ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ನವೆಂಬರ್ 9ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ ಎಂದು ಟಿಎಂಸಿ ನಾಯಕರೊಬ್ಬರು ಬುಧವಾರ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಟಿಎಂಸಿ ವಕ್ತಾರೆ ಶಶಿ ಪಂಜಾ, ”ಬ್ಯಾನರ್ಜಿ ಅವರು ಗುರುವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು “ಸೇಡಿನ ರಾಜಕೀಯ”ಕ್ಕೆ ಬಲಿಯಾಗಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.
”ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ನಿರ್ಣಾಯಕ ಚುನಾವಣೆಗೆ ಮುನ್ನ ನಾಯಕರಿಗೆ ಕಿರುಕುಳ ನೀಡಲು ಬಿಜೆಪಿ ಇಂತಹ ಸೇಡಿನ ರಾಜಕಾರಣ ಮಾಡುತ್ತಿದೆ” ಎಂದು ಹರಿಹಾಯ್ದರು.
ರಾಜ್ಯ ಬಿಜೆಪಿ ವಕ್ತಾರ ಶಮಿಕ್ ಲಾಹಿರಿ ಮಾತನಾಡಿ, ”ಪಕ್ಷಕ್ಕೆ ಸೇಡಿನ ರಾಜಕಾರಣದಲ್ಲಿ ನಂಬಿಕೆ ಇಲ್ಲ. ಕೇಂದ್ರೀಯ ಸಂಸ್ಥೆಗಳಿಂದ ಸಮನ್ಸ್ ನೀಡುವುದು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದ್ದು, ಟಿಎಂಸಿಗೆ ಯಾವುದೇ ಸಮಸ್ಯೆ ಇದ್ದರೆ ನ್ಯಾಯಾಲಯವನ್ನು ಸಂಪರ್ಕಿಸಬಹುದು” ಎಂದು ಹೇಳಿದ್ದಾರೆ.
ಅಕ್ಟೋಬರ್ 3ರಂದು ಬ್ಯಾನರ್ಜಿ ಅವರಿಗೆ ಇಡಿ ಸಮನ್ಸ್ ನೀಡಿತ್ತು, ಅಕ್ಟೋಬರ್ 9 ರಂದು ಹಾಜರಾಗುವಂತೆ ತಿಳಿಸಲಾಗಿತ್ತು. ರಾಜ್ಯಕ್ಕೆ ನೀಡಬೇಕಾದ ಕೇಂದ್ರದ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಟಿಎಂಸಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸುವ ಉದ್ದೇಶದಿಂದ ಅವರು ಇಡಿ ಮುಂದೆ ಹಾಜರಾಗಿರಲಿಲ್ಲ.
ಸೆಪ್ಟೆಂಬರ್ 13ರಂದು ನಡೆದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾನರ್ಜಿ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ. ಆ ಬಳಿಕ ಮಾತನಾಡಿದ್ದ ಬ್ಯಾನರ್ಜಿ, ‘ಇಂಡಿಯಾ’ ಸಭೆಯಲ್ಲಿ ಭಾಗವಹಿಸುವುದನ್ನು ತಡೆಯುವ ಪ್ರಯತ್ನವಾಗಿದೆ ಎಂದು ಹೇಳಿದ್ದರು.
ಇದನ್ನೂ ಓದಿ: OBC ಸಿಎಂ ಘೋಷಣೆ; ಮೋದಿಗೆ ಒವೈಸಿ ತಿರುಗೇಟು