Homeಮುಖಪುಟಶಾಲೆಯಲ್ಲಿ ಅಸ್ಪೃಶ್ಯತೆ - ಏಟಿಗೆ ಎದುರೇಟು

ಶಾಲೆಯಲ್ಲಿ ಅಸ್ಪೃಶ್ಯತೆ – ಏಟಿಗೆ ಎದುರೇಟು

- Advertisement -
- Advertisement -

ಉತ್ತರಾಖಂಡ್ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಂಗ್ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಇತ್ತೀಚೆಗೆ ಅಪರೂಪವೆನಿಸುವ ಒಂದು ಘಟನೆ ನಡೆದಿದೆ. ಸಂವಿಧಾನದ ಪ್ರಕಾರ ಅಸ್ಪೃಶ್ಯತೆಯ ಆಚರಣೆ ಅಪರಾಧವೆನಿಸಿದ್ದರೂ ದೇಶದಾದ್ಯಂತ ಒಂದು ಪಿಡುಗಾಗಿ ಮುಂದುವರೆದಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ಆದರೆ ಅದನ್ನು ಹೇಗೆ ಎದುರಿಸಬೇಕು ಎಂಬುದನ್ನು ಅಲ್ಲಿನ 23 ದಲಿತ ಮಕ್ಕಳು ತೋರಿಸಿಕೊಟ್ಟಿದ್ದಾರೆ. ದಶಕಗಳ ಹಿಂದೆಯೆ ಶಾಲೆಗಳಲ್ಲಿ ಮಧ್ಯಾಹ್ನದ ಊಟ ನೀಡುವ ಕಾರ್ಯಕ್ರಮ ಪ್ರಾರಂಭವಾದಾಗ ದಲಿತ ಮಹಿಳೆಯರು ಮಾಡಿದ ಅಡುಗೆಯನ್ನು ತಿನ್ನಲು ಸವರ್ಣೀಯ ಮಕ್ಕಳು ನಿರಾಕರಿಸುತ್ತಿದ್ದರು. ಅದಕ್ಕೆ ಕಾರಣ ಅವರ ಪೋಷಕರು. ನನ್ನ ತವರು ಜಿಲ್ಲೆಯಾದ ಚಾಮರಾಜನಗರದಲ್ಲಿ ಕೆಲವು ತಂದೆ ತಾಯಿಯರು ಮಕ್ಕಳ ನಾಲಗೆಯನ್ನು ಬೇವಿನ ಕಡ್ಡಿಯಿಂದ ತಿಕ್ಕಿ, ಹಸುವಿನ ಮೂತ್ರ ಲೇಪಿಸಿ ಶುದ್ಧೀಕರಿಸಿಕೊಂಡಿದ್ದರು. ಈ ವಿಷಯ ಬಹುವಾಗಿ ಚರ್ಚಿತವಾಗಿತ್ತು. ನಮ್ಮ ದೇಶದಲ್ಲಿ ಒಂದು ಸಮಸ್ಯೆ ಉದ್ಭವಿಸಿದರೆ ಅದನ್ನು ನಿವಾರಣೆ ಮಾಡಬೇಕು ಎಂದೇನಿಲ್ಲ. ಅದನ್ನು ಹೇಗೋ ಮುಚ್ಚಿಹಾಕಿದರೆ ಆಯಿತು ಅಥವಾ ಜನರನ್ನು ಯಾಮಾರಿಸಿದರೆ ಆಯಿತು ಎನ್ನುವ ಮನೋಭಾವ ಅಧಿಕಾರಸ್ಥರಲ್ಲಿ ಇದೆ. ಇದುವರೆಗೂ ಹಾಗೆ ಮಾಡಿಕೊಂಡು ಬಂದಿದ್ದ ಅಸ್ಪೃಶ್ಯತೆ ಸಮಸ್ಯೆಗೆ ಅಲ್ಲಿನ ವಿದ್ಯಾರ್ಥಿಗಳು ತಕ್ಕ ಉತ್ತರ ನೀಡಿದ್ದಾರೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ನಾಣ್ನುಡಿಯನ್ನು ನಿಜ ಮಾಡಿ ತೋರಿಸಿದ್ದಾರೆ.

