Homeಮುಖಪುಟಶಾಲೆಯಲ್ಲಿ ಅಸ್ಪೃಶ್ಯತೆ - ಏಟಿಗೆ ಎದುರೇಟು

ಶಾಲೆಯಲ್ಲಿ ಅಸ್ಪೃಶ್ಯತೆ – ಏಟಿಗೆ ಎದುರೇಟು

- Advertisement -
- Advertisement -

ಉತ್ತರಾಖಂಡ್ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಂಗ್ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಇತ್ತೀಚೆಗೆ ಅಪರೂಪವೆನಿಸುವ ಒಂದು ಘಟನೆ ನಡೆದಿದೆ. ಸಂವಿಧಾನದ ಪ್ರಕಾರ ಅಸ್ಪೃಶ್ಯತೆಯ ಆಚರಣೆ ಅಪರಾಧವೆನಿಸಿದ್ದರೂ ದೇಶದಾದ್ಯಂತ ಒಂದು ಪಿಡುಗಾಗಿ ಮುಂದುವರೆದಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ಆದರೆ ಅದನ್ನು ಹೇಗೆ ಎದುರಿಸಬೇಕು ಎಂಬುದನ್ನು ಅಲ್ಲಿನ 23 ದಲಿತ ಮಕ್ಕಳು ತೋರಿಸಿಕೊಟ್ಟಿದ್ದಾರೆ. ದಶಕಗಳ ಹಿಂದೆಯೆ ಶಾಲೆಗಳಲ್ಲಿ ಮಧ್ಯಾಹ್ನದ ಊಟ ನೀಡುವ ಕಾರ್ಯಕ್ರಮ ಪ್ರಾರಂಭವಾದಾಗ ದಲಿತ ಮಹಿಳೆಯರು ಮಾಡಿದ ಅಡುಗೆಯನ್ನು ತಿನ್ನಲು ಸವರ್ಣೀಯ ಮಕ್ಕಳು ನಿರಾಕರಿಸುತ್ತಿದ್ದರು. ಅದಕ್ಕೆ ಕಾರಣ ಅವರ ಪೋಷಕರು. ನನ್ನ ತವರು ಜಿಲ್ಲೆಯಾದ ಚಾಮರಾಜನಗರದಲ್ಲಿ ಕೆಲವು ತಂದೆ ತಾಯಿಯರು ಮಕ್ಕಳ ನಾಲಗೆಯನ್ನು ಬೇವಿನ ಕಡ್ಡಿಯಿಂದ ತಿಕ್ಕಿ, ಹಸುವಿನ ಮೂತ್ರ ಲೇಪಿಸಿ ಶುದ್ಧೀಕರಿಸಿಕೊಂಡಿದ್ದರು. ಈ ವಿಷಯ ಬಹುವಾಗಿ ಚರ್ಚಿತವಾಗಿತ್ತು. ನಮ್ಮ ದೇಶದಲ್ಲಿ ಒಂದು ಸಮಸ್ಯೆ ಉದ್ಭವಿಸಿದರೆ ಅದನ್ನು ನಿವಾರಣೆ ಮಾಡಬೇಕು ಎಂದೇನಿಲ್ಲ. ಅದನ್ನು ಹೇಗೋ ಮುಚ್ಚಿಹಾಕಿದರೆ ಆಯಿತು ಅಥವಾ ಜನರನ್ನು ಯಾಮಾರಿಸಿದರೆ ಆಯಿತು ಎನ್ನುವ ಮನೋಭಾವ ಅಧಿಕಾರಸ್ಥರಲ್ಲಿ ಇದೆ. ಇದುವರೆಗೂ ಹಾಗೆ ಮಾಡಿಕೊಂಡು ಬಂದಿದ್ದ ಅಸ್ಪೃಶ್ಯತೆ ಸಮಸ್ಯೆಗೆ ಅಲ್ಲಿನ ವಿದ್ಯಾರ್ಥಿಗಳು ತಕ್ಕ ಉತ್ತರ ನೀಡಿದ್ದಾರೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ನಾಣ್ನುಡಿಯನ್ನು ನಿಜ ಮಾಡಿ ತೋರಿಸಿದ್ದಾರೆ.

