HomeಮುಖಪುಟExplainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?

Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?

- Advertisement -
- Advertisement -

ಡಿಸೆಂಬರ್ 8 ಭಾನುವಾರದಂದು ಅಲಹಾಬಾದ್ ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು, ಮುಸ್ಲಿಮರನ್ನು ಗುರಿಯಾಗಿಸಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ.

ಭಾರತ ದೇಶ ಬಹುಸಂಖ್ಯಾತರ ಇಚ್ಚೆಯಂತೆ ನಡೆಯಲಿದೆ ಎಂದಿರುವ ನ್ಯಾ.ಶೇಖರ್ ಕುಮಾರ್ ಯಾದವ್, ಸಾಮಾಜಿಕ ಜಾಲತಾಣಗಳಲ್ಲಿ ಬಲಪಂಥೀಯರು ಮುಸ್ಲಿಮರನ್ನು ಗುರಿಯಾಗಿಸಿ ಬಳಸುವ ‘ಕಠ್ಮುಲ್ಲಾ’ಎಂಬ ಪದ ಉಪಯೋಗಿಸಿ ಮುಸ್ಲಿಮರ ವಿರುದ್ದ ಟೀಕೆ ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಪ್ರಾಣಿಗಳ ಹತ್ಯೆಯನ್ನು ನೋಡುವುದರಿಂದ ಮುಸ್ಲಿಂ ಮಕ್ಕಳು ದಯೆ ತೋರುತ್ತಾರೆ ಎಂದು ನಿರೀಕ್ಷಿಸುವಂತಿಲ್ಲ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

ನ್ಯಾಯಮೂರ್ತಿಗಳ ಈ ಹೇಳಿಕೆ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಮೂರ್ತಿ ವಿರುದ್ದ ಸಿಜೆಐ ಸಂಜೀವ್ ಖನ್ನಾ ಅವರಿಗೆ ದೂರು ನೀಡಲಾಗಿದೆ. ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ನಿಂದ ಈ ಬಗ್ಗೆ ಮಾಹಿತಿ ಕೋರಿದೆ. ನ್ಯಾ. ಶೇಖರ್ ಕುಮಾರ್ ಯಾದವ್ ಅವರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್ ನೀಡಿದೆ. ರಾಜ್ಯಸಭೆಯಲ್ಲಿ ವಾಗ್ದಂಡನೆ ನೋಟಿಸ್ ನೀಡಲಾಗಿದೆ. ಅದಕ್ಕೆ 55 ಸದಸ್ಯರು ಸಹಿ ಹಾಕಿದ್ದಾರೆ. ಲೋಕಸಭೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ವಾಗ್ದಂಡನೆ ನೋಟಿಸ್ ನೀಡಿದ್ದಾರೆ. ಅದಕ್ಕೆ 100 ಸಂಸದರ ಸಹಿ ಬೇಕಿದೆ.

ಹಾಲಿ ನ್ಯಾಯಾಧೀಶರಾಗಿರುವ ಶೇಖರ್ ಕುಮಾರ್ ಯಾದವ್ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಹಿನ್ನೆಲೆ ಅವರ ಪದಚ್ಯುತಿಗೆ ಆಗ್ರಹ ಹೆಚ್ಚಾಗಿದೆ. ಹಾಗಾದರೆ, ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಸಾಧ್ಯನಾ? ಅದರ ಪ್ರಕ್ರಿಯೆ ಹೇಗೆ ನಡೆಯಲಿದೆ ನೋಡೋಣ..

ಸಂವಿಧಾನ ವಿಧಿಗಳಾದ 124 ಮತ್ತು 218 ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವ ಬಗ್ಗೆ ವಿವರಿಸುತ್ತದೆ.