ಶಾಲೆಯಲ್ಲಿ ನಿವೃತ್ತಿಯಿಂದ ತೆರವಾದ ಭೋಜನಮಾತಾ (ಅಡುಗೆ ತಯಾರಿಸುವಾಕೆ) ವೃತ್ತಿಗೆ ಸುನಿತಾ ದೇವಿ ಎಂಬ ದಲಿತ ಮಹಿಳೆಯನ್ನು ಶಾಲಾ ನಿರ್ವಹಣಾ ಸಮಿತಿಯು ಕಾನೂನಿನಂತೆಯೆ ನೇಮಕ ಮಾಡಿತ್ತು. ಆದೇಶದಂತೆ ಆಕೆ ಅಡುಗೆ ಮಾಡುವ ಕಾರ್ಯಕ್ಕೆ ತೊಡಗಿದಳು. ಆದರೆ ಮರುದಿನವೇ ಶಾಲೆಯ 66 ಮಕ್ಕಳಲ್ಲಿ 43 ಸವರ್ಣೀಯ ಮಕ್ಕಳು ದಲಿತ ಮಹಿಳೆ ಮಾಡಿದ ಅಡುಗೆಯನ್ನು ತಿನ್ನುವುದಿಲ್ಲ ಎಂದು ತಿರಸ್ಕರಿಸಿದರು. ಸಮಸ್ಯೆಯನ್ನು ಪರಿಹರಿಸಲು ಶಾಲಾ ನಿರ್ವಹಣಾ ಸಮಿತಿಯು ಬೇರೆ ದಾರಿ ಕಾಣದೆ ಒಂದೆರಡು ದಿನಗಳ ನಂತರ ಸುನಿತಾ ದೇವಿಗೆ ನೀಡಿರುವ ಆದೇಶವನ್ನು ’ತಪ್ಪಾಗಿ ನೀಡಲಾಗಿದೆ’ ಎಂಬ ಕಾರಣ ಹೇಳಿ ಅದನ್ನು ರದ್ದುಪಡಿಸಿ, ಪುಷ್ಪಾ ಭಟ್ ಎನ್ನುವ ಬ್ರಾಹ್ಮಣ ಮಹಿಳೆಗೆ ಹೊಸ ಆದೇಶ ನೀಡಿತು. ಮಕ್ಕಳ ಪೋಷಕರಲ್ಲಿ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂಬ ಎರಡು ಗುಂಪಾಯಿತು. ಈ ಜಟಾಪಟಿಯ ನಡುವೆ ಉಳಿದ 23 ದಲಿತ ಮಕ್ಕಳು ಬ್ರಾಹ್ಮಣ ಮಹಿಳೆಯು ಮಾಡಿದ ಅಡುಗೆಯನ್ನು ನಾವು ತಿನ್ನುವುದಿಲ್ಲ ಎಂದು ನಿರ್ಧಾರ ತೆಗೆದುಕೊಂಡರು! ಈ ಹೊಸ ಮಾದರಿಯ ಪ್ರತಿರೋಧವನ್ನು ನೋಡಿ ಆಡಳಿತ ವರ್ಗಕ್ಕೆ ಒಂದು ದೊಡ್ಡ ಶಾಕ್ ಆಗಿರಲಿಕ್ಕೂ ಸಾಕು. ಇದು ಸರ್ಕಾರದ ಗಮನಕ್ಕೆ ಹೋಗಿ ದೇಶದಾದ್ಯಂತ ಸುದ್ದಿಯಾಯಿತು. ಸ್ವತಃ ಮುಖ್ಯಮಂತ್ರಿಯೇ ಶಾಲೆಗೆ ಭೇಟಿ ನೀಡಿದರು. ಆಗ ಸುನೀತಾ ದೇವಿಯನ್ನು ಕೆಲಸದಿಂದ ವಜಾ ಮಾಡಿದ್ದು ಯಾಕೆ? ಎಂದು ತನಿಖೆ ಮಾಡಲು ಸರ್ಕಾರ ಒಂದು ಸಮಿತಿಯನ್ನು ನೇಮಿಸಿತು. ಈ ಲೇಖನವನ್ನು ಬರೆಯುತ್ತಿರುವ ಹೊತ್ತಿಗೆ ಆಕೆಯನ್ನು ಮರುನೇಮಕ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ಮಕ್ಕಳು ಊಟ ಮಾಡುತ್ತಿದ್ದಾರೆ. ಪರಿಸ್ಥಿತಿ ತಾತ್ಕಾಲಿಕವಾಗಿ ತಣ್ಣಗಾಗಿದೆ.


1935ರಲ್ಲಿ ನಡೆದ ಇತಿಹಾಸ ಪ್ರಸಿದ್ಧವಾದ ಒಂದು ಘಟನೆಯನ್ನು ಅಂಬೇಡ್ಕರ್ ಉಲ್ಲೇಖಿಸುತ್ತಾರೆ. ಗುಜರಾತಿನ ಅಹಮದಾಬಾದ್ ಜಿಲ್ಲೆಯ ಕವಿತಾ ಎಂಬ ಗ್ರಾಮದ ಅಸ್ಪೃಶ್ಯರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಬೇಕೆಂದು ಸವರ್ಣೀಯರನ್ನು ಕೇಳಿಕೊಳ್ಳುತ್ತಾರೆ. ವಿದ್ಯೆ ಕೇಳುವಷ್ಟು ಸೊಕ್ಕು ಬಂತೆ ಇವರಿಗೆ ಎಂದು ಸವರ್ಣೀಯರು ಕೆರಳಿ ಕೆಂಡವಾಗಿ ಅಸ್ಪೃಶ್ಯರಿಗೆ ಸಾಮಾಜಿಕ ಬಹಿಷ್ಕಾರ ಹಾಕುತ್ತಾರೆ. ಅಲ್ಲಿನ ಹಿಂದೂಗಳ ಮನವೊಲಿಸಲು ಹೋಗಿದ್ದ ಎ. ವಿ. ಠಕ್ಕರ್ ಎಂಬುವರು ಒಂದು ವರದಿ ನೀಡುತ್ತಾರೆ. ಕವಿತಾ ಹಳ್ಳಿಯ ಸವರ್ಣೀಯರು ಹರಿಜನ ಬಾಲಕರನ್ನು ಶಾಲೆಗೆ ಸೇರಿಸಿಕೊಳ್ಳಲು ಒಪ್ಪಿರುತ್ತಾರೆ ಮತ್ತು ಸಮಸ್ಯೆ ಬಗೆಹರಿದಿದೆ ಎಂದಿರುತ್ತದೆ ಆ ವರದಿ. ಆದರೆ ವಾಸ್ತವವಾಗಿ ಅಸ್ಪೃಶ್ಯರನ್ನು ಹೆದರಿಸಿ, ಬೆದರಿಸಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ಒತ್ತಾಯ ಮಾಡಿದ್ದಾರೆಂದು ಅಹಮದಾಬಾದಿನ ಹರಿಜನ ಸೇವಕ ಸಂಘದ ಕಾರ್ಯದರ್ಶಿಯ ಹೇಳಿಕೆಯಿಂದ ತಿಳಿದುಬರುತ್ತದೆ. ಒತ್ತಾಯವೆಂದರೆ ಹೇಗೆ? ಅವರನ್ನು ಜಮೀನಿನಿಂದ ಓಡಿಸಲಾಯಿತು. ದನಕರುಗಳಿಗೆ ಮೇಯಲು ಬಿಡಲಿಲ್ಲ. ಅಸ್ಪೃಶ್ಯರ ಮುಂದಾಳುಗಳನ್ನು ಕರೆಸಿ ದೇವರ ಹೆಸರಿನಲ್ಲಿ ಭಾಷೆ ತೆಗೆದುಕೊಂಡು, ಇನ್ನು ಮುಂದೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲವೆಂದು ಒಪ್ಪಂದ ಮಾಡಿಕೊಳ್ಳಲಾಯಿತು, ಹೀಗೆ. ಆದರೂ ಬಹಿಷ್ಕಾರ ಮುಂದುವರೆಯುತ್ತದೆ. ತಾವು ಮಾಡಿದ ದೌರ್ಜನ್ಯ ಕಡಿಮೆಯಾಯಿತೆಂದು ಹರಿಜನರು ಬಳಸುತ್ತಿದ್ದ ಬಾವಿಯ ನೀರಿಗೆ ಸೀಮೆ ಎಣ್ಣೆ ಸುರಿದು, ಅವರು ಕುಡಿಯಲು ನೀರಿಲ್ಲದೆ ಸಂಕಟಪಡುವುದನ್ನು ನೋಡಿ ಸವರ್ಣೀಯರು ವಿಕೃತಾನಂದವನ್ನು ಪಡೆಯುತ್ತಾರೆ. ದಲಿತರ ಒಂದು ಸಣ್ಣ ಪ್ರತಿರೋಧವನ್ನು ಸವರ್ಣೀಯರು ಸಹಿಸಿಕೊಳ್ಳಲಾರರು ಎನ್ನುವುದಕ್ಕೆ ಇದೊಂದು ಉದಾಹರಣೆ. ಈ ರೀತಿಯ ಮರೆಮೋಸ, ದೌರ್ಜನ್ಯ ಯಾವತ್ತಿನಿಂದಲೂ ನಡೆದುಕೊಂಡು ಬರುತ್ತಿದೆ.

ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅನುಚ್ಛೇದ 17ರ ಪ್ರಕಾರ ಅಸ್ಪೃಶ್ಯರಿಗೆ ಸಂವಿಧಾನಾತ್ಮಕ ರಕ್ಷಣೆ ಇದ್ದಾಗ್ಯೂ 1935ರಲ್ಲಿ ಇದ್ದಂತಹ ದೌರ್ಜನ್ಯಗಳು ಇಂದಿಗೂ ಮುಂದುವರೆದಿವೆ. ಈಗ ಮತಾಂತರ ನಿಷೇಧ ಕಾಯ್ದೆಯು ಜಾರಿಗೆ ಬರುತ್ತಿದೆ. ಇದು ನೇರಾನೇರ ಪ್ರಭುತ್ವವು ಅಸ್ಪೃಶ್ಯರ ಮೇಲೆ ಎಸಗುತ್ತಿರುವ ಕಾನೂನಾತ್ಮಕ ದೌರ್ಜನ್ಯವೆಂದರೆ ತಪ್ಪಾಗದು. ಕಾನೂನು ಜಾರಿಗೆ ಬರುವ ಮುನ್ನವೆ ಸಮಾಜದಲ್ಲಿ ಅನೇಕ ಅಪಸವ್ಯಗಳು ಕಾಣಿಸಿಕೊಳ್ಳುತ್ತಿವೆ. ಮೊನ್ನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕ್ರಿಸ್‌ಮಸ್ ದಿನದಂದು ದಶಕಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ಒಂದು ಶಾಲೆಗೆ ಕೆಲ ಯುವಕರು ನುಗ್ಗಿ ಕ್ರಿಸ್‌ಮಸ್ ಯಾಕೆ ಮಾಡುತ್ತಿದ್ದೀರಿ, ಗಣಪತಿ ಹಬ್ಬ ಯಾಕೆ ಮಾಡಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಇಂತಹ ವಿತಂಡವಾದಗಳಿಗೆ ಇನ್ನುಮುಂದೆ ಕೊನೆಯಿರುವುದಿಲ್ಲ. ತುಮಕೂರು ಜಿಲ್ಲೆಯ ಒಂದು ಹಳ್ಳಿಯಲ್ಲಿ ಸಂಘಪರಿವಾರದವರೆನ್ನಲಾದ ಕೆಲವರು ಕ್ರೈಸ್ತರ ಮನೆಗಳಿಗೆ ನುಗ್ಗಿ ಮಹಿಳೆಯರನ್ನು ಎಗ್ಗಿಲ್ಲದೆ ಪ್ರಶ್ನೆ ಮಾಡಿದ್ದಾರೆ. ನವಮತಾಂತರಿಗಳ ಪಾಡು ಹೇಳತೀರದಾಗಿದೆ. ಕಾರ್ಯಕರ್ತನೊಬ್ಬ ಮನೆಯೊಳಗಿರುವ ಮಹಿಳೆಯನ್ನು ನೀವು ಹಿಂದೂ ಆಗಿದ್ದರೆ ಹೆಣ್ಮಕ್ಕಳ ಲಕ್ಷಣ ಏನು? ಎಂದು ಕೇಳುತ್ತಾನೆ. ಅದಕ್ಕೆ ಆಕೆ ನಾನು ತಾಳಿಯನ್ನೂ ಬಿಚ್ಚಿಡುತ್ತೇನೆ, ಕಾಲುಂಗುರವನ್ನೂ ತೆಗೆದಿಡುತ್ತೇನೆ. ಅದನ್ನು ಕೇಳುವ ಅಧಿಕಾರ ನಿನಗೆ ಕೊಟ್ಟವರ್‍ಯಾರು? ಎಂದು ಪ್ರತಿಭಟಿಸುತ್ತಾಳೆ. ವಾಟ್ಸ್ಯಾಪ್ ದೃಶ್ಯಾವಳಿಯ ಪ್ರಕಾರ ಅವು ಎಲ್ಲೆ ಮೀರಿದ ದೌರ್ಜನ್ಯಗಳಾಗಿವೆ. ಒಬ್ಬ ಶಾಸಕರೇ ಚರ್ಚುಗಳ ಬಳಿ ಹೋಗಿ ’ನೀವು ಯಾವ ಜಾತಿ, ಎಷ್ಟು ದಿನಗಳಿಂದ ಇಲ್ಲಿಗೆ ಬರುತ್ತಿದ್ದೀರಿ? ಎಂಬಿತ್ಯಾದಿ ಪ್ರಶ್ನೆಗಳ ಸುರಿಮಳೆಯನ್ನೇ ಹಾಕುತ್ತಾರೆ. ಶಾಸಕರೇ ಹೀಗೆ ಮಾಡಿದರೆ ಸಾರ್ವಜನಿಕ ನಡವಳಿಕೆಗೆ ಇದ್ದ ಲಕ್ಷ್ಮಣರೇಖೆಯನ್ನು ಅಳಿಸಿಹಾಕಿದಂತಾಗುವುದಿಲ್ಲವೆ? ಹಿಂದೂಧರ್ಮ ಎನ್ನುವುದು ಕಿಟಕಿ ಬಾಗಿಲುಗಳಿಲ್ಲದ, ಮೆಟ್ಟಿಲುಗಳಿಲ್ಲದ ಮನೆ ಎಂಬ ಅಂಬೇಡ್ಕರ್ ಹೇಳಿದ ಮಾತು ಸವರ್ಣೀಯರಿಗೆ
ಇಂದಿಗೂ ನಾಟುತ್ತಿಲ್ಲ ಮತ್ತು ಆಳುವ ಪ್ರಬಲ ಜಾತಿಗಳ ಮನಸ್ಥಿತಿಗೆ ಪೂರಕವಾಗಿಯೆ ಸಂವಿಧಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎನ್ನುವುದಕ್ಕೆ ಮತಾಂತರ ನಿಷೇಧ ಕಾಯಿದೆ ಉದಾಹರಣೆಯಾಗಿದೆ. ಇದು ಸಂವಿಧಾನದ ಅನುಚ್ಛೇದ 25ರಲ್ಲಿ ನೀಡಲಾಗಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನೆ ನಾಗರಿಕರಿಂದ ಕಸಿಯುವ ಕಾಯ್ದೆಯಾಗಿದೆ ಮತ್ತು ಸಂವಿಧಾನವಿರೋಧಿಯಾಗಿದೆ. ಸಂವಿಧಾನಬದ್ಧವಾಗಿ ಅಸ್ಪೃಶ್ಯತೆ ನಿಷೇಧ ಕಾನೂನನ್ನು ಜಾರಿಗೊಳಿಸುವ ಜವಾಬ್ದಾರಿ ಸರ್ಕಾರಕ್ಕಿರಬೇಕಾಗಿತ್ತು. ಅದರ ಬದಲಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಅನುಷ್ಠಾನಗೊಳಿಸಿ, ದಲಿತರನ್ನು ಮತಾಂತರ ಮಾಡಿದರೆ ಹೆಚ್ಚು ಕಠಿಣತಮ ಶಿಕ್ಷೆಯನ್ನು ವಿಧಿಸುವುದು ಏನನ್ನು ಹೇಳುತ್ತದೆ? ಸರ್ಕಾರ ದಲಿತರಿಗೆ ನೀವು ಎಲ್ಲಿದ್ದೀರೋ ಅಲ್ಲಿಯೇ ಇರಿ, ಹೇಗಿದ್ದೀರೋ ಹಾಗೆಯೆ ಇರಿ ಎಂಬ ಧಾರ್ಷ್ಟ್ಯದ ಆದೇಶವನ್ನು ನೀಡುತ್ತಿದೆ ಎಂದಲ್ಲವೆ? ಆದ್ದರಿಂದ ಇದು ಪ್ರಭುತ್ವ ದಲಿತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಎಂದು ನಾನು ಕರೆಯುತ್ತೇನೆ.

ಡಾ. ಮೂಡ್ನಾಕೂಡು ಚಿನ್ನಸ್ವಾಮಿ

ಡಾ. ಮೂಡ್ನಾಕೂಡು ಚಿನ್ನಸ್ವಾಮಿ
ಕನ್ನಡದ ಖ್ಯಾತ ಕವಿ. ದಲಿತ, ಬಂಡಾಯ ಮತ್ತು ಬೌದ್ಧ ಚಿಂತನೆಗಳನ್ನು ಸಾಹಿತ್ಯದ ಮೂಲಕ ಪ್ರಚುರಪಡಿಸಿದ ಪ್ರಮುಖರಲ್ಲಿ ಒಬ್ಬರು. ‘ಕೊಂಡಿಗಳು ಮತ್ತು ಮುಳ್ಳುಬೇಲಿಗಳು’, ‘ಚಪ್ಪಲಿ ಮತ್ತು ನಾನು’ ಮೂಡ್ನಾಕೂಡು ಅವರ ಕೆಲವು ಕವನಸಂಕಲನಗಳು. ‘ನೆನಪಿನ ಹಕ್ಕಿಯ ಹಾರಲು ಬಿಟ್ಟು’ ಅವರ ಆತ್ಮಕತೆ.


ಇದನ್ನೂ ಓದಿ: ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...