Homeಮುಖಪುಟತುಮಕೂರು ನಗರ: ಬಿಜೆಪಿಯಲ್ಲಿ ಬಂಡಾಯ - ಕಾಂಗ್ರೆಸ್, ಜೆಡಿಎಸ್‌ಗೆ ಜಯದ ಅವಕಾಶ

ತುಮಕೂರು ನಗರ: ಬಿಜೆಪಿಯಲ್ಲಿ ಬಂಡಾಯ – ಕಾಂಗ್ರೆಸ್, ಜೆಡಿಎಸ್‌ಗೆ ಜಯದ ಅವಕಾಶ

- Advertisement -
- Advertisement -

ತುಮಕೂರು ನಗರ ಬಿಜೆಪಿ ಟಿಕೆಟ್ ಹಾಲಿ ಶಾಸಕ ಜ್ಯೋತಿ ಗಣೇಶ್ ಪಾಲಾಗಿದೆ. ಟಿಕೆಟ್‌ ವಂಚಿತರಾದ ಮಾಜಿ ಸಚಿವ ಸೊಗಡು ಶಿವಣ್ಣನವರು ಬಂಡಾಯದ ಬಾವುಟ ಹಾರಿಸಿದ್ದು ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತುಮಕೂರು ನಗರದಲ್ಲಿ ಹೊಸ ಮುಖಕ್ಕೆ ಮನ್ನಣೆ ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ತನ್ನ ಮನೆಯನ್ನೇ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿ ಸೇವೆ ನೀಡುವ ಮೂಲಕ ಗಮನ ಸೆಳೆದಿದ್ದ ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಇಕ್ಬಾಲ್ ಅಹಮದ್ ಅವರಿಗೆ ಟಿಕೆಟ್ ದೊರೆತಿದೆ.

ತುಮಕೂರು
ಇಕ್ಬಾಲ್ ಅಹಮದ್

ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷವು ಕಳೆದ 11 ಚುನಾವಣೆಗಳಲ್ಲಿ ಸತತವಾಗಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಾ ಬಂದಿದೆ. ನಾಲ್ಕು ಬಾರಿ ಗೆದ್ದು, ಏಳು ಬಾರಿ ಸೋತರೂ ಮುಸ್ಲಿಮರಿಗೆ ಟಿಕೆಟ್ ನೀಡುವ ಪರಿಪಾಠ ಮುಂದುವರಿಸಿದೆ. ಈ ಬಾರಿಯೂ ಅದನ್ನೆ ಪುನಾರಾವರ್ತಿಸಿದೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚಿತ್ರಣ ಈ ರೀತಿ ಇದೆ.

ಅತಿ ಹೆಚ್ಚು ಜನಸಂಖ್ಯೆ ಇರುವ ಕಾರಣದಿಂದ ತುಮಕೂರು ನಗರ ಕ್ಷೇತ್ರದ ಜೊತೆಗೆ ಈ ಹಿಂದೆ ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳು ಇದ್ದವು. 1952ರಲ್ಲಿ ಇದ್ದ ಕೋರ ಕ್ಷೇತ್ರವನ್ನು ಕೈಬಿಟ್ಟು 1957ರಲ್ಲಿ ಹೆಬ್ಬೂರು ಕ್ಷೇತ್ರವನ್ನು ಅಸ್ತಿತ್ವಕ್ಕೆ ತರಲಾಯಿತು. 1967ರ ಹೊತ್ತಿಗೆ ಹೆಬ್ಬೂರು ಬದಲಿಗೆ ಗೂಳೂರು ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) ಅಸ್ತಿತ್ವಕ್ಕೆ ಬಂದಿತು. ಆನಂತರ ಅದನ್ನು ಕೈಬಿಟ್ಟು 1978ರ ವೇಳೆಗೆ ಬೆಳ್ಳಾವಿ ಕ್ಷೇತ್ರ ಅಸ್ತಿತ್ವಕ್ಕೆ ಬಂತು. 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಬೆಳ್ಳಾವಿ ಬದಲಿಗೆ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಸೃಷ್ಟಿಸಲಾಯಿತು. ಈಗ ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳು ಅಸ್ತಿತ್ವ ಉಳಿಸಿಕೊಂಡಿವೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರ – ರಾಜಕೀಯ ಇತಿಹಾಸ

