ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ರದ್ದು ಮಾಡುವಂತೆ ಕೋರಿ ನಟ ಉಪೇಂದ್ರ ಹೈಕೋರ್ಟ್ ಗೆ 2ನೇ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತು ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡುವಾಗ ಗಾದೆ ಮಾತು ಬಳಸಿ ‘ಊರು ಎಂದ ಮೇಲೆ ಹೊಲಗೇರಿ ಇರುತ್ತದೆ’ ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ವಿರುದ್ಧ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿತ್ತು.
ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂಧನ್ ಅವರು ಉಪೇಂದ್ರ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬಳಿಕ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬವರು ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದರು.
ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾದ ಕೇಸ್ ಗೆ ಸಂಬಂಧಿಸಿ ಈ ಮೊದಲು ಎಫ್ ಐಆರ್ ಗೆ ರದ್ದು ಕೋರಿ ಹೈಕೋರ್ಟ್ ಗೆ ಉಪೇಂದ್ರ ಅರ್ಜಿ ಸಲ್ಲಿಸಿದ್ದರು.ಈ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯ ಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ನ್ಯಾಯಪೀಠ ಎಫ್ ಐಆರ್ ಗೆ ಮಧ್ಯಂತರ ತಡೆ ನೀಡಿತ್ತು.
ಇದನ್ನು ಓದಿ; ದ.ಕನ್ನಡ: ಜಾನುವಾರು ಸಾಗಾಟ ಮಾಡುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ, ಕೊಲೆಗೆ ಯತ್ನಿಸಿದ ಸಂಘಪರಿವಾರದ ಕಾರ್ಯಕರ್ತರು