ಉತ್ತರ ಪ್ರದೇಶ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಮಾತನಾಡಿದ ಚಂದ್ರಶೇಖರ್ ಆಜಾದ್, ಕಾಂಗ್ರೆಸ್ ಜೊತೆಗಿನ ಮೈತ್ರಿ ಕುರಿತು ಮಾತುಕತೆ ನಡೆಸಿ ಸಂಜೆ ವೇಳೆಗೆ ಘೋಷಣೆ ಮಾಡಬಹುದು ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಚಂದ್ರಶೇಖರ್ ಆಜಾದ್, “ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗುತ್ತೇವೆ. ನಾನು ಶಾಸಕ ಮತ್ತು ಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್ನಿಂದ ಟಿಕೆಟ್
ಸಮಾಜವಾದಿ ಪಕ್ಷವು ನಮಗೆ 100 ಸೀಟು ನೀಡಿದರೂ ನಾನು ಅವರೊಂದಿಗೆ ಹೋಗುವುದಿಲ್ಲ. ಚುನಾವಣೆಯ ನಂತರ ಬಿಜೆಪಿಯನ್ನು ತಡೆಯಲು ನಾವು ಇತರ ಪಕ್ಷಗಳಿಗೆ ಸಹಾಯ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. “ನಾನು ಮಾಯಾವತಿ ಜತೆ ಕೂಡಾ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ” ಎಂದು ಆಜಾದ್ ಹೇಳಿದ್ದಾರೆ.
“ನಾನು ವೈಯಕ್ತಿಕ ಸಂತೋಷದ ಬಗ್ಗೆ ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಳೆದುಕೊಂಡಿದ್ದೇನೆ. ಹತ್ರಾಸ್, ಪ್ರಯಾಗ್ರಾಜ್ ಮತ್ತು ಉನ್ನಾವೋದಂತಹ ಪ್ರತಿಭಟನೆಯ ಘಟನೆಗಳಿಗಾಗಿ ನಾನು ಜೈಲಿಗೆ ಹೋಗಿದ್ದೆ” ಎಂದು ಅವರು ಹೇಳಿದ್ದಾರೆ.
‘‘ಪ್ರತಿಪಕ್ಷಗಳ ವಿಭಜನೆಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ನಷ್ಟ” ಎಂದು ಹೇಳಿರುವ ಚಂದ್ರಶೇಖರ್ ಆಜಾದ್, ಭೀಮ್ ಆರ್ಮಿಯ ಕಾರ್ಯಕರ್ತರು ನಮ್ಮ ಶಕ್ತಿ ಎಂದು ಹೇಳಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್ಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದ್ದರು.
ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಸಚಿವ ಸ್ಥಾನ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