ಇದುವರೆಗೂ ತುಮಕೂರು ನಗರದಲ್ಲಿ ನಡೆದ 15 ಚುನಾವಣೆಗಳಲ್ಲಿ 6 ಬಾರಿ ಕಾಂಗ್ರೆಸ್, 5 ಬಾರಿ ಬಿಜೆಪಿ, ಎರಡು ಬಾರಿ ಜನತಾಪಕ್ಷ ಮತ್ತು ಎರಡು ಬಾರಿ ಪ್ರಜಾ ಸೋಷಿಯಲಿಸ್ಟ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇಲ್ಲಿ ಜೆಡಿಎಸ್ ಖಾತೆ ತೆರೆಯಲು ವಿಫಲವಾಗಿರುವುದನ್ನು ಗಮನಿಸಬಹುದು.

1989ರಲ್ಲಿ ಜನತಾ ಪಕ್ಷದ ಲಕ್ಷ್ಮಿ ನರಸಿಂಹಯ್ಯನವರು ಕಾಂಗ್ರೆಸ್ ಅಭ್ಯರ್ಥಿ ಎಸ್.ಶಫಿ ಅಹಮದ್ ಎದುರು ಸೋಲುಕಂಡರು. 1994ರ ನಂತರ ತುಮಕೂರು ನಗರ ಕ್ಷೇತ್ರ ಬಿಜೆಪಿ ವಶವಾಯಿತು. ಆ ಚುನಾವಣೆಯಲ್ಲಿ ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಸೊಗಡು ಶಿವಣ್ಣ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. ಡಾ. ರಫಿಕ್ ಅಹ್ಮದ್ 43,681 ಮತಗಳನ್ನು ಪಡೆದರೆ, ಕೆಜೆಪಿಯ ಜಿ.ಬಿ.ಜ್ಯೋತಿಗಣೇಶ್ 40,073 ಮತಗಳನ್ನು ಗಳಿಸಿ ಪೈಪೋಟಿ ನೀಡಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎನ್. ಗೋವಿಂದರಾಜುರವರು 38,322 ಮತಗಳನ್ನು ಪಡೆದರೆ, ಬಿಜೆಪಿಯ ಸೊಗಡು ಶಿವಣ್ಣ ಕೇವಲ 13,159 ಮತಗಳಿಗೆ ಕುಸಿದು ಮುಖಭಂಗ ಅನುಭವಿಸಿದ್ದರು.

2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಡಾ. ರಫಿಕ್ ಅಹ್ಮದ್ ಮತ್ತು ಜೆಡಿಎಸ್‌ನಿಂದ ಎನ್. ಗೋವಿಂದರಾಜು ಸ್ಪರ್ಧಿಸಿದ್ದರು. ಮೂರು ಜನರ ತ್ರಿಕೋನ ಹಣಾಹಣಿಯಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ 5,293 ಮತಗಳ ಅಂತರದಿಂದ ಗೆದ್ದು ಬಂದರು. ಅವರು 60,421 ಮತಗಳನ್ನು ಪಡೆದರೆ ಜೆಡಿಎಸ್‌ನ ಗೋವಿಂದರಾಜುರವರು 55,128 ಮತಗಳನ್ನು ಪಡೆದರು. ಕಾಂಗ್ರೆಸ್‌ನ ರಫೀಕ್ ಅಹಮದ್ 51,219 ಮತಗಳನ್ನು ಪಡೆದ ಮೂರನೇ ಸ್ಥಾನಕ್ಕೆ ನೂಕಲ್ಪಟ್ಟರು.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,65,000; ಮುಸ್ಲಿಂ: 60,000; ಲಿಂಗಾಯಿತ: 50,000; ಪರಿಶಿಷ್ಟ ಜಾತಿ: 40,000; ಒಕ್ಕಲಿಗ: 40,000; ಕುರುಬ: 15,000; ಎಸ್‌ಟಿ: 11,000; ಗೊಲ್ಲರು: 8,000; ಇತರೆ: 41,000

