ಬೆಂಗಳೂರಿನಲ್ಲಿ 2018ರಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಸುಲ್ತಾನ್ಪುರದ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ನೀಡಿದೆ.
ಸುಲ್ತಾನ್ಪುರ ಜಿಲ್ಲೆಯ ಅಂದಿನ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು.
“ಘಟನೆ ನಡೆದಾಗ ನಾನು ಸುಲ್ತಾನ್ಪುರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷನಾಗಿದ್ದೆ. ಬೆಂಗಳೂರಿನಲ್ಲಿ ಅಮಿತ್ ಶಾ ಅವರನ್ನು ಕೊಲೆಗಾರ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಆರೋಪಗಳನ್ನು ಕೇಳಿದಾಗ ನನಗೆ ತುಂಬಾ ನೋವಾಯಿತು. ಏಕೆಂದರೆ ನಾನು 33 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದೇನೆ. ನಾನು ನನ್ನ ವಕೀಲರ ಮೂಲಕ ರಾಹುಲ್ ಗಾಂಧಿ ವಿರುದ್ದ ದೂರು ನೀಡಿದ್ದೆ. ಸುಮಾರು 5 ವರ್ಷಗಳ ನಂತರ ಈಗ ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್ ನೀಡಿದೆ” ಎಂದು ಮಾಧ್ಯಗಳಿಗೆ ವಿಜಯ್ ಮಿಶ್ರಾ ತಿಳಿಸಿದ್ದಾರೆ.
ವಿಜಯ್ ಮಿಶ್ರಾ ಪರ ವಾದ ಮಂಡಿಸಿದ ವಕೀಲ ಸಂತೋಷ್ ಕುಮಾರ್ ಪಾಂಡೆ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸರಿಯಾದ ಸಾಕ್ಷ್ಯಾಧಾರಗಳು ಕಂಡು ಬಂದಲ್ಲಿ ಅವರಿಗೆ ಗರಿಷ್ಠ 2 ವರ್ಷಗಳ ಶಿಕ್ಷೆ ವಿಧಿಸಬಹುದು ಎಂದು ಹೇಳಿದ್ದಾರೆ.
“2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಈ ಸಂಬಂಧ ಸುಲ್ತಾನ್ಪುರ ಶಾಸಕ ವಿಜಯ್ ಮಿಶ್ರಾ ಆಗಸ್ಟ್ 4,2018 ರಂದು ಜನಪ್ರತಿನಿಧಿಗಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಸೋಮವಾರ, ಸುಲ್ತಾನ್ಪುರದ ಜನ ಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಕುಮಾರ್ ಯಾದವ್ ಅವರು ಡಿಸೆಂಬರ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದಾರೆ” ಎಂದು ವಕೀಲ ಸಂತೋಷ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಇದನ್ನೂ ಓದಿ : CAA ಅಂತಿಮ ಕರಡು ಮಾ.30ರೊಳಗೆ ಸಿದ್ದವಾಗಲಿದೆ: ಸಚಿವ ಅಜಯ್ ಮಿಶ್ರಾ