Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...