ಹಾಲಿ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸುಧೀರ್ಘ ಪ್ರಕ್ರಿಯೆಯನ್ನು ಒಳಗೊಂಡಿದೆ ಮತ್ತು ಬಹಳ ಸಂಕೀರ್ಣ ವಿಷಯವಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದುವರೆಗೆ ಯಾವುದೇ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸಿಲ್ಲ. ಆದರೆ, ಹಲವರ ವಿರುದ್ದ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ಸಂವಿಧಾನದ ವಿಧಿ 124(4) ಪ್ರಕಾರ : ರಾಷ್ಟ್ರಪತಿಗಳು ಸಂಸತ್ತಿನ ಎರಡೂ ಮನೆಗಳ ಅಭಿಪ್ರಾಯಗಳನ್ನು ಪಡೆದು ಅಂತಿಮ ನಿರ್ಧಾರ ತೆಗೆದುಕೊಳ್ಳದ ಹೊರತು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ‘ಅನುಚಿತ ವರ್ತನೆ ಅಥವಾ ಅಸಮರ್ಥತೆ’ ಕಾರಣ ನೀಡಿ ಹುದ್ದೆಯಿಂದ ತೆಗೆದು ಹಾಕಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸಂಸತ್ತಿನ ಅಭಿಪ್ರಾಯ ಪಡೆಯುವಾಗ ಸಂಸತ್ತಿನ ಎರಡೂ ಸದನಗಳ ಒಟ್ಟು ಸದಸ್ಯರಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿದ್ದು ಮತ ಚಲಾಯಿಸಬೇಕು.

ಸಂವಿಧಾನದ ವಿಧಿ 218ರ ಪ್ರಕಾರ : ಹೈಕೋರ್ಟ್‌ನ ನ್ಯಾಯಾಧೀಶರಿಗೂ ಮೇಲ್ಗಡೆ ವಿವರಿಸಿದ ಅದೇ ನಿಯಮಗಳು ಅನ್ವಯಿಸುತ್ತದೆ.

ನ್ಯಾಯಾಧೀಶರ ಪದಚ್ಯುತಿ ಪ್ರಕ್ರಿಯೆಯನ್ನು ಸಂವಿಧಾನ ಹೇಗೆ ವಿವರಿಸಿದೆಯೂ, ಅದನ್ನು ಅನಸರಿಸಿ ನ್ಯಾಯಾಧೀಶರ (ವಿಚಾರಣೆ) ಕಾಯ್ದೆ-1968 ಅನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯಡಿ ನ್ಯಾಯಾಧೀಶರ ವಿರುದ್ಧ ಕೇಳಿ ಬಂದಿರುವ ಆರೋಪಗಳ ತನಿಖೆಯ ಮತ್ತು ಸಾಕ್ಷ್ಯ ಸಂಗ್ರಹದ ಕಾರ್ಯ ವಿಧಾನಗಳನ್ನು ನಿಯಂತ್ರಿಸಲಾಗುತ್ತದೆ.

ನ್ಯಾಯಾಧೀಶರ (ವಿಚಾರಣೆ) ಕಾಯ್ದೆ-1968ರ ಮೂಲಕ ನಿಗದಿಪಡಿಸಲಾದ ಪ್ರಕ್ರಿಯೆ

ಹಂತ 1 : ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಪದಚ್ಯುತಿಯ ಮೊದಲ ಹಂತ ಲೋಕಸಭೆ ಅಥವಾ ರಾಜ್ಯಸಭೆಯಿಂದ ಪ್ರಾರಂಭವಾಗುತ್ತದೆ. ಕನಿಷ್ಠ 100 ಲೋಕಸಭಾ ಸಂಸದರು ಅಥವಾ ಕನಿಷ್ಠ 50 ರಾಜ್ಯಸಭಾ ಸಂಸದರು ಪದಚ್ಯುತಿ ನೋಟಿಸ್‌ಗೆ ಸಹಿ ಹಾಕಬೇಕಿದೆ.

