Homeಕರ್ನಾಟಕತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

- Advertisement -
- Advertisement -

ಬೆಂಗಳೂರು ಮೈಸೂರು ನಡುವೆ ನಿರ್ಮಿಸಿರುವ 118 ಕಿಲೋ ಮೀಟರ್‌ ಉದ್ದದ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಈ ವೇಳೆ ಅವರು ರೋಡ್‌ ಶೋ ನಡೆಸುವ ಮಾರ್ಗದಲ್ಲಿ ಮಹಾದ್ವಾರಕ್ಕೆ ನಕಲಿ ಇತಿಹಾಸದ ಉರಿಗೌಡ, ನಂಜೇಗೌಡ ಹೆಸರಿಡಲಾಗಿತ್ತು. ಜನರ ತೀವ್ರ ವಿರೋಧದಿಂದ ಇದೀಗ ಆ ಮಹಾದ್ವಾರದ ಹೆಸರನ್ನು ತಗೆದು ಬಾಲಗಂಗಾಧರ ನಾಥ ಸ್ವಾಮೀಜಿ ಮಹಾದ್ವಾರ ಎಂದು ಹೆಸರಿಡಲಾಗಿದೆ.

ಭಾನುವಾರ ಮಂಡ್ಯ ನಗರ ವ್ಯಾಪ್ತಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಧಾನಿ 1.8 ಕಿ.ಮೀ ರೋಡ್‌ ಶೋ ನಡೆಸಲಿದ್ದಾರೆ. ಈ ಮಾರ್ಗದಲ್ಲಿ ಒಟ್ಟು 4 ಮಹಾದ್ವಾರ ಅಳವಡಿಸಲಾಗಿದೆ. ರೋಡ್‌ ಶೋ ಆರಂಭವಾಗುವ ಪ್ರವಾಸಿ ಮಂದಿರದ ಬಳಿ ಸರ್‌. ಎಂ.ವಿಶ್ವೇಶ್ವರಯ್ಯ ಮಹಾದ್ವಾರ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಹಾದ್ವಾರ, ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು.

ಟಿಪ್ಪು ಹತ್ಯೆ ಮಾಡಿದ್ದು ಉರಿಗೌಡ, ನಂಜೇಗೌಡ ಎಂದು ವಾಟ್ಸ್‌ಅಪ್‌ನಲ್ಲಿ ಬಂದ ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೊರಟಿರುವ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯದ ಹೆದ್ದಾರಿಯಲ್ಲಿ ಹಾಕಲಾಗಿರುವ ‘ಉರಿಗೌಡ, ದೊಡ್ಡ ನಂಜೇಗೌಡ ಮಹಾದ್ವಾರ’ವನ್ನು ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ನಕಲಿ ಇತಿಹಾಸದ ಉರಿಗೌಡ, ನಂಜೇಗೌಡರ ಹೆಸರಲ್ಲಿ ಮಹಾದ್ವಾರ; ನಗೆಪಾಟಲಿಗೀಡಾದ ಸಂಘಪರಿವಾರ

ಕೈಯಲ್ಲಿ ಖಡ್ಗ ಹಿಡಿದು ನಿಂತಿರುವ ತಮಿಳುನಾಡಿನ ವೀರರ ಚಿತ್ರವನ್ನೇ ಉರಿಗೌಡ, ನಂಜೇಗೌಡ ಎಂದು ಹರಿಬಿಟ್ಟಿರುವುದು ಈಗಾಗಲೇ ಬಯಲಾಗಿದೆ. ಆ ಚಿತ್ರಗಳನ್ನೇ ಇಲ್ಲಿನ ಮಹಾದ್ವಾರದಲ್ಲೂ ಹಾಕಿಕೊಳ್ಳಲಾಗಿತ್ತು.

ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಪ್ರಸಿದ್ಧರಾಗಿದ್ದರು ಎಂದು ಲಭ್ಯವಿರುವ ಮಾಹಿತಿಗಳು ಹೇಳುತ್ತವೆ. ಈ ಇಬ್ಬರು ಸಹೋದರರು ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಚಿತ್ರವನ್ನೇ ‘ಉರಿಗೌಡ, ನಂಜಗೌಡ’ ಎಂಬ ಕಾಲ್ಪನಿಕ ಕತೆಗೆ ಬಳಸಿಕೊಳ್ಳಲಾಗಿದೆ.

ಈ ಉರಿಗೌಡ ಮತ್ತು ದೊಡ್ಡ ನಂಜೇಗೌಡರು ಟಿಪ್ಪು ಸುಲ್ತಾನ್‌ನನ್ನು ಕೊಂದರು ಎಂದು ಬಿಜೆಪಿ ನಾಯಕರು ಸಭೆ ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ನನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಗೌಡ ಸಮುದಾಯದ ಮಹಾನಾಯಕರಾದ ಉರಿಗೌಡ ಮತ್ತು ದೊಡ್ಡ ನಂಜೇಗೌಡರೇ ಟಿಪ್ಪುಅನ್ನು ಕೊಂದಿದ್ದಾಗಿ ಸುಳ್ಳು ಪ್ರಚಾರ ಮಾಡುತ್ತಾ ಬಂದಿದ್ದಾರೆ.

ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಮಹಾದ್ವಾರವು ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಮಹಾದ್ವಾರದ ಚಿತ್ರ, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಮಂಡ್ಯ ಜಿಲ್ಲಾಡಳಿತ ಮಹಾದ್ವಾರದ ಹೆಸರು ಬದಲಾವಣೆ ಮಾಡಿದೆ.

ಈ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ತೆರವು ಮಾಡದಿದ್ದರೆ ಅಥವಾ ಹೆಸರು ಬದಲಾಯಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಗತಿಪರರು ಎಚ್ಚರಿಕೆ ನೀಡಿದ್ದರು. ಜತೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಕೂಡಾ ವಿರೋಧ ವ್ಯಕ್ತಪಡಿಸಿದ್ದರು.

ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರಕ್ಕೆ ಪ್ರಗತಿಪರರಿಂದ ವಿರೋಧ:

ಈ ಬಗ್ಗೆ ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಪ್ರತಿಕ್ರಿಯಿಸಿ, ”ಹಾಕಿರುವ ಫ್ಲೆಕ್ಸ್‌ಗಳನ್ನು ಕೂಡಲೇ ತೆರೆವುಗೊಳಿಸಿ ಜಿಲ್ಲೆಯನ್ನು ಕೋಮು ದಳ್ಳುರಿಗೆ ತಳ್ಳುವ ಬಿಜೆಪಿಯ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮಂಡ್ಯ ಜಿಲ್ಲಾಡಳಿತವನ್ನು CPIM ಮಂಡ್ಯ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ” ಎಂದು ಹೇಳಿದ್ದರು.

”ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಅವರು ಟಿಪ್ಪುವನ್ನು ಕೊಂದ ಸೈನಿಕರು ಎಂದು ಸುಳ್ಳು ಕತೆ ಕಟ್ಟಿ ಒಕ್ಕಲಿಗರನ್ನು ಟಿಪ್ಪು ವಿರುದ್ಧ ಹೋರಾಡಿ ಬ್ರಿಟೀಷರಿಗೆ ಸಹಾಯ ಮಾಡಿದರು ಎಂದು ಬಿಂಬಿಸಲಾಗುತ್ತಿದೆ. ಆ ಮೂಲಕ ಒಕ್ಕಲಿಗರನ್ನು ಬ್ರಿಟೀಷರ ಏಜೆಂಟರು ಎಂದು ಅವಮಾನಿಸುವ ಕೆಲಸವನ್ನು ಬಿಜೆಪಿ ಮತ್ತು ಸಂಘ ಪರಿವಾರ ಮಾಡುತ್ತಿದೆ. ಇದರ ಮುಂದವರಿಕೆಯಾಗಿ ಪ್ರಧಾನಿಯೊಬ್ಬರ ಬೇಟಿಯ ಘನತೆಯನ್ನೂ ಮಣ್ಣು ಪಾಲು ಮಾಡಿ ತನ್ನ ಸುಳ್ಳಿನ, ವಿಕೃತಿಯ ಪ್ರಚಾರದಲ್ಲಿ ಬಿಜೆಪಿ ನಿರತವಾಗಿದೆ” ಎಂದು ಟೀಕಿಸಿದ್ದರು.

