ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಶಿರಿಯಾರ ಗ್ರಾಮದ ಎತ್ತಿನಟ್ಟಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್ಒ ಆಗಿ ಕಾರ್ಯನಿರ್ವಹಿಸುತ್ತಿರುವ ಅಮೀತಾ (50) ಎಂಬುವರು ನೀಡಿದ ದೂರಿನ ಆಧಾರದ ಮೇಲೆ, ಶಿರಿಯಾರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಎಂಬಾತನ ವಿರುದ್ಧ ಕೋಟ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಘಟನೆಯ ಹಿನ್ನೆಲೆ:
ಜುಲೈ 27ರಂದು ಬೆಳಿಗ್ಗೆ ಸುಮಾರು 11:30ರ ವೇಳೆಗೆ ಬಿಎಲ್ಒ ಅಮೀತಾ ಅವರು ಶಿರಿಯಾರ ಗ್ರಾಮ ಆಡಳಿತಾಧಿಕಾರಿಗಳ (VA) ಕಚೇರಿಯಲ್ಲಿ ಅಧಿಕೃತವಾಗಿ ಎಸ್ಐಆರ್ (SIR) ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಮಯದಲ್ಲಿ ಕಚೇರಿಗೆ ಬಂದ ಸುಧೀಂದ್ರ ಶೆಟ್ಟಿ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ತೆಗೆದುಹಾಕಲು ಸಿದ್ಧಪಡಿಸಿದ ದಾಖಲೆಗಳನ್ನು ತನಗೆ ತೋರಿಸುವಂತೆ ದಬ್ಬಾಳಿಕೆ ನಡೆಸಿದ್ದಾನೆ.
ಸ್ಥಳೀಯ ನಿವಾಸಿಯೊಬ್ಬರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಯಾಕೆ ಪಟ್ಟಿ ಮಾಡುತ್ತಿದ್ದೀರಿ ಹಾಗೂ ಪಟ್ಟಿ ಮಾಡಲು ನಿಮಗ್ಯಾರು ಅಧಿಕಾರ ಕೊಟ್ಟಿದ್ದು ಎಂದು ಪ್ರಶ್ನಿಸಿ, ಮಹಿಳಾ ಬಿಎಲ್ಒ ಅವರ ಬಳಿಯಿದ್ದ ಸರ್ಕಾರಿ ಪುಸ್ತಕಗಳನ್ನು ಬಲವಂತವಾಗಿ ಎಳೆದೊಯ್ದಿದ್ದಾನೆ. ಅಲ್ಲದೆ, ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅಮೀತಾ ಅವರು ನೀಡಿದ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ಸುಧೀಂದ್ರ ಶೆಟ್ಟಿ ವಿರುದ್ಧ ಅಪರಾಧ ಕ್ರಮಾಂಕ 123/2026 ರಂತೆ ಪ್ರಕರಣ ದಾಖಲಾಗಿದೆ. ಹೊಸ ಭಾರತೀಯ ನ್ಯಾಯ ಸಂಹಿತೆಯ (BNS) ಗಂಭೀರ ಕಲಂಗಳಾದ 132 (ಸರ್ಕಾರಿ ನೌಕರನ ಮೇಲೆ ಹಲ್ಲೆ ಅಥವಾ ಕರ್ತವ್ಯಕ್ಕೆ ಅಡ್ಡಿಪಡಿಸುವುದು), 74 (ಮಹಿಳೆಯ ಘನತೆಗೆ ಕುಂದು ತರುವ ಉದ್ದೇಶದಿಂದ ಶಕ್ತಿಪ್ರಯೋಗ ಅಥವಾ ದೌರ್ಜನ್ಯ), 352 (ಶಾಂತಿ ಭಂಗ ಉಂಟುಮಾಡುವ ಉದ್ದೇಶಪೂರ್ವಕ ನಿಂದನೆ) ಹಾಗೂ 351(2) (ಕ್ರಿಮಿನಲ್ ಬೆದರಿಕೆ ಮತ್ತು ಕೊಲೆ ಬೆದರಿಕೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕ್ಷೇತ್ರ ಮಟ್ಟದಲ್ಲಿ ಜೀವದ ಹದನವಿಲ್ಲದೆ ಕೆಲಸ ಮಾಡುವ ಮಹಿಳಾ ಬಿಎಲ್ಒಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಸ್ಥಳೀಯ ರಾಜಕಾರಣಿಗಳು ನಡೆಸುವ ಇಂತಹ ದೌರ್ಜನ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.


