ಉಡುಪಿಯ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಮಹತ್ವದ ಮಾಹಿತಿಯನ್ನು ನೀಡಿದ್ದು, ಆರೋಪಿ ಕೃತ್ಯವನ್ನು ಒಪ್ಪಿಕೊಂಡಿರುವ ಬಗ್ಗೆ ತಿಳಿಸಿದ್ದಾರೆ.
ಉಡುಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಡಾ.ಕೆ.ಅರುಣ್, ಕೊಲೆ ಮಾಡಿರುವುದಾಗಿ ಪ್ರವೀಣ್ ಅರುಣ್ ಚೌಗಲೆ(39) ಒಪ್ಪಿಕೊಂಡಿದ್ದಾನೆ. ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈತನಿಗೆ ಬಂಧಿಸಲಾಗಿದೆ. ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಈತ ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ. ಈ ಬಗ್ಗೆ ಮತ್ತೆ ವಾಪಾಸ್ಸು ಮಾಹಿತಿ ಕಲೆ ಹಾಕಲಾಗುವುದು. ಗನಸಖಿ ಐನಾಝ್ ಮೇಲಿನ ದ್ವೇಷದಲ್ಲಿ ಈ ಕೃತ್ಯ ನಡೆಸಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ವಿಚಾರಣೆ ವೇಳೆ ಆರೋಪಿ ಕೊಲೆಗೆ 3 ಉದ್ದೇಶಗಳನ್ನು ತಿಳಿಸಿದ್ದು, ಅದನ್ನು ಪರಿಶೀಲನೆ ನಡೆಸಿ ದೃಢಪಡಿಸಲಾಗುವುದು. ಆರೋಪಿ ವಿವಾಹಿತನಾಗಿದ್ದಾನೆ ಮತ್ತು ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.
ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್ನಲ್ಲಿ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಯೋರ್ವ ತಾಯಿ ಹಸೀನಾ ಹಾಗೂ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಿದ್ದಾನೆ. ಈ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು ಆರೋಪಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಕುರಿತು ತನಿಖೆಗೆ ಪೊಲೀಸರ 5 ತಂಡಗಳನ್ನು ರಚಿಸಲಾಗಿತ್ತು.
ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ನನ್ನು ನಿನ್ನೆ ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಉಡುಪಿ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಯ ಆರೋಗ್ಯ ತಪಾಸಣೆ ನಡೆಸಿ ಬಿಗಿ ಪೊಲೀಸ್ ಬಂದೋ ಬಸ್ತ್ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆ ತರಲಾಯಿತು. ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಉಡುಪಿ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯ 14 ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಇದನ್ನು ಓದಿ: ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್