ಲೇಖಕ ಚಂದ್ರಪ್ರಭ ಕಟಾರಿ ಪ್ರತಿಕ್ರಿಯಿಸಿ, ”ವಾಟ್ಸಪ್ ಯೂನಿವರ್ಸಿಟಿ ಹುಟ್ಟಿ(ಸಿ)ದ ಉರಿಗೌಡ ಮತ್ತು ನಂಜೇಗೌಡರು ಬ್ರಿಟಿಷರ ಪರವಾಗಿ ಯುದ್ಧ ಮಾಡಿದರು ಎಂಬ ಕಟ್ಟುಕತೆ ಈಗ ಅಕ್ಷರಶಃ ಬೀದಿಯಲ್ಲಿ ರಾರಾಜಿಸುತ್ತಿದೆ. ಸಂಘಿಗಳು ವ್ಯವಸ್ಥಿತವಾಗಿ ತಮ್ಮ ರಾಜಕೀಯ ಲಾಭಕ್ಕಾಗಿ ಇಂಥ ದೇಶದ್ರೋಹದ ಅಪವಾದವನ್ನು ಒಕ್ಕಲಿಗ ಸಮುದಾಯದ ಹಣೆಗೆ ಕಟ್ಟಲು ಪಣ ತೊಟ್ಟಂತಿದೆ. ಅಪಾರ ಕನ್ನಡಾಭಿಮಾನದ ಒಕ್ಕಲಿಗರು ಇದನ್ನು ಪ್ರತಿಭಟಿಸಿ, ಈ ಕಟ್ಟುಕತೆ ಮುಂದುವರೆಯದಂತೆ ನೋಡಿಕೊಳ್ಳುವ ಅನಿವಾರ್ಯತೆ ಈಗ ಅವರ ಹೆಗಲಿಗೇರಿದೆ. ಪಕ್ಷಾತೀತವಾಗಿ ಇದನ್ನು ಈಗಲೇ ಚಿವುಟಿ ಹಾಕದಿದ್ದರೆ, ಒಕ್ಕಲಿಗ ಸಮುದಾಯವು ಬ್ರಿಟಿಷರ ಪರವಾಗಿತ್ತು ಎಂಬ ಕಪೋಲಕಲ್ಪಿತ ಕತೆಯು ಮುಂದಿನ ಪೀಳಿಗೆಯ ಜನಮಾನಸದಲ್ಲಿ ಶಾಶ್ವತವಾಗಿ ಉಳಿದು, ದೇಶದ್ರೋಹದ ಪಟ್ಟದ ಅಪಾಯವಂತೂ ಕಟ್ಟಿಟ್ಟ ಬುತ್ತಿ” ಎಂದು ಎಚ್ಚರಿಸಿದ್ದರು.

ಹೋರಾಟಗಾರರು ಹಾಗೂ ವೈದ್ಯರೂ ಆದ ಎಚ್.ವಿ.ವಾಸು ಅವರು ಪ್ರತಿಕ್ರಿಯಿಸಿ, ”ಇದು ಮಂಡ್ಯ ಜಿಲ್ಲೆಗೆ ಮಾಡುತ್ತಿರುವ ಅವಮಾನವೆಂಬುದರಲ್ಲಿ ಸಂದೇಹವಿಲ್ಲ. ಮಂಡ್ಯದ ಕುರಿತು ಹೊರಗೆ ಹಲವು ಪೂರ್ವಗ್ರಹಗಳಿವೆ. ಅವರು ತೀರಾ ‘Mandya centred’, ಜಾತಿ ಕೇಂದ್ರಿತ ಮನೋಭಾವ ಇರುವವರು, ಮಂಡ್ಯ ಕುರಿತಂತೆ ದುರಭಿಮಾನ ಹೊಂದಿರುವವರು ಇತ್ಯಾದಿ. ಮಂಡ್ಯದ ಜೊತೆ ಕಳೆದ 23 ವರ್ಷಗಳ ಒಡನಾಟ, 12 ವರ್ಷಗಳ ಕಾಲ ಅಲ್ಲಿಯೇ ವಾಸ ಮಾಡಿದ್ದುದರ ಆಧಾರದ ಮೇಲೆ ಹೇಳುವುದಾದರೆ ಅವೆಲ್ಲವೂ ಸುಳ್ಳು… ಒಂದು ಸಹಜ ವಿಶಾಲ ಮನೋಭಾವ, ನೆಲಮೂಲದ ವಿವೇಕವನ್ನು ಹೊಂದಿರುವ ಸಮುದಾಯ ಅಲ್ಲಿದೆ (ಎಲ್ಲಾ ಕಡೆ ಇರುವ ಸಮಸ್ಯೆಗಳು, ಕೆಡುಕು ಅಲ್ಲೂ ಇದೆ; ಇರುತ್ತದೆ)” ಎಂದು ವಿವರಿಸಿದರು.