ಹಾಲಿ ಪರಿಸ್ಥಿತಿ

ಮೊದಲ ಬಾರಿಗೆ ಶಾಸಕರಾದ ಜ್ಯೋತಿ ಗಣೇಶ್ ತುಮಕೂರಿನಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ, ಡಿಜಿಟಲ್ ಲೈಬ್ರರಿ, ಅಮಾನಿ ಕೆರೆ ಅಭಿವೃದ್ಧಿ, ಕಾಲೇಜು ಕಟ್ಟಡ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳ ಅನುಷ್ಠಾನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಜನರೊಟ್ಟಿಗೆ ಉತ್ತಮ ಬಾಂಧವ್ಯ ಸಹ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಸಾಕಷ್ಟು ಹಣ ಮಾಡಿದ್ದಾರೆ, ಪ್ರತಿ ಕಾಮಗಾರಿಗಳಲ್ಲಿ ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬ ಆರೋಪ ಸಹ ಅವರ ಮೇಲಿದೆ. ಕಾಂಗ್ರೆಸ್ ಕಾರ್ಯಕರ್ತರು ಜ್ಯೋತಿಗಣೇಶ್ ವಿರುದ್ಧ ಪೆಎಂಎಲ್‌ಎ ಪ್ರತಿಭಟನೆ ಸಹ ನಡೆಸಿ ಬಂಧನಕ್ಕೊಳಗಾಗಿದ್ದರು.

ಜ್ಯೋತಿ ಗಣೇಶ್

ಜ್ಯೋತಿಗಣೇಶ್‌ರವರ ತಂದೆ ಜಿ.ಎಸ್ ಬಸವರಾಜುರವರು ಕಾಂಗ್ರೆಸ್‌ನಿಂದ ಬಂದವರಾಗಿದ್ದು ಬಿಜೆಪಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರನ್ನು ಮಣಿಸಿ ಸಂಸದರಾಗಿದ್ದಾರೆ. ಅಪ್ಪ ಮಗ ಇಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಟಿಕೆಟ್ ವಂಚಿತ ಸೊಗಡು ಶಿವಣ್ಣ

ಮಾಜಿ ಸಚಿವ ಲಿಂಗಾಯತ ಸಮುದಾಯದ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್‌ಗಾಗಿ ಕಸರತ್ತು ನಡೆಸಿಯು ವಿಫಲರಾಗಿದ್ದಾರೆ. 2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಸೊಗಡು ಶಿವಣ್ಣ

ಜೆಡಿಎಸ್

ಜೆಡಿಎಸ್ ಪಕ್ಷವು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಒಕ್ಕಲಿಗ ಸಮುದಾಯದ ಎನ್ ಗೋವಿಂದರಾಜುರವರಿಗೆ ಟಿಕೆಟ್ ಘೋಷಿಸಿದೆ. ಅವರು ಈ ಹಿಂದೆಯೆಲ್ಲ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಆದರೆ ಸತತ ಎರಡು ಚುನಾವಣೆಗಳಲ್ಲಿ ಸೋತ ನಂತರ ಬೇಸರಗೊಂಡು ನೀರು ಕೊಡುವುದನ್ನು ನಿಲ್ಲಿಸಿದ್ದರು. ಈಗ ಚುನಾವಣೆ ಸಮಯದಲ್ಲಿ ಅವರು ಸಕ್ರಿಯರಾಗಿದ್ದಾರೆ. ಈ ಬಾರಿ ಎಂಎಲ್‌ಎ ಆಗಲೇಬೇಕೆಂದು ಕೆಲಸ ಮಾಡುತ್ತಿದ್ದಾರೆ.