ಹಂತ 2 : ಲೋಕಸಭೆಯ ಸ್ಪೀಕರ್ ಅಥವಾ ರಾಜ್ಯಸಭಾ ಅಧ್ಯಕ್ಷರು ನೋಟಿಸ್‌ ಸ್ವೀಕೃತಿ ಮಾಡಬಹುದು ಅಥವಾ ತಿರಸ್ಕರಿಸಬಹುದು

ಹಂತ 3 : ಸ್ಪೀಕರ್ ಅಥವಾ ಅಧ್ಯಕ್ಷರು ಪದಚ್ಯುತಿ ನೋಟಿಸ್ ಒಪ್ಪಿಕೊಂಡರೆ, ನ್ಯಾಯಾಧೀಶರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಅವರು ಸಮಿತಿಯನ್ನು ರಚಿಸಬೇಕಾಗುತ್ತದೆ. ಆ ಸಮಿತಿಯು ಈ ಕೆಳಗಿನವರನ್ನು ಒಳಗೊಂಡಿರಬೇಕು..

  1. ಒಬ್ಬರು ಸುಪ್ರೀಂ ಕೋರ್ಟ್ ನ್ಯಾಯಾಧೀಶರು
  2. ಒಬ್ಬ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ
  3. ಒಬ್ಬ ಖ್ಯಾತ ನ್ಯಾಯಶಾಸ್ತ್ರಜ್ಞ

ಹಂತ 4 : ಸಂಸತ್ತಿನ ಉಭಯ ಸದನಗಳಲ್ಲಿ ಒಂದೇ ದಿನದಲ್ಲಿ ವಾಗ್ದಂಡನೆ ಅಥವಾ ಪದಚ್ಯುತಿ ನೋಟಿಸ್ ನೀಡಿದರೆ, ಈ ಎರಡೂ ನೋಟಿಸ್‌ಗಳನ್ನು ಅಂಗೀಕರಿಸಿದರೆ ಮಾತ್ರ ಸಮಿತಿ ರಚಿಸಬಹುದು. ಸಮಿತಿಯ ರಚನೆಯ ಬಗ್ಗೆ ಲೋಕಸಭೆಯ ಸ್ಪೀಕರ್ ಮತ್ತು ರಾಜ್ಯಸಭೆಯ ಅಧ್ಯಕ್ಷರು ಜಂಟಿಯಾಗಿ ನಿರ್ಧಾರ ಕೈಗೊಳ್ಳಬೇಕು.

ಹಂತ 5 : ಸಮಿತಿಯು ನಂತರ ನ್ಯಾಯಾಧೀಶರ ವಿರುದ್ಧ ಆರೋಪಗಳನ್ನು ರೂಪಿಸುವ ಕೆಲಸವನ್ನು ಮಾಡುತ್ತದೆ.

ಹಂತ 6 : ನ್ಯಾಯಾಧೀಶರಿಗೆ ಅವರ ವಿರುದ್ದದ ಆರೋಪಗಳ ಕುರಿತ ಲಿಖಿತ ಪ್ರತಿಕ್ರಿಯೆಗಾಗಿ ನೋಟಿಸ್ ನೀಡಬೇಕು.

ಹಂತ 7 : ತನಿಖಾ ಸಮಿತಿಯು ತನ್ನ ವರದಿಯನ್ನು ಮತ್ತು ನ್ಯಾಯಾಧೀಶರ ಲಿಖಿತ ಪ್ರತಿಕ್ರಿಯೆಯನ್ನು ಸಂಸತ್ತಿಗೆ ಸಲ್ಲಿಸಬೇಕು. ಅದನ್ನು ಸ್ಪೀಕರ್ ಅಥವಾ ಅಧ್ಯಕ್ಷರು ಸದನದಲ್ಲಿ ಮಂಡಿಸಬೇಕು. ವರದಿಯಲ್ಲಿ ನ್ಯಾಯಾಧೀಶರ ವಿರುದ್ದದ ಅನುಚಿತ ವರ್ತನೆ ಅಥವಾ ಅಸಮರ್ಥತೆ ರುಜುವಾತಾದರೆ, ನಂತರ ಸದನವು ಅದರ ಮೇಲೆ ಚರ್ಚೆ ನಡೆಸಿ ಮತ ಚಲಾಯಿಸುತ್ತದೆ.