ಶಾಲೆಯಲ್ಲಿ ನಿವೃತ್ತಿಯಿಂದ ತೆರವಾದ ಭೋಜನಮಾತಾ (ಅಡುಗೆ ತಯಾರಿಸುವಾಕೆ) ವೃತ್ತಿಗೆ ಸುನಿತಾ ದೇವಿ ಎಂಬ ದಲಿತ ಮಹಿಳೆಯನ್ನು ಶಾಲಾ ನಿರ್ವಹಣಾ ಸಮಿತಿಯು ಕಾನೂನಿನಂತೆಯೆ ನೇಮಕ ಮಾಡಿತ್ತು. ಆದೇಶದಂತೆ ಆಕೆ ಅಡುಗೆ ಮಾಡುವ ಕಾರ್ಯಕ್ಕೆ ತೊಡಗಿದಳು. ಆದರೆ ಮರುದಿನವೇ ಶಾಲೆಯ 66 ಮಕ್ಕಳಲ್ಲಿ 43 ಸವರ್ಣೀಯ ಮಕ್ಕಳು ದಲಿತ ಮಹಿಳೆ ಮಾಡಿದ ಅಡುಗೆಯನ್ನು ತಿನ್ನುವುದಿಲ್ಲ ಎಂದು ತಿರಸ್ಕರಿಸಿದರು. ಸಮಸ್ಯೆಯನ್ನು ಪರಿಹರಿಸಲು ಶಾಲಾ ನಿರ್ವಹಣಾ ಸಮಿತಿಯು ಬೇರೆ ದಾರಿ ಕಾಣದೆ ಒಂದೆರಡು ದಿನಗಳ ನಂತರ ಸುನಿತಾ ದೇವಿಗೆ ನೀಡಿರುವ ಆದೇಶವನ್ನು ’ತಪ್ಪಾಗಿ ನೀಡಲಾಗಿದೆ’ ಎಂಬ ಕಾರಣ ಹೇಳಿ ಅದನ್ನು ರದ್ದುಪಡಿಸಿ, ಪುಷ್ಪಾ ಭಟ್ ಎನ್ನುವ ಬ್ರಾಹ್ಮಣ ಮಹಿಳೆಗೆ ಹೊಸ ಆದೇಶ ನೀಡಿತು. ಮಕ್ಕಳ ಪೋಷಕರಲ್ಲಿ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂಬ ಎರಡು ಗುಂಪಾಯಿತು. ಈ ಜಟಾಪಟಿಯ ನಡುವೆ ಉಳಿದ 23 ದಲಿತ ಮಕ್ಕಳು ಬ್ರಾಹ್ಮಣ ಮಹಿಳೆಯು ಮಾಡಿದ ಅಡುಗೆಯನ್ನು ನಾವು ತಿನ್ನುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡರು! ಈ ಹೊಸ ಮಾದರಿಯ ಪ್ರತಿರೋಧವನ್ನು ನೋಡಿ ಆಡಳಿತ ವರ್ಗಕ್ಕೆ ಒಂದು ದೊಡ್ಡ ಶಾಕ್ ಆಗಿರಲಿಕ್ಕೂ ಸಾಕು. ಇದು ಸರ್ಕಾರದ ಗಮನಕ್ಕೆ ಹೋಗಿ ದೇಶದಾದ್ಯಂತ ಸುದ್ದಿಯಾಯಿತು. ಸ್ವತಃ ಮುಖ್ಯಮಂತ್ರಿಯೇ ಶಾಲೆಗೆ ಭೇಟಿ ನೀಡಿದರು. ಆಗ ಸುನೀತಾ ದೇವಿಯನ್ನು ಕೆಲಸದಿಂದ ವಜಾ ಮಾಡಿದ್ದು ಯಾಕೆ? ಎಂದು ತನಿಖೆ ಮಾಡಲು ಸರ್ಕಾರ ಒಂದು ಸಮಿತಿಯನ್ನು ನೇಮಿಸಿತು. ಈ ಲೇಖನವನ್ನು ಬರೆಯುತ್ತಿರುವ ಹೊತ್ತಿಗೆ ಆಕೆಯನ್ನು ಮರುನೇಮಕ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಮಕ್ಕಳು ಊಟ ಮಾಡುತ್ತಿದ್ದಾರೆ. ಪರಿಸ್ಥಿತಿ ತಾತ್ಕಾಲಿಕವಾಗಿ ತಣ್ಣಗಾಗಿದೆ.


1935ರಲ್ಲಿ ನಡೆದ ಇತಿಹಾಸ ಪ್ರಸಿದ್ಧವಾದ ಒಂದು ಘಟನೆಯನ್ನು ಅಂಬೇಡ್ಕರ್ ಉಲ್ಲೇಖಿಸುತ್ತಾರೆ. ಗುಜರಾತಿನ ಅಹಮದಾಬಾದ್ ಜಿಲ್ಲೆಯ ಕವಿತಾ ಎಂಬ ಗ್ರಾಮದ ಅಸ್ಪೃಶ್ಯರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಬೇಕೆಂದು ಸವರ್ಣೀಯರನ್ನು ಕೇಳಿಕೊಳ್ಳುತ್ತಾರೆ. ವಿದ್ಯೆ ಕೇಳುವಷ್ಟು ಸೊಕ್ಕು ಬಂತೆ ಇವರಿಗೆ ಎಂದು ಸವರ್ಣೀಯರು ಕೆರಳಿ ಕೆಂಡವಾಗಿ ಅಸ್ಪೃಶ್ಯರಿಗೆ ಸಾಮಾಜಿಕ ಬಹಿಷ್ಕಾರ ಹಾಕುತ್ತಾರೆ. ಅಲ್ಲಿನ ಹಿಂದೂಗಳ ಮನವೊಲಿಸಲು ಹೋಗಿದ್ದ ಎ. ವಿ. ಠಕ್ಕರ್ ಎಂಬುವರು ಒಂದು ವರದಿ ನೀಡುತ್ತಾರೆ. ಕವಿತಾ ಹಳ್ಳಿಯ ಸವರ್ಣೀಯರು ಹರಿಜನ ಬಾಲಕರನ್ನು ಶಾಲೆಗೆ ಸೇರಿಸಿಕೊಳ್ಳಲು ಒಪ್ಪಿರುತ್ತಾರೆ ಮತ್ತು ಸಮಸ್ಯೆ ಬಗೆಹರಿದಿದೆ ಎಂದಿರುತ್ತದೆ ಆ ವರದಿ. ಆದರೆ ವಾಸ್ತವವಾಗಿ ಅಸ್ಪೃಶ್ಯರನ್ನು ಹೆದರಿಸಿ, ಬೆದರಿಸಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ಒತ್ತಾಯ ಮಾಡಿದ್ದಾರೆಂದು ಅಹಮದಾಬಾದಿನ ಹರಿಜನ ಸೇವಕ ಸಂಘದ ಕಾರ್ಯದರ್ಶಿಯ ಹೇಳಿಕೆಯಿಂದ ತಿಳಿದುಬರುತ್ತದೆ. ಒತ್ತಾಯವೆಂದರೆ ಹೇಗೆ? ಅವರನ್ನು ಜಮೀನಿನಿಂದ ಓಡಿಸಲಾಯಿತು. ದನಕರುಗಳಿಗೆ ಮೇಯಲು ಬಿಡಲಿಲ್ಲ. ಅಸ್ಪೃಶ್ಯರ ಮುಂದಾಳುಗಳನ್ನು ಕರೆಸಿ ದೇವರ ಹೆಸರಿನಲ್ಲಿ ಭಾಷೆ ತೆಗೆದುಕೊಂಡು, ಇನ್ನು ಮುಂದೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲವೆಂದು ಒಪ್ಪಂದ ಮಾಡಿಕೊಳ್ಳಲಾಯಿತು, ಹೀಗೆ. ಆದರೂ ಬಹಿಷ್ಕಾರ ಮುಂದುವರೆಯುತ್ತದೆ. ತಾವು ಮಾಡಿದ ದೌರ್ಜನ್ಯ ಕಡಿಮೆಯಾಯಿತೆಂದು ಹರಿಜನರು ಬಳಸುತ್ತಿದ್ದ ಬಾವಿಯ ನೀರಿಗೆ ಸೀಮೆ ಎಣ್ಣೆ ಸುರಿದು, ಅವರು ಕುಡಿಯಲು ನೀರಿಲ್ಲದೆ ಸಂಕಟಪಡುವುದನ್ನು ನೋಡಿ ಸವರ್ಣೀಯರು ವಿಕೃತಾನಂದವನ್ನು ಪಡೆಯುತ್ತಾರೆ. ದಲಿತರ ಒಂದು ಸಣ್ಣ ಪ್ರತಿರೋಧವನ್ನು ಸವರ್ಣೀಯರು ಸಹಿಸಿಕೊಳ್ಳಲಾರರು ಎನ್ನುವುದಕ್ಕೆ ಇದೊಂದು ಉದಾಹರಣೆ. ಈ ರೀತಿಯ ಮರೆಮೋಸ, ದೌರ್ಜನ್ಯ ಯಾವತ್ತಿನಿಂದಲೂ ನಡೆದುಕೊಂಡು ಬರುತ್ತಿದೆ.

ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅನುಚ್ಛೇದ 17ರ ಪ್ರಕಾರ ಅಸ್ಪೃಶ್ಯರಿಗೆ ಸಂವಿಧಾನಾತ್ಮಕ ರಕ್ಷಣೆ ಇದ್ದಾಗ್ಯೂ 1935ರಲ್ಲಿ ಇದ್ದಂತಹ ದೌರ್ಜನ್ಯಗಳು ಇಂದಿಗೂ ಮುಂದುವರೆದಿವೆ. ಈಗ ಮತಾಂತರ ನಿಷೇಧ ಕಾಯ್ದೆಯು ಜಾರಿಗೆ ಬರುತ್ತಿದೆ. ಇದು ನೇರಾನೇರ ಪ್ರಭುತ್ವವು ಅಸ್ಪೃಶ್ಯರ ಮೇಲೆ ಎಸಗುತ್ತಿರುವ ಕಾನೂನಾತ್ಮಕ ದೌರ್ಜನ್ಯವೆಂದರೆ ತಪ್ಪಾಗದು. ಕಾನೂನು ಜಾರಿಗೆ ಬರುವ ಮುನ್ನವೆ ಸಮಾಜದಲ್ಲಿ ಅನೇಕ ಅಪಸವ್ಯಗಳು ಕಾಣಿಸಿಕೊಳ್ಳುತ್ತಿವೆ. ಮೊನ್ನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕ್ರಿಸ್‌ಮಸ್ ದಿನದಂದು ದಶಕಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ಒಂದು ಶಾಲೆಗೆ ಕೆಲ ಯುವಕರು ನುಗ್ಗಿ ಕ್ರಿಸ್‌ಮಸ್ ಯಾಕೆ ಮಾಡುತ್ತಿದ್ದೀರಿ, ಗಣಪತಿ ಹಬ್ಬ ಯಾಕೆ ಮಾಡಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಇಂತಹ ವಿತಂಡವಾದಗಳಿಗೆ ಇನ್ನುಮುಂದೆ ಕೊನೆಯಿರುವುದಿಲ್ಲ. ತುಮಕೂರು ಜಿಲ್ಲೆಯ ಒಂದು ಹಳ್ಳಿಯಲ್ಲಿ ಸಂಘಪರಿವಾರದವರೆನ್ನಲಾದ ಕೆಲವರು ಕ್ರೈಸ್ತರ ಮನೆಗಳಿಗೆ ನುಗ್ಗಿ ಮಹಿಳೆಯರನ್ನು ಎಗ್ಗಿಲ್ಲದೆ ಪ್ರಶ್ನೆ ಮಾಡಿದ್ದಾರೆ. ನವಮತಾಂತರಿಗಳ ಪಾಡು ಹೇಳತೀರದಾಗಿದೆ. ಕಾರ್ಯಕರ್ತನೊಬ್ಬ ಮನೆಯೊಳಗಿರುವ ಮಹಿಳೆಯನ್ನು ನೀವು ಹಿಂದೂ ಆಗಿದ್ದರೆ ಹೆಣ್ಮಕ್ಕಳ ಲಕ್ಷಣ ಏನು? ಎಂದು ಕೇಳುತ್ತಾನೆ. ಅದಕ್ಕೆ ಆಕೆ ನಾನು ತಾಳಿಯನ್ನೂ ಬಿಚ್ಚಿಡುತ್ತೇನೆ, ಕಾಲುಂಗುರವನ್ನೂ ತೆಗೆದಿಡುತ್ತೇನೆ. ಅದನ್ನು ಕೇಳುವ ಅಧಿಕಾರ ನಿನಗೆ ಕೊಟ್ಟವರ್‍ಯಾರು? ಎಂದು ಪ್ರತಿಭಟಿಸುತ್ತಾಳೆ. ವಾಟ್ಸ್ಯಾಪ್ ದೃಶ್ಯಾವಳಿಯ ಪ್ರಕಾರ ಅವು ಎಲ್ಲೆ ಮೀರಿದ ದೌರ್ಜನ್ಯಗಳಾಗಿವೆ. ಒಬ್ಬ ಶಾಸಕರೇ ಚರ್ಚುಗಳ ಬಳಿ ಹೋಗಿ ’ನೀವು ಯಾವ ಜಾತಿ, ಎಷ್ಟು ದಿನಗಳಿಂದ ಇಲ್ಲಿಗೆ ಬರುತ್ತಿದ್ದೀರಿ? ಎಂಬಿತ್ಯಾದಿ ಪ್ರಶ್ನೆಗಳ ಸುರಿಮಳೆಯನ್ನೇ ಹಾಕುತ್ತಾರೆ. ಶಾಸಕರೇ ಹೀಗೆ ಮಾಡಿದರೆ ಸಾರ್ವಜನಿಕ ನಡವಳಿಕೆಗೆ ಇದ್ದ ಲಕ್ಷ್ಮಣರೇಖೆಯನ್ನು ಅಳಿಸಿಹಾಕಿದಂತಾಗುವುದಿಲ್ಲವೆ? ಹಿಂದೂಧರ್ಮ ಎನ್ನುವುದು ಕಿಟಕಿ ಬಾಗಿಲುಗಳಿಲ್ಲದ, ಮೆಟ್ಟಿಲುಗಳಿಲ್ಲದ ಮನೆ ಎಂಬ ಅಂಬೇಡ್ಕರ್ ಹೇಳಿದ ಮಾತು ಸವರ್ಣೀಯರಿಗೆ
ಇಂದಿಗೂ ನಾಟುತ್ತಿಲ್ಲ ಮತ್ತು ಆಳುವ ಪ್ರಬಲ ಜಾತಿಗಳ ಮನಸ್ಥಿತಿಗೆ ಪೂರಕವಾಗಿಯೆ ಸಂವಿಧಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎನ್ನುವುದಕ್ಕೆ ಮತಾಂತರ ನಿಷೇಧ ಕಾಯಿದೆ ಉದಾಹರಣೆಯಾಗಿದೆ. ಇದು ಸಂವಿಧಾನದ ಅನುಚ್ಛೇದ 25ರಲ್ಲಿ ನೀಡಲಾಗಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನೆ ನಾಗರಿಕರಿಂದ ಕಸಿಯುವ ಕಾಯ್ದೆಯಾಗಿದೆ ಮತ್ತು ಸಂವಿಧಾನವಿರೋಧಿಯಾಗಿದೆ. ಸಂವಿಧಾನಬದ್ಧವಾಗಿ ಅಸ್ಪೃಶ್ಯತೆ ನಿಷೇಧ ಕಾನೂನನ್ನು ಜಾರಿಗೊಳಿಸುವ ಜವಾಬ್ದಾರಿ ಸರ್ಕಾರಕ್ಕಿರಬೇಕಾಗಿತ್ತು. ಅದರ ಬದಲಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಅನುಷ್ಠಾನಗೊಳಿಸಿ, ದಲಿತರನ್ನು ಮತಾಂತರ ಮಾಡಿದರೆ ಹೆಚ್ಚು ಕಠಿಣತಮ ಶಿಕ್ಷೆಯನ್ನು ವಿಧಿಸುವುದು ಏನನ್ನು ಹೇಳುತ್ತದೆ? ಸರ್ಕಾರ ದಲಿತರಿಗೆ ನೀವು ಎಲ್ಲಿದ್ದೀರೋ ಅಲ್ಲಿಯೇ ಇರಿ, ಹೇಗಿದ್ದೀರೋ ಹಾಗೆಯೆ ಇರಿ ಎಂಬ ಧಾರ್ಷ್ಟ್ಯದ ಆದೇಶವನ್ನು ನೀಡುತ್ತಿದೆ ಎಂದಲ್ಲವೆ? ಆದ್ದರಿಂದ ಇದು ಪ್ರಭುತ್ವ ದಲಿತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಎಂದು ನಾನು ಕರೆಯುತ್ತೇನೆ.

ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ಡಾ. ಮೂಡ್ನಾಕೂಡು ಚಿನ್ನಸ್ವಾಮಿ
ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.


ಇದನ್ನೂ ಓದಿ: ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....