ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾದಾಗಿನಿಂದ ಪ್ರತಿದಿನ ಒಂದಲ್ಲ ಒಂದು ಪ್ರಕರಣವನ್ನು ಯುಪಿ ಪೊಲೀಸರು ದಾಖಲಿಸುತ್ತಿದ್ದಾರೆ. ಈಗ ಇಂತಹದ್ದೇ ಮತ್ತೊಂದು ಪ್ರಕರಣ ದಾಖಲಿಸಿರುವ ಪೊಲೀಸರು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಿಜ್ನೋರ್ನಲ್ಲಿ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಾಕಿಬ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಆಕೆಯನ್ನು ಮತಾಂತರಗೊಳಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.
“ಕಳೆದ ಕೆಲವು ದಿನಗಳಿಂದ ಧಂಪೂರಿನ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಆದರೆ ಸಾಕಿಬ್ ಎಂಬ ಮುಸ್ಲಿಂ ವ್ಯಕ್ತಿ ಬಾಲಕಿಯನ್ನು ಅಪಹರಿಸಿದ್ದಾನೆ. ಪೊಲೀಸರು ಮತ್ತು ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ವಿಚಾರಣೆಯ ನಂತರ, ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ತನ್ನ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ. ಹಾಗಾಗಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ” ಎಂದು ಕುಮಾರ್ ತಿಳಿಸಿದರು.
ಇದನ್ನೂ ಓದಿ: ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ
ಆರೋಪಿ ಸಾಕಿಬ್ ತನ್ನ ನಿಜವಾದ ಗುರುತನ್ನು ಮರೆಮಾಚಿ, ತನ್ನನ್ನು ಸೋನು ಎಂದು ಬಾಲಕಿಗೆ ಪರಿಚಯ ಮಾಡಿಕೊಂಡಿದ್ದನು. ನಂತರ ಅಕೆಯನ್ನು ಅಪಹರಿಸಿ ಮತಾಂತರಗೊಳಿಸಲು ಒತ್ತಾಯಿಸಿದ್ದಾನೆ. ಆರೋಪಿ ಮೇಲೆ ಕಾನೂನುಬಾಹಿರ ಧಾರ್ಮಿಕ ಮತಾಂತರ ಮತ್ತು ಎಸ್ಸಿ / ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ನವೆಂಬರ್ನಲ್ಲಿ ಉತ್ತರ ಪ್ರದೇಶ ಸರ್ಕಾರ ಕಾನೂನುಬಾಹಿರವಾಗಿ ಧರ್ಮ ಪರಿವರ್ತನೆ ನಿಷೇಧ ಸುಗ್ರೀವಾಜ್ಞೆ 2020 ಜಾರಿಗೆ ತಂದಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ, ಹಲವರನ್ನು ಜೈಲಿಗೆ ಕಳುಹಿಸಲಾಗಿದೆ. ಹಳೆಯ ಪ್ರಕರಣಗಳನ್ನು ಈ ಕಾಯ್ದೆಯಡಿ ತಂದು ಜನರನ್ನು ಪೊಲೀಸರು ಮತ್ತು ಬಜರಂಗದಳದ ಕಾರ್ಯಕರ್ತರು ಬಲಿಪಶು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹೊಸ ಕಾನೂನಿನ ಪ್ರಕಾರ ಬಲವಂತದ ಮತಾಂತರಗಳನ್ನು ನಡೆಸಿದ ಆರೋಪದಲ್ಲಿ ಒಂದರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 15,000 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ.
ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…