ಹಂತ 8 : ಮತದಾನದಕ್ಕೂ ಮೊದಲು, ಆರೋಪ ಹೊತ್ತಿರುವ ನ್ಯಾಯಾಧೀಶರು ತಮ್ಮ ವಾದವನ್ನು ಸದನದಲ್ಲಿ ಮಂಡಿಸಬಹುದು.

ಹಂತ 9 : ನ್ಯಾಯಾಧೀಶರ ವಿರುದ್ದ ಸಂಸತ್ತಿನ ಉಭಯ ಸದನಗಳಲ್ಲಿ ಪದಚ್ಯತಿ ಅಂಗೀಕರಿಸಲು ಬಹುಮತಬೇಕು. ಅಂದರೆ, ಸದನದ ಒಟ್ಟು ಸದಸ್ಯರ ಪೈಕಿ ಅರ್ಧಕ್ಕಿಂತ ಹೆಚ್ಚು ಜನರು ನಿರ್ಣಯ ಬೆಂಬಲಿಸಬೇಕು. ಉಪಸ್ಥಿತರಿರುವ ಮತ್ತು ಮತ ಚಲಾಯಿಸುವ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರ ಬೆಂಬಲ ಇದಕ್ಕೆ ಅಗತ್ಯವಿದೆ.

ಹಂತ 10 : ನಂತರ ರಾಷ್ಟ್ರಪತಿಗಳಿಗೆ ಪದಚ್ಯುತಿ ನಿರ್ಣಯ ಕಳುಹಿಸಲಾಗುತ್ತದೆ. ಅವರು ನ್ಯಾಯಾಧೀಶರನ್ನು ಹುದ್ದೆಯಿಂದ ತೆಗೆದುಹಾಕುವ ಆದೇಶ ನೀಡುತ್ತಾರೆ.

ಸ್ವತಂತ್ರ ಭಾರತದ ಇತಿಹಾಸಲ್ಲಿ ಇದುವರೆಗೆ ಒಬ್ಬರು ನ್ಯಾಯಾಧೀಶರ ವಿರುದ್ದ ಮಾತ್ರ 8ನೇ ಹಂತದವರೆಗೆ ಪದಚ್ಯುತಿ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ.

ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಸೌಮಿತ್ರ ಸೇನ್ ಅವರ ವಿರುದ್ದ ಹಣ ದುರುಪಯೋಗದ ಆರೋಪ ಕೇಳಿ ಬಂದಿತ್ತು. ರಾಜ್ಯಸಭೆಯ ಸದನದಲ್ಲಿ ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು. ರಾಜ್ಯಸಭೆಯು ಅವರ ಪದಚ್ಯುತಿಗೆ ನಿರ್ಣಯ ಅಂಗೀಕರಿಸಿತ್ತು. ಆದರೆ, ಲೋಕಸಭೆಯಲ್ಲಿ ಪದಚ್ಯುತಿ ನಿರ್ಣಯ ಮತದಾನಕ್ಕೆ ಬರುವ ಮುನ್ನವೇ ನ್ಯಾಯಾಧೀಶ ಸೌಮಿತ್ರ ಸೇನ್ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಉನ್ನತ ನ್ಯಾಯಾಂಗದ ನ್ಯಾಯಾಧೀಶರನ್ನು ಪದಚ್ಯುತಗೊಳಿಸಲು ಸಂಸದೀಯ ಕ್ರಮವು ಅಗತ್ಯವಾಗಿದ್ದರೂ, ಇಡೀ ವಿಷಯವನ್ನು ನ್ಯಾಯಾಂಗದಿಂದಲೇ ಪ್ರಾರಂಭಿಸಬಹುದು. 1999 ರಲ್ಲಿ, ಸುಪ್ರೀಂ ಕೋರ್ಟ್ “ಇನ್-ಹೌಸ್ ಪ್ರೊಸೀಜರ್” ಗಾಗಿ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳನ್ನು 2014 ರಲ್ಲಿ ಸಾರ್ವಜನಿಕಗೊಳಿಸಲಾಯಿತು. ಆಂತರಿಕ ಕಾರ್ಯವಿಧಾನವನ್ನು ದೋಷಾರೋಪಣೆಯ ಮುಜುಗರವನ್ನು ತಪ್ಪಿಸುವ ಮಾರ್ಗವಾಗಿಯೂ ನೋಡಲಾಗುತ್ತದೆ.

ಆಂತರಿಕ ಕಾರ್ಯವಿಧಾನದ ಪ್ರಕಾರ, ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ವಿರುದ್ಧದ ದೂರನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅಥವಾ ರಾಷ್ಟ್ರಪತಿಗಳು ಸ್ವೀಕರಿಸಬಹುದು.

ಹಂತ 1 : ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರು ಸ್ವೀಕರಿಸಿದರೆ, ಅವರು ದೂರು ನಿಷ್ಪ್ರಯೋಜಕವಾಗಿದೆಯೇ ಅಥವಾ ಅರ್ಹತೆ ಹೊಂದಿದೆಯೇ ಎಂಬುವುದನ್ನು ಪರಿಶೀಲಿಸಬೇಕು. ದೂರು ಅರ್ಹವಾಗಿದ್ದರೆ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು, ಆರೋಪ ಹೊತ್ತಿರುವ ನ್ಯಾಯಾಧೀಶರ ಪ್ರತಿಕ್ರಿಯೆ ಕೇಳಬೇಕು. ಈ ಪ್ರತಿಕ್ರಿಯೆಯ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಬೇಕೇ..ಬೇಡವೇ? ಎಂದು ನಿರ್ಧರಿಸಬೇಕು. ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ, ಅವರು ದೂರು, ಪ್ರತಿಕ್ರಿಯೆ ಮತ್ತು ಪರಿಸ್ಥಿತಿಯ ಬಗ್ಗೆ ಸಿಜೆಐಗೆ ಮಾಹಿತಿ ನೀಡಬೇಕು.

ರಾಷ್ಟ್ರಪತಿಗಳು ದೂರನ್ನು ಸ್ವೀಕರಿಸಿದರೆ, ಅವರು ಅದನ್ನು ಸಿಜೆಐಗೆ ರವಾನಿಸಬೇಕು. ರಾಷ್ಟ್ರಪತಿಯಿಂದ ದೂರು ಬಂದರೆ ಅಥವಾ ಸಿಜೆಐ ನೇರವಾಗಿ ದೂರನ್ನು ಸ್ವೀಕರಿಸಿದರೆ, ಅದು ಅರ್ಹವಾಗಿದೆಯೇ? ಎಂದು ಮೊದಲು ಪರಿಶೀಲನೆ ಮಾಡಬೇಕಾಗುತ್ತದೆ. ದೂರು ವಿಚಾರಣೆಗೆ ಅರ್ಹವಾಗಿದೆ ಎಂದು ಅವರು ಕಂಡುಕೊಂಡರೆ, ಅದನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ರವಾನಿಸಬೇಕು. ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮೇಲೆ ವಿವರಿಸಿದಂತೆ ಪ್ರಕ್ರಿಯೆಯನ್ನು ಅನುಸರಿಸುತ್ತಾರೆ.

ಹಂತ 2 : ಪ್ರಕರಣವು ಹೈಕೋರ್ಟ್‌ನಿಂದ ಸಿಜೆಐಗೆ ಹಿಂತಿರುಗಿದ ನಂತರ, ಹೆಚ್ಚಿನ ತನಿಖೆಯ ಅಗತ್ಯವಿದೆಯೇ ? ಎಂದು ಸಿಜೆಐ ನಿರ್ಧರಿಸಬೇಕು. ಹಾಗಿದ್ದಲ್ಲಿ, ಸಿಜೆಐ ಮೂವರು ಸದಸ್ಯರ ಸಮಿತಿಯನ್ನು ರಚಿಸಬೇಕು. ಈ ಸಮಿತಿಯಲ್ಲಿ ಆರೋಪ ಎದುರಿಸುತ್ತಿರುವ ನ್ಯಾಯಾಧೀಶರು ಹೊರತುಪಡಿಸಿ ಹೈಕೋರ್ಟ್‌ಗಳ ಇಬ್ಬರು ಮುಖ್ಯ ನ್ಯಾಯಮೂರ್ತಿಗಳು ಮತ್ತು ಒಬ್ಬರು ಹೈಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡಿರಬೇಕು.

