭಾವನೆಗಳಿಲ್ಲದವನು.

ಆದರೆ ನಮ್ಮ ಪ್ರೇಮ ಎಂಥದೆಂದರೆ

ನಾನು ಪಶ್ಚಿಮಕ್ಕೆ ಮುಖ ಮಾಡಿ
ತಲೆ ಬಾಗಿಸುವುದಷ್ಟೇ ತಡ
ಎಲ್ಲಿ ಈ ಭಗವಂತ ತನ್ನ ತುಟಿಗಳಿಂದ
ಕಚಗುಳಿ ಇಡಲು ಶುರು ಮಾಡುತ್ತಾನೋ
ಎಂದು ಹೆದರಿ
ಅವನನ್ನು ದೂರ ತಳ್ಳುತ್ತೇನೆ.
ನನ್ನ ಮಾತು ಕೇಳಿ.
ಇನ್ನೆಂದೂ ನನ್ನ ಮುಂದೆ
ಭಗವಂತನ ಪರಿಪೂರ್ಣತೆಯ ಬಗ್ಗೆ ಮಾತಾಡಬೇಡಿ,
ಭಗವಂತನ ಬಗ್ಗೆ ತಿಳಿದುಕೊಳ್ಳಲೇಬೇಕು ಎನಿಸಿದರೆ
ಎಚ್ಚರವಿದ್ದಾಗ ಅವನು ಸೃಷ್ಟಿಮಾಡುವ
ಫಜೀತಿಗಳಿಗೂ ತಯಾರಾಗಿ.
(The perfection of Allah)

*******

5. ಹೆಣ

ಇಂದು ಮುಂಜಾನೆ
ಶಹರದಲ್ಲಿ ಏನೋ ಕೋಲಾಹಲ.
ಗೇಟ್ ಹತ್ತಿರ ಒಂದು ಶವ ಪತ್ತೆಯಾಗಿದೆ.
ಹೆಣದ ತಪಾಸಣೆ ಮಾಡುತ್ತಿದ್ದಾನೆ
ಕಾವಲುಗಾರ.
ಅಳುಕಿನಿಂದಲೇ ಸೇರಿಕೊಳ್ಳುತ್ತೇನೆ
ಶವದ ಸುತ್ತ ನೆರೆದಿರುವ ಗುಂಪನ್ನು.

ದಿಗಿಲಾಯಿತು,
ಹೃದಯವೇ ಬಾಯಿಗೆ ಬಂದ ಹಾಗಾಯಿತು
ನನಗೆ ಗೊತ್ತು – ಇದು ಯಾರೆಂದು.

ಬಹುಶಃ
ಪೂರ್ವದ ತಣ್ಣನೆಯ ಗಾಳಿ
ಆವರಿಸಿಕೊಂಡು ಮೈ ಮರಗಟ್ಟುವ ಮುನ್ನ
ಒಳಗೆ ಸೇರಿಕೊಂಡು ಬಿಡಬೇಕೆಂದು
ಅವಸರದಿಂದ ಮುನ್ನುಗ್ಗುವಾಗ ಸತ್ತಿರಬಹುದು ಅಥವಾ

ಯಾರಿಗೂ ಹೇಳದೇ ಬಚ್ಚಿಟ್ಟುಕೊಂಡ
ಅಪಾರ ಪ್ರೇಮದ ಒತ್ತಡ ತಾಳಲಾರದೆ
ಎದೆಯೊಡೆದುಕೊಂಡು.

ಹೆಣದ ಹತ್ತಿರ ಹೋಗಲಿಲ್ಲ ನಾನು
ಹೆದರಿಕೆ, ಈ ಅಪರಾಧದಲ್ಲಿ
ನಾನೂ ಭಾಗಿಯಾಗಿರಬಹುದೆಂಬ
ಅನುಮಾನ.

ಯಾರ ಹೆಣ ಎಂದು ಗುರುತಿಸಲು
ಮುಖ ನೋಡುವ ಅಗತ್ಯ ನನಗಿಲ್ಲ,
ಅದು
ದೇವರ ಹೆಣ.

ನಾನೂ ಅವನ ಹಾಗೆಯೇ ಸೆಟೆದ
ತಣ್ಣನೆಯ ಶರೀರವಾಗಿಬಿಡುತ್ತಿದ್ದೆ
ಹಾಗೆಂದು ಹೇಳಿದ್ದರೆ
ಕೂಗಿ.
(The Corpse)

******

6. ಪ್ರೇಮಿಗಳ ಸಾವು

ಒಂದು ದಿನ
ಪುರಾತನ ಅರಮನೆಯ
ಪಾಳುಬಿದ್ದ ಅವಶೇಷಗಳ ನಡುವೆ
ಓಡಾಡುತ್ತ ದಣಿದು
ಖರ್ಜೂರದ ಮರವೊಂದರ ಕೆಳಗೆ
ಸ್ವಲ್ಪ ಹೊತ್ತು ಕಾಲು ಚಾಚಿದೆ ಹಾಯಾಗಿ

ಮನೆಯಿಂದ ಕಟ್ಟಿಕೊಂಡು ಬಂದಿದ್ದ
ಬುತ್ತಿ ಗಂಟು ಬಿಚ್ಚಿ, ಊಟ ಮುಗಿಸಿ
ಬೀಸುತ್ತಿದ್ದ ತಂಗಾಳಿಗೆ ಮೈಯೊಡ್ಡಿ
ಕಣ್ಣು ಮುಚ್ಚಿಕೊಳ್ಳುತ್ತಿದ್ದಂತೆಯೇ
ನನ್ನ ಕೈಗಳನ್ನು ನೆಕ್ಕತೊಡಗಿತು
ಜಿಂಕೆಯೊಂದು

ಬಿಳಚಿಕೊಂಡಿತ್ತು ಅದರ ಮೂಗು ಮುಖ
ಏನೋ ಒಂದು ಬಿಗಿತ ಕತ್ತಿನ ಚಲನೆಯಲ್ಲಿ

ಕಣ್ಣು ಬಿಟ್ಟರೆ ಜಿಂಕೆ ಅಂಜಬಹುದೆಂದು
ಎಲ್ಲ ಗಮನಿಸುತ್ತಿದ್ದೆ

ಹಾಗೆ ಅಲ್ಲಾಡದೇ ಕಿರುಗಣ್ಣಿನಲ್ಲಿಯೇ
ನನ್ನ ದೇಹವನ್ನೊಮ್ಮೆ ಮೂಸಿ ನೋಡಿ
ಮೊಣಕಾಲ ಮೇಲೆ ಬಗ್ಗಿ
ತನ್ನ ತಲೆಯನ್ನ ನನ್ನ ತೊಡೆಗಳ ಮೇಲಿಟ್ಟು
ಒರಗಿಕೊಂಡಿತು ಜಿಂಕೆ

ಒಂದು ಜೊತೆ ಕಪ್ಪುಕಣ್ಣುಗಳು
ನನ್ನ ಕಣ್ಣುಗಳೊಡನೆ ಮಾತಿಗಿಳಿದವು,
ನಿಧಾನವಾಗಿ ಆ ಕಣ್ಣೊಳಗಿನ ಬೆಳಕು ಮಾಯವಾಗುತ್ತ, ತೀರಿಯೇ ಹೋದಳು
ಆ ಕಪ್ಪು ಕಣ್ಣಿನ ಒಡತಿ.

ಒಂದಿಷ್ಟು ಅದ್ಭುತ ದಿನಗಳ ಪ್ರೇಮದ ನಂತರ
ಪ್ರೇಮಿಗಳು ಸಾಯಲು ಬಯಸೋದು ಹೀಗೆ,
ಪ್ರೇಮಿಯ ಕೈ
ತನ್ನ ಗಲ್ಲ ನೇವರಿಸುತ್ತಿರುವಾಗ
ಕಣ್ಣೊಳಗಿನ ಬೆಳಕು ನಿಧಾನವಾಗಿ
ಆರಿ ಹೋಗುವಂತೆ.
ನಜತ್ ಹೇಳುತ್ತಾನೆ….

ಆದರೆ ನೀವು ಹಾಗೆ
ಪ್ರೇಮಿಯ ತೊಡೆಯ ಮೇಲೆ ತಲೆಯಿಟ್ಟು
ಕಣ್ಣು ಮುಚ್ಚಿಕೊಳ್ಳಲು ಕಾಯಬೇಕಿಲ್ಲ
ಸಾವು ಬರುವ ತನಕ.
(How lovers long to die)

*********

ನಜತ್ ಓಝ್ಕಾಯಾ 14 ನೇ ಶತಮಾನದ ಸೂಫಿ ಕವಿ. ಜಲಾಲುದ್ದೀನ್ ರೂಮಿಯ ಊರು ಕೋನ್ಯಾದಲ್ಲಿಯೇ ಇದ್ದವನು. ಜಾನ್ ಮಾರ್ಬಿ ಎನ್ನುವ ಇಂಗ್ಲೀಷ್ ಕವಿ, ಅನುವಾದಕ ನಜತ್‌ನ ಕವಿತೆಗಳನ್ನ Salvation of the true rock ಎನ್ನುವ ಅಂಥಾಲಜಿಯಲ್ಲಿ ಸಂಗ್ರಹಿಸಿದ್ದಾನೆ.

(ಕನ್ನಡಕ್ಕೆ): ಚಿದಂಬರ ನರೇಂದ್ರ

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ’ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ’ಹೂಬಾಣ’, ’ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...