ಉತ್ತರ ಪ್ರದೇಶದ ಮೊರಾದಾಬಾದ್ನ ಕಾಂತ್ನಲ್ಲಿ ಎರಡು ದಿನಗಳಿಂದ ಕಾಣೆಯಾಗಿದ್ದ ಅಪ್ರಾಪ್ತ ಮುಸ್ಲಿಂ ಬಾಲಕಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯನ್ನು ಅಪಹರಿಸಿ, ಅತ್ಯಾಚಾರಗೈದು, ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮತ್ತು ಮರಣೋತ್ತರ ವರದಿಗಳು ದೃಢಪಡಿಸಿವೆ.
ಮೊರಾದಾಬಾದ್ನ ಕಾಂತ್ನ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಡಿಸೆಂಬರ್ 22 ರಂದು ಬಾಲಕಿ ತನ್ನ ಮನೆಯ ಹೊರಗೆ ಆಟವಾಡಲು ಹೋಗಿದ್ದರು. ಮರಳಿ ಮನೆಗೆ ಹಿಂದಿರುಗಿರಲಿಲ್ಲ. ಬಾಲಕಿ ಕಾಣಿಸದಿದ್ದಾಗ ಆಕೆಯ ಕುಟುಂಬದವರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಆಕೆ ಸಿಗದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರ ಎರಡು ತಂಡಗಳು ಶೋಧ ಕಾರ್ಯ ನಡೆಸಿದ್ದರೂ ಬಾಲಕಿ ಪತ್ತೆಯಾಗಿರಲಿಲ್ಲ. ಡಿಸೆಂಬರ್ 24 ರಂದು ಆಕೆಯ ನಿವಾಸದಿಂದ ಎರಡು ಕಿಲೋಮೀಟರ್ ದೂರದಲ್ಲಿದ್ದ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.
ಇದನ್ನೂ ಓದಿ: ಕಥುವಾ ಬಾಲಕಿ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು: ಮೆಹಬೂಬ ಮುಫ್ತಿ ಕಿಡಿ
ಐಪಿಸಿ ಮತ್ತು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಅತ್ಯಾಚಾರ, ಅಪಹರಣ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. “ನಮ್ಮ ತಂಡಗಳು ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಅಪರಾಧಿಗಳನ್ನು ಬಂಧಿಸಲಾಗುತ್ತದೆ” ಎಂದು ಕಾಂತ ವೃತ್ತ ಸರ್ಕಲ್ ಅಧಿಕಾರಿ ಮಹೇಶ್ ಗೌತಮ್ ತಿಳಿಸಿದ್ದಾರೆ.
“ನಾನು ನನ್ನ ಮಗಳಿಗಾಗಿ ಎಲ್ಲೆಡೆ ಹುಡುಕಿದ್ದೆ. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಎರಡು ದಿನಗಳ ಬಳಿಕ ಆಕೆಯ ಮೃತ ದೇಹವು ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ ಎಂದು ನನಗೆ ತಿಳಿದು ಬಂದಿದೆ. ನನ್ನ ಮಗಳಿಗೆ ನ್ಯಾಯ ಬೇಕು” ಎಂದು ಸಂತ್ರಸ್ತೆಯ ಅಸಹಾಯಕ ತಾಯಿ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಮೊರಾದಾಬಾದ್ ಸಂಸದ ಡಾ.ಎಸ್.ಟಿ.ಹಸನ್, ಅಖಿಲ ಭಾರತ ಅಲ್ಪಸಂಖ್ಯಾತರ ಕಾಂಗ್ರೆಸ್ನ ಸಂಯೋಜಕ ಅಹ್ಮದ್ ಖಾನ್ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಸ್ಲಂ ಖುರ್ಷೀದ್ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಶೀಘ್ರ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.