ಕಳೆದ ಒಂದು ವಾರದಿಂದ ಬೆಂಗಳೂರು ಮಹಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು, ಸಿಡಿಲು ಸಹಿತ ಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಪ್ರತಿದಿನ ಸಂಜೆ ಹೊತ್ತಿಗೆ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಅ.23) ಬೆಳಿಗ್ಗೆಯಿಂದ ಕೊಂಚ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣವಿತ್ತು. ಆದರೆ, ಸಂಜೆ 4 ಗಂಟೆಯಿಂದ ಮಳೆ ಶುರುವಾಗಿದೆ. ಹವಾಮಾನ ಇಲಾಖೆ ಇಂದು ನಗರಕ್ಕೆ ಆರೆಂಜ್ ಅಲರ್ಟ್ ನೀಡಿದೆ.
ನಾಳೆ (ಅ.24) ಬೆಳಗ್ಗೆ 8.30ರ ತನಕದ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ, ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಇರಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ. ಬಹುತೇಕ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.
ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ
ಬೆಂಗಳೂರು ನಗರ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ 22 ವರೆಗೆ 24.1 ಸೆಂ.ಮೀ ಮಳೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 11.8 ಸೆಂ.ಮೀ ಮಳೆಯಾಗುತ್ತಿತ್ತು. 1901ರಿಂದ 2024ರ ಅವಧಿಯಲ್ಲಿ ಅ.1ರಿಂದ 22ರವರೆಗೆ 2005ರಲ್ಲಿ ಮಾತ್ರ 29.1 ಸೆಂ.ಮೀ ಮಳೆಯಾಗಿತ್ತು. ಇದು ಈವರೆಗಿನ ದಾಖಲೆ. 1970ರಲ್ಲಿ 25.3 ಸೆಂ.ಮೀ ಮಳೆಯಾಗಿತ್ತು. ಅದರ ನಂತರ ಈ ಬಾರಿಯಾಗಿದೆ ಅತೀ ಹೆಚ್ಚು ಮಳೆಯಾಗಿರುವುದು.
ಕಳೆದ ಒಂದು ವಾರದಿಂದ ಪ್ರತಿದಿನ ಸುರಿಯುತ್ತಿರುವ ಮಳೆಯಿಂದ ಸಂಚಾರ ಅಡಚಣೆ, ಅಂಡರ್ಪಾಸ್ಗಳಲ್ಲಿ ನೀರು ತುಂಬಿ ವಾಹನ ಸವಾರರ ಪರದಾಟ ಇತ್ಯಾದಿ ಸಮಸ್ಯೆಗಳು ಆಗುತ್ತಿತ್ತು. ಆದರೆ, ಸೋಮವಾರ (ಅ.21) ತಡರಾತ್ರಿ ಮತ್ತು ಮಂಗಳವಾರ (ಅ.22) ಮಧ್ಯಾಹ್ನ ಸುರಿದ ಮಳೆಯಿಂದ ಜನರಿಗೆ ದೊಡ್ಡ ಮಟ್ಟದ ಸಮಸ್ಯೆ ಉಂಟಾಗಿದೆ.
1 ಸಾವಿರಕ್ಕೂ ಅಧಿಕ ಮನೆಗಳಿಗೆ ನುಗ್ಗಿದ ನೀರು
ವರದಿಗಳ ಪ್ರಕಾರ, ನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಸುರಿದ ಭಾರೀ ಮಳೆಗೆ 1 ಸಾವಿರಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ನಗರದ ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ಯಲಹಂಕ, ಯಲಹಂಕ ಉಪನಗರ ಭಾಗಗಳಲ್ಲಿ ಮನೆಗಳು ಜಲಾವೃತಗೊಂಡು ಜನರು ಸಂಕಷ್ಟಪಟ್ಟಿದ್ದಾರೆ. ಯಲಹಂಕ ಕೋಗಿಲು ಕ್ರಾಸ್ ಬಳಿಯ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ನ ನೆಲ ಮಹಡಿ ಸಂಪೂರ್ಣ ಜಲಾವೃತಗೊಂಡು, ಪಾರ್ಕಿಂಗ್ ಪ್ರದೇಶದಲ್ಲಿ ಐದು ಐಡಿಗಳಷ್ಟು ನೀರು ಸಂಗ್ರವಾಗಿತ್ತು. ಅಲ್ಲಿನ ನಿವಾಸಿಗಳನ್ನು ಎನ್ಡಿಆರ್ಎಫ್, ಎಸ್ಡಿಆರ್ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಟ್ರ್ಯಾಕ್ಟರ್ ಮತ್ತು ಬೋಟ್ಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ.
ನಿರ್ಮಾಣ ಹಂತದ ಕಟ್ಟಡ ಕುಸಿದು 6 ಮಂದಿ ಸಾವು
ನಗರದಲ್ಲಿ ಭಾರೀ ಮಳೆಯ ನಡುವೆ ಮಂಗಳವಾರ (ಅ.22) ಸಂಜೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈ ಸುದ್ದಿಯ ಬರೆಯುವ (ಸಂಜೆ 4 ಗಂಟೆ) 6 ಕ್ಕೆ ಏರಿಕೆಯಾಗಿತ್ತು.
