ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಮುಷ್ಕರ ವಾಪಸ್ ಹಿನ್ನೆಲೆ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ತಾತ್ಕಾಲಿಕವಾಗಿ ಅಂತ್ಯ ನೀಡಲಾಗಿದೆ. ಆದರೆ, ಬೇಡಿಕೆ ಈಡೇರುವ ತನಕ ಮುಷ್ಕರ ಮುಂದುವರೆಯಲಿದೆ ಎಂದು ಇಂದು ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿರ್ಧಾರ ತಿಳಿಸಿದ್ದಾರೆ.
ಆರನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರು. ಸರ್ಕಾರದ ಮನವಿಗೆ ಸ್ಪಂದಿಸದ ನೌಕರರ ಮೇಲೆ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿತ್ತು.
ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ
ನ್ಯಾಯಾಲಯಕ್ಕೆ ಗೌರವ ಕೊಟ್ಟು ಮುಷ್ಕರ ತಾತ್ಕಾಲಿಕ ವಾಗಿ ಮುಷ್ಕರ ವಾಪಸ್ ಪಡೆದಿದ್ದೇವೆ. ನಮ್ಮ ನ್ಯಾಯಯುತ ಬೇಡಿಕೆಗಳ ಬಗ್ಗೆ ಹೋರಾಟ ಮುಂದುವರಿಸುವುದಾಗಿ ಹೇಳಿದರು. ಸಾರಿಗೆ ನೌಕರರ ವಜಾ ಮತ್ತು ಅಮಾನತು, ವರ್ಗಾವಣೆ ಆದೇಶಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಮುಷ್ಕರ ಅಂತ್ಯದಿಂದ ನಾಳೆಯಿಂದ ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಬಸ್ ಸಂಚಾರವಿಲ್ಲದೆ ಜನ ಸಾಮಾನ್ಯರು ತೀವ್ರ ತೊಂದರೆಗೆ ಒಳಗಾಗಿದ್ದರು. ರಾಜ್ಯ ಸರ್ಕಾರ ಪ್ರತಿಭಟನಾಕಾರರ ಜೊತೆಗೆ ಜಿದ್ದಿಗೆ ಬಿದ್ದು ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ನೀಡಿತ್ತು.
ಆದರೆ ಕೊರೊನಾದಿಂದ ವಿಧಿಸಿರುವ ಕರ್ಫ್ಯೂ ಬಳಿಕ ಮತ್ತೆ ಮುಷ್ಕರ ಆರಂಭವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