ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್ ಹಾಗೂ ಅಸ್ಸಾಂ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಎಐಸಿಸಿ ಸದಸ್ಯ ನವಜ್ಯೋತಿ ತಾಲುಕ್ದಾರ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಬೋರ್ಡೊಲೊಯ್ ಅವರು, “ಇಂದು ಅತ್ಯಂತ ತೀವ್ರವಾದ ದುಃಖದೊಂದಿಗೆ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಎಲ್ಲಾ ಹುದ್ದೆಗಳು, ಸವಲತ್ತುಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ರಾಜೀನಾಮೆ ನೀಡಿದ ನಂತರ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾಧ್ಯಮಗಳ ಮುಂದೆ ಬೋರ್ಡೊಲೊಯ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಪಕ್ಷದಲ್ಲಿ ನಮ್ಮನ್ನು ಅವಮಾನಿಸಲಾಗುತ್ತಿದೆ, ಗೌರವ ಸಿಗುತ್ತಿಲ್ಲ. ಹಿರಿಯ ನಾಯಕರಾಗಿದ್ದರೂ ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ” ಎಂದು ಹೇಳಿದ್ದಾರೆ.
“ಅಸ್ಸಾಂ ಕಾಂಗ್ರೆಸ್ನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ರೀತಿಯಲ್ಲಿ ಪಾರದರ್ಶಕತೆ ಇಲ್ಲ ಮತ್ತು ಕೆಲವೇ ವ್ಯಕ್ತಿಗಳ ಹಿತಾಸಕ್ತಿಗೆ ಪಕ್ಷ ಬಲಿಯಾಗುತ್ತಿದೆ” ಎಂದು ಅವರು ಟೀಕಿಸಿದ್ದಾರೆ.
ಪ್ರಸ್ತುತ ಅಸ್ಸಾಂನ ನೌಗಾಂಗ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರದ್ಯುತ್ ಬೋರ್ಡೊಲೊಯ್, ಈ ಹಿಂದೆ ಅಸ್ಸಾಂನ ಮಾರ್ಗರಿಟಾ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ (1998 ರಿಂದ 2014ರವರೆಗೆ) ಶಾಸಕರಾಗಿ ಆಯ್ಕೆಯಾಗಿದ್ದರು.
ತರುಣ್ ಗೊಗೊಯ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇವರು ಅತ್ಯಂತ ಪ್ರಭಾವಿ ಸಚಿವರಾಗಿದ್ದರು. ವಿದ್ಯುತ್, ಕೈಗಾರಿಕೆ ಮತ್ತು ವಾಣಿಜ್ಯ, ಶಿಕ್ಷಣ ಮತ್ತು ಸಾರ್ವಜನಿಕ ಸಂಬಂಧಗಳಂತಹ ಪ್ರಮುಖ ಖಾತೆಗಳನ್ನು ನಿಭಾಯಿಸಿದ ಅನುಭವವಿದೆ.
ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ಉಪಾಧ್ಯಕ್ಷರಾಗಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಕಾರ್ಯದರ್ಶಿಯಾಗಿಯೂ ಇವರು ಕೆಲಸ ಮಾಡಿದ್ದಾರೆ.
ರಾಜಕೀಯಕ್ಕೆ ಬರುವ ಮುನ್ನ ವಿದ್ಯಾರ್ಥಿ ದೆಸೆಯಿಂದಲೇ ಇವರು ಸಕ್ರಿಯರಾಗಿದ್ದರು. ಬೋರ್ಡೊಲೊಯ್ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಹಳೆಯ ವಿದ್ಯಾರ್ಥಿಯೂ ಹೌದು.
ನವಜ್ಯೋತಿ ತಾಲುಕ್ದಾರ್ ರಾಜೀನಾಮೆ
ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಉಪಾಧ್ಯಕ್ಷ ನವಜ್ಯೋತಿ ತಾಲುಕ್ದಾರ್ ಕೂಡ ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ತಮ್ಮ ರಾಜೀನಾಮೆ ಪತ್ರದಲ್ಲಿ ತಾಲುಕ್ದಾರ್ ಅವರು, “ಪಕ್ಷದ ಕಾರ್ಯವೈಖರಿಯಲ್ಲಿನ ಅಸಮಾಧಾನ, ಸಮನ್ವಯದ ಕೊರತೆ ಮತ್ತು ನನ್ನ ಕಡೆಯಿಂದ ಹಲವು ಬಾರಿ ಪ್ರಯತ್ನಿಸಿದರೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿನ ವಿಫಲತೆಯಿಂದಾಗಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಇಂತಹ ಸಂದರ್ಭಗಳಲ್ಲಿ ಮುಂದುವರಿಯುವುದು ಸ್ವೀಕಾರಾರ್ಹವೂ ಅಲ್ಲ ಮತ್ತು ಇದರಿಂದ ಯಾವುದೇ ಪ್ರಯೋಜನವೂ ಇಲ್ಲ” ಎಂದು ತಿಳಿಸಿದ್ದಾರೆ.
“ನಾನು, ನವಜ್ಯೋತಿ ತಾಲುಕ್ದಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಉಪಾಧ್ಯಕ್ಷ ಸ್ಥಾನ, ಎಐಸಿಸಿ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆ. ಈ ವಿಷಯದ ಕುರಿತು ಇದು ನನ್ನ ಅಂತಿಮ ಸಂವಹನ ಎಂದು ಪರಿಗಣಿಸಿ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಮತ್ತು ನನ್ನ ಎಲ್ಲಾ ಜವಾಬ್ದಾರಿಗಳನ್ನು ವಿಳಂಬವಿಲ್ಲದೆ ಕೊನೆಗೊಳಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ” ಎಂದು ತಾಲುಕ್ದಾರ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅಸ್ಸಾಂ ಕಾಂಗ್ರೆಸ್ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಕಾಂಗ್ರೆಸ್ ತೊರೆದು ಕಳೆದ ಫೆಬ್ರವರಿ 22ರಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೀಗ ಒಂದು ತಿಂಗಳು ಕಳೆಯುವುದರೊಳಗೆ ಮತ್ತಿಬ್ಬರು ಪ್ರಮುಖ ನಾಯಕರು ಪಕ್ಷ ತೊರೆದಿರುವುದು ಕಾಂಗ್ರೆಸ್ಗೆ ದೊಡ್ಡ ಹಿನ್ನೆಡೆ ಎನ್ನಬಹುದು.
ಈ ಬಾರಿ ಶತಾಯಗತಾಯ ಅಧಿಕಾರ ಹಿಡಿಯಬೇಕೆಂದು ಪ್ರಯತ್ನ ಪಡುತ್ತಿರುವ ಕಾಂಗ್ರೆಸ್ಗೆ ಘಟಾನುಘಟಿ ನಾಯಕರ ರಾಜೀನಾಮೆ ದೊಡ್ಡ ನಷ್ಟ ಎಂದು ಹೇಳಲಾಗ್ತಿದೆ.