ಧರೆಗುರುಳಿದ ಮರ, ಸಂಚಾರ ದಟ್ಟಣೆ
ಭಾರೀ ಮಳೆಗೆ ನಗರದಲ್ಲಿ ಹಲವೆಡೆ ಮರಗಳು ಧರೆಗುರುಳಿವೆ. ಕೆಲವೆಡೆ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರ ಬಿದ್ದು ಹಾನಿ ಉಂಟಾಗಿದೆ. ಸಂಜೆ ಹೊತ್ತು ಕಚೇರಿ, ಶಾಲಾ-ಕಾಲೇಜು ಬಿಡುವ ಸಮಯದಲ್ಲಿ ಮಳೆಯಾಗುತ್ತಿರುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಬಳ್ಳಾರಿ ರಸ್ತೆಗಳಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಚರಂಡಿ, ರಸ್ತೆ ಗುಂಡಿಗಳ ಅವ್ಯವಸ್ತೆ
ನಗರದಲ್ಲಿ ಮಳೆಯಿಂದ ಹೆಚ್ಚು ಸಮಸ್ಯೆ ಉಂಟಾಗಲು ಚರಂಡಿ ಅವ್ಯವಸ್ಥೆ ಪ್ರಮುಖ ಕಾರಣವಾಗಿದೆ. ನಗರದಾದ್ಯಂತ ಎಲ್ಲೂ ಸರಿಯಾದ ಚರಂಡಿ ವ್ಯವಸ್ಥೆಯಿಲ್ಲ. ಮಳೆ ಬಂದಾಗ ರಸ್ತೆಯಿಂದ ನೀರು ಹರಿದು ಚರಂಡಿಗೆ ಹೋಗುವ ಬದಲು ಚರಂಡಿ ತುಂಬಿ ರಸ್ತೆ, ಮನೆಗಳಿಗೆ ನೀರು ನುಗ್ಗುತ್ತಿದೆ. ಇದರ ಜೊತೆಗೆ ರಸ್ತೆಗಳಲ್ಲಿರುವ ಗುಂಡಿಗಳು ಜನರ ಪ್ರಾಣಕ್ಕೆ ಕುತ್ತು ತರುವಂತಿದೆ. ಮಳೆ ಬಂದು ರಸ್ತೆ ಮೇಲೆ ನೀರು ನಿಂತಾಗ ಎಲ್ಲಿ ಎಷ್ಟು ದೊಡ್ಡ ಗುಂಡಿ ಇದೆ ಎಂದು ತಿಳಿಯದೆ ಬೈಕ್ ಸವಾರರು ಅದರೊಳಗೆ ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ವಾಹನ ಸವಾರರನ್ನು ಬಲಿ ಪಡೆಯುವಂತಿದೆ.
ಶಾಲೆಗಳಿಗೆ ರಜೆ, ಕಂಪನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ
ಮಳೆ ಹಿನ್ನೆಲೆ ಕಳೆದ ಮೂರು ದಿನಗಳಿಂದ ಬೆಂಗಳೂರು ನಗರದ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ. ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಸರ್ಕಾರ ಸೂಚನೆ ನೀಡಿದೆ.
ತುರ್ತು ಕ್ರಮಕ್ಕ ಸೂಚನೆ
ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಿಗೆ ಮಂಗಳವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ” ಅಪಾರ್ಟ್ಮೆಂಟ್ಗಳ ನೆಲಮಹಡಿಯಲ್ಲಿ ಸಂಗ್ರಹವಾಗಿರುವ ನೀರನ್ನು ಹೊರಹಾಕಲು ಮೋಟಾರ್ ಪಂಪ್ಗಳ ಅವಶ್ಯಕತೆಯಿದ್ದು, ಅಧಿಕಾರಿಗಳಿಗೆ ಪಂಪ್ಗಳನ್ನು ಒದಗಿಸುವಂತೆ ಮನವಿ ಮಾಡಲಾಗಿದೆ. ಅಗ್ನಿಶಾಮಕದಳ ಮತ್ತು ಬಿಬಿಎಂಪಿ ಸಿಬ್ಬಂದಿ ಮೂಲಕ ನೀರನ್ನು ಹೊರಹಾಕಲಾಗುವುದು. ದೊಡ್ಡಬೊಮ್ಮಸಂದ್ರ ಕೆರೆ ಕೋಡಿ 17 ವರ್ಷಗಳ ನಂತರ ಹರಿದಿದೆ. ಇದರಿಂದ ಕೊಡಿಗೇಹಳ್ಳಿ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆ
ಬೆಂಗಳೂರು ನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು ಬಿಬಿಎಂಪಿ ವಲಯವಾರು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಿದೆ. ಇದರ ಜೊತೆಗೆ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಅಗ್ನಿಶಾಮಕ ಮತ್ತು ಪೊಲೀಸ್ ತಂಡಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಇತರ ಜಿಲ್ಲೆಗಳಲ್ಲೂ ಭಾರೀ ಮಳೆ
ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತಿದ್ದು, ವಿವಿಧ ರೀತಿಯ ಹಾನಿ ಸಂಭವಿಸಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 120 ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹಾಸನ, ರಾಮನಗರ ಜಿಲ್ಲೆಗಳಲ್ಲೂ ಮಳೆಹಾನಿ ಸಂಭವಿಸಿದ ಬಗ್ಗೆ ಮಾಹಿತಿ ದೊರೆತಿದೆ.
12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇಂದು (ಅ.23) ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು, ಕರಾವಳಿಯ ಉಳಿದು ಜಿಲ್ಲೆಗಳ ಹಲವೆಡೆ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲಸ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ


