ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಉಳಿಯಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನ್ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಪ್ರಕಟಿಸಿದ್ದಾರೆ. ಬಿಜೆಪಿಯ ರಾಜಸ್ಥಾನ ಮತ್ತು ಕರ್ನಾಟಕ ಘಟಕಗಳ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್, ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಸಂಸದೀಯ ಮಂಡಳಿಯು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಜೈಪುರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್ ಸಿಂಗ್, “ಈಗಾಗಲೇ ಉತ್ತಮ ಕೆಲಸ ಮಾಡುತ್ತಿರುವಾಗ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಯಾಕೆ ಕಿತ್ತು ಹಾಕಬೇಕು” ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿಭಾಯಿಸಿದ ಬಗ್ಗೆ ಆದಿತ್ಯನಾಥ್ ವಿರುದ್ಧ ಪಕ್ಷದಲ್ಲಿನ ಆಕ್ಷೇಪಗಳು ಹೆಚ್ಚಾಗುತ್ತಿದ್ದಂತೆ ಈ ಹೇಳಿಕೆಗಳು ಹೊರ ಬಂದಿವೆ.
ಈ ಹಿಂದೆ ಪಕ್ಷದ ಹಿರಿಯ ಮುಖಂಡ, ಉತ್ತರ ಪ್ರದೇಶ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಮುಂದಿನ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿಯನ್ನು ಬಿಜೆಪಿಯ ಕೇಂದ್ರ ನಾಯಕತ್ವವು ಅಂತಿಮಗೊಳಿಸುತ್ತದೆ ಎಂದು ಹೇಳಿದ್ದರು.
ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ
ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ಇತ್ತೀಚೆಗೆ ಇದೇ ರೀತಿಯ ಹೇಳಿಕೆ ನೀಡಿದ್ದು, ಮುಂಬರುವ ಚುನಾವಣೆಗಳು ಯಾರ ಅಡಿಯಲ್ಲಿ ನಡೆಯಲಿವೆ ಎಂದು ಪಕ್ಷದ ರಾಷ್ಟ್ರೀಯ ನಾಯಕತ್ವ ನಿರ್ಧರಿಸುತ್ತದೆ ಎಂದು ಹೇಳಿದ್ದರು.
ರಾಜಸ್ಥಾನದ ರಾಜ್ಯ ಬಿಜೆಪಿ ಸಮಿತಿ ಮತ್ತು ಮಾಜಿ ಸಿಎಂ ವಸುಂಧರಾ ರಾಜೆ ಗುಂಪಿನ ನಡುವೆ ನಡೆಯುತ್ತಿರುವ ಜಗಳದ ನಡುವೆಯೆ ರಾಜಸ್ಥಾನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಮಾತನಾಡಿದ ಅರುಣ್ ಸಿಂಗ್, “2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಸಂಸದೀಯ ಮಂಡಳಿ ನಿರ್ಧರಿಸುತ್ತದೆ” ಎಂದು ಹೇಳಿದ್ದಾರೆ.
ರಾಜ್ಯ ಸಮಿತಿಯ ಕಾರ್ಯಚಟುವಟಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ವಸುಂಧರ ರಾಜೇ ಅವರ ಬೆಂಬಲಿಗರಿಗೆ ಅವರು ಎಚ್ಚರಿಕೆ ನೀಡಿದ್ದಾರೆ. “ಪಕ್ಷದ ಬಗ್ಗೆ ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಲಾಭವಾಗುತ್ತದೆಯೇ ಅಥವಾ ನಷ್ಟವನ್ನುಂಟುಮಾಡುತ್ತದೆಯೇ ಎಂದು ಹೇಳಿಕೆಗಳನ್ನು ನೀಡುವವರು ಮೊದಲು ತಮ್ಮ ಅಭಿಪ್ರಾಯವು ಮೌಲ್ಯಮಾಪನ ಮಾಡಬೇಕು” ಎಂದು ಅರಣ್ ಸಿಂಗ್ ಹೇಳಿದ್ದಾರೆ.
ನಾಯಕರ ಹೇಳಿಕೆಗಳು ಪಕ್ಷವನ್ನು ಯಾವುದೇ ರೀತಿಯಲ್ಲಿ ತೊಂದರೆಗೊಳಗಾಗುವಂತೆ ಮಾಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!