ಹಂತ 3 : ಈ ಸಮಿತಿಯು ನಂತರ ದೂರು ನಿಜವೇ? ಎಂದು ನಿರ್ಧರಿಸಬೇಕು ಮತ್ತು ಸಿಜೆಐಗೆ ದೂರಿನ ಕುರಿತು ಕೆಳಗಿನ ಮೂರು ರೀತಿಯಲ್ಲಿ ಹೇಳಬೇಕು..

  • ಗಂಭೀರ ಮತ್ತು ನ್ಯಾಯಾಧೀಶರನ್ನು ತೆಗೆದುಹಾಕುವ ಅಗತ್ಯವಿದೆ
  • ನಿಜ, ಆದರೆ ನ್ಯಾಯಾಧೀಶರನ್ನು ತೆಗೆದುಹಾಕುವ ಅಗತ್ಯವಿಲ್ಲ
  • ಸುಳ್ಳು

ಹಂತ 4 : ನ್ಯಾಯಾಧೀಶರನ್ನು ತೆಗೆದು ಹಾಕುವ ಅಗತ್ಯವಿದೆ ಎಂದು ಸಮಿತಿಯು ಕಂಡುಕೊಂಡರೆ, ಸಿಜೆಐ ಆರೋಪ ಹೊತ್ತಿರುವ ನ್ಯಾಯಾಧೀಶರನ್ನು ರಾಜೀನಾಮೆ ನೀಡುವಂತೆ ಕೇಳುತ್ತಾರೆ. ನ್ಯಾಯಾಧೀಶರ ಪದಚ್ಯುತಿಗೆ ಅಗತ್ಯವಿರುವಷ್ಟು ಸಮಸ್ಯೆ ಗಂಭೀರವಾಗಿಲ್ಲದಿದ್ದರೆ, ಸಿಜೆಐ ನ್ಯಾಯಾಧೀಶರೊಂದಿಗೆ ಮಾತನಾಡಿ ಅವರಿಗೆ ಸಲಹೆ ನೀಡಬಹುದು.

ಹಂತ 5 : ನ್ಯಾಯಾಧೀಶರು ರಾಜೀನಾಮೆ ನೀಡಲು ನಿರಾಕರಿಸಿದರೆ, ಅವರಿಗೆ ಯಾವುದೇ ಪ್ರಕರಣಗಳನ್ನು ವಹಿಸದಂತೆ ಸಿಜೆಐ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಕೇಳಬೇಕಾಗುತ್ತದೆ. ಸಿಜೆಐ ಈ ವಿಚಾರವನ್ನು ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೆ ತಿಳಿಸಬೇಕು. ನ್ಯಾಯಾಧೀಶರ ಪದಚ್ಯುತಿಗಾಗಿ ಸಂಸತ್ತಿನ ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಕೋರಬೇಕು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದೇ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ಪದಚ್ಯುತಗೊಳಿಸಿಲ್ಲ. ಆದಾಗ್ಯೂ, ಹಲವಾರು ನ್ಯಾಯಾಧೀಶರ ವಿರುದ್ಧ ಆಂತರಿಕ ಪ್ರಕ್ರಿಯೆ, ಅಥವಾ ತೆಗೆದು ಹಾಕಲು ಸಂಸತ್ತಿನ ಪ್ರಕ್ರಿಯೆ ಅಥವಾ ಎರಡನ್ನೂ ಪ್ರಾರಂಭಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...