ಉತ್ತರ ಪ್ರದೇಶದ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ಸಚಿವ ದಾರಾ ಸಿಂಗ್ ಚೌಹಾಣ್ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ ಉತ್ತರ ಪ್ರದೇಶದ ಎರಡನೇ ಸಚಿವ ದಾರಾ ಸಿಂಗ್ ಚೌಹಾಣ್. ರಾಜ್ಯದಲ್ಲಿ ಈಗ ಒಟ್ಟು ಆರು ಶಾಸಕರು ರಾಜೀನಾಮೆ ನೀಡಿದ್ದಾರೆ.
ಮಂಗಳವಾರ (ಜ.11) ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಂಪುಟ ಮತ್ತು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇವರನ್ನೇ ಅನುಸರಿಸಿದ್ದ ರಾಜ್ಯದ ಇತರ ನಾಲ್ವರು ಶಾಸಕರು ಬಿಜೆಪಿ ತೊರೆದಿದ್ದಾರೆ.
ಪ್ರಭಾವಿ ಹಿಂದುಳಿದ ವರ್ಗಗಳ ನಾಯಕರಾಗಿರುವ ದಾರಾ ಸಿಂಗ್ ಚೌಹಾಣ್ ಅವರು ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಅರಣ್ಯ ಮತ್ತು ಪರಿಸರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯರಂತೆಯೇ ಇವರು ಕೂಡ ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಬುಧವಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಕಚೇರಿಗೆ ಹಾಕಲು ಬೀಗ ಕಳುಹಿಸಿದ ಸಮಾಜವಾದಿ ಪಾರ್ಟಿ
ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಸಾಮಾಜಿಕ ನ್ಯಾಯ ಹೋರಾಟದ ಅವಿರತ ಹೋರಾಟಗಾರ ದಾರಾ ಸಿಂಗ್ ಚೌಹಾಣ್ ಜಿ ಅವರಿಗೆ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು!” ಎಂದು ಟ್ವೀಟ್ ಮಾಡಿದ್ದಾರೆ.
“ಎಸ್ಪಿ ಮತ್ತು ಅದರ ಮಿತ್ರಪಕ್ಷಗಳು ಒಗ್ಗೂಡಿ ಸಮಾನತೆ ಮತ್ತು ಸಮಾನತೆಯ ಚಳವಳಿಯನ್ನು ತೀವ್ರತೆಗೆ ಕೊಂಡೊಯ್ಯುತ್ತವೆ… ತಾರತಮ್ಯವನ್ನು ತೊಡೆದುಹಾಕಿ! ಇದು ನಮ್ಮ ಸಾಮೂಹಿಕ ಸಂಕಲ್ಪ!” ಎಂದು ಅಖಿಲೇಶ್ ಯಾದವ್ ಬರೆದಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022 ಏಳು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 10 ರಿಂದ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.