ಉತ್ತರ ಪ್ರದೇಶದ ಫಿರೋಜಾಬಾದ್ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್ಇನ್ಸ್ಪೆಕ್ಟರ್ಗಳು ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುಟುಂಬಸ್ಥರು ನೀಡಿದ ಮಾಹಿತಿಯಂತೆ, ಕಳ್ಳತನ ಪ್ರಕರಣದಲ್ಲಿ ಗೌರವ್ ಎಂಬಾತನನ್ನು ಬಂಧಿಸಲು ಸಬ್ಇನ್ಸ್ಪೆಕ್ಟರ್ ಧರ್ಮಪಾಲ್ ಸಿಂಗ್ ನೇತೃತ್ವದ ಪೊಲೀಸ್ ತಂಡ ಭಾನುವಾರ ರಾತ್ರಿ ಸುಮಾರು 11.45ಕ್ಕೆ ಲಭೌವಾ ಗ್ರಾಮದಲ್ಲಿರುವ ಆತನ ಮನೆಗೆ ತಲುಪಿತ್ತು.
ತನ್ನ ಗಂಡನನ್ನು ಕರೆದುಕೊಂಡು ಹೋಗದಂತೆ ಗೌರವ್ನ ಗರ್ಭಿಣಿ ಪತ್ನಿ ಅಂಜಲಿ (28) ವಿನಂತಿಸಿಕೊಂಡಾಗ, ಸಬ್ಇನ್ಸ್ಪೆಕ್ಟರ್ ಸಿಂಗ್ ಆಕೆಯ ಹೊರಟ್ಟೆಗೆ ಒದ್ದಿದ್ದರಿಂದ ಆಕೆ ಕೆಳಗೆ ಬಿದ್ದಳು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಪೊಲೀಸರು ಗೌರವ್ನನ್ನು (32) ಕರೆದುಕೊಂಡು ಹೋದ ನಂತರ ಅಂಜಲಿ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿತು. ತಕ್ಷಣ ಅವರನ್ನು ಶಿಕೋಹಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಬೆಳಿಗ್ಗೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹೆರಿಗೆಯ ನಂತರ ಅವರ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದರಿಂದ ಅವರನ್ನು ಫಿರೋಜಾಬಾದ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಅಂಜಲಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಗೌರವ್ನನ್ನು ಬಿಡುಗಡೆ ಮಾಡಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.
ಆಕೆಯ ಸಾವಿನ ನಂತರ ಗ್ರಾಮಸ್ಥರು ಪೊಲೀಸ್ ಠಾಣೆಯ ಮುಂದೆ ಗಲಾಟೆ ನಡೆಸಿ, ಪೊಲೀಸರ ನಡವಳಿಕೆಯನ್ನು ಪ್ರಶ್ನಿಸಿದರು. ನವಜಾತ ಶಿಶುವಿನ ಸ್ಥಿತಿಯೂ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಗ್ರಾಕ್ಕೆ ರವಾನಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ನಿರ್ಲಕ್ಷ್ಯದ ಆರೋಪದ ಮೇಲೆ ಸಬ್ಇನ್ಸ್ಪೆಕ್ಟರ್ಗಳಾದ ಧರ್ಮಪಾಲ್ ಸಿಂಗ್, ಹೆಡ್ ಕಾನ್ಸ್ಟೇಬಲ್ಗಳಾದ ಮೋಹನ್ ಸಿಂಗ್ ಮತ್ತು ಅರವಿಂದ್ ಕುಮಾರ್ ಹಾಗೂ ಕಾನ್ಸ್ಟೇಬಲ್ಗಳಾದ ಭವತೋಷ್ ಕುಮಾರ್ ಮತ್ತು ಕುಲದೀಪ್ ಕುಮಾರ್ ಅವರನ್ನು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಎಸ್ಪಿ) ಆದಿತ್ಯ ಲಾಂಗೇ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ಅಮಾನತುಗೊಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ನಗರ) ರವಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಮಹಿಳೆಯ ಮರಣೋತ್ತರ ಪರೀಕ್ಷೆಯನ್ನು ತಡರಾತ್ರಿ ನಡೆಸಲಾಗಿದ್ದು, ಅದೇ ರಾತ್ರಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.