”ಯಾವ ಸಂದೇಹವೂ ಇಲ್ಲದೇ ಹೇಳಬಹುದಾದ ಸಂಗತಿಯೆಂದರೆ – ಇಂದು ಮಂಡ್ಯದಲ್ಲಿ ದ್ವಾರದಲ್ಲಿ ಹೆಸರಿಸಲಾಗಿರುವ ಎರಡು ಫೇಕ್ ಪಾತ್ರಗಳು ಒಕ್ಕಲಿಗ ಸಮುದಾಯಕ್ಕೂ, ಮಂಡ್ಯಕ್ಕೂ ದೊಡ್ಡ ಅವಮಾನವಲ್ಲದೇ ಬೇರೇನೂ ಅಲ್ಲ. ಇಂದಿಗೂ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಡಾ.ಸಿ.ಬಂದೀಗೌಡರು, ನಮ್ಮೆಲ್ಲರನ್ನು ಪೊರೆದ ಹಿರಿಯ ಜೀವ ಪ್ರೊ.ಎಚ್.ಎಲ್.ಕೇಶವಮೂರ್ತಿ, ದಸಂಸದ ಹಿರಿಯ ನಾಯಕ ನಾರಾಯಣ್ ಇಂಥವರನ್ನು ನೆನೆದರೇನೇ ಮನಸ್ಸಿನಲ್ಲಿ ಗೌರವ, ಪ್ರೀತಿ ಉಕ್ಕುತ್ತದೆ. ಹಾಗೆಯೇ ನಾವು ದಾರಿ ತಪ್ಪಬಾರದು ಎಂಬ ಎಚ್ಚರ ಮೂಡುತ್ತದೆ. ಅವರಂಥವರ ಸಹವಾಸದಲ್ಲಿ ಒಂದೆರಡು ದಶಕಗಳ ಕಾಲ ಇದ್ದ ನಾವುಗಳು ಮಂಡ್ಯಕ್ಕೆ ಈ ಅವಮಾನ ಆಗದಂತೆ ನೋಡಿಕೊಳ್ಳಬೇಕು. ಇದು ನಮ್ಮ ಕರ್ತವ್ಯ” ಎಂದು ನೆನಪಿಸಿದರು.

ಕವಿ ರಾಜೇಂದ್ರ ಪ್ರಸಾದ್ ಈ ಕುರಿತು ಪೋಸ್ಟ್ ಮಾಡಿ, ”ಪ್ರಧಾನಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹೊತ್ತಿನಲ್ಲಿ ಬಿಜೆಪಿ ಪಕ್ಷವು ಕಪೋಲಕಲ್ಪಿತವಾದ ‘ಉರಿಗೌಡ & ನಂಜೇಗೌಡ’ ಹೆಸರುಗಳಲ್ಲಿ ಹಾಕಿರುವ ಫ್ಲೆಕ್ಸ್ ಗಳನ್ನು ಕೂಡಲೇ ತೆರೆವು ಗೊಳಿಸಿ ಎಲ್ಲವೂ ಶಾಂತಿಯುತವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...