ಗೋವಿಂದರಾಜು

ಕಾಂಗ್ರೆಸ್

ಈ ಬಾರಿ ಮೂವರು ಮುಸ್ಲಿಂ ಸಮುದಾಯದ ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಕಸರತ್ತು ನಡೆಸಿದ್ದರು. ಅದರಲ್ಲಿ ಇಕ್ಬಾಲ್ ಅಹಮದ್ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಸೋತಿರುವ ಡಾ.ರಫೀಕ್ ಅಹ್ಮದ್ ಮತ್ತು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕರಾದ ಅಟ್ಟಿಕಾ ಬಾಬುರವರು ಕಾಂಗ್ರೆಸ್ ಟಿಕೆಟ್ ಬೇಕೆಂದು ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ ಇಕ್ಬಾಲ್ ಅಹಮದ್‌ರವರ ಕೈ ಹಿಡಿದಿದೆ.

ಕೋವಿಡ್ ಸಂದರ್ಭದಲ್ಲಿ ತನ್ನ ಮನೆಯನ್ನೆ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿ ಗಮನ ಸೆಳೆದಿದ್ದ ಅವರು ತನಗೆ ಮಾಜಿ ಶಾಸಕ ಶಫಿ ಅಹ್ಮದ್ ಬೆಂಬಲ ಇದೆ ಎಂದು ಹೇಳಿಕೊಂಡು ಪ್ರಚಾರ ಆರಂಭಿಸಿದ್ದಾರೆ.

2023ರ ಸಾಧ್ಯಾಸಾಧ್ಯತೆ

ಕಾಂಗ್ರೆಸ್‌ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಮತಗಳು, ದಲಿತ, ಕುರುಬ ಸಮುದಾಯದ ಮತಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ. ಕಳೆದ ಸಾರಿ ಇದ್ದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ ಇಲ್ಲಿದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಹಾಗಾಗಿ ಐದನೇ ಮುಸ್ಲಿಂ ಶಾಸಕರಾಗಲು ಅವರು ಕಾತುರರಾಗಿದ್ದಾರೆ.

ಅದೇ ರೀತಿ ಜೆಡಿಎಸ್‌ನಲ್ಲಿಯೂ ಸಹ ಗೋವಿಂದರಾಜುರವರಿಗೆ ಯಾವುದೇ ಬಂಡಾಯ ಮತ್ತು ಒಳೇಟಿನ ಭೀತಿ ಇಲ್ಲ. ಎರಡು ಬಾರಿ ಸೋತಿರುವ ಅನುಕಂಪ ಅವರಿಗಿದೆ. ಒಮ್ಮೆಯೂ ಜೆಡಿಎಸ್ ಗೆದ್ದಲ್ಲದ ತುಮಕೂರು ನಗರದಲ್ಲಿ ಈ ಬಾರಿ ಖಾತೆ ತೆರೆಯಲು ಉತ್ಸುಕರಾಗಿದ್ದಾರೆ.

ಆದರೆ ಬಿಜೆಪಿಯ ಜ್ಯೋತಿ ಗಣೇಶ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸೊಗಡು ಶಿವಣ್ಣ ಸ್ಪರ್ಧಿಸಿದರೆ ಲಿಂಗಾಯಿತ ಮತಗಳ ವಿಭಜನೆಯಾಗುತ್ತದೆ. ಆಗ 2013ರಂತೆ ಕಾಂಗ್ರೆಸ್‌ ಅಥವಾ ಜೆಡಿಎಸ್ ಅದರ ಲಾಭ ಪಡೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...