ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳ ಅವಧಿಯಲ್ಲಿ ಆರು ಜನ ನಾಯಕರು ಬಿಜೆಪಿ ತೊರೆದಿದ್ದು, ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟುತ್ತಿದೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಪಕ್ಷವು ಚಿಂತಿಸುತ್ತಿದೆ ಎಂದು ಮೂಲಗಳು ತಿಳಿಸಿರುವಾಗಿ ಎನ್ಡಿಟಿವಿ ವರದಿ ಮಾಡಿದೆ. ಈ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ಸೂಚಿಸಲಿದ್ದಾರೆ ಎನ್ನಲಾಗಿದೆ.
ಪೂರ್ವ ಯೂಪಿಯಿಂದ ಬಂದವರಾದ ಯೋಗಿ ಆದಿತ್ಯನಾಥ ಅವರು, ಗೋರಖ್ಪುರ ಕ್ಷೇತ್ರದಿಂದ ಐದು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಹಿಂದುಳಿದ ವರ್ಗದ ನಾಯಕರು ಬಿಜೆಪಿಯನ್ನು ತೊರೆಯುತ್ತಿರುವುದರಿಂದಾಗಿ ಪೂರ್ವ ಯೂಪಿಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನಲಾಗುತ್ತಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿರುವುದರಿಂದ ಬಿಜೆಪಿಯ ರಾಜಕೀಯ ಚಟುವಟಿಕೆಗೆ ಶಕ್ತಿ ನೀಡಬಹುದು ಎಂದು ಮೂಲಗಳು ಹೇಳಿವೆ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದಷ್ಟೇ ಅಲ್ಲದೇ ಅವರನ್ನು ಹಿಂದುತ್ವದ ಐಕಾನ್ ಆಗಿ ಬಿಂಬಿಸಲು ಅನುವು ಮಾಡಿಕೊಡುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಅಯೋಧ್ಯೆ ಕ್ಷೇತ್ರವನ್ನು ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅವರು ಪ್ರಸ್ತುತ ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿಯ ಸಭೆ ನಡೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷೇತ್ರವಾರು ಪರಿಶೀಲನೆ ನಡೆಸಿದ್ದಾರೆ. ಗ್ರೌಂಡ್ ರಿಪೋರ್ಟ್ಗಳನ್ನು ಸ್ಥಳೀಯ ಉಸ್ತುವಾರಿಗಳಿಂದ ಪಡೆದಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಯೋಧ್ಯೆಯಿಂದ ಸ್ಪರ್ಧಿಸುವ ಸಾಧ್ಯತೆಗಳು ಸಭೆಯಲ್ಲಿ ವ್ಯಕ್ತವಾಗಿವೆ. ಆದಿತ್ಯನಾಥ ಅವರು ಪ್ರಸ್ತುತ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಪಕ್ಷದ ವರಿಷ್ಠರು ತಿಳಿಸಿದ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಥ ಎಂದು ಅವರು ಇತ್ತೀಚೆಗೆ ಹೇಳಿದ್ದರು.
ಫೆಬ್ರವರಿ 10 ಮತ್ತು 14 ರಂದು ನಡೆಯಲಿರುವ ಮೊದಲ ಎರಡು ಹಂತಗಳ ಚುನಾವಣೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಿರುವ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಶೀಘ್ರದಲ್ಲೇ ಸಭೆ ಸೇರುವ ಸಾಧ್ಯತೆಯಿದೆ.
ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಫೆ.10ರಂದು ಮೊದಲ ಸುತ್ತಿನ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆಯಾಗಲಿದೆ.